Home / ಕಥೆ / ಜನಪದ / ಹೆಂಡತಿಗೆ ಹೊಡೆಯಬೇಕೆನ್ನುವ ರಾಜ

ಹೆಂಡತಿಗೆ ಹೊಡೆಯಬೇಕೆನ್ನುವ ರಾಜ

ಇಬ್ಬರು ಗಂಡ ಹೆಂಡತಿ ಇದ್ದರು. ಅವರಿಗೆ ಒಬ್ಬಾಕೆ ಮಗಳು ಮಾತ್ರ ಇದ್ದಳು. ಅಪ್ಪ ಹೊಲಕ್ಕೆ ಹೋಗಿದ್ದಾನೆ; ತಾಯಿ ಹೊರಕ್ಕೆ ಹೋಗಿದ್ದಾಳೆ;  ಮಗಳು ಹೊರಕಡಿಗೆ ಹೊರಟಳು. ಹಾದಿಯಲ್ಲೊಂದು ಮನೆ.  ಮನೆಯಲ್ಲಿ ಗಂಡನಾದವನು ಹೆಂಡತಿಗೆ ಹೊಡೆಯುತ್ತಿದ್ದನು. ಮೂರುದಿನಕ್ಕೊಮ್ಮೆ ಗಂಡ ಯಾಕೆ ಹೊಡೆಯುತ್ತಾನೆ? “ಯಾರು ತಿಂತಾರವ್ವ ಹೀಂಗ ದಿನಾಲು ಏಟು.  ಏನು ತಪ್ಪಮಾಡ್ಯಾಳೋ ಯಾನೋ” ಎನ್ನುತ್ತಾಳೆ ಆ ಮಗಳು. ಅಷ್ಟರಲ್ಲಿ-

ರಾಜ ಮತ್ತು ಪ್ರಧಾನಿ ಇಬ್ಬರೂ ವಾಯುಸೇವನೆಗೆ ಹೊರಟಿದ್ದರು.  ಪ್ರಧಾನಿಯು, ರಾಜನಿಗೆ ಸಲಹೆ ಕೊಡುತ್ತಾನೆ . “ಈ ಹೆಣ್ಣುಮಗಳು ಚಪಲ ಕಾಣಿಸುತ್ತಾಳೆ. ಇವಳನ್ನು ಮಾತಾಡಿಸಿ ನೋಡೋಣ.”

ಆ ಹೆಣ್ಣು ಮಗಳಿಗೆ ರಾಜನು ಕೇಳುತ್ತಾನೆ – “ಮಗಾ  ನಿಮ್ಮಪ್ಪ ನಿಮ್ಮವ್ವ ಎಲ್ಲಿ ಹೋಗಿದ್ದಾರೆ?,’

ಆಕೆ ಮರು ನುಡಿಯುತ್ತಾಳೆ . “ಅಪ್ಪ ಮುಳ್ಳಿನ ಗಿಡಕ್ಕೆ ಮುಳ್ಳುಹಚ್ಚಲು ಹೋಗಿದ್ದಾನೆ.  ಖಂಡದೊಳಗಿನ ಖಂಡ ತೆಗೆಯಲು ಅವ್ವ ಹೋಗಿದ್ದಾಳೆ.”

“ಯಾವಾಗ ಬರುತ್ತಾರೆ?”

“ಹೊತ್ತು ಮುಳಗಿದ ಬಳಿಕ ಬರುತ್ತಾರೆ.”

ವಿಷಯ ಗೊತ್ತಾಯಿತು. ಅವರು ಬಂದ ಬಳಿಕ ಕೇಳೋಣ ಎಂದು ರಾಜ ಹಾಗೂ ಪ್ರಧಾನಿ ಮಾತಾಡಿಕೊಂಡರು.

ತಾನು ಬದನೀಗಿಡಕ್ಕೆ ಮುಳ್ಳು ಹಚ್ಚಲು ಹೋಗಿದ್ದೇನೆಂದು ತಂದೆ ಹೇಳಿದನು.  ಹಡೆಯಲಾರದೆ ನಿಂತ ಹೆಂಗುಸಿಗೆ ಹಡೆಯುವಂತೆ ಮಾಡಲು ಹೋಗಿದ್ದೆನೆಂದು ತಾಯಿ ಹೇಳಿದಳು.

ಆ ಹುಡಿಗೆಯ ಮಾತಿನ ಕುಶಲತೆಯನ್ನು ರಾಜನು ಮೆಚ್ಚುವನು.  ಅವಳನ್ನು ಮದುವೆಯಾಗಬೇಕೆಂದು ನಿರ್ಧರಿಸುತ್ತಾನೆ. ಮಗಳು ಸುಖದಲ್ಲಿ ಬೀಳುವಳೆಂದು ಅಪ್ಪನು ಮಗಳನ್ನು ರಾಜನಿಗೆ ಕೊಟ್ಟು ಲಗ್ನ ಮಾಡುತ್ತಾನೆ.

ರಾಜನು ಹೊಸ ಹೆಂಡತಿಯನ್ನು ಕರಕೊಂಡು ತನ್ನ ಮನೆಗೆ ಹೋಗುತ್ತಾನೆ.  ಆ ಬಳಿಕ ಹೆಂಡತಿಗೆ ಹೇಳುತ್ತಾನೆ. . “ನಾವು ಬೇಟೆಯಾಡಲು ಎಕ್ಕೀಹಳ್ಳಿಗೆ ಹೋಗುವೆವು.  ನಾವು ಬರುವಷ್ಟರಲ್ಲಿ ಹನ್ನೆರಡು ಮೊಟ್ಟೆ ನಡೆಯುವ ಭಾರಂಗ ಭಾವಿನ್ನು ಅಗಿಸಬೇಕು. ಜವೆ, ಮೆಂತಿ ಬೆಳೆಯುವ ತೋಟ ತಯಾರಮಾಡಬೇಕು. ಈಗ ಮಲ್ಲಿಗೆ ಹೂವಿನ ಸರವನ್ನು ನಿನ್ನ ಕೊರಳಲ್ಲಿ ಹಾಕುತ್ತೇನೆ.  ಅದು ಬಾಡಲಾರದಂತೆ ನೋಡಿಕೊಳ್ಳಬೇಕು.  ಅಲ್ಲಿಗೆ ನಾ ಬರುವಷ್ಟರಲ್ಲಿ ಒಂದು ಮಗಾ ತಯಾರು ಮಾಡಬೇಕು.”

ರಾಜನು ಬೇಟಿಯಾಡುವುದಕ್ಕೆ ಹೊರಟುಹೋದನು.

ಹೆಂಡತಿ ಕೈಯೊಳಗಿನ ದುಡ್ಡು ಖರ್ಚುಮಾಡಿ ಭಾರಂಗ ಭಾವಿ ಅಗಿಸಿದಳು.  ಮೊಟ್ಟೆ ಹೊಡಿಸಿ ತೋಟ ತಯಾರಿಸಿದಳು.

ಗಂಡಸಿನ ವೇಷತೊಟ್ಟು ಹೊರಬಿದ್ದಳು. ಒಂದೂರು ದಾಟಿ ಸಾಗಿದಾಗ ಅಲ್ಲಿಯ ರಾಜನ ಮಗಳು ಮಾಡಿದ ಶಪಥವನ್ನು ಕೇಳಿದಳು. ಏನೆಂದರೆ ಹರಿಯುವ ನೀರ ಮೇಲಿಂದ ಕುದುರೆ ಹಾರಿಸಬೇಕು. ಕುದುರೆಗೆ ನೀರು ತಟ್ಟಬಾರದು.  ಅಂಥವರನ್ನು ತಾನು ಲಗ್ನವಾಗುತ್ತೇನೆ. ಗಂಡು ವೇಷದಲ್ಲಿದ್ದ ಆ ಹೆಣ್ಣು ಮಗಳು
ನದಿಯ ಮೇಲಿಂದ ಕುದುರೆಯನ್ನು ಹಾರಿಸಿದಳು, ಚಬಕಿಯಿಂದ ಹೊಡೆದು, ಅದನ್ನು ಕಂಡು ರಾಜನ ಮಗಳು ಲಗ್ನ ಮಾಡಿಕೊಳ್ಳಲು ಮುಂದೆ ಬಂದಳು.

ಪಂಥ ಗೆದ್ದಿದ್ದಕ್ಕಾಗಿ ಪಂಥದ ವೀಳೆ ಎತ್ತಲಾಯಿತು.  ಆದರೆ ಸದ್ಯಕ್ಕೆ ತನ್ನದೊಂದು ವ್ರತವಿದೆಯೆಂದೂ ಈಗ ಲಗ್ನವಾಗಲಾರೆನೆಂದೂ ಪುರುಷ ವೇಷದಲ್ಲಿರುವ ಹೆಣ್ಣು ಮಗಳು ಹೇಳಿದಳು. ಆದ್ದರಿಂದ ತಲವಾರದೊಂದಿಗೆ ಲಗ್ನ ಮಾಡಿಕೊಳ್ಳುವುದು ನಿರ್ಧಾರವಾಯಿತು. ಹಾದಿಗೆ ಹಂದರ ಹಾಕಿ, ಬೀದಿಗೆ ಛಳಿ ಕೊಟ್ಟು ಲಗ್ನವನ್ನು ಸಡಗರದಿಂದ ಮಾಡಿದರು. ರಾಜನ ಮಗಳನ್ನು ಕರಕೊಂಡು ಮುಂದೆ ಹೊರಟಳು.

ಎಕ್ಕೆಹಳ್ಳಿಯನ್ನು ತಲುಪಿದಳು. ಅಲ್ಲಿ ಪಾತರನಾಚು ನಡೆದಿದೆಯೆಂದು ಕೇಳಿ, ನೆಟ್ಟಗೆ ಪಾತರದವರ ಮನೆಗೆ ಹೋದಳು. ದಾಸಿಯರಿಗೆ ಹೇಳಿ ಸೀರೆ ಸಜ್ಜುಮಾಡಿಕೊಂಡಳು. ಬೇಟೆಯಾಡಲು ಹೋದ ರಾಜನ ಎದುರಿಗೆ ನಾಚು ಮಾಡಿದಳು. ರಾಜನು ಹೆಂಡತಿಯನ್ನು ಗುರುತಿಸಲಿಲ್ಲ. ರಾಜನ ಮನಸ್ಸು ಮಾತ್ರ ಅವಳ ಮೇಲೆ ಕುಳಿತಿತು.  ರಾಜನ ಸಂಗಡ ಅಂದಿನ ರಾತ್ರಿ ಕಳೆದಳು.  ಬೆಳಗಾಗುತ್ತಲೆ ರಾಜನ ಕೈಯೊಳಗಿನ ಉಂಗುರ ಮತ್ತು ಶಾಲು ಇಸಗೊಂಡಳು. ಅಲ್ಲದೆ ಒಂದು ಚೀಟಿಯನ್ನೂ ಬರೆಯಿಸಿಕೊಂಡಳು. ಎರಡು ರಾತ್ರಿ ಕಳೆದು ಆಕೆ ಹೋಗಿಬಿಟ್ಟಳು.

ರಾಜಧಾನಿಗೆ ಬಂದಳು. ಅಷ್ಟರಲ್ಲಿ ಭಾರಂಗ ಭಾವಿ ತಯಾರಾಗಿದೆ. ರಾಜನ ಮಗಳನ್ನು ಒಳಗೆ ಕರೆದು ಸೀರೆಯುಟ್ಟು ನುಡಿಯುತ್ತಾಳೆ . “ತಂಗೀ, ಇದೆಲ್ಲ ನಮ್ಮದೇ. ಹಿಂದಿನಿಂದ ನಿನ್ನ ಗಂಡ ಹೊರಟಿದ್ದಾನೆ. ನೀ ಏನೂ ಕಾಳಜಿ ಮಾಡಬೇಡ.”

ಮುಂದೆ ಬಯಕೆ ಕಾಡಹತ್ತಿ ಒಂಬತ್ತು ತಿಂಗಳು ಒಂಬತ್ತು ದಿನಕ್ಕೆ ಗಂಡು ಮಗುವಿಗೆ ಜನ್ಮವಿತ್ತಳು.

ರಾಜ ಬರುತ್ತಾನೆ. ಹೆಂಡತಿಯನ್ನು ಯಾವಾಗ ಹೊಡೆಯಲಿ ಎಂದು ವಿಚಾರಿಸುತ್ತಾನೆ.  ತಾನು ಬರುವಷ್ಟರಲ್ಲಿ ಭಾರಂಗ ಭಾವಿ ತಯಾರಾಗಿದೆ.  ಅರಮನೆಗೆ ಬರುತ್ತಾನೆ. “ನೀರು ಕುಡಿಯಿರಿ” ಎಂದು ಹೆಂಡತಿ  ಸ್ವಾಗತಿಸುತ್ತಾಳೆ.  ಬಗಲಲ್ಲಿ ಕೂಸು ಇದೆ.  ಕೊರಳೊಳಗಿನ ಹೂವಿನ ಸರ ಬಾಡಿಲ್ಲ.

“ಮಗಾ ಎಲ್ಲಿಯದು”, ಎಂದು ಹೆಂಡತಿಗೆ ಕೇಳಿದರೆ ಆಕೆ ಉಂಗುರ, ಶಾಲು ಮತ್ತು ಚೀಟಿ ತೋರಿಸುತ್ತಾಳೆ.  ರಾಜನ ಸಿಟ್ಟೆಲ್ಲ ಇಳಿಯುತ್ತದೆ.  ತಾನು ಕೇಳಿದಂತೆ ಮೊಟ್ಟೆಯಿದೆ;  ತೋಟವಿದೆ. ಮೇಲೆ ಮಗನೂ ಹುಟ್ಟಿದ್ದಾನೆ. ಇಷ್ಟಾದ ಬಳಿಕ ಹೊಸ ರಾಜಕುಮಾರಿಯೂ ಬಂದಿದ್ದಾಳೆ.

ಈ ಎಲ್ಲ ಐಶ್ವರ್ಯವನ್ನು ನೋಡಿ ರಾಜನಿಗೆ ಸುಖವೆನಿಸಿತು. ಹೆಂಡತಿಯನ್ನು ಹೊಡೆಯುವ ವಿಚಾರವನ್ನು ಬಿಟ್ಟುಕೊಟ್ಟನು.
*****

ಪುಸ್ತಕ: ಉತ್ತರ ಕರ್ನಾಟಕದ ಜನಪದ ಕಥೆಗಳು

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...