Home / ಕವನ / ಕವಿತೆ / ಹುಲ್ಲು ಗರಿಕೆಯ ಆಸೆ

ಹುಲ್ಲು ಗರಿಕೆಯ ಆಸೆ

ರಕ್ತ ಸಿಕ್ತ ಕರ್‍ಬಲಾದ ಬೀದಿಗಳೇ
ನಿಮ್ಮೆದೆಯ ಕದವ ತೆರೆದು ಮಾತಾಡಿಸಿ
ಗಲೀಫ್ ತೊಟ್ಟ ಕಲ್ಲು ಗೋರಿಯಾಗಿಸದಿರಿ
ನಿಮ್ಮ ಮನೆ ಬಾಗಿಲಿಗೆ ಬಂದಿರುವೆನು.
ನಿಮ್ಮ ಮನೆ ಮುಂದೆಯೇ ರಕ್ತ ರಣರಂಗವಾಗುವಾಗ,
ನೀವೇಕೆ ಪ್ರತಿಭಟಿಸಲಿಲ್ಲ ಮಾತಾಡಿ ಮೀನಾರುಗಳೇ.
ನಿಮ್ಮ ಬಾಗಿಲ ಮುಂದೆಯೇ ಮನುಷ್ಯತ್ವದ
ಕೊಲೆಯಾಗಿ ರಕ್ತದ ಮಡುವಿನಲ್ಲಿ ಬಿದ್ದಿರುವಾಗ
ನೀವೇಕೆ ಸುಮ್ಮನಿದ್ದೀರಿ ಹೇಳಿ ಮಂದಿರದ ಗೋಪುರಗಳೇ
ಕೊಲೆಯಾಗಿ ಬಿದ್ದ ಶವರಾಶಿಯಲ್ಲಿ
ಜಾತಿ ಹೆಕ್ಕುವವರನು ನಡುಬೀದಿಯಲಿನ ನಿಲ್ಲಿಸಿ ಕೇಳುವೆ
ಕೊಲೆಗಡುಕರೇ ವಿಶ್ವದ ಕಳಂಕಿತರೇ
ಮಂದಿರ, ಮಸೀದಿಯಲಿ ಕದನಕ್ಕೆ ಕಾಲುಕೆದರುವವರೇ,
ದೇಶಭಕ್ತಿಯ ಸೋಗಿನಲಿ ಮುಂದೆ ಬಂದವರೇ
ಹಾಡುಹಗಲೇ ನಿಮ್ಮ ಸೋದರಿ ವಿಧವೆಯಾದುದಕ್ಕೆ
ಧನದಾಹದ ಬೆಂಕಿಯಲ್ಲಿ ಬೆಂದುಹೋದುದಕ್ಕೆ
ದೇಗುಲ ಸಂಸ್ಕೃತಿಗೆ ತಳಪಾಯ ಹಾಕಿದುದಕ್ಕೆ
ಹೆಣ್ಣುಗಳ ಸಾಯಿಸಿ, ಹೊಟ್ಟೆ ಹೊರೆಯುತ್ತಿರುವುದಕ್ಕೆ
ಅವಳ ‘ಸತಿ’ ಗುಡಿಯ ಜೀರ್‍ಣೋದ್ಧಾರದ ಬಗ್ಗೆ
ಎಚ್ಚರ! ಸತಿಯಾದ ಗುಡಿಯ ಕಲ್ಲುಗಳೇ ಕೇಳುತ್ತವೆ
ಮುಂದೊಂದು ದಿನ ನಿಮ್ಮ ಕರ್‍ಮಕಾಂಡದ ಲೆಕ್ಕ
ಅವಳ ಖಾತೆ ಪುಸ್ತಕದಲ್ಲಿ ಬರೆದು
ನಿಮ್ಮನು ಕೋರ್‍ಟಿಗೆ ಎಳೆಯುತ್ತಾಳೆ.
ನಿಮ್ಮ ಮೇಲಿನ ಆರೋಪಪಟ್ಟಿ ಸಿದ್ಧಪಡಿಸುತ್ತಾಳೆ.
ದಾಸ್ತಾವೇಜುಗಳು ಸಾಬೀತಾದ ದಿನ
ಲೋಕದ ಜೈಲಿನ ಗೋಡೆಗಳು ಸಾಕಾಗಲಾರವು
ನಿಮ್ಮನ್ನು ಕೂಡಿ ಹಾಕಲು.
ನಿಮ್ಮ ಪಾಪದ ಬೆಳೆ ಬಾನೆತ್ತರಕ್ಕೆ ಬೆಳೆದು
ಬಹುದೂರ ನಿಮ್ಮ ಮೋಕ್ಷದ ದಾರಿ.
ಕಾವೇರಿ, ಗಂಗೆ, ತುಂಗೆ ಯಮುನೆಯರು
ಸಾಕಾಗುವುದಿಲ್ಲ ನಿಮ್ಮ ಪಾಪ ತೊಳೆಯಲು.
ಕಾವಿಗಳೆದೆಯಲ್ಲಿ ಮುಚ್ಚಿಟ್ಟ ಕೋವಿಗಳೇ
ಮಂದಿರ – ಮಸೀದಿಗಳಲ್ಲಿ ಅಡಗಿಸಿಟ್ಟ ಬಂದೂಕುಗಳೇ,
ಮದ್ದು ತುಂಬಿದ ಕುಂಡ ಕಮಂಡಲಗಳೇ,
ಆಧ್ಯಾತ್ಮದ ಗುಹೆಯಲ್ಲಿ ಮೊಳಕೆಯೊಡೆಯಲಾರಿರಿ
ಕಣ್ಣ ಬಿಂಬದ ತುಂಬ ವಸಂತ ಮೂಡಿಸಲಾರಿರಿ
ಹಸಿದ ಹೊಟ್ಟೆಗೆ ರೊಟ್ಟಿಯಾಗಲಾರಿರಿ
ಮಂತ್ರದುಗುಳಿನಲಿ ತೇಜಾಬು ಬೆರಸಿ
ಗರ್‍ಭಗುಡಿಯಲಿ ಒಳಸಂಚು ನಡೆಸಿ,
ವ್ಯಾಪಾರ ವಹಿವಾಟು ಕುದುರಿಸಲಾರಿರಿ
ಖಾದಿ, ಖಾಕಿ, ಕಾವಿಗಳಿಗೆ
ಅರ್‍ಪಿತ ದೆಹಲಿಯೆಂಬ ಬೆಲೆವಣ್ಣು
ಡಿಸೆಂಬರ್ ಆರು ಬಂತೆಂದರೆ ನಡುಗುತ್ತಾಳೆ
ಬಾಬ್ರಿ ಮಸೀದಿ ನೆಲಕ್ಕುರುಳಿ
ಇತಿಹಾಸದಲ್ಲಿ ಕಪ್ಪಾದ ಆ ದಿನ
ಗುಮ್ಮಟ ಉರುಳಿದ ದಿನ
ಜಟಕಾ ಬಂಡಿ ಸುಟ್ಟು ಹೋದ ದಿನ
ಕೂಲಿ ಬಡವರು ಕರಕಲಾದ ದಿನ
ಸಂಸ್ಕೃತಿಯೆಂಬ ಮಂತ್ರ ಉಗುಳುವ ನೀವು
ಸೌಹಾರ್‍ದ ಸಂಪತ್ತನು ಲೂಟಿ ಮಾಡಿದ ದಿನ
ಗಣಿ ಧೂಳಿನಲ್ಲಿ ಉಸಿರುಗಟ್ಟಿ
ನೆತ್ತರ ಪಸೆಯಲಿ ಮೊಳಕೆ ಹೆಪ್ಪುಗಟ್ಟಿದೆ.
ಬೆಂಕಿ ಬಿದ್ದ ಗುಡಿಸಲಲ್ಲಿ ಅಸ್ತಿಪಂಜರಗಳು
ಕರಕಲಾದ ಕನಸುಗಳಲಿ ಚಿಗುರು ಮೊಳೆತು
ಕೆಂಪು ಹೂವುಗಳು ಅರಳಿ ನಿಂತಾಗ

ಮಂದಿರ – ಮಸೀದಿಗಳ ಠೇಕೇದಾರರಿಗೆ
ಚೌಕದಲಿ ನಿಲ್ಲಿಸಿ ಕೇಳುತ್ತೇನೆ ಪಾಪಿಗಳೇ
ನೀವೆಷ್ಟೇ ಹೊಸಕಿ ಹಾಕಿದರೂ ನಾವು
ಮತ್ತೆ ಮತ್ತೆ ಕಂಪು ಬೀರುವ ಹೂವಾಗಿ
ಅರಳಿ ನಿಲ್ಲುತ್ತೇವೆ ಬಯಲು ನಾಡಿನ ತುಂಬ
ಹಚ್ಚ ಹಸುರಿನ ಆಸೆಯ ಹುಲ್ಲು ಗರಿಕೆಯಾಗಿ
ಸೌಹಾರ್‍ದ ಬದುಕಿಗೆ ನಾಂದಿಯಾಗಿ.
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...