Home / ಕವನ / ಕವಿತೆ / ಏನೆಂದು ಹಾಡಲಿ

ಏನೆಂದು ಹಾಡಲಿ

ಏನೆಂದು ಹಾಡಲೀ ಏನನ್ನು ಹಾಡಲೀ ನಿಮ್ಮ ಮುಂದೆ ನಿಂತು
ಒಡೆದ ಗಂಟಲಿಂದಾ ಬಿರಿದ ಒಣಾ ನಾಲಿಗಿಂದ ||ಪ||

ಕಣ್ಣು ಕಣ್ಣುಗಳ ಚಿಕ್ಕೆ ಕಾಂತಿಗಳು ನಂದಿ ನರಳುತಿರಲು
ಬಾನ ಚಿಕ್ಕೆಗಳ ಬೆಣ್ಣೆ ಚಂದ್ರಮನ ತೋರಿ ಹಾಡಲೇನು
ಮಣ್ಣ ಜೀವಗಳ ಬಳ್ಳಿ ಗಿಡಗಳಿಗೆ ಮುಳ್ಳುಹೋದರು ಮುಚ್ಚಿ
ಚುಚ್ಚುತಿರಲು ಆ ಸಗ್ಗ ನಂದನವ ಕೊಂಡು ಕೊನರಲೇನು ||೧||

ಎಲುಬು ಗೂಡುಗಳ ಹರಿದ ಚಿಂದಿಗಳ ಬಿಟ್ಟು ಸುತ್ತ ಮುತ್ತ
ಗುಲಾಬಿಯ ಕೆನ್ನೆ ತೊಂಡೆಗುಟಿ ಕನ್ಯೆ ಎಂದು ಕನವರಿಸಲೆ
ಕೊಳಚೆ ಕೊಂಪೆಗಳ ಮುರುಕು ಗೂಡುಗಳ ನೋಡೀ ನೋಡದಂತೆ
ಭವ್ಯ ಬಂಗಲೆಯ ದಿವ್ಯ ಗೋಪುರವ ಹಾಡಿ ಹೊಗಳುತಿರಲೆ ||೨||

ತುತ್ತನ್ನಕ್ಕಾಗಿ ಬೇಡಿ ಕಾಡುವ ಪುಟ್ಟ ತಿರುಪ ಕೈಯಿ
ಹೆಜ್ಜೆ ಹೆಜ್ಜೆಗೂ ಕಾಲ ತೊಡರಿರಲು ಹಾಡಲೆಲ್ಲಿ ಬಾಯಿ
ಅಂದದುಡಿಗೆಗಳ ಸೇಬುಗಲ್ಲಗಳ ಮಮ್ಮಿ ಡ್ಯಾಡಿ ಎನುವ
ದುಂಡು ದುಂಡಗಿನ ಧನಿಕ ಮಕ್ಕಳನು ಮೆಚ್ಚಿ ಹಾಡಲೇನು ||೩||

ನೂರು ಸಾವಿರದ ದೇವರುಗಳು ಕಚ್ಚಾಡಿ ಮೆರೆಯುವಿಲ್ಲಿ
ದೇವರುಗಳ ಸೃಷ್ಟಿಸಿದ ಮಾನವನ ಮರೆತ ನರಕದಲ್ಲಿ
ಸುತ್ತ ಜಗಕೆ ಕಿವಿ ಕಣ್ಣು ಮುಚ್ಚಿ ತೇಲ್ಗಣ್ಣ ಭಾವದಲ್ಲಿ
ದೇವ ಭಜನೆಯನು ನಾಮ ಕೀರ್ತನೆಯ ಕಟ್ಟಿ ಹಾಡಲೇನು ||೪||

ದುಡಿದು ದಣಿವ ಮೈ ರಕ್ತ ಬೆವರುಗಳ ಧಾರೆ ಧಾರೆಯಿಂದ
ಭಟ್ಟಿ ಉಳಿದ ಸೆರೆ ತುಂಬಿ ಕುಡಿಯುತಿಹ ದಣಿಯ ಹೊಗಳಲೇನು
ಮರುಳು ಕುರಿಗಳನು ಸವರಿ ನೇಯ್ದ ಕಂಬಳಿಯ ಗದ್ದುಗೆಯಲಿ
ಮೆರೆಯುತಿರುವ ನರಭಕ್ಷಕರನು ನಾ ಹೊಗಳಿ ಹಾಡಲೇನು ||೫||

ಸುತ್ತ ಮುತ್ತಿರಲು ಅಂಧಕಾರತೆಯು ಕತ್ತಲಲ್ಲಿ ಕುಳಿತು
ಎಲ್ಲ ಬೆಳ್ಳಗಿದೆ ಇದೇ ಬೆಳಕು ಎನ್ನುತ್ತ ಹಾಡಲೇನು
ಎಲ್ಲ ತೋಟಗದ್ದೆಗಳ ಚೆಲುವ ಹಲ ಹದ್ದು ಮುಕ್ಕುತಿರಲು
ಎಲ್ಲ ಅಂದ ಸುಂದರವು ಎಂದು ನಾ ಬಣ್ಣಿಸಿ ಹಾಡಲೇನು ||೬||

ಕೋಟೆ ಅರಮನೆಯ ಶಿಲ್ಪ ಸಿರಿಗಳನು ಕಟ್ಟಿದವರ ಮರೆತು
ಲೂಟಿ ಮಾಡಿ ಮೆರೆದಂಥ ರಾಜರುಗಳ ಚರಿತೆ ಹೊಗಳಲೇನು
ಕ್ರೌರ್ಯ ಹಿಂಸೆಗಳ ಬಾಯ್ಗಳಲ್ಲಿ ಜನ ಜೀವ ಮಿಡುಕುತಿರಲು
ದಯೆಯೆ ಧರ್ಮಕ್ಕೆ ಮೂಲವೆಂದು ಒಣ ಶಾಂತಿ ಪಠಿಸಲೇನು ||೭||

ಜಾತಿ ಭಾಷೆ ಕುಲ ಧರ್ಮ ದೈವಗಳ ಛಿದ್ರ ಛಿದ್ರ ನೆಲವ
ಭವ್ಯ ದಿವ್ಯ ಭಾರತವೆ ಎಂದು ಎದೆ ತುಂಬಿ ಹಾಡಲೇನು
ತಲೆತಲಾಂತರದ ಮೌಢ್ಯಬಳುವಳಿಯ ಕೊಳೆತು ನಿಂತ ಕೊಳವ
ಗಂಗೆ ತುಂಗೆಯರ ಪುಣ್ಯರಂಗೆಂದು ಹಾಡಿ ಹರಸಲೇನು ||೮||

ಬೆನ್ನಿಗಂಟಿರುವ ಬರಿಯ ಹೊಟ್ಟೆಗಳು ಬಿಕ್ಕಿ ಬಿಕ್ಕುತಿರಲು
ಬೊಜ್ಜು ಹೊಟ್ಟೆಗಳ ಕಮರು ಡೇಗು ಹಾಡುಗಳ ತೇಗಲೇನು
ಹಳ್ಳಿಪಾಡು ಹಾಡುವಾ ಹಕ್ಕಿ ಕುತ್ತಿಗೆಯ ಹಿಚುಕುತಿರಲು
ಡಿಳ್ಳಿದರಬಾರು ಮೋಡಿ ಮೆರಗುಗಳ ಹಾಡು ಕಿರುಚಲೇನು ||೯||

ಸತ್ಯ ಹೇಳಿದರೆ ಕುತ್ತು ಹೊರಿಸುವರು ಕತ್ತಿಯೊತ್ತಿ ಶಿರಕೆ
ಅದಕೆ ಹೆದರಿ ಬರಿ ಸುಳ್ಳು ಗೊಳ್ಳು ಶಬ್ದಗಳ ಬುರುಗು ಬಿಡಲೆ
ಹೇಳುವುದು ಒಂದು ಮಾಡುವುದು ಒಂದು ನಮ್ಮ ಧರ್ಮ ನೀತಿ
ಎಂದಿನಿಂದಲೋ ಬಂದ ರೀತಿ ಅದರಂತೆ ಬುರುಡೆ ಬಿಡಲೆ ||೧೦||

ಜನತೆ ಗಂಡ ಜನನೀತಿ ಹೆಂಡತಿಯು ಗಂಡನೆದುರೆ ಅವಳ
ಸೀರೆ ಹರಿದು ವ್ಯಭಿಚಾರ ಮಾಡಿದರು ಗಂಡ ಸುಮ್ಮನಿರಲು
ಜನರ ತಾಯಿಯನು ಕಿತ್ತಿತಿನುವ ತಾಯ್ಗಂಡರಾಳುತಿರಲು
ನಮ್ಮದೇಶ ಜನತಂತ್ರದೇಶ ಎನ್ನುತ್ತ ಹಾಡಲೇನು ||೧೧||

ಹಾಡು ಬೇಡ ಹಣ ಹೆಂಡ ತಿಂಡಿಕೊಡು ಓಟು ಹಾಕುತೀವಿ
ಓಟು ಹಾಕಿ ನೆಲ ಗೋರಿ ಗೋರಿ ಮುಲುಗುತ್ತ ಮಲಗುತೀವಿ
ಬಹಳ ಹಳೆಯ ಹುಳಿ ಹೆಂಡ ಧರ್ಮವಿದೆ ನಿಶೆಯಲ್ಲಿ ಬಾಳುತೀವಿ
ನಮ್ಮ ನಡೆಸಲಿಕೆ ಗುರುವು ಮಠವು ದೇವರುಗಳಿರುವರಲ್ಲ ||೧೨||

ಆಗಾಗ ಅವನು ಅವತರಿಸಿ ಬರುವ ನಮಗೇಕೆ ಚಿಂತೆಯೆಲ್ಲ
ಎನುತ ಮಲಗಿ ಸತ್ತಿಲ್ಲದಿರುವ ಈ ಜನರ ಮುಂದೆ ನಾನು
ಏನು ಹಾಡಲೀ ಎಂತು ಹಾಡಲೀ ಒಡೆದ ಗಂಟಲಿಂದ
ಬಿರಿದಾ ಒಣಾ ನಾಲಿಗಿಂದ ||೧೩||
*****

Tagged:

Leave a Reply

Your email address will not be published. Required fields are marked *

ತೆಂಕಣದಿ ಹದಿನಾರು ಮೈಲಿಗಳಾಚಿ ಬಾಂದಳಕೆ ಭುಜಗೊಟ್ಟು ನಿಂತಿರುವ ಸಿಂಹಗಡವೇ-ಇದೋ ನಿನಗೆ ತಲೆಬಾಗುವೆನು. ಶತಮಾನಗಳ ಹಿಂದೆ, ನರಜಾತಿಯಲಿ ಹರಿಯಂತೆ ಮೆರೆದ ವೀರಲೀಲಾಲೋಲ ಶಿವಪ್ರಭುವನು ಶಿರದಲಿ ಹೊತ್ತು ಮೆರೆಯಿಸಿದ ಸಿಂಹಗಡವೇ ಇದೋ-ನಿನಗೆ ವಂದಿಸುವೆನು. ಅಂದು ನಮ್ಮ ನಾಡಿನ ಧರ್‍ಮ-ನಮ್ಮ ಹ...

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...