Home / ಕವನ / ಕವಿತೆ / ಚಿಂತೆಗೆ ಕಣ್ಣತೆತ್ತವಳೆ!!

ಚಿಂತೆಗೆ ಕಣ್ಣತೆತ್ತವಳೆ!!

ಚಿಂತೆಗೆ ಕಣ್ಣ ತೆತ್ತವಳೆ,  ಚಿಲುಕದಮೇಲೆ
ಮುಂಗೈಯನೂರಿ ನಿಂತವಳೆ,
ಬಿಂದಿಗೆ ಹೊರದೆ ಸೋತವಳೆ, ಸಣ್ಣಗೆ ಒಳಗೆ
ಚಿಂತೆ, ಏತರ ಚಿಂತೆ, ನಿನಗೆ?

ಚಿಂತೆಗೆ ಕಣ್ಣ ತೆತ್ತವಳೆ, ತುರುಬಿನ ತುದಿಗೆ
ಒಂದೆ ಹೂವನು ಮುಡಿದವಳೆ,
ಒಂದೊಂದೆ ಬಳೆಯ ತೊಟ್ಟವಳೆ, ಈ ಮನೆಯೊಳಗೆ
ಚಿಂತೆ, ಏತರ ಚಿಂತೆ, ನಿನಗೆ?

ಚಿಂತೆಗೆ ಕಣ್ಣ ತೆತ್ತವಳೆ, ಹತ್ತಿದ ದೀಪ
ಮಂಕಾಗಿ ತೋರಿ ನಿಂತವಳೆ,
ಸಂತೆಗೆ ಹೋಗಿ ಬರಿಗೈಲೆ ಬಂದೆಯ, ಪಾಪ !-
ಚಿಂತೆ, ಏತರ ಚಿಂತೆ, ನಿನಗೆ?

ನಿನಗಾವ ಚಿಂತೆ ಚಿಕ್ಕವಳೆ, ಚಿನ್ನದ ಬಳೆಗೆ
ಒಪ್ಪುವ ತುಂಬುಗೈಯವಳೆ !
ಗಾಳಿಯ ಸುಳಿಗೆ ಹೂವಾದ ಮಲ್ಲಿಗೆಯರಳೆ,
ಬಂಡಿಯ ದನಿಗೆ ಬೆಚ್ಚುವಳೆ !-

ನಿನಗಾವ ಚಿಂತೆ, ಚಿಕ್ಕವಳೆ, ತುಂಬಿದ ಮನೆಗೆ
ಘನವಾಗಿ ಬಂದ ಗುಣದವಳೆ,
ನುಡಿದೊಂದು ಮಾತು ಸಾಕೆನುವ ಇನಿದನಿಯವಳೆ,
ತಲೆತಗ್ಗಿ ನಾಚಿ ನಡೆಯುವಳೆ?

ಮಳೆ ಬಿದ್ದು, ಕೆರೆ ತುಂಬಿ ನೀರು! ಮಿಂಚುವ ನೀರು,
ಬರಿ ನೀರೆ? ಥೇಟು ಪನ್ನೀರು !
ಅತ್ತಿತ್ತ ನೆಲ ಹೂವ ತೇರು; ಅಲ್ಲಿಗೆ ಬಾನು
ಇದ್ದೀತು ಒಂದೆರಡು ಮಾರು !

ಮನೆಗಿಂತ ಬಾನು ಎತ್ತರವೆ? ಆದರೆ ಏನು?
ಬಾನಿಗೆ ತಾರೆ ಹತ್ತಿರವೆ?
ಏನಂಥ ಬೆಟ್ಟ ಹೊತ್ತಿರುವೆ? ಸುಮ್ಮನೆ ನೀನು
ಸೊಂಪಾಗಿ ನಿಲುವುದುತ್ತರವೆ ?

ತೋಟದ ಮೇಲೆಲ್ಲ ತೆಂಗು; ತೆಂಗಿನ ಮೇಲೆ
ತೆರೆದ ಹೊಂಬಾಳೆಯ ರಂಗು!
ಗೊನೆ ಬಿಟ್ಟ ರಸಬಾಳೆ ಕಂದು; ಹಣ್ಣಿನ ಮೇಲೆ
ಹುದುಗಿತ್ತು ಗಿಣಿಯೊಂದು ಬಂದು.

ವೀಣೆಗೆ ತಂತಿಯ ಚೆಂತೆ; ತಂತಿಗೆ ತನ್ನ
ಹುಡುಕುವ ಬೆರಳಿನ ಚಿಂತೆ ;
ಬೆರಳಿಗೆ ಉಂಗುರದ ಚಿಂತೆ ; ಚಿಂತೆಗೆ ತನ್ನ
ಮಡಿಲ ತುಂಬುವುದೊಂದೆ ಚಿಂತೆ.

ಇಲ್ಲದ ಸಲ್ಲದ ಚಿಂತೆ ; ಅದು ಬಂದಂತೆ
ಹೋದೀತು ಇರಲೊಂದು ಗಳಿಗೆ !
ಸಂಶಯ ನನಗಿಲ್ಲ, ಚೆಲುವೆ; ಚೆಲುವಿಗೆ ಚಿಂತೆ;
ಚಿಂತೆಯಿಲ್ಲದ ಚೆಲುವು ಚೆಲುವೆ ?
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...