Home / ಕವನ / ಕವಿತೆ / ಹಸು-ಕರು

ಹಸು-ಕರು

ಹಸುವಿನ ಹೆಸರು ಯಶೋದಾ
ಅದರ ಬಣ್ಣ ಊದಾ
ಅದೊಂದು ಕರುವನು ಈದ
ಸಂಗತಿಯೇನು ಪ್ರಮಾದ?
ಅದರಿಂದೆನಗೀ ಕವಿತೆಯ ಬಾಧ
ಪ್ರಾಸವ ಬರೆವ ವಿನೋದ.

ನಾನದಕಿತ್ತುದು ನೂರು ರುಪಾಯಿ
ಮಧ್ಯಸ್ಥಿಕೆಗಿರೆ ರಂಗಾಬೋಯಿ
ನೆರೆಮನೆಯೊಳಗಿದಕಾಯಿತು ಸಾಲ
ಬಿತ್ತರಿಸಿತೆಮ್ಮ ಮಮತೆಯ ಜಾಲ
ಇಂತು ಯಶೋದೆಯ ಬಾಳಿನ ಮೇಲೆ
ಪ್ರಕೃತಿಯ ಮತ್ತೂಂದಾವರಣದವೊಲೆ.
ಇದಕ್ಕೂ ಚೆಂದದ ಹಸುವಿನ್ನುಂಟೆ
ಇದರ ಸುಗುಣಗಳು ನಾಲ್ಕೆ ಎಂಟೆ
ಗಿಡ್ಡವಾಗಿಹುದು ಕರೆಯುವ ಜಾತಿ
ಸೌಮ್ಯವಾದ ಬಲು ಅಂದದ ಮೂತಿ
ನಮ್ಮ ಪಾಲಿಗಿದುವೇ ಸುರಧೇನು
ಎರಡೇ ದಿನ ಈನುವುದಿನ್ನೇನು
ಇಂತೀ ಪರಿಯೊಳು ನಡೆದಿರೆ ಮಾತು
ಪ್ರಸೂತಿವೇದನೆ ಯಶೋದೆಗಾಯ್ತು
ನಿಲ್ಲದೆ ಮಲಗದೆ ಬೇನೆಯ ತಿನುತ
ನೀರವವಾಗಿಯೆ ಬಾಧೆಯ ಪಡುತ-
ನಾನೊಪ್ಪುವೆ ಈ ನೀರವ ಭಾವ
ನನ್ನಚ್ಚರಿಸಿತು ಒಂದರೆ ಜಾವ
ಬೆದೆಗಾಲದ ಹಮ್ಮೈಸಿಕೆಯೊಳಗೆ
ಪೆರ್ಭಯದಂಬಾ ಸಂರುತಿಯೊಳಗೆ
ತನ್ನ ಹೊರಗಿರುವ ಜೀವದ ನೆರವ
ಆತ್ಮಸ್ವಾಸ್ಥ್ಯಕೆ ಯಾಚಿಸುತ್ತಿರುವ
ಪರಿಯಿಲ್ಲೀ ದಿನ ನಮ್ಮೀ ಪಶುವಿಗೆ
ತನ್ನ ಪ್ರಕೃತಿಯೆ ತನಗಾಗಿರೆ ಹಗೆ
ತಿತಿಕ್ಷೆಯೇ ಗತಿ ಬೇರಿನ್ನಿಲ್ಲ
ಎಂದರಿಯಿತೊ ಇದು ಯಾವನು ಬಲ್ಲ-
ಅಂತೂ ನೋವನು ಮೌನದಿ ಸಹಿಸಿ
ಈ ಮೌನದೊಳೆನ್ನಚ್ಚರಿಗೊಳಿಸಿ
ಯಶೋದೆ ಈದಿತು ಹೋರಿಕರುವನು
ತಾಯ ಗರ್ಭದಿಂ ಹೊರಟ ಶಿಶುವನು
ಸ್ವಾಗತಿಸಿರೆ ನಾವಮೃತದಾಸೆಯಿಂ
ಹಸು ಸುತನಂ ನೆಕ್ಕಿತು ಅಕ್ಕರೆಯಿಂ.

ಎಳೆಯರು ಕರೆದರು ಗೋಪೀನಾಥ
ಹೊಸಬನಿವನು ಆದೊಡೆ ನಿರ್ಭೀತ
ರೋದನವಿಲ್ಲದೆ ಜಗಕ್ಕೆ ಬಂದ
ಎರಡೇ ಚಣದೊಳು ಸ್ವತಂತ್ರ ನಿಂದ
ಕೆಚ್ಚಲಿನೊಳು ತನ್ನ ನ್ನವ ಕಂಡ
ಅಧಿಪತಿಯಂದದಿ ತಾನದನುಂಡ.
ಈತನ ಮೈಯೇನಚ್ಚರಿಮಾಟ
ಈತನ ಬಗೆ ಏ ಮಾಯೆಯ ಹೂಟ
ಅಗೊ ಅಗೊ ನನ್ನೆಡೆ ಕೊಂಕಿನ ನೋಟವ-
ನಿಡುತಿಹನಬ್ಬ ನೋಡಿವನಾಟವ
ಗರ್ಭದಿ ನಿನ್ನಾಲಿಯ ಸಮೆವಂದು
ನೋಟವದಾವುದ ಬಯಸಿದೆ ಬಂಧು
ಆ ಕತ್ತಲೆಯೊಳು ಏ ಬೆಳಕನ್ನ
ಹಾರೈಸಿದ್ದೆಯೊ ನೀ ಬಹ ಮುನ್ನ
ಈ ಜಗವಚ್ಚರಿಯಲ್ಲವೆ ನಿನಗೆ
ಇಲ್ಲಿ ಕಾಂಬೆಯಾ ನೀ ಬಗೆದ ಬಗೆ?
ನೀನೀ ತೆರದೊಳು ನೋಡುವ ರೀತಿ
ಕಿವಿಯನು ನಿಮಿರಿಸುತಾಲಿಪ ರೀತಿ
ಕರಣದ ತುದಿ ವಿಷಯದ ತುದಿ ಸೇರಿ
ಏನೋ ಶಕ್ತಿಗೆ ಸಮಯುತ ದಾರಿ
ಏನೋ ಬೆಳಕಿನ ಹರಿವನು ತೋರಿ
ಮನದೊಳು ನವತೇಜದ ಕಳೆಬೀರಿ
ಹೊಸತೊಂದಿರವಿನ ಪರಿಯಂ ಸಾರಿ
ಹೊಸ ತೆರದೊಳು ಭವಜಲಧಿಯ ವಾರಿ
ತೆರೆಯಿಡುತಿಹ ರೀತಿಯ ತೋರುತಿದೆ
ನಿನ್ನೀ ಲೀಲೆಗೆ ನಿರ್ವ್ಯಾಜಂ ಎದೆ
ಒಲಿದಿಹುದೈ ಮುದವಾನುತಲೀಗ
ಎಲ್ಲರಿಗೂ ಮುದ್ದಾದೆಯೊ ಬೇಗ.
ಅತ್ತಣಿನಿತ್ತಡೆ ಬಂದಿರುವಣ್ಣ
ನಿನ್ನಿರವನು ಇಹ ಕವಿಯುವ ಮುನ್ನ
ಪೇಳೈ ಆವನು ನಮ್ಮಿಬ್ಬರನೂ
ನಮ್ಮ ನಂಟಿನ ಇವರೆಲ್ಲರನ್ನೂ
ಈ ತರ ತಡಿಕೆಯ ಪಂದ್ಯದೊಳೋಡಿಸಿ
ಓಡಿಸಿ ಆಡಿಸಿ ಕಾಡಿಸಿ ಬಾಡಿಸಿ
ಪಣವೇನಂ ಗೆಲೆ ಬಯಸಿಹನಯ್ಯ?
ಇದರೊಳು, ದಿಟ, ನಿನಗೌದಾಸೀನ್ಯ
ಈ ಓಟವು ನಿನಗಿನ್ನೂ ಲೀಲೆ
ನನ್ನ ದಣಿವಿನನುಭೂತಿಯ ಕೇಳೆ.
ಚಿಣ್ಣಾ, ತೋಳ್ತೆಕ್ಕೆಗೆ ಬಾರಣ್ಣಾ
ನಿನ್ನಾಲಿಂಗನವೆನಿತಿನಿದಣ್ಣಾ
ಹೊಸಮೈಕೂದಲ ನಸುಬಿಸಿಯಿಂಪು
ಹೊಸ ಬಾಳಿನ ಸಂಸರ್ಗದ ಸೊಂಪು
ಗಂಗಾಸ್ನಾನದ ಶುಚಿಯಾಯ್ತಣ್ಣ
ದೇವರ ಮುಟ್ಟಿದ ಪೆರಿಯಾಯ್ತಣ್ಣ-
ಬೆಚ್ಚು ವೆ ಏಕೀ ಸ್ಪರ್ಶಕೆ ಕರುವೇ
ಈ ಮುದ್ದಿಗೆ ಈ ಒದೆತವು ತರವೇ?
ಚಿಮ್ಮುವೆ ಹಮ್ಮೈಸುವ ತಾಯೆಡೆಗೆ
ಗರ್ಭದ ತಡೆಯಿರಿ ಮಮತೆಯ ತಡೆಗೆ
ಅಂಬಾ ಎನ್ನುವೆ ನೀ ಮರುನುಡಿಗೆ
ಆಹ್ಹಾ ನೀ ನಡೆದಾಡುವ ಬೆಡಗೇ!

ಇಂತೀಪರಿಯೊಳು ಕರುವನು ಮುದ್ದಿಸಿ
ಈ ಅರ್ತಿಯೊಳೆನ್ನೊಳಗಂ ಶುದ್ದಿಸಿ
ಹಮ್ಮೈಸುವ ತಾಯ್ನುಡಿಯಂ ಕೇಳಿ
ಅಂಬಾ ಎನ್ನುವ ಕರುವಂ ಕೇಳಿ
ಇಂತೆರಡಿರವಿನ ಬಗೆತುದಿಯಿಂದ
ವಿದ್ಯುತ್ಕಣ ಸಿಡಿದಾಡುವ ಚೆಂದ
ವಾತ್ಸಲ್ಯಂ ಪರಿದಾಡುವ ಬಗೆಗೆ
ಸೋಜಿಗಗೊಳ್ಳುತೆ ಯಶೋದೆಯೆಡೆಗೆ
ನಮ್ಮಿ ಗೋಪೀನಾಥನ ಬಿಟ್ಟು
ಅಂದಿನಚ್ಚರಿಗೆ ಈ ನುಡಿಗಟ್ಟು
ನನ್ನೊಳು ವೇದನೆಗೊಳ್ಳಲು ಇಂತು
ಬರೆದೆನು-ಈ ಕತೆ ಮುಗಿಯಿತು ಅಂತು.

ಇದನೋದಲು ನಾ ಮುತ್ತಣ್ಣನಿಗೆ,
“ಗದ್ಯವೊ ಪದ್ಯವೊ ಏನಿದರ ಬಗೆ
ನಿನ್ನದು, ಬಿಡು, ಬಲು ಅಂತರ್‌ದೃಷ್ಟಿ
ಸೃಷ್ಟಿಯೊಳಗೆ ನೀ ವಿಚಿತ್ರಸೃಷ್ಟಿ
ಹಸು ಕರುವೀದರೆ ಅಚ್ಚರಿಯೇಕೆ?
ಹೊಸತನುಭವ ನಿನಗಾದೊಡೆ ಜೋಕೆ
ಹೆಜ್ಜೆ ಹೆಜ್ಜೆಗೂ ಬೆರಗೆನಬೇಡ
ನಿನಗೇ ಬೆರಗೆಂಬರು ಜನ ನೋಡ”
ಎನುತೀ ಪರಿ ದಟ್ಟಿಸಿ ನಗೆಯಾಡಿ
ತುಸ ಚಿಂತಿಸಿ ಬಳಿಕೆನ್ನನು ನೋಡಿ
“ದಿಟ, ಸೋಜಿಗವೀ ಪಂದ್ಯದ ಓಟ
ನಮಗಿಂತಾಯಿತು ದೇವರ ಕಾಟ.
ಈ ಬಾಳ ಮುಂದೆ ಮತ್ತಾವ ತಡಿಕೆಯೋ
ಏ ಜನ್ಮವೊ ಮೇಣೇನು ದುಡಿಕೆಯೋ
ನಮಗೀ ಬಾಳಿನೊಳೇನು ರುಚಿಸದೋ
ಆ ಬಾಳೇ ಮುಂದಕ ನಮಗಹುದೊ?
ಎಲ್ಲಾ ಜನ್ಮದ ರುಚಿಗಳನುಂಡು
ಸಿಹಿ ಕಹಿ ಎನ್ನದ ಹದವನು ಕಂಡು
ಥೂ ಛೀ ಸೈ ಎಂಬುದ ಬಿಡುವರೆಗೂ
ತಡಿಕೆಯ ಓಟವೆ ನನಗೂ ನಿನಗೂ.
ನಿ‌ರ್‌ವೈರಾಗ್ಯಗೆ ಮುಕ್ತಿಯೆ? ಭ್ರಾಂತಿ.
ಸಮತೆಗೆ ಸಲ್ಲದಗೆಲ್ಲಿಯ ಶಾಂತಿ?”
ಎನ್ನುತ ತತ್ತ್ವವನೊರೆದನು ನನಗೆ
ಇಲ್ಲಿಗೆ ಮುಗಿಯಿತು ಈ ಬರೆವಣಿಗೆ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...