Home / ಕವನ / ಅನುವಾದ / ಬೈಜಾಂಟಿಯಮ್ಮಿಗೆ ಯಾನ

ಬೈಜಾಂಟಿಯಮ್ಮಿಗೆ ಯಾನ


ಮುದುಕರಿಗೆ ತಕ್ಕ ನಾಡಲ್ಲ ಅದು. ಪ್ರಾಯದ
ಹೆಣ್ಣು ಗಂಡುಗಳೆಲ್ಲ ತೋಳತೆಕ್ಕೆಗಳಲ್ಲಿ,
ಹಕ್ಕಿ ಮರಮರದಲ್ಲಿ – ಸಾವಿರುವ ಸಂತಾನ – ಹಾಡಿನುಬ್ಬರದಲ್ಲಿ,
ಸ್ಯಾಮನ್ ಮೀನುಗಳ ಪಾತ, ಮೆಕರೆಲ್ ಕಿಕ್ಕಿರಿದ ಕಡಲು,
ಗಾಳಿ ನೆಲ ಜಲ ಜೀವಕೋಟಿ ಎಲ್ಲವು ಇಲ್ಲಿ ಗ್ರೀಷ್ಮದುದ್ದಕ್ಕೂ
ಹಾಡಿ ಕೊಂಡಾಡುವುವು ಪಡೆದದ್ದ, ಹಡೆದದ್ದ, ಮಡಿದದ್ದನ್ನೆಲ್ಲ
ವಿಷಯ ಸುಖಗಾನ ಸುಳಿಯಲ್ಲಿ ಕೆಡೆದು ಇವಕ್ಕೆ
ಕಾಲದಂಕೆಗೆ ಸಿಗದ ಧೀಶಕ್ತಿ ಸ್ಮಾರಕಗಳೆಂದರೆ ಉಪೇಕ್ಷೆ.


ದನಿಯೆತ್ತಿ ಆತ್ಮ ಚಪ್ಪಾಳೆಯಕ್ಕಿ
ಮರ್ತ್ಯವಸ್ತ್ರದ ಸುಕ್ಕುಸುಕ್ಕಿಗೂ ಹಾಡುತ್ತ ತಾರಸ್ವರದತ್ತ
ಏರದಿದ್ದರೆ ಅಯ್ಯ, ಮುದಿಮನುಷ್ಯ ಒಂದು ಕಃಪದಾರ್‍ಥ,
ಗೂಟಕ್ಕೆ ಸಿಕ್ಕಿಸಿದ ಹರಕು ಕೋಟು.
ಸ್ವಂತಸ್ಮಾರಕ ಮಂತ್ರಮುಗ್ಧನೆಲ ಅದು, ಅಲ್ಲಿ
ಹಾಡು ಕಲಿಸುವ ಶಾಲೆ ಎಲ್ಲಿ? ಎಂದೇ ಬಂದೆ
ಕಡಲುಗಳ ದಾಟಿ ನಾ ಇಲ್ಲಿಗೆ,
ಬೈಜಾಂಟಿಯಮ್ ಪವಿತ್ರ ನಗರಕ್ಕೆ.


ಚಿನ್ನಮೆಟ್ಟಿದ ಭಿತ್ತಿಚಿತ್ರ ಎನ್ನುವ ಹಾಗೆ
ದಿವ್ಯಾಗ್ನಿಯಲ್ಲಿ ನಿಂತಿರುವ ಓ ಋಷಿಗಳೇ
ಹೊರಬನ್ನಿ ದಿವ್ಯಾಗ್ನಿಯಿಂದ ಡೇಗೆಯ ಹಾಗೆ ಮಂಡಲಾಕಾರ ಚಲಿಸುತ್ತ,
ದಿವ್ಯಗಾಯನ ಕಲಿಸಬನ್ನಿ ಈ ಆತ್ಮಕ್ಕೆ,
ತಿನ್ನಿ ನನ್ನೆದೆಯನ್ನು; ಈ ಮೋಹಪೀಡಿತ ಆತ್ಮ
ಕಟ್ಟುವಡೆದಿದೆ ಒಂದು ಸಾಯುವ ಮೃಗಕ್ಕೆ;
ತಾನೇನು ಎನ್ನುವುದೆ ತಿಳಿಯದದು, ಬನ್ನಿ
ಬಾಚಿಕೊಳ್ಳಿರಿ ನನ್ನ ಶಾಶ್ವತ ಶಿಲ್ಪಸ್ಥಿತಿಗೆ.


ಪ್ರಕೃತಿಯಿಂದೊಂದು ಸಲ ಆಚೆ ಜಿಗಿದೆನೊ ಸಾಕು
ಬೇಕಿಲ್ಲ ಮುಂದೆಂದೂ ನಿಸರ್‍ಗ ನೀಡುವ ದೇಹ,
ಪಡೆವೆ ಗ್ರೀಸಿನ ವಿಶ್ವಕರ್‍ಮಿ ನಿರ್‍ಮಿಸುವಂಥ
ಬಡಿದ ಚಿನ್ನದ ಅಥವ ಚಿನ್ನ ಸವರಿದ ಶಿಲಕಾಯ,
ದರ್‍ಬಾರಿನಲ್ಲಿ ತೂಕಡಿಸುತ್ತಿರುವ ದೊರೆಯನ್ನು
ಎಚ್ಚರಿಸಲೆಂದು ಅಥವಾ ಹೊನ್ನರೆಂಬೆಯಲ್ಲಿ
ಕುಳಿತು ಬೈಜಾಂಟಿಯಮ್ಮಿನ ಕುಲಶ್ರೇಷ್ಠರಿಗೆ
ಭೂತ ವರ್‍ತಮಾನ ಭವಿಷ್ಯತ್ತುಗಳ ಹಾಡಲೆಂದು.
*****
ಮೂಲ: ವಿಲಿಯಂ ಬಟ್ಲರ್ ಏಟ್ಸ್

ಬೈಜಾಂಟಿಯಮ್ ಈಗಿನ ಇಸ್ತಾಂಬುಲ್ ನಗರ. ಅದರ ಪ್ರಾಚೀನ ಕಾಲದ ಸಂಸ್ಕೃತಿ ಏಟ್ಸನಿಗೆ ಬಹಳ ಪ್ರಿಯವಾದದ್ದು. ಒಂದು ಕಾಲದಲ್ಲಿ ಆಧ್ಯಾತ್ಮಿಕ, ಕಲಾತ್ಮಕ ಮತ್ತು ಲೌಕಿಕನೆಲೆಗಳ ಜ್ಞಾನ ವಿವೇಕಗಳು ಜನಜೀವನದಲ್ಲಿ ಒಟ್ಟಾಗಿ ಬೆಸೆದುಕೊಂಡಿದ್ದ ನಗರ ಅದು ಎಂದು ಕವಿ ಮೆಚ್ಚಿದ್ದಾನೆ. ‘ಪ್ರಾಚೀನ ಕಾಲಕ್ಕೆ ಹೋಗಿ ಒಂದು ತಿಂಗಳು ಕಾಲ ಕಳೆಯುವ ಅವಕಾಶ ಸಿಕ್ಕಲ್ಲಿ ನಾನು ಬೈಜಾಂಟಿಯಂ ನಗರಕ್ಕೆ ಹೋಗಲು ಬಯಸುತ್ತೇನೆ’ ಎಂದು ಏಟ್ಸ್ ತನ್ನ ‘ವಿಶನ್’ ಪುಸ್ತಕದಲ್ಲಿ ಹೇಳಿಕೊಂಡಿದ್ದಾನೆ. ಇಂಗ್ಲೆಂಡ್ ಏನಿದ್ದರೂ ಭೋಗನಗರಿ; ಸಾವಿನ ಅರಿವಿಲ್ಲದೆ ಭೋಗದಲ್ಲಿ ಮುಳುಗಿಹೋಗಿರುವಂಥದ್ದು ಅಲ್ಲದ ತನ್ನ ಹಳೆಯ ವೈಭವಗಳ ಕೊಂಡಾಟದಲ್ಲಿ ತಲ್ಲೀನವಾಗಿರುವಂತದ್ದು. ಅದನ್ನು ತೊರೆದು ಆತ್ಮದ ಅಮರತ್ವವನ್ನು ಕಲಿಸಿಕೊಡುವ ಬೈಜಾಂಟಿಯಮ್ಮಿಗೆ ಹೋಗಲು ಬಯಸುತ್ತಾನೆ ಕವಿ.

(೧) ಕವಿ ಈ ಪದ್ಯದಲ್ಲಿ ತನ್ನ ನಾಡನ್ನು (ಐರ್‍‌ಲೆಂಡ್ ಅಥವಾ ಇಂಗ್ಲೆಂಡನ್ನು) ಬಿಟ್ಟು ಪ್ರಾಚೀನ ಬೈಜಾಂಟಿಯಂ ಪಟ್ಟಣಕ್ಕೆ ಬಂದಿದ್ದಾನೆ.
(೧೩) ತನ್ನ ನಾಡು ಭೋಗಭೂಮಿ. ಅದು ಹಾಡಿನಬ್ಬರದಲ್ಲಿ ಮೈಮರೆತು ಬಾಳುತ್ತಿದೆ. ‘ಸಾಲ್ಮನ್’ ಮತ್ತು ‘ಮೆಕರೆಲ್’ ಭಿನ್ನಜಾತಿಯ ಮೀನುಗಳು. ತನ್ನ ನಾಡಿನಲ್ಲಿ ಯುವಕರು(ನೆಲ) ಹಕ್ಕಿಗಳು (ಬಾನು) ಮತ್ತು ಮೀನುಗಳು (ಜಲ) ಎಲ್ಲವೂ ಕಾಮಮೋಹಿತವಾಗಿವೆ ಎಂದು ಕವಿ ಸೂಚಿಸುತ್ತಿದ್ದಾನೆ.
(೧೯) ಮಂಡಲಾಕಾರದ ಚಲನೆ ಏಟ್ಸನ ಜೈ‌ರ್ ಕಲ್ಪನೆಯನ್ನು ಸೂಚಿಸುತ್ತದೆ.
(೨೯) ಏಟ್ಸ್ ಈ ಕವನಕ್ಕೆ ಒಂದು ವಿವರಣೆಯನ್ನು ಕೊಟ್ಟಿದ್ದಾನೆ. ‘ಬೈಜಾಂಟಿಯಂ ದೊರೆಯ ಅರಮನೆಯಲ್ಲಿ ಇತ್ತೆನ್ನಲಾದ ಚಿನ್ನಬೆಳ್ಳಿಗಳ ಮರದ ಮೇಲೆ ಕೃತಕಪಕ್ಷಿಗಳು ಕೂತು ಹಾಡುತ್ತಿದ್ದವು ಎಂದು ಎಲ್ಲೋ ಓದಿದ್ದೆ’ ಎಂದು ಆ ಟಿಪ್ಪಣಿಯಲ್ಲಿ ಏಟ್ಸ್ ಹೇಳುತ್ತಾನೆ.
(೩೧) ಚಿನ್ನದ ಹಕ್ಕಿಯಾಗಿ ಬೈಜಾಂಟಿಯಮ್ಮಿನ ಕುಲಶ್ರೇಷ್ಠರಿಗೆ ತಾನು ಹಾಡಬೇಕೆಂದು ಕವಿ ಹೇಳುತ್ತಾನೆ. ಈ ಪದ್ಯ ಬರೆಯುವ ಹೊತ್ತಿಗೆ ತನ್ನ ನಾಡಿನಲ್ಲಿ ಸಂಭವಿಸಿದ್ದ ಕೆಲವು ಘಟನೆಗಳಿಂದ ಸಾಮಾನ್ಯ ಜನವರ್‍ಗದ ಬಗ್ಗೆ ಅವನ ಮನಸ್ಸು ಕಹಿಯಾಗಿತ್ತು. ಸಾಹಿತ್ಯ ಸಂಸ್ಕೃತಿಗಳ ಬಗ್ಗೆ ಅವರಿಗೆ ಶ್ರೇಷ್ಠ ಅಭಿರುಚಿ ಇರಲಾರದೆಂಬ ಸಂಶಯ ಅವನಲ್ಲಿ ಹೊಕ್ಕಿತ್ತು. ಹಾಗೆಂದೇ ಇಲ್ಲಿ ಕುಲಶ್ರೇಷ್ಠರ ಮಾತು.

Tagged:

Leave a Reply

Your email address will not be published. Required fields are marked *

ತೆಂಕಣದಿ ಹದಿನಾರು ಮೈಲಿಗಳಾಚಿ ಬಾಂದಳಕೆ ಭುಜಗೊಟ್ಟು ನಿಂತಿರುವ ಸಿಂಹಗಡವೇ-ಇದೋ ನಿನಗೆ ತಲೆಬಾಗುವೆನು. ಶತಮಾನಗಳ ಹಿಂದೆ, ನರಜಾತಿಯಲಿ ಹರಿಯಂತೆ ಮೆರೆದ ವೀರಲೀಲಾಲೋಲ ಶಿವಪ್ರಭುವನು ಶಿರದಲಿ ಹೊತ್ತು ಮೆರೆಯಿಸಿದ ಸಿಂಹಗಡವೇ ಇದೋ-ನಿನಗೆ ವಂದಿಸುವೆನು. ಅಂದು ನಮ್ಮ ನಾಡಿನ ಧರ್‍ಮ-ನಮ್ಮ ಹ...

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...