Home / ಕಥೆ / ಜನಪದ / ಮೈನಾವತಿ

ಮೈನಾವತಿ

ಒಂದೂರಲ್ಲಿ ಒಬ್ಬ ರಾಜ, ಒಬ್ಬ ಪ್ರಧಾನಿ, ಒಬ್ಬ ಸಾಹುಕಾರ ಇದ್ದರು. ಆ ಮೂವರಿಗೂ ಒಬ್ಬೊಬ್ಬರಂತೆ ಗಂಡಸು ಮಕ್ಕಳಿದ್ದರು. ಅವರೆಲ್ಲರೂ ಸಾಲೆ ಬರೆಯುತ್ತಿದ್ದರು. ಮುಂದೆ ದೊಡ್ಡವರಾದರು. “ಬೇಟೆಗಾಗಿ ಎಕ್ಕೀಹಳ್ಳಿಗೆ ಹೋಗಾರಿ” ಎಂದು ಮೂವರೂ ನಿಶ್ಚಯಿಸಿದರು. ಅಷ್ಟರಲ್ಲಿ ಅವರ ತಾಯಿತಂದೆಗಳು ಅವರ ಲಗ್ನ ಮಾಡಲು ತಯಾರಿ ನಡೆಸಿದರು. ಅದರಂತೆ ಒಳ್ಳೆಯ ಮುಹೂರ್ತದಲ್ಲಿ ಲಗ್ನವನ್ನೂ ಮಾಡಿಹಾಕಿದರು. ಅವರು ಬೇಟೆಗೆ ಹೋಗಲು ಗಡಬಿಡಿ ಮಾಡುತ್ತಿರಲು, ಶೋಭಾನ ಮಾಡಿಕೊಂಡುಹೋಗಿರಿ – ಎಂದು ಹೇಳಿದರು. ಅದರಂತೆ ಶೋಭನ ಕಾರ್ಯ ಮುಗಿಸಿಕೊಂಡು ಬೇಟೆಯಾಡಲು ಹೋದರು.

ಮುಂದೆ ಒಂಬತ್ತು ತಿಂಗಳಿಗೆ ಅವರ ಹೆಂಡಂದಿರು ಕೂಸುಗಳಿಗೆ ಜನ್ಮವಿತ್ತರು. ರಾಜ ಮತ್ತು ಪ್ರಧಾನಿಗಳಿಗೆ ಗಂಡು ಕೂಸುಗಳು ಹುಟ್ಟಿದವೆಂದೂ ಸಾಹುಕಾರನಿಗೆ ಹೆಣ್ಣು ಕೂಸು ಹುಟ್ಟಿತೆಂದೂ ಪತ್ರಬಂತು. ಹೆಣ್ಣು ಹುಟ್ಟಿತೆಂದು ಸಾಹುಕಾರನಿಗೆ ಸ್ವಲ್ಪ ಅಸಮಾಧಾನ. ಅದಕ್ಕೇಕೆ ಅಷ್ಟು ಗಿಲಿಗಿಲಿ ಆಗುತ್ತೀ ಎಂದು ರಾಜ ಮತ್ತು ಪ್ರಧಾನಿ ಸಾಹುಕಾರನಿಗೆ ಹ೦ಗಿಸಿದರು. ತೊಟ್ಟಿಲಿಕ್ಕುವ ಸಲುವಾಗಿ ಮೂವರೂ ಮನೆಗೆ ಬಂದು ಮತ್ತೆ ಬೇಟೆಗೆ ಹೋದರು- ವರ್ಷಗಳು ಉರುಳಿದವು.

ಮಕ್ಕಳು ದೊಡ್ಡವರಾದರು. ಆಗ ಅವರು ಊರಿಗೆ ಮರಳಿದರು. ಸಾಹುಕಾರನ ಮಗಳ ಹೆಸರು ಮೈನಾವತಿ- ಅವಳು ಮದುವೆಯ ವಯಸ್ಸಿಗೆ ಬಂದಿದ್ದಾಳೆ. ವರಗಳು ಹೆಣ್ಣು ಕೇಳಲು ಬಂದವು. ಅಷ್ಟರಲ್ಲಿ ರಾಜನಮಗ ಹಾಗೂ ಪ್ರಧಾನಿಯ ಮಗ – “ನಾವು ಇನ್ನೂ ಎಷ್ಟುದಿನ ಸಾಲೀ ಬರೀಬೇಕು” ಎಂದು ತಕರಾರು ಮಾಡಿದರು. ರಾಜನ ಮಗನು ಮೈನಾವತಿಯೊಡನೆ ಲಗ್ನವಾಗಬೇಕೆಂದು ಮಾಡಿದ್ದನು. ಆದರೆ ಅವಳ ಲಗ್ನ ಮತ್ತೊಬ್ಬನಕೂಡ ಆಗಿಹೋಯಿತು.

ಮೈನಾವತಿಯನ್ನು ಕರೆಯಲು ಅವರ ಮಾವ ಬಂದನು.

ಒಬ್ಬ ಆಳುಮನುಷ್ಯನು, ರಾಜನ ಮಗನು ಕಳಿಸಿದ ಚೀಟಿಯನ್ನು ಸಾಹುಕಾರನ ಮನೆ ಬಾಗಿಲಿಗೆ ಅಂಟಿಸಿ ಹೋಗುತ್ತಾನೆ.

ಮೈನಾವತಿ ಊರಿಗೆ ಹೋಗುವಾಗ ಆ ಚೀಟಿ ಅವಳ ಕೈಗೆ ಸಿಗುತ್ತದೆ. ತನ್ನ ಮನೆಬಾಗಿಲಿಗೆ ಅವಳೊಂದು ಚೀಟಿ ಅಂಟಿಸಿ ಅತ್ತೆ ಮಾವರ ಮನೆಗೆ ಹೋದಳು.

“ನನ್ನೂರಿಗೆ ನೀವು ಬರಬೇಕು”, ಎಂದು ಆಕೆ ಚೀಟಿಯಲ್ಲಿ ಬರೆದ ಪ್ರಕಾರ, ರಾಜನ ಮಗ ಹಾಗೂ ಪ್ರಧಾನಿಯ ಮಗ ಮೈನಾವತಿಯ ಗಂಡನೂರಿಗೆ ಹೋಗಿ ಅಲ್ಲಿ ಹೂಗಾರ ಮುದುಕಿಯ ಮನೆಗೆ ಹೋಗುತ್ತಾರೆ. ಅಲ್ಲಿ ರಾತ್ರಿ ಮಲಗಲು ಮಾಡುತ್ತಾರೆ. ಅಕ್ಕಿ ತಂದುಕೊಟ್ಟರೆ ಬೋನ ಮಾಡಿಕೊಡುವೆ ಎಂದಳು ಆ ಮುದುಕಿ. ಅಕ್ಕಿ ತರುವುದಕ್ಕೆ ಬುಟ್ಟಿ ಕೇಳಿದರೆ ಆ ಮುದುಕಿ ನೇರವಾಗಿ ಮೈನಾವತಿಯ ಮನೆಗೆ ಹೋಗಿ ಒಂದು ಬುಟ್ಟಿ ಬೇಡುತ್ತಾಳೆ- ಮೈನಾವತಿ ಬುಟ್ಟಿಗೆ ಜಾಜಾ ಹಚ್ಚಿಕೊಡುತ್ತಾಳೆ- ಅಕ್ಕಿ ಕೊಳ್ಳುವುದಕ್ಕೆ ರಾಜನ ಮಗನು ಅಂಗಡಿಗೆ ಹೋದಾಗ ಆತನಿಗೆ ಒಂದು ಚೀಟಿ ಸಿಗುತ್ತದೆ –

“ಈ ಹೊತ್ತಿನ ದಿವಸ ಶಂಭುಮಹಾದೇವನ ಗುಡಿಗೆ ಬರುತ್ತೇನೆ – ನೀವೂ ಅಲ್ಲಿಗೆ ಬರಬೇಕು” ಎಂದು ಮೈನಾವತಿ ಬರೆದಿದ್ದಳು.

ಅಕ್ಕಿ ತೆಗೆದುಕೊಂಡು ಸೈರ ಮನೆಗೆ ಬಂದರು.

ಹೊತ್ತು ಮುಳುಗುವ ಸಮಯಕ್ಕೆ ರಾಜನ ಮಗನು ಮಹಾದೇವನ ಗುಡಿಗೆ ಹೋಗುತ್ತಾನೆ. ಜರದ ಸೀರೆಯುಟ್ಟು ಕೈಯಲ್ಲಿ ಆರತಿ ಹಿಡಕೊಂಡು ಮೈನಾವತಿ ಗುಡಿಗೆ ಹೋಗುತ್ತಾಳೆ- ಅವಳು ಹೋಗುವುದನ್ನು ನೋಡಿದ ಓಲೆಕಾರನೊಬ್ಬನು ಅವಳ ಬೆನ್ನ ಹಿಂದೆ ತಾನೂ ಗುಡಿಗೆ ಹೋಗುತ್ತಾನೆ. ರಾಜನ ಮಗನೂ ಗುಡಿಯೊಳಕ್ಕೆ ಹೋಗುವುದನ್ನು ಕಂಡ ಓಲೆಕಾರನು – ಹೆಂಗಸೊಬ್ಬಳು ಗಂಡಸರಿದ್ದ ಗುಡಿಯೊಳಕ್ಕೆ ಹೋಗಿದ್ದಾಳೆಂದು ಬೊಬ್ಬಾಟ ಮಾಡುತ್ತಾನೆ. ಗಸ್ತಿಯಾಳುಗಳು ನಾಲ್ವರು ಅಲ್ಲಿ ಕಾವಲು ಕುಳಿತುಕೊಳ್ಳುತ್ತಾರೆ.

ಅದೆಷ್ಟು ಹೊತ್ತಾದರೂ ಮೈನಾವತಿ ಹೊರಗೆ ಬರಲಿಲ್ಲ. ಗಸ್ತಿಯಾಳುಗಳೆಲ್ಲ ತಿರುಗಿ ಹೋದರು.

“ಹೂವಿನ ಬನದಾಗ ಸೈರೇ ದನ ಬಂದಾದ. ಅದನ್ನು ಬಿಡಿಸಿಕೊಂಡು ಬಾ” ಎಂದು ಪ್ರಧಾನಿಯ ಮಗ ಹೂಗಾರ ಮುದುಕಿಗೆ ಬೆನ್ನು ಬೀಳುತ್ತಾನೆ. ಮುದುಕಿ ಹೊರಗೆ ಹೋದಕೂಡಲೇ ಪ್ರಧಾನಿಯ ಮಗನು ಅವಳದೊಂದು ಸೀರೆ ಉಟ್ಟುಕೊಂಡು ಗುಡಿಗೆ ಹೋಗುತ್ತಾನೆ. ಅಲ್ಲಿ ಕುಳಿತವರು ಅವನನ್ನು ಒಳಗೆ ಬಿಡುವುದಿಲ್ಲ.
“ಪೂಜೆಮಾಡಿ ಐದು ತಿಂಗಳಾದವು. ದೇವರಿಗೆ ಹರಕೆ ಹೊತ್ತಿದ್ದೇನೆ. ನನ್ನನ್ನು ಒಳಗೆ ಬಿಡಿರಿ”, ಎಂದು ದುಂಬಾಲ ಬೀಳುತ್ತಾನೆ- ಆದ್ದರಿಂದ ಒಳಗೆ
ಹೋಗಲು ಅಪ್ಪಣೆ ಸಿಕ್ಕಿತು.

ರಾಜನ ಮಗ ಒಳಗೆ ಕುಳಿತಿದ್ದನು. ಈಗ ಪ್ರಧಾನಿಯ ಮಗನೂ ಒಳಗೆ ಹೋಗಿ ಅವನಿಗೆ ಜತೆಯಾದನು. ಪ್ರಧಾನಿಯ ಮಗನು ಉಟ್ಟುಕೊಂಡ ಸೀರೆಯನ್ನೇ ತಾನುಟ್ಟುಕೊಂಡು ಮೈನಾವತಿ ಅಲ್ಲಿಂದ ಹೊರಬಿದ್ದಳು. ಅವರಿಬ್ಬರೂ ಜೊತೆಗಾರರು ಗುಡಿಯಲ್ಲಿ ಸ್ವಸ್ಥವಾಗಿ ನಿದ್ದೆ ಮಾಡಿದರು.

ಬೆಳಗಾಗುತ್ತಲೆ ಅವರೆದ್ದು ಹೊರಹೊರಟರು. ಓಲೆಕಾರ ಹಾಗೂ ಉಳಿದಜನ ಅವರನ್ನು ಕಣ್ಣುತೆರೆದು ನೋಡಿದರು. ಒಳಗೆ ಹೋಗಿ ತಪಾಸು ಮಾಡಿದರೆ ಅಲ್ಲಿ ಯಾವ ಹೆಣ್ಣುಮಗಳೂ ಇರಲಿಲ್ಲ. ಎಲ್ಲರೂ ಓಲೆಕಾರನಿಗೆ ಸಿಟ್ಟುಮಾಡಿ ಹೋಗಿಬಿಟ್ಟರು. .

ಆ ಉಭಯಕುಮಾರರು ಹೂಗಾರ ಮುದುಕಿಯ ಮನೆಗೆ ಹೋಗಿ ಜಳಕ ಊಟ ಮುಗಿಸಿ ವಿಶ್ರಾಂತಿ ಮಾಡಿದರು.

ಪ್ರಧಾನಿಯ ಮಗನು ರಾಜನ ಮಗನಿಗೆ ಒಂದು ಒಳ್ಳೆಯ ಸೀರೆ ಉಡಿಸಿ ಮೈನಾವತಿಯ ಗಂಡನಮನೆಗೆ ಕರಕೊಂಡು ಹೋದನು. ಆ ಸಂದರ್ಭದಲ್ಲಿ ಮೈನಾವತಿಯ ಗಂಡನು ಊರಲ್ಲಿರಿಲಿಲ್ಲ. ಮುತ್ತುರತ್ನಗಳ ವ್ಯಾಪಾರಕ್ಕಾಗಿ ದೇಶ ಸಂಚಾರ ಹೋಗಿದ್ದನು- ಪ್ರಧಾನಿಯ ಮಗನು, ಮೈನಾವತಿಯ ಮಾವನಿಗೆ ಹೇಳಿದನು – “ನನ್ನ ಸೊಸೆಯನ್ನು ನಿಮ್ಮ ಮನೆಯಲ್ಲಿ ಬಿಡುತ್ತೇನೆ. ಯಾಕೆಂದರೆ, ನನ್ನ ಸಾಮಾನುಗಳನ್ನೆಲ್ಲ ಕಳ್ಳರು ದೋಚಿಕೊಂಡು ಒಯ್ದಿದ್ದಾರೆ. ಈಗ ಸಹ ಅವರು ನನ್ನ ಬೆನ್ನು ಹತ್ತಿದ್ದಾರೆ. ದಯಮಾಡಿ ಕೆಲದಿನದ ಮಟ್ಟಗೆ ಈಕೆಯನ್ನು ನಿಮ್ಮ ಮನೆಯಲ್ಲಿ ಇರಿಸಿಕೊಳ್ಳಿರಿ.”

ಈ ಪ್ರಕಾರ ವೇಷದ ಸೊಸೆಯನ್ನು ಬಿಟ್ಟುಕೊಟ್ಟು ಪ್ರಧಾನಿಯ ಮಗನು ಹೋಗಿಬಿಡುತ್ತಾನೆ.

ರಾಜನಮಗ ಹಾಗೂ ಮೈನಾವತಿಯರ ಭೇಟಿ ಹೀಗೆ ಆಗುತ್ತದೆ. ಎಂಟು ಹತ್ತು ದಿನಗಳು ಕಳೆದ ಬಳಿಕ ಮೈನಾವತಿಯ ಗಂಡನು, ವ್ಯಾಪಾರ ತೀರಿಸಿಕೊಂಡು ಮನೆಗೆ ಬರುತ್ತಾನೆ. ಮನೆಯಲ್ಲಿರುವ ಹೊಸ ಹೆಣ್ಣು ಮಗಳನ್ನು ಕಂಡು ಅವಳ ಮೇಲೆ ಮನಸ್ಸು ಮಾಡುತ್ತಾನೆ. “ನಿನ್ನದು ಯಾವ ಊರು” ಎಂದು, ಆಕೆಯ ಹತ್ತಿರಕ್ಕೆ ಹೋಗಿ ಕೇಳುತ್ತಾನೆ.

ಹೆಂಡತಿ ನಡುವೆ ಬಾಯಿಹಾಕಿ ಏನೋ ಹೇಳತೊಡಗಲು – “ನೀನು ಸುಮ್ಮನಿರೇ” ಎಂದು ತನ್ನ ಹೆಂಡತಿಯನ್ನು ಬೆದರಿಸುತ್ತಾನೆ.

ಅಂದು ರಾತ್ರಿಯೇ ಮೈನಾವತಿಯ ಗಂಡನು ಸ್ತ್ರೀವೇಷದಲ್ಲಿರುವ ರಾಜ ಕುಮಾರನ ಕೋಣೆಗೆ ಹೋದನು. ಅಲ್ಲಿ ಬನಿಯನ್, ಅಂಡರವೇರ್ ಧರಿಸಿ ಮಲಗಿದ್ದ ರಾಜಕುಮಾರನು ಎಚ್ಚತ್ತವನೇ ಚಾಕುವಿನಿಂದ ಆತನ ಮೂಗನ್ನೇ ಬಿಡಿಸಿದನು- ಮೊದಲೇ ಒಕ್ಕಣ್ಣ, ಈಗ ಮೂಗುಬೇರೆ ಕಳಕೊಂಡು ಅವಲಕ್ಷಣವಾದನು-

ರಾಜಕುಮಾರನು ಸೈರ ಮುದುಕಿಯ ಮನೆಗೆ ತೆರಳಿದನು. ಆಗ ಪ್ರಧಾನಿಯ ಮಗನು ಕುದುರೆ ಹಿಡಕೊಂಡು ಮೈನಾವತಿಯ ಮನೆಗೆ ಹೋಗಿ – “ನನ್ನ ಸೊಸೆಯನ್ನು ಕಳಿಸಿರಿ” ಎಂದು ಕೇಳುತ್ತಾನೆ. “ನಿನ್ನ ಮಗನೇ ಕರಕೊಂಡು ಹೋಗಿದ್ದಾನೆ” ಎಂದು ಮೈನಾವತಿಯ ಮಾವನು ಮರುನುಡಿಯುತ್ತಾನೆ.

“ಸೊಸೆಯನ್ನು ತಂದಿಟ್ಟರೆ ಹೀಗೆ ಮಾಡಬೇಕೆ ? ನನ್ನ ಸೊಸೆಯಿಲ್ಲದಿದ್ದರೆ ನಿನ್ನ ಸೊಸೆಯನ್ನು ಕಳಿಸಿಕೊಡಿರಿ. ಯಾರಿಗೆ ಹೇಳುವಿರಿ” ಎಂದು ಮೈನಾವತಿಯನ್ನು ಬಲವಂತದಿಂದ ಕರಕೊಂಡು ಹೋದನು.

ರಾಜಕುಮಾರನು ಮೈನಾವತಿಯ ಸಂಗಡ ಲಗ್ನ ಮಾಡಿಕೊಂಡನು.
*****

ಪುಸ್ತಕ: ಉತ್ತರ ಕರ್ನಾಟಕದ ಜನಪದ ಕಥೆಗಳು

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...