Home / ಕವನ / ಅನುವಾದ / ಸರ್‍ಕಸ್ ಕಂಪೆನಿ ಮುಚ್ಚಿದ್ದು

ಸರ್‍ಕಸ್ ಕಂಪೆನಿ ಮುಚ್ಚಿದ್ದು

ಮೂಲ: ವಿಲಿಯಂ ಬಟ್ಲರ್ ಏಟ್ಸ್

ಕವನಕ್ಕೆ ವಸ್ತು ಸಿಗಲಿಲ್ಲ, ವ್ಯರ್‍ಥ ಪ್ರಯತ್ನಿಸಿದ್ದೆಲ್ಲ
ಪ್ರತಿದಿನ ಪರದಾಟ, ಆರುವಾರ ಕಳೆದರೂ ಇಲ್ಲ,
ಶಾಂತನಾಗುವುದೆ ಉತ್ತಮ ಮುದುಕ ಅಲ್ಲಿಗೆ;
ವಯಸ್ಸಾಗುವ ಮುಂಚೆ ಪ್ರತಿ ಚಳಿಗಾಲ ಬೇಸಿಗೆ
ಆಟಕ್ಕಿದ್ದವು ನನ್ನ ಸರ್‍ಕಸ್ ಪ್ರಾಣಿಗಳೆಲ್ಲ
ಮೆಟ್ಟುಗಾಲನ್ನು ಕಟ್ಟಿಕೊಂಡ ಆ ಹುಡುಗರು,
ಕಣ್ಣು ಕುಕ್ಕುವ ಹಾಗೆ ಥಳಥಳಿಸುತ್ತಿದ್ದ ರಥ,
ಸಿಂಹಗಳು ಹೆಣ್ಣುಗಳು ಏನೆಲ್ಲ, ಎಲ್ಲ ಆ ದೇವರೇ ಬಲ್ಲ.

ಇನ್ನೇನಿದೆ ಹೊರಡುವುದೆ ಹಳೆವಸ್ತುಗಳ ಸ್ಮರಣೆಗೆ:
ಮೂಗುದಾರಕ್ಕೆ ಸಿಕ್ಕು ಮೂರುಮೋಹಕ ದ್ವೀಪಗಳಲ್ಲಿ
ವ್ಯರ್‍ಥ ಹರ್‍ಷ, ವ್ಯರ್‍ಥಯುದ್ಧ ವ್ಯರ್‍ಥ ಶಾಂತಿಗಳ
ರೂಪಕ ಸ್ವಪ್ನಗಳಲ್ಲಿ ನಡೆದ ಕಡಲ ಸವಾರ
ಉಷೀನ್ ಬರುತ್ತಾನೆ ಎಲ್ಲಕ್ಕೂ ಮೊದಲಲ್ಲಿ
ಕಹಿಯುಂಡ ಹೃದಯ ಆಯ್ದಂಥ ವಸ್ತುಗಳು,
ಗತಯುಗದ ಗೀತಕ್ಕೆ, ಆಸ್ಥಾನದಬ್ಬರಕ್ಕೆ ಹೇಳಿಸಿದ ವಿಷಯಗಳು.
ಅವನನ್ನಲೆಸಿದ ನಾನೇ ಎಷ್ಟು ಬೆಲೆ ಕೊಟ್ಟಿದ್ದೆ ಅವನ ಕಷ್ಟಕ್ಕೆ?
ಅವನ ಕನಸಿನ ಕನ್ನೆಯನ್ನು ನಾನೇ ಬಯಸಿ ಕಂಗಾಲಾಗಿದ್ದೆ.

ಮುಂದೆ ಆಟಕ್ಕಿಳಿದದ್ದು ಅದರ ವಿರೋಧೀ ಸತ್ಯ:
ನಾ ಕೊಟ್ಟ ಹೆಸರು ಕ್ಯಾಥಲೀನಿನ ರಾಣಿ, ಆ ಹೆಣ್ಣ ಚಿತ್ತ
ಮರುಕಕ್ಕೆ ತುತ್ತಾಗಿ, ತೆತ್ತುಕೊಂಡರೆ ತನ್ನಾತ್ಮವನ್ನೇ ಹುಚ್ಚಿಗೆ,
ಇಳಿದು ಬಂದಿತು ಸ್ವರ್‍ಗ ಅವಳನ್ನು ರಕ್ಷಿಸಲು ಪ್ರದರ್‍ಶಿಸುತ ಮೆಚ್ಚಿಗೆ.
ಆತ್ಮನಾಶದ ಕಡೆಗೆ ಸಾಗಿದ್ದಾಳೆ ಪ್ರಿಯ ಎಂದೇ ಅನಿಸಿತ್ತು.
ಮತ ಭ್ರಾಂತಿ ದ್ವೇಷಕ್ಕೆ ಸಿಕ್ಕು ಅವಳಾತ್ಮ ತುತ್ತಾಗಿ ಹೋಗಿತ್ತು.
ಮುಂದೆ ಹೊಸ ಕನಸೊಂದಕ್ಕೆ ಇದೇ ಎಡೆಮಾಡಿತು.
ನನ್ನ ಚಿಂತನೆ ಒಲವು ಅದಕ್ಕೇ ಮುಡಿಪಾಯಿತು.

ಆ ಮೂರ್‍ಖ ಕುರುಡರು ರೊಟ್ಟಿ ಕದ್ದಾಗ
ಅದಮ್ಯ ಸಾಗರದ ಜೊತೆ ಕುಹುಲೇನ್ ಹೋರಾಡಿದ.
ಹೃದಯ ರಹಸ್ಯಗಳೇ ಅಲ್ಲಿ ಎಲ್ಲೆಡೆಗೂ, ಆದರೂ
ಮರುಳುಮಾಡಿದ್ದು ಕನಸೇ ನನ್ನನ್ನು ಕಡೆಗೂ:
ಕೃತಿಯಿಂದ ಮುಕ್ತವಾದಂಥ ಪಾತ್ರಗಳೇ
ಪ್ರಸ್ತುತವನ್ನು ತುಂಬ ಸ್ಮೃತಿಯನ್ನು ಆಳಿದ್ದು.
ಬಣ್ಣದ ವೇದಿಕೆ, ನಟರೇ ನನ್ನೊಲವ ಗಳಿಸಿದ್ದು,
ಆಟ ಸಂಕೇತಿಸಿದ ವಿಷಯವಲ್ಲ.

ಸರ್‍ವ ಸ್ವತಂತ್ರ ಆ ಪರಿಪೂರ್‍ಣ ಪ್ರತಿಮೆಗಳು
ಪರಿಶುದ್ಧ ಮನದಲ್ಲಿ ಬೆಳೆದರೂ ಮೊದಲಲ್ಲಿ ಎಲ್ಲಿಂದ ಮೊಳೆತವು?
ಎಸೆದ ‘ಬಿಸಾಕು’ಗಳ ತಿಪ್ಪೆ, ರಸ್ತೆಯ ಕಸದ ಗುಪ್ಪೆ,
ಹಳೆಸೀಸ, ಹಳೆಕೆಟಲು, ಸುಲಿದ ಬಾಳೆಯ ಸಿಪ್ಪೆ,
ಹಳೆಜಂಕು, ಮೂಳೆ ಕೊಳೆಚಿಂದಿ, ಮುರುಕಲು ಗೊಂಬೆ,
ಅಂಗಡಿಗಲ್ಲಕ್ಕೆ ಕೂತು ಕೂಗುವ ಗಲ್ಲಿಯ ರಂಭೆ,
ಈಗ ಏಣಿಯೆ ಇಲ್ಲ, ಕೆಳಗೆ ಮಲಗುವುದಷ್ಟೆ ಎಲ್ಲ ಏಣಿಗಳು ಶುರುವಾಗುವಲ್ಲಿ
ಚಿಂದಿ, ಮೂಳೆಗಳು ತುಂಬಿರುವ ಹೃದಯದ ಕೊಳೆ ಕಿರಾಣಿಯಂಗಡಿಯಲ್ಲಿ.
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...