Home / ಕವನ / ಅನುವಾದ / ಜೀವ ಆತ್ಮರ ನಡುವೆ ಸಂವಾದ

ಜೀವ ಆತ್ಮರ ನಡುವೆ ಸಂವಾದ

ಮೂಲ: ವಿಲಿಯಂ ಬಟ್ಲರ್ ಏಟ್ಸ್


ಆತ್ಮ: ಸುತ್ತಿ ಮೇಲೇರುವೀ ಸನಾತನ ಪಾವಟಿಗೆಯತ್ತ ಕರೆಯುವ ನಿನ್ನ:
ನೆಟ್ಟಿರಲಿ ಚಿತ್ತ ಕಡಿದಾದ ಏರುವೆಯತ್ತ
ಬಿರುಕೆದ್ದು ಮಣ್ಣು ಉದುರುವ ಕೋಟೆ ಕೈಪಿಡಿಯತ್ತ,
ಚಿಕ್ಕೆ ಉರಿಯುವ, ಉಸಿರು ಕಟ್ಟಿಸುವ ಗಾಳಿಯತ್ತ,
ಗುಪ್ತಾಕ್ಷ ಬಿಂದುವನ್ನು ಗೊತ್ತುಮಾಡುವ ಆ ನಕ್ಷತ್ರ ಧ್ರುವದತ್ತ;
ಎತ್ತೆತ್ತಲೋ ಜಿಗಿವ ಯೋಚನೆಯನ್ನೊಂದೊಂದೆ
ನೆಟ್ಟುಬಿಡು ಅರಿವೆಲ್ಲ ಬಟ್ಟಬಯಲಾಗಿ ಬಿಡುವಂಥ ಸ್ಥಳದಲ್ಲಿ:
ಕತ್ತಲನ್ನು ಆತ್ಮದಿಂದ ಪ್ರತ್ಯೇಕಿಸುವರಾರು?

ಜೀವ : ನನ್ನ ತೊಡೆಗಳ ಮೇಲೆ ಇರುವ ಮೀಸಲುಗತ್ತಿ
ಸೇಟೋನ ಪ್ರಾಚೀನ ಖಡ್ಗ, ಈಗಲು ಕೂಡ
ಹಾಗೆಯೇ, ಅದೇ ತೀಕ್ಷ್ಣಧಾರೆ, ಶತಶತಮಾನ
ಕಳೆದರೂ ಶುಭ್ರವಾಗಿರುವ ಕನ್ನಡಿಯಂತೆ.
ರೇಷ್ಮೆವಸ್ತ್ರದಲ್ಲಿ ನಯವಾಗಿ ಹೂ ಬಿಡಿಸಿರುವ ಈ ಹಳೆ ಕಸೂತಿ
ಯಾವ ಆಸ್ಥಾನಮಾನ್ಯೆಯ ವಸ್ತ್ರದಿಂದ
ಹರಿದು ಉಳಿದದ್ದೊ ಈಗ ಮರದ ಒರೆಯನ್ನು ಸುತ್ತಿ
ಹರಿದಿದ್ದೂ ರಕ್ಷಿಸಿದೆ, ಕಾಂತಿ ಮಾಸಿದ್ದರೂ ಶೋಭಿಸಿದೆ.

ಆತ್ಮ: ಪ್ರಾಯ ಎಂದೋ ತೀರಿದವನ ಕಲ್ಪನೆ ಈಗ
ಯಾಕೆ ನೆನೆಯುವುದು ಪ್ರೇಮ ಸಮರ ಸಂಕೇತಗಳ?
ಮರ್‍ತ್ಯನ ಕಲ್ಪನೆ ಈ ಮಣ್ಣಿನ ಜಗತ್ತನ್ನು,
ಚಿತ್ತ ಅದಕ್ಕೆ ಇದಕ್ಕೆ ಭ್ರಮಿಸುತ್ತ ಸುತ್ತುವುದನ್ನು
ಬಿಟ್ಟುಕೊಟ್ಟರೆ ಅದಕ್ಕೆ ಹುಟ್ಟು ಸಾವುಗಳಿಂದ
ಮುಕ್ತಿ ನೀಡುವ ಮೂಲದ ಕತ್ತಲನ್ನು ಧ್ಯಾನಿಸು.

ಜೀವ : ಮೊಂಟಶೀಗಿ, ವಂಶದಲ್ಲಿ ಮೂರನೆಯಾತ
ನಿರ್‍ಮಿಸಿದ್ದಿದು ಐದುನೂರು ವರ್‍ಷದ ಹಿಂದೆ;
ಕತ್ತಿಹಿಡಿ ಸುತ್ತಿರುವ ಹೂವು ಯಾವ ಕಸೂತಿ
ವಸ್ತ್ರದ್ದೊ ನಾ ತಿಳಿಯೆ, ಬಣ್ಣ ಹೃದಯದ ರೀತಿ,
ಹಗಲ ಸಂಕೇತಿಸುವ ಈ ಎಲ್ಲ ವಸ್ತುವೂ
ಇರುಳ ಸಂಕೇತಿಸುವ ಗೋಪುರಕ್ಕೆ ವಿರೋಧ,
ಯೋಧನೊಬ್ಬನ ಹಕ್ಕಿನಿಂದ ಕೇಳುತ್ತೇನೆ
ಮತ್ತೊಮ್ಮೆ ಅಂಥ ಅಪರಾಧಕ್ಕೆ ಅಧಿಕಾರ ಪತ್ರವನ್ನ.

ಆತ್ಮ : ತುಂಬಿ ಸೂಸುವುದು ಆ ಸ್ಥಲದಲ್ಲಿ ಪೂರ್‍ಣತೆ
ತುಳುಕಿ ಬೀಳುವುದು ಚಿತ್ರದ ಕೆಳತಳಕ್ಕೆ,
ಅದರ ಶಕ್ತಿಗೆ ಮರ್‍ತ್ಯ ಕಿವುಡನೂ ಮೂಕನೂ
ಕುರುಡನೂ ಆಗಿ ಗರ ಬಡಿಯುವುದು ಚಿತ್ತಕ್ಕೆ.
ಬುದ್ದಿಗೆ ತಿಳಿಯದು ಆಗ ಜ್ಞಾತ್ರಜ್ಞೇಯದ ಭೇದ,
ಇರುವುದಕ್ಕೂ ಆಗಬೇಕಾದ್ದಕ್ಕೂ ವಿರೋಧ –
ಇದರರ್‍ಥ ಮೇಲಕ್ಕೇರುವುದು ಅದು ಸ್ವರ್‍ಗಕ್ಕೆ;
ಸತ್ತವರು ಮಾತ್ರವೇ ತಕ್ಕವರು ಕ್ಷಮೆಗೆ;
ಆದರೆ ಅದನ್ನು ನಾ ನೆನೆವಾಗ ಕಲ್ಲಾಗಿಬಿಡುವುದೇ ನಾಲಿಗೆ

ಜೀವ : ಬಾಳುವ ವ್ಯಕ್ತಿ ಕುರುಡ, ತನ್ನ ಪಾಲಿನ ಜಲವ
ಕುಡಿದೇ ಬಿಡುವ, ಹೊಂಡ ಹೊಲ, ಬಿಡು ಏನಂತೆ?
ಒಮ್ಮೆ ಬಾಳಿದ್ದನ್ನೆ ಬಾಳಬೇಕೇ ಮತ್ತೆ? ಇರಲಿ ಬಿಡು ಏನಂತೆ?
ಬೆಳೆಯುವಾಗಿನ ಗೋಳನ್ನೆಲ್ಲ ತಾಳುವುದೆ ಸರಿ.
ಬಾಲ್ಯಾವಸ್ಥೆಯ ದೈನ್ಯ, ಆ ಬಾಲ್ಯ ಹರೆಯಕ್ಕೆ
ಹೊರಳುವಾಗಿನ ಕರ್‍ಮ, ಪೂರ್‍ತಿ ಬೆಳೆಯದ ಮರ್‍ತ್ಯ
ತನ್ನ ವಿಕಾರಸಹಿತ ಢಿಕ್ಕಿಯಾಗುವ ಅನರ್‍ಥ
ಇರಲಿ ಬಿಡು ಏನಂತೆ?

ಪೂರ್‍ಣ ಬೆಳೆದ ಮನುಷ್ಯನೋ? ಸುತ್ತ ಶತ್ರುಗಳು,
ದೇವರಾಣೆಗೂ ಎಂದೂ ತಪ್ಪಿಸಲಾರ ಅವನು
ಕುಹಕಿಗಳ ಕಣ್ಣುಗನ್ನಡಿ ಅವನ ಕಣ್ಣುಗಳ
ಮೇಲೆ ಬಿಂಬಿಸುವ ಹುಸಿ ವಿಕೃತ ರೂಪವನು;
ನೋಡಿ ನೋಡೀ ಕಡೆಗೆ ಅದೆ ತನ್ನ ನಿಜವೆಂದು
ತಿಳಿವ ಆಭಾಸ. ಅದರಿಂದ ಪಾರಾಗಿಯೂ
ಬಂದ ಫಲವೇನು, ಸಂಜೆಗೆ ಸತ್ಯ ತಿಳಿದೇನು?

ಇರಲಿ ಮತ್ತೆ ಅದನ್ನು ಬಾಳುವವನೇ ನಾನು
ಇನ್ನೊಮ್ಮೆ ಮತ್ತೊಮ್ಮೆ ಅದೆಂಥ ಕೊಚ್ಚೆಯೆ ಇರಲಿ.
ಕಪ್ಪೆಮರಿ ಗಿಜಿಗಿಡುವ, ಕುರುಡ ಕುರುಡರನ್ನಿರಿವ
ಅಂಧನ ಚರಂಡಿ ಇರಲಿ, ಇಲ್ಲವೆ ಎಲ್ಲಕ್ಕಿಂತ
ಬಹಳ ಫಲವತ್ತಾದ, ತನ್ನಾತ್ಮಕ್ಕೊಗ್ಗದ
ಹೆಮ್ಮೆಯ ಹಣ್ಣಿಗೆದೆತ್ತೆತ್ತ ಮೂರ್‍ಖನಿಗೆ ಹೇಳಿಸಿದ
ಕೊಳೆಗಟಾರವೆ ಇರಲಿ, ಧುಮುಕುವೆನು ಅದರಲ್ಲಿ.

ಪ್ರತಿ ಘಟನೆಯನ್ನು ಕ್ರಿಯೆಯಲ್ಲಿ ಚಿಂತನೆಯಲ್ಲಿ
ಬಗೆದುನೋಡುತ್ತ ಹೋಗುವೆನು, ನನಗದೆ ಸಾಕು;
ನನ್ನ ವಿಧಿಯನ್ನೆಲ್ಲ ಅಳೆದು ನನ್ನಷ್ಟಕ್ಕೆ ಬಿಟ್ಟುಬಿಡು ನನ್ನನ್ನು!
ಎಲ್ಲ ಪರಿತಾಪ ಕಿತ್ತೆಸೆದಾಗ ನನ್ನೆದೆಯೊಳಗೆ
ಎಂಥ ಜೇನಿನಧಾರೆ ಹರಿಯುವುದು ಎಂದರೆ
ಕೇಕೆ ಹಾಕಿ ನಗುತ್ತ ಕುಣಿಯಬೇಕೆನಿಸುವುದು,
ಇಡೀ ಸೃಷ್ಟಿಯೇ ನಮ್ಮ ಬಾಳನ್ನು ಹರಸಿದೆ
ನಾವು ಕಾಣುವುದೆಲ್ಲ ಹರಸಿದ್ದೆ ಆಗಿವೆ.
*****
(೧೦) ಸೇಟೋ ಏಟ್ಸನ ಒಬ್ಬ ಜಪಾನೀ ಸ್ನೇಹಿತ. ಏಟ್ಸನಿಗೆ ಐದುನೂರು ವರ್‍ಷಗಳ ಹಿಂದಿನ ಖಡ್ಗವೊಂದನ್ನು ಸ್ನೇಹದ ಗುರುತಾಗಿ ಕೊಟ್ಟವನು.
(೨೩) ಮೊಂಟಶೀಗಿ: ಮೇಲೆ ಹೇಳಿದ ಖಡ್ಗ ಈತನದು. ಸಮರದ ಸಂಕೇತವಾದ ಆ ಖಡ್ಗದ ಕೈಪಿಡಿಗೆ ಪ್ರೇಮದ ಸಂಕೇತದಂತಿರುವ ಕಸೂತಿ ವಸ್ತ್ರವೊಂದನ್ನು ಸುತ್ತಿದೆ.

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...