Home / ಕವನ / ಕವಿತೆ / ಮುಳ್ಳಗಳ್ಳಿ

ಮುಳ್ಳಗಳ್ಳಿ

ಮುಳ್ಳಗಳ್ಳಿ ಬಳಿಯೆ ನೀನು
ಕಳ್ಳಿಕರಿಯ ಹುಳದ ಕೊಲೆಗೆ
ಅಳಲಿ ಬಳಲಿ ಬಾಯಬಿಟ್ಟು
ನೊಂದು ಬೆಂದು ಬೂದಿಯಾಗಿ ಕಾಣುತಿರುವೆಯ
ಚಂದದಿಂಪು ಸಂದಿತೆಂದು ಸವೆಯುತಿರುವೆಯ
ಕೋಟಗೀಟೆಯಂತೆ ಬೇಲಿ
ಕೂಟಕೆಲ್ಲ ನಿನ್ನ ನಡಿಸೆ
ಮಾಟವಾಗಿ ಮೆರೆದು ನಿಂದು
ಸೊಬಗಿನಿಂದ ಬೆಳೆದು ಬಂದ ದಿವಸ ಪೋಯಿತೆ
ಜವನ ಜಾತ್ರೆ ಜವದಿ ಬಂದು ಮೋಸವಾಯಿತೆ
ಮುಳ್ಳಿನಿಂದ ಕೂಡಿಯಿರುವ
ಒಳ್ಳೆ ಹಣ್ಣಿನಿಂದ ಸಿಳ್ಳಿ-
ಮಿಳ್ಳಿ ಜಗವ ತಣಿಸಿ ಕುಣಿಸಿ
ಚಲುವಿನಿಂದ ಬೆಳೆಪ ಬಾಲರಮೃತವೆಲ್ಲಿದೆ
ತಿಳಿಯದಾಯ್ತು ತಿರೆಗೆ ಬೇರೆತರವದೆಲ್ಲಿದೆ
ಹಕ್ಕಿ ಹರಿಣಿ ಹಾವುಗಳಿಗೆ
ತಕ್ಕುದಾದ ಇಕ್ಕೆಯನ್ನು
ಮಕ್ಕಳಂತೆ ಸಾಕಿ ಕೊಡಲು
“ನಾಡತಾಯಿ ಬೀಡು” ಎಂದು ಕೂಗಿ ಕಲೆತವೆ
ಕೇಡುಗಾಲ ಬರಲು ತಾವೆಯೋಡಿ ಹೋದವೆ
ಹಲವು ಕಾಲ ಹಲವು ಬಗೆಯ
ಹೊಲವ ಬಳಸಿ ಮಲೆತುನಿಂತು
ಛಲದೆ ಬೆಳೆಯ ಜನರು ನಿನ್ನ
ಸವರಿ ಸವರಿ ಸೋತು ಸೋತು ಸರಿದು ನಿಂತ‌ರೈ
ಬವಣೆಯಿಂದ ಕೊಲುವ ಮದ್ದನಿತ್ತು ದಣಿದರೈ
ರಕ್ತಬೀಜ ರಾತ್ರಿಚರನ
ರಕ್ತದಂತೆ ಬಿದ್ದ ಕಡೆಗೆ
ವ್ಯಕ್ತರೂಪದಿಂದಲೇಳೆ
ಮತಿಯು ಹರಿಯದಿರಲು ನರರು ಮೊರೆಯನಿಟ್ಟರೆ
ವ್ಯಥಿತವಾದ ದನಿಯನೆಲ್ಲ ದೇವ ಕೇಳ್ದನೆ
ರೀತಿ ನೀತಿ ತಿಳಿದುನೋಡಿ
ಜಾತಿ ರತ್ನದಂತ ದೇವಿ
ಖ್ಯಾತಿಗೊಂಡು ನಡೆಯದಿರಲು
ಪೊಡವಿಯೊಡೆಯ ಸಿಟ್ಟಿನಿಂದೆ ಪಿಡುಗಬಿಟ್ಟನೆ
ಒಡನೆ ಹುಳದ ಗಡಣದಿಂದೆ ಕೊಲೆಯ ನಡಿಸಿತೆ
ಸಿಟ್ಟಿಗೆದ್ದು ದೇವ ಕಷ್ಟ
ಕೊಟ್ಟನೆಂಬ ನಾಡ ನುಡಿಯ
ಮಟ್ಟಿಗಿಳಿಯದಿರುವ ಮಾತ
ಮನದೆ ತೂಗಿ ನೋಡೆ ದಯಾಮಯನು ಮಾಳ್ಪನೆ
ಜನಕತಂದೆ “ಅನುವ ತನುವ” ನೋಡದಿರುವನೆ
ಸಾವಿರಾರು ವರುಷದಿಂದೆ
ಧರೆಯ ಬಳಸಿ ಮರೆದು ನಿಂದ
ಅರಸುತನದ “ಅರವು ಮರವು”
ಅರಿಯದಂತೆ ಕರಗಿ ಕರಗಿ ಮಾಯವಾಯಿತೆ
ಪಿರಿದೆನಿಪ್ಪ ಸಿರಿಯ ಮರವು ಸರಿದು ಹೋಯಿತೆ
೧೦
ತಾಯಿ ನಿನ್ನ ಬೇನೆಯೇನು
ಬಾಯಿ ಬರದೆ ಪೇಳುವುದಕೆ
ಕಾಯ್ವರಾರೊ ಕೊನೆಯ ಕಾಣೆ
ಯಾವದುಷ್ಟ ಪಿಡುಗು ಬಂದು ಕುಲವ ಕಡಿವುದೈ
ಕಾವನೆಲ್ಲಿ ಇರುವನಯ್ಯೊ ಕುಲವೆ ಕಳೆವುದೈ
೧೧
ಕರ್ಮಭೂಮಿಯಲ್ಲಿ ಬಂದು
ಕರ್ಮವನ್ನು ಮಾಡಿ ನಿಂದು
ಕರ್ಮದಿಂದ ಹುಟ್ಟು ಸಾವ
ತೊಟ್ಟು ಧರೆಗೆ ಬಂದು ಆಡಿಪಾಡಿ ಮಡಿವೆವೈ
ಬಿಟ್ಟು ಬಿಡದ ಕರ್ಮವನ್ನು ಕಟ್ಟಿ ನಡೆವೆವೈ
೧೨
ಬರದ ಕಾಲ ಬಂದು ಜನರ
ತರಿದು ತರಿದು ತೂರುತ್ತಿರು
ಹರಣವುಳಿಸಿ ಪೊರೆದ ತಾಯಿ
ಸಿರಿಯ ತೊರೆದು ಧರೆಯ ತೊರೆದು ಪೋಗುತಿರುವೆಯ
ಮರುಕದಿಂದ ಮನದೆ ನೊಂದು ಹರಣ ತೊರೆವೆಯ
೧೩
ಕಷ್ಟ ಕಾಲವೊದಗಿ ಬರಲು
ಇಷ್ಟರಾಪ್ತ ಮಿತ್ರರೆಲ್ಲ
ನಿಷ್ಟುರಾಗಿ ನಡೆವರಯ್ಯ
ಕಾಲ ಬರಲು ಕಾಲು ತಾನೆ ಕೊಲೆಗೆ ನಿಲುವುದೈ
ಗೆಳೆಯರೆಂಬ ಕೊಳಚೆಯೆಲ್ಲ ಕಳಚಿ ಬೀಳ್ವುದೈ
೧೪
ಪರಮಪುಣ್ಯ ಪರಮಪಾಪಿ
ಧರೆಯನಾಳ್ದ ನರಪರೆಲ್ಲ
ಹಿರಿದು ಕಿರಿದು ಪದವಿ ತೊರೆದು
ಕಾಲಗತಿಗೆ ಕಟ್ಟುಬಿದ್ದು ಮಾಯವಾದರೈ
ಕಾಲಬರಲು ಯಾರು ತಾನೆ ಜಗದೆ ಉಳಿವರೈ
೧೫
ಅಂಗವೆಲ್ಲ ರೋಗದಿಂದ
ವಿಂಗಡಾಗಿ ಕಳಚಿ ಬೀಳ್ವ
ಸಾಂಗವಾದ ಸಾವ ನೋಡೆ
ಒಡನೆ ದುಗುಡದಿಂದ ಕೂಡಿ ಒಡಲೆಯುರಿಯುದೈ
ಪೊಡವಿಯಾಣ್ಮನಡಿಯಕಂಡು ನುಡಿಯುತ್ತಿರುವುದೈ
೧೬
ನಿನ್ನ ದುಃಖವೆನ್ನತಾಗೆ
ಬನ್ನ ಬಡುವ ಮನವು ತಾನೆ
ಭಾವಗೀತೆಯಲ್ಲಿ ಮೊಳೆಯೆ
ಕಲಿಸದಿರ್ದ ಕವನ ತಾನೆ ಕಟ್ಟಿ ಬರುವುದೈ
ಕರುಳಿಗೆಲ್ಲ ತಿಳಿವ ತಾನೆ ತೊಳೆದು ನಿಲುವುದೈ
೧೭
ಜಗದ ಬಗೆಯ ಬಗೆದು ನೋಡಿ
ಬಗೆದ ದುಗುಡವೆಲ್ಲ ನುಂಗಿ
ಮಗುಳಿ ಮನವ ಬಿಗಿದು ಬಿಗಿದು
ಇಳೆಗೆ ತಂದು ತಿಳಿವನಿತ್ತ ದೊರೆಯ ಪಾಡುವ
ಕಳೆವಕಾಯ ಕಳಚಿಬೀಳೆ ಒಲಿದು ಪಾಡುವ
*****
Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...