Home / ಕಥೆ / ಜನಪದ / ಕೊರವಂಜಿಯ ಕಲೆ

ಕೊರವಂಜಿಯ ಕಲೆ

ಅಣ್ಣನ ಮಗಳನ್ನು ಅಕ್ಕರೆಯಿಂದ ಮಗನಿಗೆ ತೆಗೆದುಕೊಂಡು ಮದುವೆಮಾಡಿದ್ದಳು, ನೀಲಗಂಗಮ್ಮ. ಆದರೆ ಮಗನು ಮನೆಗೇ ಹತ್ತಲೊಲ್ಲನಾದನು. ಹೊರಗಿನಿಂದ ಹೊರಗೇ ಇರತೊಡಗಿದನು.

ಬಾಳೆಯ ಬನದಲ್ಲಿ ಮಗನು ಚಂಡಾಡುತ್ತಿರುವನೆಂಬ ಸುದ್ದಿ ಕೇಳಿ ತಾಯಿ ಅಲ್ಲಿಗೆ ಹೋಗಿ ಮಗನನ್ನು ಕೇಳಿಕೊಂಡಳು . “ನನ್ನ ಸೊಸೆ ಬಾಳೆಗಿಂತ ಚಲುವೆಯಾಗಿದ್ದಾಳೆ. ಒಂದು ಸಾರೆ ಮನೆಗೆ ಬಂದು ಮುಖ ತೋರಿಸು.”

“ಬಾಳೆಗಿಂತ ಚಲುವೆಯಾದರೆ ಭಾವಿಯಲ್ಲಿ ನುಗಿಸು. ಇಲ್ಲವೆ ಉಟ್ಟಬಟ್ಟಿ ಕಳಕೊಂಡು ತವರುಮನೆಗೆ ಕಳಿಸು.  ನಾನು ನನಗೆ ತಿಳಿದಂತೆ ವರ್ತಿಸುವೆನು” ಎಂಬುದು ಮಗನ ಮರುನುಡಿ.

ಇನ್ನೊಂದು ಸಾರೆ, ಮಗನು ನಿಂಬಿಯ ಬನದಲ್ಲಿ ಚೆಂಡಾಡುತ್ತಿದ್ದಾನೆಂದು ಕೇಳಿ ಅಲ್ಲಿಗೆ ಹೋಗಿ . “ನಿಂಬೆಗಿಂತ ನನ್ನ ಸೊಸೆ ಚೆಲುವೆಯಾಗಿದ್ದಾಳೆ ಒಂದೇ ಸಲ ಮನೆಗೆ ಬಂದು ಮೊಗದೋರು” ಎಂದು ಅಂಗಲಾಚಿದಳು.

ಕಟ್ಟಿಗೆ ಮುರಿದು ಕೈಗೆ ಕೊಟ್ಟಂತೆ ಮಗನು ಮರುನುಡಿದನು . “ನಿಂಬೆಗಿಂತ ಚೆಲುವೆಯಾಗಿದ್ದರೆ ಆಕೆಯನ್ನು ಬಾವಿಗೆ ನೂಕು. ಇಲ್ಲವೆ ಕಟ್ಟಿದ ಕರಿಮಣಿಯನ್ನು ಹರಕೊಂಡು ತವರುಮನೆಗೆ ಹಚ್ಚಗೊಡು.  ನಾನು ನನಗೆ ತಿಳಿದಂತೆ ಮಾಡುವೆನು.”

ತಾಯಿ ನಿರಾಶಳಾಗಿ ಮನೆಗೆ ಬಂದು ಸೊಸೆಗೆ ಹೇಳಿದಳು . “ಅಣ್ಣನ ಮಗಳೆಂದು ಹೆಮ್ಮೆಯಿಂದ ನಿನ್ನನ್ನು ತಂದುಕೊಂಡರೆ ಮಗನು ಮಾತೇ ಕೇಳದಾಗಿದ್ದಾನೆ. ಸೊಸೆಮುದ್ದೇ, ಹೋಗಿ ಬಿಡವ್ವ ನಿನ್ನ ತವರುಮನೆಗೆ.”

“ಯಾರು ಅಣ್ಣ, ಯಾರು ತಮ್ಮ? ತಾಯಿ ಯಾರು ತಂದೆ ಯಾರು?  ಅಣ್ಣನ ಮದುವೆ ಹೆಂಡಿರಾರು ಅತ್ತೆ? ತವರು ಮನೆಗೆ ಹೋಗಲಾರೆ ಒಂದು, ಹೊನ್ನು ಖರ್ಚುಮಾಡಿ ಮದುವೆ ಮಾಡಿದಿ; ಈಗ ಎರಡು ಹೊನ್ನು ಖರ್ಚುಮಾಡಿ ನನಗೆ ಕೊರವಂಜಿ ಬುಟ್ಟಿ ಕೊಂಡುಕೊಡು. ಅತ್ತೇ, ಗಂಡನನ್ನು ನೋಡಿ ಬರುವೆ. ಆತನ ರಂಡೆಯನ್ನು ನೋಡಿ ಬರುವೆ” ಎಂದಳು ಸೂಸೆ.

ಹೊರಮೈಗೆ ಮುತ್ತು ಹಚ್ಚಿ, ಒಳಮೈಗ ಮಾಣಿಕಹಚ್ಚಿ ಕೋದ ಬುಟ್ಟಿಯನ್ನು ಅತ್ತೆ ಆ ಕೂಡಲೇ ತಂದಿಟ್ಟಳು. ಸೊಸೆಯು ಅದನ್ನು ತಲೆಯಮೇಲೆ ಹೊತ್ತು ಕಾಲಲ್ಲಿ ಚೆಪ್ಪಲಿ ಮೆಟ್ಟಿಕೊಂಡು ತನ್ನ ರಾಯರಿರುವ ರಾಜಪಟ್ಟಣದ ದಾರಿ ಕೇಳುತ್ತ ನಡೆದಳು –

“ದನ ಕಾಯುವ ಅಣ್ಣಗಳಿರಾ, ದನಕಾಯುವ ತಮ್ಮಗಳಿರಾ, ನಮ್ಮ ರಾಯರಿರುವ ರಾಜಪಟ್ಟಣದ ದಾರಿಯಾವುದು?”

ದನಗಾಹಿಗಳು ಹೇಳಿಕೊಟ್ಟರು – “ಬಾಳೆ ಬನದ ಬಲಕ್ಕೆ ನಿಂಬೆ ಬನದ ಎಡಕ್ಕೆ ನಾಗಸಂಪಿಗೆಯ ನಡುವೆ ಹಸಿರು ಸೀರೆಯುಟ್ಟು, ಹಸಿರು ಕುಪ್ಪಸ ತೊಟ್ಟು, ಹಸಿರು ಸೆರಗ ಮರೆಮಾಡಿಕೊಂಡು ಎದುರು ಬರುತ್ತಿರುವ ತನ್ನಂಥ ಹರದಿಯರನ್ನು ಬಲಗೊಂಡಳು.  ಅದರಂತೆ ಕೆಂಪುಸೀರೆಯುಟ್ಟು, ಕೆಂಪು ಕುಪ್ಪಸ ತೊಟ್ಟು, ಕೆಂಪು ಸೆರಗು ಮರೆಮಾಡಿಕೊಂಡು ಎದುರು ಬರುತ್ತಿರುವ ಹರದಿಯರನ್ನೂ ಬಲಗೊಂಡಳು. ಬೀದಿಯಲ್ಲಿ ಸಾಗಿದ ಆನೆಗಳ ಮುಂದೆ, ಆನೆಮರಿಗಳ ಮುಂದೆ, ಆನೆಯನ್ನೇರುವ ಚದುರಮನ್ನೆಯರ ಮಗಳು ರಾಜಬೀದಿಯಲ್ಲಿ ಹೊರಟಳು.  ಒಂಟೆಗಳ ಮುಂದೆ, ಒಂಟೆಗಳನ್ನೇರುವ ಭಂಟಮನ್ನೆಯರ ಮಗಳು ರಾಜಬೀದಿಯಲ್ಲಿ ಸಾಗಿದಳು.

“ಕಾಲಲ್ಲಿ ಕಂಚಿನಪಿಲ್ಲೆ, ಕಿವಿಯಲ್ಲಿ ಹಿತ್ತಾಳೆಯ ಓಲೆ, ಸರಪಳಿ ಗಂಟಿಸರದಾಳಿ ಧರಿಸಿದ ನೀನು ಯಾವನಾಡಿನ ಕೊರವೆ” ಎಂದು ಕೇಳಿದನು ಒಬ್ಬ ತರುಣ.

“ನಾನು ಈ ನಾಡ ಕೊರವಿಯೂ ಅಲ್ಲ ; ಆ ನಾಡ ಕೊರವಿಯೂ ಅಲ್ಲ.  ದೇವಲೋಕದ ಕೊರವೆ. ಜಾಣ, ನಾನು ದೇವರು ಹೇಳುತ್ತೇನೆ ಕೇಳು-ಸೂಳೆಯರು ನಿನ್ನನ್ನು ಮೋಡಿಮಾಡಿ ಹೊಡೆಯುತ್ತಾರೆ” ಎ೦ದಳು ಕೊರವಿ.

“ಮಡದಿಯನ್ನು ಬಿಟ್ಟು ಹನ್ನೆರಡುವರುಷ ಆಯ್ತು ಕೊರವೀ. ಮಡದಿಯನ್ನು ಕೂಡಿಸು. ಕೈಮುಗಿಯುತ್ತೇನೆ ; ನಿನ್ನ ಕಾಲು ಬೀಳುತ್ತೇನೆ. ಅಷ್ಟು ಮಾಡಿದರೆ ನಿನ್ನನ್ನು ಕರೆತಂದು ಸೀರೆ ಕುಪ್ಪಸ ಉಡುಗೊರೆ ಕೊಡುತ್ತೇನೆ” ಎಂದನು ಆ ಜಾಣ.

“ನನ್ನ ಕಾಲ ಬೀಳುವುದಕ್ಕೆ, ನನ್ನ ಕೈಮುಗಿಯುವುದಕ್ಕೆ ಯಾರಿಗೆ ಯಾವ ತಪ್ಪು ಮಾಡಿರುವಿರಿ ಮಾರಾಯರೇ?  ಹೋಗೋಣ ನಡೆಯಿರಿ” ಎಂದು
ಕೊರವಿ ನುಡಿದು, ಆತನ ದಿಗಿಲನ್ನೆಲ್ಲ ಬಯಲು ಮಾಡಿದಳು.

ಗಂಡಹೆಂಡಿರು ಕೂಡಿಕೊಂಡು ಸಡಗರದಿಂದ ತಮ್ಮೂರ ಹಾದಿ ಹಿಡಿದರು. ಹಿ೦ದೆ ಆ ರಂಡಿ – ಸೂಳೆ ಬೆನ್ನುಹತ್ತಿದ್ದನ್ನು ಕಂಡು, ಆಕೆಯನ್ನು ಹಿಂದಕ್ಕೆ ಹೊಡೆದು ಹಾಕಿದರು.

“ಆರು ವರುಷ ತಿರುಗಿ ಅರಸನನ್ನು ತಂದಿದ್ದೇನೆ ಅತ್ತೇ, ಹೊರಗಡೆ ಬಾ.  ನಿನ್ನ ಮಗನನ್ನು ಒಳಗಡೆ ಕರೆದುಕೋ” ಎಂದು ಸೊಸೆಯು ಕೂಗಿದಾಗ ಅತ್ತೆಗಾದ ಆನಂದಕ್ಕೆ ಅಳತೆಯಿದೆಯೆ?
*****

ಪುಸ್ತಕ: ಉತ್ತರ ಕರ್ನಾಟಕದ ಜನಪದ ಕಥೆಗಳು

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...