Home / ಕಥೆ / ಜನಪದ / ಮಲವಯ್ಯ ಶೆಟ್ಟಿ

ಮಲವಯ್ಯ ಶೆಟ್ಟಿ

ಶೆಟ್ಟಿ ಅದೇ ಊಟ ಮುಗಿಸಿ, ಎಲೆ ಅಡಿಕೆ ಮೆದ್ದು ಅಣಿಗೊಳಿಸತೊಡಗಿದ್ದಾನೆ. ಪ್ರಯಾಣದ ಸಿದ್ಧತೆಯೆಂದು ತೋರುತ್ತದೆ.

ರುದ್ರಾಕ್ಷಿ ಪೇಟೆಯ ಧೋತರ ಉಟ್ಟಿದ್ದಾನೆ. ಅವೆಂಥವೋ ಚಮ್ಮಳಿಗೆ ಮೆಟ್ಟದ್ದಾನೆ. ಬೆರಳಲ್ಲಿ ಉಂಗುರ. ಎದೆಯ ಮೇಲೆ ಸಜ್ಜೇದ ಚೌಕ, ಕೈಯಲ್ಲಿ ತಂಬುಲದ ಚೀಲು. ಅದೆಲ್ಲ ಘಟ್ಟದ ಸಾರಿಗೆಯ ಸಿಂಗಾರ. ಕರಿಯೆತ್ತಿಗೆ ಕಮಲದ ಹೂ. ಬಿಳಿಯೆತ್ತಿಗೆ ಗೆಜ್ಜಿಸರ. ಸಾರಂಗದೆತ್ತಿಗೆ ಸರಗಂಟಿ ಕಟ್ಟಿದ್ದಾನೆ.

ಬಟ್ಟಲಲ್ಲಿ ಉಂಡು, ತೊಟ್ಟಲಲ್ಲಿ ಆಡುವ ತಂಗಿಯನ್ನು ಬಿಟ್ಟು ಶೆಟ್ಟಿ ಮಲ್ಲಾಡ ದೇಶಕ್ಕೆ ಹೊರಟಿದ್ದಾನೆ. ಅಂಗಳದಲ್ಲಿ ಆಡಿ, ಗಂಗಾಳದಲ್ಲಿ ಉಣ್ಣುವ ತಂಗಿಯನ್ನು ಬಿಟ್ಟು ಶೆಟ್ಟಿ ಘಟ್ಟದ ಸಾರಿಗೆಗೆ ಹೊರಟಿದ್ದಾನೆ.

ಶುಂಠಿ, ಮೆಣಸು, ಯಾಲಕ್ಕಿ, ಲವಂಗ ಇವುಗಳನ್ನಲ್ಲ ಹೇರು ಹೇರು ಖರೀದಿ ಮಾಡಿದ್ದಾನೆ. ಅಡಿಕೆ ಎರಡೆರಡು ಹೇರು ಖರೀದಿ ಮಾಡಿದ್ದಾನೆ. ತನ್ನ ಕರಿ ಎತ್ತು, ಬಿಳಿ ಎತ್ತು, ಸಾರಂಗದ ಎತ್ತುಗಳ ಮೇಲೆ ಆ ಹೇರುಗಳನ್ನೆಲ್ಲ ಹೇರಿಕೊಂಡು ಘಟ್ಟ ಇಳಿದು ಬಯಲುನಾಡಿಗೆ ಬಂದನು. ಬರುವಾಗ ದಾರಿಯಲ್ಲಿ ವಿಜಯನಗರವನ್ನು ದಾಟಿ ಬಾದಾಮಿಗೆ ಬಂದು ಸಂಗನಬಸವನ ಗುಡಿಯ ಮುಂದೆ ತನ್ನ ಹೇರು ಇಳಿಸಿ, ವಿಶ್ರಾಂತಿಗಾಗಿ ತಂಗಿದನು. ಅಲ್ಲಿಯ ಪೇಟೆಯಲ್ಲೆಲ್ಲ ಅಡ್ಡಾಡಿ, ಕೊಂಡುಕೊಳ್ಳಬೇಕಾದುದನ್ನು ಕೊಂಡುಕೊಂಡು ಬರುವಾಗ ಅಲ್ಲೊಬ್ಬ ಥಾಟಗಿತ್ತಿಯನ್ನು ಕಂಡನು. ಆಕೆ ಬಾದಾಮಿಪೇಟೆಯ ಬಸವಿ.

ಶೆಟ್ಟಿ ಊರು ಬಿಟ್ಟು ಹನ್ನೆರಡು ವರ್ಷವಾಗಿತ್ತು. ಮನಸ್ಸು ಚಂಚಲವಾಯಿತು, ಶೆಟ್ಟಿ ಆ ಥಾಟಗಿತ್ತಿಗೆ ಹೇಳಿಕಳಿಸಿದನು.

ತು೦ಬಿಸೂಸುವ ಬೆಳದಿಂಗಳಿನಲ್ಲಿ ಇಂಬಾದ ಸೆಳೆಮಂಚ ; ದಿಂಬಿಗೊರಗಿ ಮಲಗಿದ್ದಾಳೆ ಆ ಬಸವಿ. ಶೆಟ್ಟಿಯಾದರೋ ಸಿಂಗಾರವನ್ನೇ ಉಟ್ಟು, ಸಿಂಗಾರವನ್ನೇ ತೊಟ್ಟು ಆ ಬಸವಿಯ ಮನೆಗೆ ಹೋದನು.

ಆದರೆ ವಿಧಿಯು ಅಲ್ಲೊಂದು ಬೇರೆ ಆಟ ಹೂಡಿದೆ.

ಶೆಟ್ಟಿ ಬಸವಿಗೆ ಎಲೆಕೊಡಹೋದನು. ಅಡಿಕೆ ಕೊಡಹೋದನು. ಕೊಡ ಮಾಡಿದ ಎಲೆ ಅಡಿಕೆ ಉಡಿಯಲ್ಲಿ ಬೀಳದೆ ಕಡೆಗೆ ಬಿದ್ದವು.

“ಅತ್ತ ಇತ್ತ ನೋಡುತ್ತೀಯಲ್ಲ ! ಚಿತ್ತ ಎರಡು ಮಾಡುತ್ತಿಯಲ್ಲ !! ಮನಸ್ಸಿಲ್ಲದಿದ್ದರೆ ಮಾತನ್ನೇಕೆ ಕೊಟ್ಟೆ?” ಎಂದು ಕೇಳಿದನು ಶೆಟ್ಟಿ.

“ಅತ್ತ ಇತ್ತ ನೋಡಿಯೇ ಇಲ್ಲ. ಚಿತ್ತ ಎರಡು ಮಾಡಿಯೇ ಇಲ್ಲ. ಮಲವೈನ ಆಣೆಮಾಡಿ ಹೇಳುತ್ತೇನೆ. ನನ್ನ ಮನಸ್ಸು ಎರಡಿಲ್ಲ” ಎಂದಳಾಕೆ.

“ಮಲವೈನ ಹೆಸರುಗೊಂಡಿ. ಆತನ ಆಣೆ ಮಾಡಿದಿ. ಮಲವೈಶೆಟ್ಟಿ ನಿನಗೇನಾಗಬೇಕು? ನಿನ್ನ ಹುಟ್ಟಿದೂರು ಯಾವುದು ? ಯಾವ ಊರಿಗೆ ನಿನ್ನನ್ನು ಕೊಟ್ಟಿದ್ದು ? ಎಲ್ಲವನ್ನೂ ಸರಿಯಾಗಿ ಹೇಳು- ತಂದೆಯ ಹೆಸರೇನು- ತಾಯಿಯ ಹೆಸರೇನು ? ಒಡಹುಟ್ಟಿದ ಅಣ್ಣನ ಹೆಸರೇನು ?” ಎಂದು ಕೇಳಿದ ಶೆಟ್ಟಿಗೆ ಬಸವಿ ಈ ರೀತಿಯಾಗಿ ಮರುನುಡಿಯುತ್ತಾಳೆ –

“ತಂದೆ ಸುಂಕುಬಾಳ, ತಾಯಿ ಗಂಗಾಬಾಳ. ಒಡಹುಟ್ಟಿದ ತಂಗಿಯ ಹೆಸರು ಮಾಸುಂದರಿ. ಅಣ್ಣ ಮಲವೈಶೆಟ್ಟಿ” ಬಸವಿ ಮರುನುಡಿಯುವಾಗ ಶೆಟ್ಟಿಯು ಆಕೆಯ ಮುಖನೋಡಿ, ಹಣೆಯ ಮೇಲಿರುವ ಕಲೆ ಕಂಡು ದಿಗ್ಭ್ರಮೆಗೊಂಡನು. ತೊಟ್ಟಿಲಲ್ಲಿ ಆಡುವಾಗ ಬಟ್ಟಲಲ್ಲಿ ಕುಡಿಯುವಾಗ ಕಟ್ಟೆಯ ಕೆಳಗೆ ಬಿದ್ದ ಕಚ್ಚು ಕಂಡನು ಆ ಶೆಟ್ಟಿ. “ಹುಟ್ಟುದಟ್ಟಿ ಯುಟ್ಟು ಬಟ್ಟಲದನ್ನ ಉಣ್ಣುವಾಗ ನನ್ನ ಮಲವಯ್ಯ ಶೆಟ್ಟಿ ಬಿಟ್ಟು ಹೋಗಿದ್ದಾನೆ – ದುರ್ದೈವದಿಂದ ದಿಕ್ಕುಗೇಡಿಯಾದೆ. ಬಾಳಾಸಾನಿ ಎತ್ತಿಕೊಂಡಳು. ಬಾದಾಮಿ ಪೇಟೆಗೆ ನನ್ನನ್ನು ಬಸವಿ ಬಿಟ್ಟಳು.”

“ನನ್ನನ್ನು ನಾನು ಕಡಿದುಕೊಳ್ಳಲಾ, ತಂಗೀ, ಇರಿದು ಕೊಳ್ಳಲಾ ? ಅಲಗು ಕಟ್ಟಿ ಅದಕ್ಕೆ ಹಾಯಲೇನೇ ತಂಗೀ” ಎಂದು ಹಲುಬಿದನು ಶೆಟ್ಟಿ.

“ಕಡಿದುಕೊಳ್ಳುವುದೂ ಬೇಡ ; ಅಣ್ಣಯ್ಯ, ಇರಿದು ಕೊಳ್ಳುವುದೂ ಬೇಡ. ಅಲಗು ಕಟ್ಟಿ ಅದನ್ನು ಹಾಯುವುದೂ ಬೇಡ- ಅಣ್ಣಯ್ಯ. ಅಣ್ಣಯ್ಯ. ಊರ ಕೋಟೆಯನ್ನು ದಾಟಿದರೆ ಮೂಡಣದ ಕೊಳ್ಳದಲ್ಲಿ ಕೋಟಿಲಿಂಗಗಳು ನೆನೆದಿವೆ. ಅಂಗವನ್ನೇ ವಸ್ತ್ರಮಾಡಿ ಲಿಂಗವನ್ನು ಪೂಜಿಸಿ ನಿನಗೆ ತಟ್ಟಿದ ಇಂದಿನ ಪಾಪವನ್ನು ಹಿಂಗಿಸಣ್ಣ. ಗೋಕಾವಿ ನಾಡಿಗೆ ಹೋಗಿ ಒಂದು ಹಿಂಡು ಆಕಳು ತೆಗೆದುಕೊಂಡು ಬಂದು, ಕೊಳಗೆ ಮೆಟ್ಟಿ ಕೊಂಬ ನೀ ದಾನ ಮಾಡಣ್ಣ. ಆವಾಗ ನಿನ್ನ ಪಾಪ ಪರಿಹಾರ ಅಣ್ಣಯ್ಯ”, ಎಂದು ಉಸುರಿದಳು ಆ ತಂಗಿ.
*****

ಪುಸ್ತಕ: ಉತ್ತರ ಕರ್ನಾಟಕದ ಜನಪದ ಕಥೆಗಳು

 

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...