Home / ಕವನ / ಅನುವಾದ / ಬೈಜಾಂಟಿಯಮ್

ಬೈಜಾಂಟಿಯಮ್

ಮೂಲ: ವಿಲಿಯಂ ಬಟ್ಲರ್ ಏಟ್ಸ್

ಸರಿಯುವ ಹಿಂದೆ, ಹಗಲಿನ ಅಶುದ್ಧ ಪ್ರತಿಮೆಗಳು;
ನಿದ್ರಿಸಿದ್ದಾರೆ ಚಕ್ರವರ್‍ತಿಯ ಮತ್ತ ಸೈನಿಕರು;
ಇರುಳ ದನಿಯನುರಣನ ಮೆಲ್ಲಮೆಲ್ಲಗೆ ಅಳಿದು
ದೊಡ್ಡ ಚರ್‍ಚಿನ ಗಂಟೆ ಬಡಿದು, ಗಾಳಿಯಲೀಗ
ರಾತ್ರಿಂಚರರ ಹಾಡು. ಚಿಕ್ಕಯೋ ಚಂದ್ರನೋ
ಹಚ್ಚಿಟ್ಟ ಧವಳಗುಮ್ಮಟ ತಿರಸ್ಕರಿಸುತಿದೆ ಮರ್‍ತ್ಯನ ಸಮಸ್ತವನ್ನೂ,
ಮರ್‍ತ್ಯ ಬಾಳಿನ ಎಲ್ಲ ಸಂಕೀರ್‍ಣತೆಗಳನ್ನು
ಮರ್‍ತ್ಯಧಮನಿಗಳ ರೊಚ್ಚೆ ರೋಷಗಳನ್ನು

ತುಯ್ಯುತಿದೆ ಕಣ್ಣ ಮುಂದೊಂದು ಪ್ರತಿಮೆ, ಮನುಷ್ಯನೋ ನೆರಳೋ,
ನೆರಳೆನ್ನುವುದೆ ಸರಿ, ನೆರಳಿಗಿಂತಲು ಪ್ರತಿಮೆ ಎಂದರಿನ್ನೂ ಸರಿ;
ಮಮ್ಮಿವಸ್ತ್ರದಲಿ ಹುಗಿದಿಟ್ಟ ಅಧೋಲೋಕದ ಆತ್ಮ
ಸುತ್ತಬೇಕಾದ ಪಥವ ಬಿಚ್ಚಬಹುದು;
ಉಸಿರಿರದ ತೇವವಿಲ್ಲದ ಬಾಯಿಯೊಂದು
ಉಸಿರು ಬಿಗಿಹಿಡಿದ ಬಾಯಿಗಳ ತನ್ನಲ್ಲಿಗೆ ಕರೆಸಬಹುದು;
ಅತಿಮಾನುಷಕ್ಕೆ ಉಘೇ ಎನ್ನುವವ ನಾನು;
ಬಾಳಿನಲ್ಲಿನ ಸಾವು, ಸಾವಿನಲ್ಲಿನ ಬಾಳು ಎನ್ನುವೆ ಅದನ್ನು

ಇದು ಪವಾಡವೆ, ಹಕ್ಕಿಯೆ, ಹೊನ್ನಿನಲಿ ಕೊರೆದ ಕುಶಲ ಕೈಕಸುಬೆ?
ಹಕ್ಕಿಗಿಂತ, ಹಸ್ತಕೌಶಲಕ್ಕಿಂತ ಇದು ದಿಟ ಪವಾಡವೆ,
ನಕ್ಷತ್ರದೀಪ್ತ ಚಿನ್ನದ ಕೊಂಬೆಮೇಲೆ ಇದು ನೆಟ್ಟು ನಿಲಿಸಿದ್ದು
ಅಧೋಲೋಕದ ಹುಂಜಗಳ ಹಾಗೆ ಕೊರಳೆತ್ತಿ ಕೂಗಬಲ್ಲದ್ದು.
ಚಂದ್ರಕಾಂತಿಯ ತಿವಿತಕುದ್ದೀಪ್ತವಾಗಿ ಇದು ಮೂದಲಿಸೀತು ಕೂಗಿ
ನಿಜದ ಹಕ್ಕಿಗಳನ್ನು ಹೂವಿನೆಸಳುಗಳನ್ನು
ರಕ್ತದ್ದೊ ರೊಚ್ಚೆಯದೊ ಎಲ್ಲ ಗೋಜಲುಗಳನ್ನು
ಪರಿವರ್‍ತನೆಯೆ ಇರದ ಲೋಹವೈಭವದಲ್ಲಿ ಬೀಗಿ.

ಚಕ್ರವರ್‍ತಿಯ ಮಹಲ ನೃತ್ಯದಂಗಣದಲ್ಲಿ
ಅರಣಿ ಉದ್ದೀಪಿಸದ, ಉಕ್ಕು ಉರಿಹೊತ್ತಿಸದ, ಬಿರುಗಾಳಿ ಬಾಧಿಸದ,
ಜ್ವಾಲೆಯಿಂದಲೆ ಎದ್ದ ಜ್ವಾಲೆ ಜಿಗಿದಾಡುವುವು,
ಅಲ್ಲಿ ಬರುವುವು ರಕ್ತಸಂಜನಿತ ಜೀವಗಳು,
ಕೆರಳು ಮೊಳೆಸಿದ ತೊಡಕುಗಳನ್ನೆಲ್ಲ ನೀಗುವುವು,
ಲಯವಾಗಿ ನೃತ್ಯದಲಿ
ಸಮಾಧಿಯ ಮಧುರ ನೋವಿನಲಿ
ವಸ್ತ್ರದಂಚನ್ನು ಸಹ ಸುಡಲಾರದಂಥ ಜ್ವಾಲೆಯ ವೇದನೆಯಲ್ಲಿ

ಕೆಸರು ನೆತ್ತರ ಮಧ್ಯೆ ಡಾಲ್ಫಿನಿನ ಬೆನ್ನೇರಿ ಜೀವಗಳ ಸಾಲು,
ಸಾಲುಜೀವದ ಧಾರೆಯನ್ನು ಅಲ್ಲಲ್ಲೇ ಛೇದಿಸುವ ಕುಲುಮೆಗಳು,
ಚಕ್ರವರ್‍ತಿಯ ಗೃಹದ ಹೊನ್ನ ಕುಲುಮೆಗಳು!
ಒಡೆಯುತಿವೆ ಕೆರಳು ಮೂಡಿಸಿದ ಗೋಜಲುಗಳನ್ನು
ನೃತ್ಯದಂಗಣದ ಅಮೃತಶಿಲೆಯ ಹಾಸುಗಳು;
ಆ ಪ್ರತಿಮೆಗಳು ಅವುಗಳಿಂದ ಒಡಮೂಡುವ
ಬೇರೆ ಹೊಸ ಪ್ರತಿಮೆಗಳು,
ಆ ಡಾಲ್ಫಿನನ್ನು ಸೀಳಿರುವ, ಆ ಗಂಟೆದನಿ ಪೀಡಿಸುವ ಕಡಲುಗಳು.
*****
(೩೩) ಡಾಲ್ಫಿನ್ನಿನ ಬೆನ್ನೇರಿ: ಸತ್ತವರ ಜೀವಗಳು ಡಾಲ್ಫಿನ್ನಿನ ಬೆನ್ನು ಹತ್ತಿ ಪರಲೋಕಕ್ಕೆ ಬರುತ್ತವೆ ಎಂಬ ನಂಬಿಕೆ.

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...