Home / ಕಥೆ / ಜನಪದ / ಮಲವಯ್ಯ ಶೆಟ್ಟಿ

ಮಲವಯ್ಯ ಶೆಟ್ಟಿ

ಶೆಟ್ಟಿ ಅದೇ ಊಟ ಮುಗಿಸಿ, ಎಲೆ ಅಡಿಕೆ ಮೆದ್ದು ಅಣಿಗೊಳಿಸತೊಡಗಿದ್ದಾನೆ. ಪ್ರಯಾಣದ ಸಿದ್ಧತೆಯೆಂದು ತೋರುತ್ತದೆ.

ರುದ್ರಾಕ್ಷಿ ಪೇಟೆಯ ಧೋತರ ಉಟ್ಟಿದ್ದಾನೆ. ಅವೆಂಥವೋ ಚಮ್ಮಳಿಗೆ ಮೆಟ್ಟದ್ದಾನೆ. ಬೆರಳಲ್ಲಿ ಉಂಗುರ. ಎದೆಯ ಮೇಲೆ ಸಜ್ಜೇದ ಚೌಕ, ಕೈಯಲ್ಲಿ ತಂಬುಲದ ಚೀಲು. ಅದೆಲ್ಲ ಘಟ್ಟದ ಸಾರಿಗೆಯ ಸಿಂಗಾರ. ಕರಿಯೆತ್ತಿಗೆ ಕಮಲದ ಹೂ. ಬಿಳಿಯೆತ್ತಿಗೆ ಗೆಜ್ಜಿಸರ. ಸಾರಂಗದೆತ್ತಿಗೆ ಸರಗಂಟಿ ಕಟ್ಟಿದ್ದಾನೆ.

ಬಟ್ಟಲಲ್ಲಿ ಉಂಡು, ತೊಟ್ಟಲಲ್ಲಿ ಆಡುವ ತಂಗಿಯನ್ನು ಬಿಟ್ಟು ಶೆಟ್ಟಿ ಮಲ್ಲಾಡ ದೇಶಕ್ಕೆ ಹೊರಟಿದ್ದಾನೆ. ಅಂಗಳದಲ್ಲಿ ಆಡಿ, ಗಂಗಾಳದಲ್ಲಿ ಉಣ್ಣುವ ತಂಗಿಯನ್ನು ಬಿಟ್ಟು ಶೆಟ್ಟಿ ಘಟ್ಟದ ಸಾರಿಗೆಗೆ ಹೊರಟಿದ್ದಾನೆ.

ಶುಂಠಿ, ಮೆಣಸು, ಯಾಲಕ್ಕಿ, ಲವಂಗ ಇವುಗಳನ್ನಲ್ಲ ಹೇರು ಹೇರು ಖರೀದಿ ಮಾಡಿದ್ದಾನೆ. ಅಡಿಕೆ ಎರಡೆರಡು ಹೇರು ಖರೀದಿ ಮಾಡಿದ್ದಾನೆ. ತನ್ನ ಕರಿ ಎತ್ತು, ಬಿಳಿ ಎತ್ತು, ಸಾರಂಗದ ಎತ್ತುಗಳ ಮೇಲೆ ಆ ಹೇರುಗಳನ್ನೆಲ್ಲ ಹೇರಿಕೊಂಡು ಘಟ್ಟ ಇಳಿದು ಬಯಲುನಾಡಿಗೆ ಬಂದನು. ಬರುವಾಗ ದಾರಿಯಲ್ಲಿ ವಿಜಯನಗರವನ್ನು ದಾಟಿ ಬಾದಾಮಿಗೆ ಬಂದು ಸಂಗನಬಸವನ ಗುಡಿಯ ಮುಂದೆ ತನ್ನ ಹೇರು ಇಳಿಸಿ, ವಿಶ್ರಾಂತಿಗಾಗಿ ತಂಗಿದನು. ಅಲ್ಲಿಯ ಪೇಟೆಯಲ್ಲೆಲ್ಲ ಅಡ್ಡಾಡಿ, ಕೊಂಡುಕೊಳ್ಳಬೇಕಾದುದನ್ನು ಕೊಂಡುಕೊಂಡು ಬರುವಾಗ ಅಲ್ಲೊಬ್ಬ ಥಾಟಗಿತ್ತಿಯನ್ನು ಕಂಡನು. ಆಕೆ ಬಾದಾಮಿಪೇಟೆಯ ಬಸವಿ.

ಶೆಟ್ಟಿ ಊರು ಬಿಟ್ಟು ಹನ್ನೆರಡು ವರ್ಷವಾಗಿತ್ತು. ಮನಸ್ಸು ಚಂಚಲವಾಯಿತು, ಶೆಟ್ಟಿ ಆ ಥಾಟಗಿತ್ತಿಗೆ ಹೇಳಿಕಳಿಸಿದನು.

ತು೦ಬಿಸೂಸುವ ಬೆಳದಿಂಗಳಿನಲ್ಲಿ ಇಂಬಾದ ಸೆಳೆಮಂಚ ; ದಿಂಬಿಗೊರಗಿ ಮಲಗಿದ್ದಾಳೆ ಆ ಬಸವಿ. ಶೆಟ್ಟಿಯಾದರೋ ಸಿಂಗಾರವನ್ನೇ ಉಟ್ಟು, ಸಿಂಗಾರವನ್ನೇ ತೊಟ್ಟು ಆ ಬಸವಿಯ ಮನೆಗೆ ಹೋದನು.

ಆದರೆ ವಿಧಿಯು ಅಲ್ಲೊಂದು ಬೇರೆ ಆಟ ಹೂಡಿದೆ.

ಶೆಟ್ಟಿ ಬಸವಿಗೆ ಎಲೆಕೊಡಹೋದನು. ಅಡಿಕೆ ಕೊಡಹೋದನು. ಕೊಡ ಮಾಡಿದ ಎಲೆ ಅಡಿಕೆ ಉಡಿಯಲ್ಲಿ ಬೀಳದೆ ಕಡೆಗೆ ಬಿದ್ದವು.

“ಅತ್ತ ಇತ್ತ ನೋಡುತ್ತೀಯಲ್ಲ ! ಚಿತ್ತ ಎರಡು ಮಾಡುತ್ತಿಯಲ್ಲ !! ಮನಸ್ಸಿಲ್ಲದಿದ್ದರೆ ಮಾತನ್ನೇಕೆ ಕೊಟ್ಟೆ?” ಎಂದು ಕೇಳಿದನು ಶೆಟ್ಟಿ.

“ಅತ್ತ ಇತ್ತ ನೋಡಿಯೇ ಇಲ್ಲ. ಚಿತ್ತ ಎರಡು ಮಾಡಿಯೇ ಇಲ್ಲ. ಮಲವೈನ ಆಣೆಮಾಡಿ ಹೇಳುತ್ತೇನೆ. ನನ್ನ ಮನಸ್ಸು ಎರಡಿಲ್ಲ” ಎಂದಳಾಕೆ.

“ಮಲವೈನ ಹೆಸರುಗೊಂಡಿ. ಆತನ ಆಣೆ ಮಾಡಿದಿ. ಮಲವೈಶೆಟ್ಟಿ ನಿನಗೇನಾಗಬೇಕು? ನಿನ್ನ ಹುಟ್ಟಿದೂರು ಯಾವುದು ? ಯಾವ ಊರಿಗೆ ನಿನ್ನನ್ನು ಕೊಟ್ಟಿದ್ದು ? ಎಲ್ಲವನ್ನೂ ಸರಿಯಾಗಿ ಹೇಳು- ತಂದೆಯ ಹೆಸರೇನು- ತಾಯಿಯ ಹೆಸರೇನು ? ಒಡಹುಟ್ಟಿದ ಅಣ್ಣನ ಹೆಸರೇನು ?” ಎಂದು ಕೇಳಿದ ಶೆಟ್ಟಿಗೆ ಬಸವಿ ಈ ರೀತಿಯಾಗಿ ಮರುನುಡಿಯುತ್ತಾಳೆ –

“ತಂದೆ ಸುಂಕುಬಾಳ, ತಾಯಿ ಗಂಗಾಬಾಳ. ಒಡಹುಟ್ಟಿದ ತಂಗಿಯ ಹೆಸರು ಮಾಸುಂದರಿ. ಅಣ್ಣ ಮಲವೈಶೆಟ್ಟಿ” ಬಸವಿ ಮರುನುಡಿಯುವಾಗ ಶೆಟ್ಟಿಯು ಆಕೆಯ ಮುಖನೋಡಿ, ಹಣೆಯ ಮೇಲಿರುವ ಕಲೆ ಕಂಡು ದಿಗ್ಭ್ರಮೆಗೊಂಡನು. ತೊಟ್ಟಿಲಲ್ಲಿ ಆಡುವಾಗ ಬಟ್ಟಲಲ್ಲಿ ಕುಡಿಯುವಾಗ ಕಟ್ಟೆಯ ಕೆಳಗೆ ಬಿದ್ದ ಕಚ್ಚು ಕಂಡನು ಆ ಶೆಟ್ಟಿ. “ಹುಟ್ಟುದಟ್ಟಿ ಯುಟ್ಟು ಬಟ್ಟಲದನ್ನ ಉಣ್ಣುವಾಗ ನನ್ನ ಮಲವಯ್ಯ ಶೆಟ್ಟಿ ಬಿಟ್ಟು ಹೋಗಿದ್ದಾನೆ – ದುರ್ದೈವದಿಂದ ದಿಕ್ಕುಗೇಡಿಯಾದೆ. ಬಾಳಾಸಾನಿ ಎತ್ತಿಕೊಂಡಳು. ಬಾದಾಮಿ ಪೇಟೆಗೆ ನನ್ನನ್ನು ಬಸವಿ ಬಿಟ್ಟಳು.”

“ನನ್ನನ್ನು ನಾನು ಕಡಿದುಕೊಳ್ಳಲಾ, ತಂಗೀ, ಇರಿದು ಕೊಳ್ಳಲಾ ? ಅಲಗು ಕಟ್ಟಿ ಅದಕ್ಕೆ ಹಾಯಲೇನೇ ತಂಗೀ” ಎಂದು ಹಲುಬಿದನು ಶೆಟ್ಟಿ.

“ಕಡಿದುಕೊಳ್ಳುವುದೂ ಬೇಡ ; ಅಣ್ಣಯ್ಯ, ಇರಿದು ಕೊಳ್ಳುವುದೂ ಬೇಡ. ಅಲಗು ಕಟ್ಟಿ ಅದನ್ನು ಹಾಯುವುದೂ ಬೇಡ- ಅಣ್ಣಯ್ಯ. ಅಣ್ಣಯ್ಯ. ಊರ ಕೋಟೆಯನ್ನು ದಾಟಿದರೆ ಮೂಡಣದ ಕೊಳ್ಳದಲ್ಲಿ ಕೋಟಿಲಿಂಗಗಳು ನೆನೆದಿವೆ. ಅಂಗವನ್ನೇ ವಸ್ತ್ರಮಾಡಿ ಲಿಂಗವನ್ನು ಪೂಜಿಸಿ ನಿನಗೆ ತಟ್ಟಿದ ಇಂದಿನ ಪಾಪವನ್ನು ಹಿಂಗಿಸಣ್ಣ. ಗೋಕಾವಿ ನಾಡಿಗೆ ಹೋಗಿ ಒಂದು ಹಿಂಡು ಆಕಳು ತೆಗೆದುಕೊಂಡು ಬಂದು, ಕೊಳಗೆ ಮೆಟ್ಟಿ ಕೊಂಬ ನೀ ದಾನ ಮಾಡಣ್ಣ. ಆವಾಗ ನಿನ್ನ ಪಾಪ ಪರಿಹಾರ ಅಣ್ಣಯ್ಯ”, ಎಂದು ಉಸುರಿದಳು ಆ ತಂಗಿ.
*****

ಪುಸ್ತಕ: ಉತ್ತರ ಕರ್ನಾಟಕದ ಜನಪದ ಕಥೆಗಳು

 

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...