Home / ಕವನ / ಕವಿತೆ / ಹಸು-ಕರು

ಹಸು-ಕರು

ಹಸುವಿನ ಹೆಸರು ಯಶೋದಾ
ಅದರ ಬಣ್ಣ ಊದಾ
ಅದೊಂದು ಕರುವನು ಈದ
ಸಂಗತಿಯೇನು ಪ್ರಮಾದ?
ಅದರಿಂದೆನಗೀ ಕವಿತೆಯ ಬಾಧ
ಪ್ರಾಸವ ಬರೆವ ವಿನೋದ.

ನಾನದಕಿತ್ತುದು ನೂರು ರುಪಾಯಿ
ಮಧ್ಯಸ್ಥಿಕೆಗಿರೆ ರಂಗಾಬೋಯಿ
ನೆರೆಮನೆಯೊಳಗಿದಕಾಯಿತು ಸಾಲ
ಬಿತ್ತರಿಸಿತೆಮ್ಮ ಮಮತೆಯ ಜಾಲ
ಇಂತು ಯಶೋದೆಯ ಬಾಳಿನ ಮೇಲೆ
ಪ್ರಕೃತಿಯ ಮತ್ತೂಂದಾವರಣದವೊಲೆ.
ಇದಕ್ಕೂ ಚೆಂದದ ಹಸುವಿನ್ನುಂಟೆ
ಇದರ ಸುಗುಣಗಳು ನಾಲ್ಕೆ ಎಂಟೆ
ಗಿಡ್ಡವಾಗಿಹುದು ಕರೆಯುವ ಜಾತಿ
ಸೌಮ್ಯವಾದ ಬಲು ಅಂದದ ಮೂತಿ
ನಮ್ಮ ಪಾಲಿಗಿದುವೇ ಸುರಧೇನು
ಎರಡೇ ದಿನ ಈನುವುದಿನ್ನೇನು
ಇಂತೀ ಪರಿಯೊಳು ನಡೆದಿರೆ ಮಾತು
ಪ್ರಸೂತಿವೇದನೆ ಯಶೋದೆಗಾಯ್ತು
ನಿಲ್ಲದೆ ಮಲಗದೆ ಬೇನೆಯ ತಿನುತ
ನೀರವವಾಗಿಯೆ ಬಾಧೆಯ ಪಡುತ-
ನಾನೊಪ್ಪುವೆ ಈ ನೀರವ ಭಾವ
ನನ್ನಚ್ಚರಿಸಿತು ಒಂದರೆ ಜಾವ
ಬೆದೆಗಾಲದ ಹಮ್ಮೈಸಿಕೆಯೊಳಗೆ
ಪೆರ್ಭಯದಂಬಾ ಸಂರುತಿಯೊಳಗೆ
ತನ್ನ ಹೊರಗಿರುವ ಜೀವದ ನೆರವ
ಆತ್ಮಸ್ವಾಸ್ಥ್ಯಕೆ ಯಾಚಿಸುತ್ತಿರುವ
ಪರಿಯಿಲ್ಲೀ ದಿನ ನಮ್ಮೀ ಪಶುವಿಗೆ
ತನ್ನ ಪ್ರಕೃತಿಯೆ ತನಗಾಗಿರೆ ಹಗೆ
ತಿತಿಕ್ಷೆಯೇ ಗತಿ ಬೇರಿನ್ನಿಲ್ಲ
ಎಂದರಿಯಿತೊ ಇದು ಯಾವನು ಬಲ್ಲ-
ಅಂತೂ ನೋವನು ಮೌನದಿ ಸಹಿಸಿ
ಈ ಮೌನದೊಳೆನ್ನಚ್ಚರಿಗೊಳಿಸಿ
ಯಶೋದೆ ಈದಿತು ಹೋರಿಕರುವನು
ತಾಯ ಗರ್ಭದಿಂ ಹೊರಟ ಶಿಶುವನು
ಸ್ವಾಗತಿಸಿರೆ ನಾವಮೃತದಾಸೆಯಿಂ
ಹಸು ಸುತನಂ ನೆಕ್ಕಿತು ಅಕ್ಕರೆಯಿಂ.

ಎಳೆಯರು ಕರೆದರು ಗೋಪೀನಾಥ
ಹೊಸಬನಿವನು ಆದೊಡೆ ನಿರ್ಭೀತ
ರೋದನವಿಲ್ಲದೆ ಜಗಕ್ಕೆ ಬಂದ
ಎರಡೇ ಚಣದೊಳು ಸ್ವತಂತ್ರ ನಿಂದ
ಕೆಚ್ಚಲಿನೊಳು ತನ್ನ ನ್ನವ ಕಂಡ
ಅಧಿಪತಿಯಂದದಿ ತಾನದನುಂಡ.
ಈತನ ಮೈಯೇನಚ್ಚರಿಮಾಟ
ಈತನ ಬಗೆ ಏ ಮಾಯೆಯ ಹೂಟ
ಅಗೊ ಅಗೊ ನನ್ನೆಡೆ ಕೊಂಕಿನ ನೋಟವ-
ನಿಡುತಿಹನಬ್ಬ ನೋಡಿವನಾಟವ
ಗರ್ಭದಿ ನಿನ್ನಾಲಿಯ ಸಮೆವಂದು
ನೋಟವದಾವುದ ಬಯಸಿದೆ ಬಂಧು
ಆ ಕತ್ತಲೆಯೊಳು ಏ ಬೆಳಕನ್ನ
ಹಾರೈಸಿದ್ದೆಯೊ ನೀ ಬಹ ಮುನ್ನ
ಈ ಜಗವಚ್ಚರಿಯಲ್ಲವೆ ನಿನಗೆ
ಇಲ್ಲಿ ಕಾಂಬೆಯಾ ನೀ ಬಗೆದ ಬಗೆ?
ನೀನೀ ತೆರದೊಳು ನೋಡುವ ರೀತಿ
ಕಿವಿಯನು ನಿಮಿರಿಸುತಾಲಿಪ ರೀತಿ
ಕರಣದ ತುದಿ ವಿಷಯದ ತುದಿ ಸೇರಿ
ಏನೋ ಶಕ್ತಿಗೆ ಸಮಯುತ ದಾರಿ
ಏನೋ ಬೆಳಕಿನ ಹರಿವನು ತೋರಿ
ಮನದೊಳು ನವತೇಜದ ಕಳೆಬೀರಿ
ಹೊಸತೊಂದಿರವಿನ ಪರಿಯಂ ಸಾರಿ
ಹೊಸ ತೆರದೊಳು ಭವಜಲಧಿಯ ವಾರಿ
ತೆರೆಯಿಡುತಿಹ ರೀತಿಯ ತೋರುತಿದೆ
ನಿನ್ನೀ ಲೀಲೆಗೆ ನಿರ್ವ್ಯಾಜಂ ಎದೆ
ಒಲಿದಿಹುದೈ ಮುದವಾನುತಲೀಗ
ಎಲ್ಲರಿಗೂ ಮುದ್ದಾದೆಯೊ ಬೇಗ.
ಅತ್ತಣಿನಿತ್ತಡೆ ಬಂದಿರುವಣ್ಣ
ನಿನ್ನಿರವನು ಇಹ ಕವಿಯುವ ಮುನ್ನ
ಪೇಳೈ ಆವನು ನಮ್ಮಿಬ್ಬರನೂ
ನಮ್ಮ ನಂಟಿನ ಇವರೆಲ್ಲರನ್ನೂ
ಈ ತರ ತಡಿಕೆಯ ಪಂದ್ಯದೊಳೋಡಿಸಿ
ಓಡಿಸಿ ಆಡಿಸಿ ಕಾಡಿಸಿ ಬಾಡಿಸಿ
ಪಣವೇನಂ ಗೆಲೆ ಬಯಸಿಹನಯ್ಯ?
ಇದರೊಳು, ದಿಟ, ನಿನಗೌದಾಸೀನ್ಯ
ಈ ಓಟವು ನಿನಗಿನ್ನೂ ಲೀಲೆ
ನನ್ನ ದಣಿವಿನನುಭೂತಿಯ ಕೇಳೆ.
ಚಿಣ್ಣಾ, ತೋಳ್ತೆಕ್ಕೆಗೆ ಬಾರಣ್ಣಾ
ನಿನ್ನಾಲಿಂಗನವೆನಿತಿನಿದಣ್ಣಾ
ಹೊಸಮೈಕೂದಲ ನಸುಬಿಸಿಯಿಂಪು
ಹೊಸ ಬಾಳಿನ ಸಂಸರ್ಗದ ಸೊಂಪು
ಗಂಗಾಸ್ನಾನದ ಶುಚಿಯಾಯ್ತಣ್ಣ
ದೇವರ ಮುಟ್ಟಿದ ಪೆರಿಯಾಯ್ತಣ್ಣ-
ಬೆಚ್ಚು ವೆ ಏಕೀ ಸ್ಪರ್ಶಕೆ ಕರುವೇ
ಈ ಮುದ್ದಿಗೆ ಈ ಒದೆತವು ತರವೇ?
ಚಿಮ್ಮುವೆ ಹಮ್ಮೈಸುವ ತಾಯೆಡೆಗೆ
ಗರ್ಭದ ತಡೆಯಿರಿ ಮಮತೆಯ ತಡೆಗೆ
ಅಂಬಾ ಎನ್ನುವೆ ನೀ ಮರುನುಡಿಗೆ
ಆಹ್ಹಾ ನೀ ನಡೆದಾಡುವ ಬೆಡಗೇ!

ಇಂತೀಪರಿಯೊಳು ಕರುವನು ಮುದ್ದಿಸಿ
ಈ ಅರ್ತಿಯೊಳೆನ್ನೊಳಗಂ ಶುದ್ದಿಸಿ
ಹಮ್ಮೈಸುವ ತಾಯ್ನುಡಿಯಂ ಕೇಳಿ
ಅಂಬಾ ಎನ್ನುವ ಕರುವಂ ಕೇಳಿ
ಇಂತೆರಡಿರವಿನ ಬಗೆತುದಿಯಿಂದ
ವಿದ್ಯುತ್ಕಣ ಸಿಡಿದಾಡುವ ಚೆಂದ
ವಾತ್ಸಲ್ಯಂ ಪರಿದಾಡುವ ಬಗೆಗೆ
ಸೋಜಿಗಗೊಳ್ಳುತೆ ಯಶೋದೆಯೆಡೆಗೆ
ನಮ್ಮಿ ಗೋಪೀನಾಥನ ಬಿಟ್ಟು
ಅಂದಿನಚ್ಚರಿಗೆ ಈ ನುಡಿಗಟ್ಟು
ನನ್ನೊಳು ವೇದನೆಗೊಳ್ಳಲು ಇಂತು
ಬರೆದೆನು-ಈ ಕತೆ ಮುಗಿಯಿತು ಅಂತು.

ಇದನೋದಲು ನಾ ಮುತ್ತಣ್ಣನಿಗೆ,
“ಗದ್ಯವೊ ಪದ್ಯವೊ ಏನಿದರ ಬಗೆ
ನಿನ್ನದು, ಬಿಡು, ಬಲು ಅಂತರ್‌ದೃಷ್ಟಿ
ಸೃಷ್ಟಿಯೊಳಗೆ ನೀ ವಿಚಿತ್ರಸೃಷ್ಟಿ
ಹಸು ಕರುವೀದರೆ ಅಚ್ಚರಿಯೇಕೆ?
ಹೊಸತನುಭವ ನಿನಗಾದೊಡೆ ಜೋಕೆ
ಹೆಜ್ಜೆ ಹೆಜ್ಜೆಗೂ ಬೆರಗೆನಬೇಡ
ನಿನಗೇ ಬೆರಗೆಂಬರು ಜನ ನೋಡ”
ಎನುತೀ ಪರಿ ದಟ್ಟಿಸಿ ನಗೆಯಾಡಿ
ತುಸ ಚಿಂತಿಸಿ ಬಳಿಕೆನ್ನನು ನೋಡಿ
“ದಿಟ, ಸೋಜಿಗವೀ ಪಂದ್ಯದ ಓಟ
ನಮಗಿಂತಾಯಿತು ದೇವರ ಕಾಟ.
ಈ ಬಾಳ ಮುಂದೆ ಮತ್ತಾವ ತಡಿಕೆಯೋ
ಏ ಜನ್ಮವೊ ಮೇಣೇನು ದುಡಿಕೆಯೋ
ನಮಗೀ ಬಾಳಿನೊಳೇನು ರುಚಿಸದೋ
ಆ ಬಾಳೇ ಮುಂದಕ ನಮಗಹುದೊ?
ಎಲ್ಲಾ ಜನ್ಮದ ರುಚಿಗಳನುಂಡು
ಸಿಹಿ ಕಹಿ ಎನ್ನದ ಹದವನು ಕಂಡು
ಥೂ ಛೀ ಸೈ ಎಂಬುದ ಬಿಡುವರೆಗೂ
ತಡಿಕೆಯ ಓಟವೆ ನನಗೂ ನಿನಗೂ.
ನಿ‌ರ್‌ವೈರಾಗ್ಯಗೆ ಮುಕ್ತಿಯೆ? ಭ್ರಾಂತಿ.
ಸಮತೆಗೆ ಸಲ್ಲದಗೆಲ್ಲಿಯ ಶಾಂತಿ?”
ಎನ್ನುತ ತತ್ತ್ವವನೊರೆದನು ನನಗೆ
ಇಲ್ಲಿಗೆ ಮುಗಿಯಿತು ಈ ಬರೆವಣಿಗೆ.
*****

Tagged:

Leave a Reply

Your email address will not be published. Required fields are marked *

ತೆಂಕಣದಿ ಹದಿನಾರು ಮೈಲಿಗಳಾಚಿ ಬಾಂದಳಕೆ ಭುಜಗೊಟ್ಟು ನಿಂತಿರುವ ಸಿಂಹಗಡವೇ-ಇದೋ ನಿನಗೆ ತಲೆಬಾಗುವೆನು. ಶತಮಾನಗಳ ಹಿಂದೆ, ನರಜಾತಿಯಲಿ ಹರಿಯಂತೆ ಮೆರೆದ ವೀರಲೀಲಾಲೋಲ ಶಿವಪ್ರಭುವನು ಶಿರದಲಿ ಹೊತ್ತು ಮೆರೆಯಿಸಿದ ಸಿಂಹಗಡವೇ ಇದೋ-ನಿನಗೆ ವಂದಿಸುವೆನು. ಅಂದು ನಮ್ಮ ನಾಡಿನ ಧರ್‍ಮ-ನಮ್ಮ ಹ...

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...