Home / ಕವನ / ಅನುವಾದ / ಕಲ್ಕತ್ತಾ

ಕಲ್ಕತ್ತಾ

ಮೂಲ: ತಾರಾಪದ ರಾಯ್

ಹೇಳು ಕಲ್ಕತ್ತಾ,
ನನ್ನ ಬಳಿಯಿದ್ದ ಹಸಿರಂಗಿ, ಪಾಸ್‌ ಪೋರ್ಟುಗಳ
ನೆನಪಿದೆಯೆ ನಿನಗೆ?
ಪೂರ್ವ ಪಾಕಿಸ್ತಾನದಿಂದ ಓಡುತ್ತ ಬಂದ ರೈಲಿಂದ ಇಳಿದು
ಸಿಯಾಲ್ದಾ ನಿಲ್ದಾಣದ ಹೆಬ್ಬಾಗಿಲನ್ನು ದಾಟಿ ಬಂದೆ ಸುರಿಮಳೆಯಲ್ಲಿ.
ನನ್ನ ಜೀವನದಲ್ಲೆ ಮೊದಲ ಸಲ ಕಂಡೆ
ಷೂ ಪಾಲಿಷ್ ಮಾಡುವ ಹುಡುಗನನ್ನು;
ನೋಡಿ ರೋಮಾಂಚಗೊಂಡೆ,
ನನ್ನ ಕನಸಿನ ನಗರ ಕಂಡುಕೊಂಡೆ.
ಮೊದಲ ಬಾರಿಗೆ ಒಂದು ಟ್ರಾಮ್‌ಕಾರು ಕಂಡದ್ದು ನಿನ್ನಲ್ಲೆ,
ಮೊದಲ ದರ್ಜೆಯ ಸೀಟು ಕೂಡ ಇತ್ತು ಅದಕ್ಕೆ.
ಮೊದಲ ದರ್ಜೆಯೆ ನೀನೂ ಕಲ್ಕತ್ತಾ.
ಒಂದೊಂದು ಮನೆಯನ್ನೂ ಮುಗಿಲು ಕವಿದಿತ್ತು
ಒಂದೊಂದು ಮನೆಗೂ ನಿಗೂಢ ಕಿಟಕಿ ಇತ್ತು
ಆಟವಾಡುತ್ತಿತ್ತು ಅವುಗಳ ಮುಖದ ಮೇಲೆ
ಮಬ್ಬುಗತ್ತಲೆ ಬೆಳಕು.

ಹಸಿರು ಷರಟನ್ನು
ಹರಿದ ಬೂಟನ್ನು
ತೊಟ್ಟು ತಿರುಗಿದೆ ಇಡೀ ಕಲ್ಕತ್ತೆಯನ್ನು.
ತಿರುಕರನ್ನು ಮತ್ತು ಹುಚ್ಚರನ್ನು
ಹುಚ್ಚಾಗಿ ಕುಡಿದು ಅಮಲೇರಿದವರನ್ನು
ದಿಕ್ಕಿಂದ ದಿಕ್ಕಿಗೆ ಕಾಮನಬಿಲ್ಲಿನ ಹಾಗೆ
ಬಾಗಿ ಸಾಗಿದ್ದ ಮೆರವಣಿಗೆ ಸಾಲನ್ನು
ಜನ ಮುಸುರುತ್ತಿದ್ದ ಚಾ ಅಂಗಡಿಗಳನ್ನು
ದಾರಿ ಮೂಲೆಗಳಲ್ಲಿ ಹರಟೆಕೊಚ್ಚುತ್ತಿದ್ದ
ಸೋಮಾರಿ ಗುಂಪನ್ನು.

ಮಧ್ಯಾಹ್ನಕ್ಕೆ ಮುಂಚೆ ಗಾಳಿ ಬಡಿತಕ್ಕೆ ಕಳಚಿ
ಚೆಲ್ಲಾಪಿಲ್ಲಿ ಬಿದ್ದ ತರಗೆಲೆಗಳನ್ನು
ಬಯಲ ಬಿಸಿಲಲ್ಲಿ ಚಾಚಿ ಬೆಳೆದಿದ್ದರೂ
ಯಾರನ್ನೂ ಎಲ್ಲಿಗೂ ಒಯ್ದು ಮುಟ್ಟಿಸದ
ಆನೆದಂತದ ಹಾಗೆ ಬಾಗಿ ಸಾಗಿದ್ದ ಟ್ರಾಮ್ ಕಾರು ಹಳಿಯನ್ನು-
ಕಂಡೆ ನಿನ್ನನ್ನು.

ಏಕೋ ಒಮ್ಮೊಮ್ಮೆ ಅನ್ನಿಸುವುದು ನಾ ನಿನ್ನ
ತೆಕ್ಕೆಯೊಳಗಿಲ್ಲವೆಂದು.
ನನ್ನ ಆ ನಗರ ಎಲ್ಲಿ ಹೋಯಿತು ಈಗ?
ಹಿಂದೊಮ್ಮೆ ಎರಡು ಲೈಟ್‌ ಕಂಬಗಳ ನಡುವೆ
ಪೆನಾಲ್ಟಿ ಕಿಕ್ ಸಿಕ್ಕ ಫುಟ್‌ಬಾಲ್ ಆಟಗಾರ
ಚಂದ್ರನನ್ನ ನಡು ಅತರಿಕ್ಷಕ್ಕೆ ಒದ್ದದ್ದು,
ಗ್ಯಾಲರಿಗಳನ್ನೇರಿ ಕುಳಿತ ಜನ ಒಟ್ಟಾಗಿ
‘ಗೋಲ್’ ಎಂದು ಕಿರುಚಿದ್ದು ಎಲ್ಲ ನೆನಪೀಗ.

ಕಳೆದ ಇಪ್ಪತ್ತು ವರುಷ ನಮ್ಮ ನಡುವೆ ಏಕೋ
ಹೊಂದಿ ಬರಲಿಲ್ಲ. ನನ್ನ
ಮುರಿದ ಕನಸುಗಳು ಹರಿದೆಸೆದ ಕವನಗಳು
ಚಿಂದಿ ಆಯುವ ಜನರ ಚೀಲದಲ್ಲಿದ್ದಾವೆ.
ಇಪ್ಪತ್ತು ವರುಷವಿಡೀ ಅವನ್ನು ಆಯ್ದಿದ್ದಾರೆ.
ತೂಕಕ್ಕೆ ಹಾಕಿ, ಬೆಲೆಕಟ್ಟಿ ಕನಸುಗಳನ್ನು
ಗೇಲಿ ಮಾಡಿದ್ದಾರೆ.
ಒಂದೇ ರಹಸ್ಯ ಕಿಟಕಿ ನನಗಾಗಿ ಎಂದೂ
ಇಲ್ಲಿ ತೆರೆದದ್ದಿಲ್ಲ.
ನನ್ನ ಛಾವಣಿ ಬಿಟ್ಟು ಮೇಲೇರಿ ಮುಗಿಲುಗಳ ಕಡೆಗೆ ಸಾಗಿದ್ದಿಲ್ಲ.
ಅಂದಮೇಲೆ ನನ್ನ ಷರಟಿನ ಬಣ್ಣವನ್ನು
ಬೂಟಿನ ಅಳತೆಯನ್ನು
ಬದಲಿಸಲು ನನಗೆ ಕಾರಣವೆ ಕಂಡಿಲ್ಲ.
*****

Tagged:

Leave a Reply

Your email address will not be published. Required fields are marked *

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...