Home / ಕಥೆ / ಕಿರು ಕಥೆ / ನಿರ್ಧಾರ

ನಿರ್ಧಾರ

ಒಮ್ಮೆ ಒಂದು ಪಕ್ಷಿ, ಗೂಡಿನಲ್ಲಿಟ್ಟ, ಮೊಟ್ಟೆಯನ್ನು ದಿಟ್ಟಿಸಿ ನೋಡುತಿತ್ತು. ಈ ಮೊಟ್ಟೆಯಿಂದ ಹೊರ ಬರುವ ನನ್ನ ಮರಿ ಹಕ್ಕಿ, ಎಷ್ಟು ಕಠಿಣ ಜಗತ್ತನ್ನು ಎದುರಿಸಬೇಕೆಂದು ಯೋಚಿಸುತಿತ್ತು. ಗಾಳಿ-ಮಳೆ, ಗುಡುಗು-ಮಿಂಚು, ಶತ್ರುಮಿತ್ರರ ಹಾವಳಿಯಿಂದ ಹೇಗೆ ನನ್ನ ಈ ಪುಟ್ಟ ಕಂದಮ್ಮನನ್ನು ಸಂರಕ್ಷಿಸಲಿ ಎಂದು ಚಿಂತೆಗೊಳಗಾಯಿತು. ಮೊಟ್ಟೆ ಒಳಗಿಂದ ಮರಿಯೂ ತಾಯಿಯ ಗಾಭರಿಯ ಆತಂಕಕ್ಕೆ ಓಗೊಟ್ಟು ತನ್ನ ಭಯವನ್ನು ವ್ಯಕ್ತಪಡಿಸಿತು.

“ಅಮ್ಮಾ! ನನಗೆ ಹೊರಗೆ ಬರಲು ಬಹಳ ಭಯವಾಗುತ್ತಿದೆ” ಎಂದಿತು.

“ಮಗು, ನೀ ಭಯ ಪಡಬೇಡ. ನಾನು, ಕಟ್ಟಿರುವ ಮೊಟ್ಟೆಯ ಕೋಟೆಯಲ್ಲಿ ನೀ ಹಾಯಾಗಿರು. ನೀನು ಈ ಕಷ್ಟದ ಪ್ರಪಂಚಕ್ಕೆ ಬಂದು ಕಷ್ಟ ಪಡುವುದು ಬೇಡ” ಎಂದಿತು ತಾಯಿ ಹಕ್ಕಿ.

ದಿನವೂ ತಾಯಿಹಕ್ಕಿ, ಆಗಸದಾದ್ಯಂತ ಹಾರಾಡಿ ಬಂದು ಮೊಟ್ಟೆ ಒಳಗಿನ ಮರಿಮಗುವಿಗೆ ಎಲ್ಲಾ ಸುದ್ದಿ ಹೇಳುತ್ತಿತ್ತು. ವನದಲ್ಲಿ ಬಿಟ್ಟ ಮೊಗ್ಗು, ಹೂಗಳ ಬಗ್ಗೆ, ಎಲೆ, ಕಾಯಿ, ಹಣ್ಣುಗಳ ಬಗ್ಗೆ ವರ್ಣಿಸಿ ಹೇಳುತ್ತಿತ್ತು. ಋತುಗಳ ಬದಲಾವಣೆಯಾದಾಗಲೂ ಎಲ್ಲಾ ವರದಿ ಒಪ್ಪಿಸುತ್ತಿತ್ತು.

ಮಳೆ ಬಂದಾಗ “ಮಗು ನಿನ್ನ ತೋಯದಂತೆ ಮಾಡಿರುವೆ ಅಲ್ಲವೇ?” ಎಂದಿತು.

“ಅಮ್ಮಾ! ಮಳೆ ಎಂದರೇನು? ಮಿಂಚು ಅಂದರೇನು? ನೋಡಬೇಕು ಅನಿಸುತ್ತಿದೆ. ವನದ ಹೂವು, ಹಣ್ಣು ಎಲ್ಲಾ ನೋಡಬೇಕು ಅನ್ನಿಸುತ್ತಿದೆ.” ಎಂದು ಮರಿಹಕ್ಕಿ ಅಮ್ಮನಲ್ಲಿ ಹೇಳಿಕೊಂಡಿತು. “ಮಗು! ಹೋಗಲಿ ನಿನ್ನ ಮೊಟ್ಟೆಯ ಕೋಟೆಗೆ ಬಂದು ಸಣ್ಣ ಕಿಡಕಿಯ ತೂತು ಮಾಡುತ್ತೇನೆ. ನೀನು ಅದರಿಂದ ಜಗವನ್ನು ನೋಡು” ಎಂದಿತು.

ಮೊಟ್ಟೆ ತೂತಿನ ಕಿಡಕಿಯಿಂದ ಮರಿಹಕ್ಕಿ ಜಗವನ್ನು ನೋಡಲಾರಂಭಿಸಿತು. ಜಗದ ಬಿಸಿಲ ಕಿರಣ, ಬೆಳದಿಂಗಳು, ಮಂದಮಾರುತ, ಎಲ್ಲವೂ ಕಿಡಕಿಯಿಂದ ಒಳಹೊಕ್ಕು ಮರಿಹಕ್ಕಿಯನ್ನು ಮೋಹಿಸಿದವು. ಮರಿಗೆ ಜಗದಲ್ಲಿ ಮೋಹ ಹುಟ್ಟಿತು.

ಜಗದ ಮೋಹಕತೆ ಜೊತೆಗೆ ಚಿಕ್ಕ ಹುಳು ಹುಪ್ಪಟೆಗಳು ಮೊಟ್ಟೆ ಒಳಗೆ ಬಂದು ಮರಿ ಹಕ್ಕಿಯನ್ನು ಕಾಡಲಾರಂಭಿಸಿದವು. ಮರಿಗೆ ಮೊಟ್ಟೆಯ ಕೋಟೆಯಲ್ಲಿ ಉಸಿರುಕಟ್ಟಲಾರಂಭಿಸಿತು. ಒಂದು ದಿನ “ಅಮಾ!” ಎಂದು ಚೀರಿಕೊಂಡು ಮೊಟ್ಟೆಯಿಂದ ಹೊರಬಂದಿತು.

ತಾಯಿ ಹಕ್ಕಿ “ಇದೇನು ಕೆಲಸ ಮಾಡಿದೆ ಲಕ್ಷ್ಮಣ ರೇಖೆಯಂತೆ ಇದ್ದ ಮೊಟ್ಟೆ ಹೊಸಿಲು ದಾಟಿ ಬಂದು ಬಿಟ್ಟೆಯಾ? ಮರಿಹಕ್ಕಿ” ಎಂದಿತು. “ಅಮ್ಮಾ! ಮೊಟ್ಟೆಯಲ್ಲಿ ಕಣ್ಣುಮುಚ್ಚಿ ಕೂತರೆ ನನ್ನ ರೆಕ್ಕೆ ಬಲಿಯುವುದೇ? ನಾನು ಆಗಸ ನೋಡುವುದೆಂದು? ಭೂಮಿ ಸುತ್ತುವುದೆಂದು? ನಿನ್ನ ರೆಕ್ಕೆಯ ನೆರಳಿರುವಾಗ ಮೊಟ್ಟೆಯ ಕೋಟೆ ಏಕೆ?” ಎಂದು ಮೆತ್ತ ಮೆತ್ತಗೆ ಹಾರುತ್ತ ಆಗಸ ಸೇರಿತು.

ತಾಯಿಹಕ್ಕಿ ಆನಂದ ಬಾಷ್ಪ ಸುರಿಸುತ್ತ ಕಂದಮ್ಮನ ಸಾಹಸವನ್ನು ಮೆಚ್ಚಿಕೊಂಡಿತು. ಆಗಸದ ಸೂರು, ಭೂಮಿಯ ನೆಲೆ, ವೃಕ್ಷದ ಗೂಡು ಕೊಟ್ಟಿರುವ ದೈವ ಇರುವವರೆಗೆ ನನಗೇಕೆ ನನ್ನ ಮರಿಯ ಚಿಂತೆ ಎಂದು ಅರಿತುಕೊಂಡಿತು ತಾಯಿ ಹಕ್ಕಿ.
*****

Tagged:

Leave a Reply

Your email address will not be published. Required fields are marked *

ತೆಂಕಣದಿ ಹದಿನಾರು ಮೈಲಿಗಳಾಚಿ ಬಾಂದಳಕೆ ಭುಜಗೊಟ್ಟು ನಿಂತಿರುವ ಸಿಂಹಗಡವೇ-ಇದೋ ನಿನಗೆ ತಲೆಬಾಗುವೆನು. ಶತಮಾನಗಳ ಹಿಂದೆ, ನರಜಾತಿಯಲಿ ಹರಿಯಂತೆ ಮೆರೆದ ವೀರಲೀಲಾಲೋಲ ಶಿವಪ್ರಭುವನು ಶಿರದಲಿ ಹೊತ್ತು ಮೆರೆಯಿಸಿದ ಸಿಂಹಗಡವೇ ಇದೋ-ನಿನಗೆ ವಂದಿಸುವೆನು. ಅಂದು ನಮ್ಮ ನಾಡಿನ ಧರ್‍ಮ-ನಮ್ಮ ಹ...

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...