Home / ಕಥೆ / ಜನಪದ / ಒಂದು ಹಾಡು ಒಂದು ಕಥೆ

ಒಂದು ಹಾಡು ಒಂದು ಕಥೆ

ಒಂದೂರಿನಲ್ಲಿ ಒಬ್ಬ ಗೃಹಿಣಿಯಿದ್ದಳು. ಆಕೆಗೆ ಒಂದು ಕಥೆ ಗೊತ್ತಿತ್ತು.  ಒಂದು ಹಾಡು ಬರುತ್ತಿತ್ತು. ಆದರೆ ಅವಳು ತನಗೆ ಗೊತ್ತಿದ್ದ ಕಥೆಯನ್ನು
ಯಾರಮುಂದೆಯೂ ಹೇಳಿದವಳಲ್ಲ. ತಾನು ಕಲಿತ ಹಾಡನ್ನು ಯಾರಮುಂದೆಯೂ ಹಾಡಿದವಳಲ್ಲ.

ಆಕೆಯ ಮನಸ್ಸಿನಲ್ಲಿ ಸೆರೆಸಿಕ್ಕಿ ಆ ಕಥೆ ಆ ಹಾಡು ಅಲ್ಲಿಂದ ಕಾಲ್ತೆಗೆದು ಓಡಿ ಹೋಗಬೇಕೆಂದು ಮಾಡಿದವು. ಅಲ್ಲಿ ನಿಲ್ಲುವುದೇ ಬೇಡವಾಗಿತ್ತು ಅವುಗಳಿಗೆ. ಯಾವ ಬಗೆಯಿಂದ ಹೊರಬೀಳಬೇಕು – ಎಂದು ಯೋಚಿಸಿ ಕಡೆಗೆ ಕಥೆಯು ಹೊರಬಿದ್ದು ಅಂಗಳದಲ್ಲಿ ಎರಡು ಬೂಟುಗಳಾಗಿ ಕುಳಿತಿತು. ಹಾಡು ಒಂದು ಕೋಟು ಆಗಿ ಗೂಟಿಗೆ ನೇತು ಬಿದ್ದಿತು.

ಆ ಗೃಹಿಣಿಯ ಪತಿಯು ಮನೆಗೆ ಬಂದಾಗ ಅಂಗಳದೊಳಗಿನ ಬೂಟುಗಳನ್ನೂ ಗೂಟಕ್ಕೆ ತೂಗಬಿದ್ದ ಕೋಟನ್ನೂ ಕಂಡು ಹೆಂಡತಿಗೆ ಕೇಳಿದನು – “ಯಾರು ಬಂದಿದ್ದಾರೆ ಮನೆಗೆ?”

“ಯಾರೂ ಬಂದಿಲ್ಲವಲ್ಲ!” ಎಂದಳು ಹೆಂಡತಿ.

“ಹಾಗಾದರೆ ಈ ಬೂಟು ಈ ಕೋಟು ಯಾರವು?” ಪತಿಯ ಪ್ರಶ್ನೆ.

“ನನಗೂ ತಿಳಿಯದು” ಎಂದು ಸತಿ ಹೇಳಿದ ಉತ್ತರದಿಂದ ಗಂಡನಿಗೆ ಸಮಾಧಾನವೆನಿಸಲಿಲ್ಲ. ಸಂಶಯವೇ ಹುಟ್ಟಿಕೊಂಡಿತು. ಅದರಿಂದ ಅವರ ಮಾತುಕತೆಗಳಲ್ಲಿ ವಿರಸವು ಮೊಳೆಯಿತು. ವಿರಸವು ಕದನವಾಗಿ ಪರಿಣಮಿಸಿತು.  ಗಂಡನು ಹೆಂಡತಿಯ ಮೇಲೆ ಮುನಿಸಾಗಿ, ತನ್ನ ಕಂಬಳಿಯನ್ನು ತೆಗೆದುಕೊಂಡವನೇ ಹೊರಬಿದ್ದು ಹನುಮಂತ ದೇವರ ಗುಡಿಗೆ ಮಲಗಲು ಹೋದನು.

ಗೃಹಿಣಿಗೇನೂ ತಿಳಿಯಲಿಲ್ಲ. ಮನೆಯಲ್ಲಿ ಒಬ್ಬಳೇ ಅಡ್ಡಾದಳು. ನಿದ್ರೆಯೇ ಬರಲೊಲ್ಲದು. ಅದೇ ಚಿಂತೆ; ಅದೇ ವಿಚಾರ, ತಿರುತಿರುಗಿ ಬಂದು ನಿಲ್ಲುವದು. ಆ ಬೂಟು ಆ ಕೋಟು ಯಾರವು ? ಬಹಳ ಹೊತ್ತಿನ ಮೇಲೆ ಬೇಸತ್ತು ದೀಪವನ್ನಾರಿಸಿ ಮಲಗಿಕೊಂಡಳು.

ಆ ಊರೊಳಗಿನ ಹಣತಿಗಳೆಲ್ಲ ರಾತ್ರಿಯನ್ನು ಕಳೆಯಲು ಹನುಮಂತ ದೇವರ ಗುಡಿಗೆ ತೆರಳುವುದು ವಾಡಿಕೆಯಾಗಿತ್ತು. ಎಲ್ಲ ಮನೆಗಳಿಂದ ಹಣತಿಗಳು ಬಂದು ಬಂದು ನೆರೆದವು. ಬಹಳ ತಡಮಾಡಿ ಒಂದು ಹಣತಿ ಬಂದಿತು.  ಅದಕ್ಕೆ ಉಳಿದ ಹಣತಿಗಳೆಲ್ಲ ಕೇಳಿದವು – “ಇಷ್ಟೇಕೆ ತಡ ಬರಲಿಕ್ಕೆ ?”

“ನಮ್ಮ ಮನೆಯಲ್ಲಿ ಗಂಡಹೆಂಡರು ಜಗಳಾಡುತ್ತ ಕುಳಿತಿದ್ದರಿಂದ ರಾತ್ರಿಯಾಯಿತು” ಎಂದಿತು ಆ ಹಣತಿ.

“ಏಕೆ ಜಗಳಾಡಿದರು ಆ ಗಂಡಹೆಂಡಿರು ?”

“ಗಂಡನಿಲ್ಲದಾಗ ಅವರ ಮನೆಯಂಗಳಕ್ಕೆ ಜೋಡು ಬೂಟುಗಳು ಪಡಸಾಲೆಯ ಗೂಟಿಗೆ ಒಂದು ಕೋಟು ಬಂದಿದ್ದವು. ಅವು ಯಾರವು ಎಂದು ಗಂಡ ಕೇಳಿದರೆ, ನನಗೆ ಗೊತ್ತಿಲ್ಲವೆಂದು ಹೆಂಡತಿ ಹೇಳಿದಳು. ಅದಕ್ಕಾಗಿ ಜಗಳಾಡಿದರು” ಎಂದಿತು ಹಣತಿ.

“ಹಾಗಾದರೆ ಆ ಬೂಟು ಕೋಟು ಎಲ್ಲಿಂದ ಬಂದವು ?”

“ನಮ್ಮ ಮನೆಯೊಡತಿಗೆ ಒಂದು ಕಥೆ, ಒಂದು ಹಾಡು ಗೊತ್ತಿದೆ. ಎಷ್ಟು ಚಾಲುವರೆದರೂ ತಾನು ಕಲಿತ ಕಥೆ ಹೇಳಿದವಳಲ್ಲ.  ತನ್ನ ಹಾಡು ಅಂದು ತೋರಿಸಿದವಳಲ್ಲ. ಸೆರೆಸಿಕ್ಕ ಆ ಕಥೆ ಹಾಡುಗಳು ಬೂಟುಕೋಟುಗಳಾಗಿ ಹೊರಬಿದ್ದಿವೆ. ಅದು ಆಕೆಗೆ ಗೊತ್ತಾಗಿಲ್ಲ.”

ಆ ಹಣತಿಯ ವಿವರಣೆಯನ್ನೆಲ್ಲ ಕಂಬಳಿ ಮುಸುಕಿನಲ್ಲಿಯೇ ಕೇಳಿದ ಆ ಗಂಡನ ಸಂಶಯವೆಲ್ಲ ನಿವಾರಣೆ ಆಯ್ತು.  ನಿಶ್ಚಿಂತೆಯಿಂದ ಮಲಗಿ ನಿದ್ದೆಮಾಡಿ ಮುಂಜಾನೆ ಮನೆಗೆ ಹೋದನು. ಕಥೆ ಹಾಡಿನ ಸುದ್ದಿ ತೆಗೆದು ಹೆಂಡತಿಗೆ ಮಾತಾಡಿಸಿ ನೋಡಿದನು. ಆದರೆ ಆಕೆಗೆ ಬರುತ್ತಿದ್ದ ಕಥೆ ಹಾಡು ಎರಡೂ ಮರೆತುಹೋದವೆಂದು ತಿಳಿಯಿತು.
*****

ಪುಸ್ತಕ: ಉತ್ತರ ಕರ್ನಾಟಕದ ಜನಪದ ಕಥೆಗಳು

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...