Home / ಕವನ / ಕವಿತೆ / ನೀರಿಗೆ ಬಿದ್ದ ಹೆಣ್ಣು

ನೀರಿಗೆ ಬಿದ್ದ ಹೆಣ್ಣು

ನೀರಿಗೆ ಬಿದ್ದ ಹೆಣ್ಣು ತಾವರೆಯ ತೆನೆಯಾಗಿ
ಹೂವಾಗಲಿಲ್ಲ ಕೆಂಪಾಗಿ.
ಸಾವಿನಲಿ ಶಾಂತಿ ಉರುಳಿತ್ತು ತಲೆಕೆಳಗಾಗಿ
ಆ ಎಲ್ಲ ನೋವು ತಂಪಾಗಿ.

ನೀರಿಗೆ ಬಿದ್ದ ಹೆಣ್ಣು ಒಂದೇ ಮುಳುಗು ಮುಳುಗಿ
ಕಂಡಿತ್ತು ಸಾವಿನ ಯುಗಾದಿ.
ಸುತ್ತೆಲ್ಲ ಕಿತ್ತು ಬಿದ್ದಿತ್ತು ಆಸೆಯ ಜೋಲಿ
ತೆರೆದಿತ್ತು ಹುಡಿಮಣ್ಣು ಹಾದಿ.

ನೀರಿಗೆ ಬಿದ್ದ ಹೆಣ್ಣು ಯಾರಿಗೂ ಹೇಳದೆಯೆ
ಆಗಿತ್ತು ಕೆರೆಗೆ ಆಹುತಿ.
ಹಾಲ ಕಾಣದ ಬದುಕು ಕುಡಿದಿತ್ತು ಕೆರೆಯನೆ;
ಅಲ್ಲಿತ್ತು ಅದರ ಸದ್ಗತಿ.

ಗಂಡ ಬಂದನು ಕಡೆಗೆ ನಡೆಬಂದ ಕಂಬದೊಲು;
ಹತ್ತು ಜನ ಅಲ್ಲೆ ಒದಗಿದರು.
ಬೆಂಕಿ ಹೆಣವನು ನುಂಗಿ ಬೆಂಬೂದಿಯಾಗಿರಲು,
ಉಳಿದವರು ಊರ ಸೇರಿದರು.

ನೀರು ಮುಗಿಸಿದ ಕಥೆಗೆ ಬೆಂಕಿ ಮಂಗಳ ಹಾಡಿ
ನಡೆದಿತ್ತು ದೈವ ಸಂಕಲ್ಪ.
ಇಂಥ ಬಾಳಿಗೆ ಸಾವೆ ನಂದನದ ಕೆರೆ-ಕೋಡಿ;
ಮಸಣದಲಿ ಮಾತ್ರ ಸುಖತಲ್ಪ.

ಹೆಣ್ಣು ಸತ್ತಳು ಏಕೆ? ನೆರೆಯ ನಿರ್ಭಾಗ್ಯರಿಗೆ
ಸಂಶಯದ ಮೇಲೆ ಸಂಶಯ.
ಕಾರಣದ ಬಂಗಾರ ಬೇಟೆ ಫಲಿಸದೆ ಕಡೆಗೆ
ಸತ್ತವಳ ಮೇಲೆ ಸಂಶಯ.

ಕಯ್ಯಾರ ಕೆರೆಗೆ ತಳ್ಳಿದನೆ ಮಡೆದಿಯನಿವನು?
ನ್ಯಾಯದಲಿ ತೀರ್ಪು: ನಿರ್ದೋಷಿ.
ಗದ್ದಲದ ಗಡಸು ನಾಲಗೆಯ ಗಂಡಲ್ಲಿವನು;
ಊರು ಕಂಡಂತೆ ಮಿತಭಾಷಿ.

ಸತ್ತವಳ ಮೇಲೆ ಸಂಶಯ -ಊರಿಗಿವನಂಥ
ಮಾದರಿಯ ಗಂಡ ಆಭರಣ.
ಸತ್ತವಳು ಇಳಿದು ಸತ್ಯವನೊದರುವಂತಿಲ್ಲ ;
ಸಂಗತಿಗೆ ಮೌನದಾವರಣ.

ನೀರಿಗೆ ಬಿದ್ದ ಹೆಣ್ಣ ಗಂಡನ ಹಣೆಯ ಮೇಲೆ
ಬಿಡುಗಡೆಯ ನಿರ್ಭಯದ ತಿಲಕ.
ಎದೆಯಲಿ ಏನೊ ಎಂತೊ, ತೋರುವ ಮುಖದ ಮೇಲೆ
ಎಷ್ಟೊಂದು ನೋವು, ನಾಟಕ!

ಸತ್ತಳು ಏಕೆ ಹೆಣ್ಣು (ಊರಿಗೆ ಇಲ್ಲ ಕಣ್ಣು):
ಅಂತು ಕೇಳಿದವನೊಬ್ಬ ಕುಂಟ.
ಸತ್ತರೆ ಏನು ನಷ್ಟ? ಕಾದಿದೆ ಬೇರೆ ಹೆಣ್ಣು;
ಇಂತು ಹೇಳಿದನೊಬ್ಬ ನಂಟ.

ಕನಿಕರದಿಂದ ಬಂದ ಕುರಿಯೊಂದು ನುಡಿದಿತ್ತು :
ಮುಂಗಿದಿತ್ತು ಹೆಣ್ಣ ಹಣೆ-ಬರಹ.
ಮಾನವ ಜನ್ಮಧಾರಿ ನರಿಯೊಂದು ನಕ್ಕಿತ್ತು :
ನೀರಿಗೆ ಜಾರಿ ಬಿದ್ದ ವಿಷಯ.
*****

Tagged:

Leave a Reply

Your email address will not be published. Required fields are marked *

ತೆಂಕಣದಿ ಹದಿನಾರು ಮೈಲಿಗಳಾಚಿ ಬಾಂದಳಕೆ ಭುಜಗೊಟ್ಟು ನಿಂತಿರುವ ಸಿಂಹಗಡವೇ-ಇದೋ ನಿನಗೆ ತಲೆಬಾಗುವೆನು. ಶತಮಾನಗಳ ಹಿಂದೆ, ನರಜಾತಿಯಲಿ ಹರಿಯಂತೆ ಮೆರೆದ ವೀರಲೀಲಾಲೋಲ ಶಿವಪ್ರಭುವನು ಶಿರದಲಿ ಹೊತ್ತು ಮೆರೆಯಿಸಿದ ಸಿಂಹಗಡವೇ ಇದೋ-ನಿನಗೆ ವಂದಿಸುವೆನು. ಅಂದು ನಮ್ಮ ನಾಡಿನ ಧರ್‍ಮ-ನಮ್ಮ ಹ...

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...