Home / ಕಥೆ / ಜನಪದ / ಕೊರವಂಜಿಯ ಕಲೆ

ಕೊರವಂಜಿಯ ಕಲೆ

ಅಣ್ಣನ ಮಗಳನ್ನು ಅಕ್ಕರೆಯಿಂದ ಮಗನಿಗೆ ತೆಗೆದುಕೊಂಡು ಮದುವೆಮಾಡಿದ್ದಳು, ನೀಲಗಂಗಮ್ಮ. ಆದರೆ ಮಗನು ಮನೆಗೇ ಹತ್ತಲೊಲ್ಲನಾದನು. ಹೊರಗಿನಿಂದ ಹೊರಗೇ ಇರತೊಡಗಿದನು.

ಬಾಳೆಯ ಬನದಲ್ಲಿ ಮಗನು ಚಂಡಾಡುತ್ತಿರುವನೆಂಬ ಸುದ್ದಿ ಕೇಳಿ ತಾಯಿ ಅಲ್ಲಿಗೆ ಹೋಗಿ ಮಗನನ್ನು ಕೇಳಿಕೊಂಡಳು . “ನನ್ನ ಸೊಸೆ ಬಾಳೆಗಿಂತ ಚಲುವೆಯಾಗಿದ್ದಾಳೆ. ಒಂದು ಸಾರೆ ಮನೆಗೆ ಬಂದು ಮುಖ ತೋರಿಸು.”

“ಬಾಳೆಗಿಂತ ಚಲುವೆಯಾದರೆ ಭಾವಿಯಲ್ಲಿ ನುಗಿಸು. ಇಲ್ಲವೆ ಉಟ್ಟಬಟ್ಟಿ ಕಳಕೊಂಡು ತವರುಮನೆಗೆ ಕಳಿಸು.  ನಾನು ನನಗೆ ತಿಳಿದಂತೆ ವರ್ತಿಸುವೆನು” ಎಂಬುದು ಮಗನ ಮರುನುಡಿ.

ಇನ್ನೊಂದು ಸಾರೆ, ಮಗನು ನಿಂಬಿಯ ಬನದಲ್ಲಿ ಚೆಂಡಾಡುತ್ತಿದ್ದಾನೆಂದು ಕೇಳಿ ಅಲ್ಲಿಗೆ ಹೋಗಿ . “ನಿಂಬೆಗಿಂತ ನನ್ನ ಸೊಸೆ ಚೆಲುವೆಯಾಗಿದ್ದಾಳೆ ಒಂದೇ ಸಲ ಮನೆಗೆ ಬಂದು ಮೊಗದೋರು” ಎಂದು ಅಂಗಲಾಚಿದಳು.

ಕಟ್ಟಿಗೆ ಮುರಿದು ಕೈಗೆ ಕೊಟ್ಟಂತೆ ಮಗನು ಮರುನುಡಿದನು . “ನಿಂಬೆಗಿಂತ ಚೆಲುವೆಯಾಗಿದ್ದರೆ ಆಕೆಯನ್ನು ಬಾವಿಗೆ ನೂಕು. ಇಲ್ಲವೆ ಕಟ್ಟಿದ ಕರಿಮಣಿಯನ್ನು ಹರಕೊಂಡು ತವರುಮನೆಗೆ ಹಚ್ಚಗೊಡು.  ನಾನು ನನಗೆ ತಿಳಿದಂತೆ ಮಾಡುವೆನು.”

ತಾಯಿ ನಿರಾಶಳಾಗಿ ಮನೆಗೆ ಬಂದು ಸೊಸೆಗೆ ಹೇಳಿದಳು . “ಅಣ್ಣನ ಮಗಳೆಂದು ಹೆಮ್ಮೆಯಿಂದ ನಿನ್ನನ್ನು ತಂದುಕೊಂಡರೆ ಮಗನು ಮಾತೇ ಕೇಳದಾಗಿದ್ದಾನೆ. ಸೊಸೆಮುದ್ದೇ, ಹೋಗಿ ಬಿಡವ್ವ ನಿನ್ನ ತವರುಮನೆಗೆ.”

“ಯಾರು ಅಣ್ಣ, ಯಾರು ತಮ್ಮ? ತಾಯಿ ಯಾರು ತಂದೆ ಯಾರು?  ಅಣ್ಣನ ಮದುವೆ ಹೆಂಡಿರಾರು ಅತ್ತೆ? ತವರು ಮನೆಗೆ ಹೋಗಲಾರೆ ಒಂದು, ಹೊನ್ನು ಖರ್ಚುಮಾಡಿ ಮದುವೆ ಮಾಡಿದಿ; ಈಗ ಎರಡು ಹೊನ್ನು ಖರ್ಚುಮಾಡಿ ನನಗೆ ಕೊರವಂಜಿ ಬುಟ್ಟಿ ಕೊಂಡುಕೊಡು. ಅತ್ತೇ, ಗಂಡನನ್ನು ನೋಡಿ ಬರುವೆ. ಆತನ ರಂಡೆಯನ್ನು ನೋಡಿ ಬರುವೆ” ಎಂದಳು ಸೂಸೆ.

ಹೊರಮೈಗೆ ಮುತ್ತು ಹಚ್ಚಿ, ಒಳಮೈಗ ಮಾಣಿಕಹಚ್ಚಿ ಕೋದ ಬುಟ್ಟಿಯನ್ನು ಅತ್ತೆ ಆ ಕೂಡಲೇ ತಂದಿಟ್ಟಳು. ಸೊಸೆಯು ಅದನ್ನು ತಲೆಯಮೇಲೆ ಹೊತ್ತು ಕಾಲಲ್ಲಿ ಚೆಪ್ಪಲಿ ಮೆಟ್ಟಿಕೊಂಡು ತನ್ನ ರಾಯರಿರುವ ರಾಜಪಟ್ಟಣದ ದಾರಿ ಕೇಳುತ್ತ ನಡೆದಳು –

“ದನ ಕಾಯುವ ಅಣ್ಣಗಳಿರಾ, ದನಕಾಯುವ ತಮ್ಮಗಳಿರಾ, ನಮ್ಮ ರಾಯರಿರುವ ರಾಜಪಟ್ಟಣದ ದಾರಿಯಾವುದು?”

ದನಗಾಹಿಗಳು ಹೇಳಿಕೊಟ್ಟರು – “ಬಾಳೆ ಬನದ ಬಲಕ್ಕೆ ನಿಂಬೆ ಬನದ ಎಡಕ್ಕೆ ನಾಗಸಂಪಿಗೆಯ ನಡುವೆ ಹಸಿರು ಸೀರೆಯುಟ್ಟು, ಹಸಿರು ಕುಪ್ಪಸ ತೊಟ್ಟು, ಹಸಿರು ಸೆರಗ ಮರೆಮಾಡಿಕೊಂಡು ಎದುರು ಬರುತ್ತಿರುವ ತನ್ನಂಥ ಹರದಿಯರನ್ನು ಬಲಗೊಂಡಳು.  ಅದರಂತೆ ಕೆಂಪುಸೀರೆಯುಟ್ಟು, ಕೆಂಪು ಕುಪ್ಪಸ ತೊಟ್ಟು, ಕೆಂಪು ಸೆರಗು ಮರೆಮಾಡಿಕೊಂಡು ಎದುರು ಬರುತ್ತಿರುವ ಹರದಿಯರನ್ನೂ ಬಲಗೊಂಡಳು. ಬೀದಿಯಲ್ಲಿ ಸಾಗಿದ ಆನೆಗಳ ಮುಂದೆ, ಆನೆಮರಿಗಳ ಮುಂದೆ, ಆನೆಯನ್ನೇರುವ ಚದುರಮನ್ನೆಯರ ಮಗಳು ರಾಜಬೀದಿಯಲ್ಲಿ ಹೊರಟಳು.  ಒಂಟೆಗಳ ಮುಂದೆ, ಒಂಟೆಗಳನ್ನೇರುವ ಭಂಟಮನ್ನೆಯರ ಮಗಳು ರಾಜಬೀದಿಯಲ್ಲಿ ಸಾಗಿದಳು.

“ಕಾಲಲ್ಲಿ ಕಂಚಿನಪಿಲ್ಲೆ, ಕಿವಿಯಲ್ಲಿ ಹಿತ್ತಾಳೆಯ ಓಲೆ, ಸರಪಳಿ ಗಂಟಿಸರದಾಳಿ ಧರಿಸಿದ ನೀನು ಯಾವನಾಡಿನ ಕೊರವೆ” ಎಂದು ಕೇಳಿದನು ಒಬ್ಬ ತರುಣ.

“ನಾನು ಈ ನಾಡ ಕೊರವಿಯೂ ಅಲ್ಲ ; ಆ ನಾಡ ಕೊರವಿಯೂ ಅಲ್ಲ.  ದೇವಲೋಕದ ಕೊರವೆ. ಜಾಣ, ನಾನು ದೇವರು ಹೇಳುತ್ತೇನೆ ಕೇಳು-ಸೂಳೆಯರು ನಿನ್ನನ್ನು ಮೋಡಿಮಾಡಿ ಹೊಡೆಯುತ್ತಾರೆ” ಎ೦ದಳು ಕೊರವಿ.

“ಮಡದಿಯನ್ನು ಬಿಟ್ಟು ಹನ್ನೆರಡುವರುಷ ಆಯ್ತು ಕೊರವೀ. ಮಡದಿಯನ್ನು ಕೂಡಿಸು. ಕೈಮುಗಿಯುತ್ತೇನೆ ; ನಿನ್ನ ಕಾಲು ಬೀಳುತ್ತೇನೆ. ಅಷ್ಟು ಮಾಡಿದರೆ ನಿನ್ನನ್ನು ಕರೆತಂದು ಸೀರೆ ಕುಪ್ಪಸ ಉಡುಗೊರೆ ಕೊಡುತ್ತೇನೆ” ಎಂದನು ಆ ಜಾಣ.

“ನನ್ನ ಕಾಲ ಬೀಳುವುದಕ್ಕೆ, ನನ್ನ ಕೈಮುಗಿಯುವುದಕ್ಕೆ ಯಾರಿಗೆ ಯಾವ ತಪ್ಪು ಮಾಡಿರುವಿರಿ ಮಾರಾಯರೇ?  ಹೋಗೋಣ ನಡೆಯಿರಿ” ಎಂದು
ಕೊರವಿ ನುಡಿದು, ಆತನ ದಿಗಿಲನ್ನೆಲ್ಲ ಬಯಲು ಮಾಡಿದಳು.

ಗಂಡಹೆಂಡಿರು ಕೂಡಿಕೊಂಡು ಸಡಗರದಿಂದ ತಮ್ಮೂರ ಹಾದಿ ಹಿಡಿದರು. ಹಿ೦ದೆ ಆ ರಂಡಿ – ಸೂಳೆ ಬೆನ್ನುಹತ್ತಿದ್ದನ್ನು ಕಂಡು, ಆಕೆಯನ್ನು ಹಿಂದಕ್ಕೆ ಹೊಡೆದು ಹಾಕಿದರು.

“ಆರು ವರುಷ ತಿರುಗಿ ಅರಸನನ್ನು ತಂದಿದ್ದೇನೆ ಅತ್ತೇ, ಹೊರಗಡೆ ಬಾ.  ನಿನ್ನ ಮಗನನ್ನು ಒಳಗಡೆ ಕರೆದುಕೋ” ಎಂದು ಸೊಸೆಯು ಕೂಗಿದಾಗ ಅತ್ತೆಗಾದ ಆನಂದಕ್ಕೆ ಅಳತೆಯಿದೆಯೆ?
*****

ಪುಸ್ತಕ: ಉತ್ತರ ಕರ್ನಾಟಕದ ಜನಪದ ಕಥೆಗಳು

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...