Home / ಕವನ / ಅನುವಾದ / ‘ತಪ್ಪು’ ಮಾಡಿದ ಒಬ್ಬ ಸೋದರನಿಗೆ

‘ತಪ್ಪು’ ಮಾಡಿದ ಒಬ್ಬ ಸೋದರನಿಗೆ

ಮೂಲ: ನಜರುಲ್ ಇಸ್ಲಾಂ

ಅಯ್ಯೋ ಪೆದ್ದಣ್ಣ
ಯಾರು ಹೇಳಿದ್ದೊ ನೀ ಕಳ್ಳ ಅಂತ?
ಖದೀಮ ಅಂತ ?

ನೋಡು ಇಲ್ಲಿ
ಸುತ್ತ ಕೂತಿದೆ ಹೇಗೆ
ಮೆತ್ತೆ ಪೀಠದ ಮೇಲೆ ಅಸಲುಗಳ್ಳರ ತಂಡ!
ರಾಜ್ಯಸೂತ್ರವ ಹಿಡಿದು ರಕ್ತ ಹೀರಿದೆ ಹೇಗೆ
ಎಲ್ಲರಿಗು ಮೇಲೆ ಅತಿ ಭಂಡ!
ಯಾರಪ್ಪ ಡೇನಿಯಲ್, ಎಲ್ಲಿದ್ದಾನೆ ಹೇಳು
ಗುಟ್ಟು ಹೊರತೆಗೆವಂಥ ಧೀರ ಈ ಠಕ್ಕಿಗರ ಹೊಟ್ಟೆ ಸೀಳಿ?
ಯಾರಪ್ಪ ನಿಷ್ಕಳಂಕ.
ಯಾರ ಮನೆಯಯ್ಯ ಗುಡಿ?
ದಪ್ಪ ಹೇಗಾದಾರು ಇಷ್ಟು, ನುಂಗದೆ ಇವರು ಬಡವರನ್ನ?
ಎಷ್ಟು ದೊಡ್ಡದೊ ಲೂಟಿ, ಎಷ್ಟು ದೊಡ್ಡದೊ ಚಾಟಿ
ಅಷ್ಟೆ ದೊಡ್ಡದೊ ಅಣ್ಣ ವಿಶ್ವಸಂಸ್ಥೆಗಳಲ್ಲಿ ಇವರ ದನಿ ಧಾಟಿ.
ತುಳಿದು ಮಣ್ಣಾದವನ ಹೀರಿ ಏರಿದ ಮಹಲು,
ಲಕ್ಷ ಕುಲುಮೆಯ ಮೆಟ್ಟಿ ಎದ್ದಿದೆಯೊ ಕಾರ್ಖಾನೆ ತಡೆದು ಬಿಸಿಲು.
ನರಮಾಂಸ ಉಂಡು ಬೆಳೆಯುವ ದೈತ್ಯಯಂತ್ರ ಇದು ಯಾವುದಯ್ಯ,
ಯಾವುದಯ್ಯಾ ಗೆಳೆಯ? ಯಾವುದಯ್ಯಾ ಒಳಗೆ
ಹರಿವ ಪ್ರಾಣದ ಹೊಳೆಯ ಹೀರಿ ಕಬ್ಬಿನ ಸಿಪ್ಪೆ
ಮಾಡಿ ಎಸೆಯುವ ತಂತ್ರ?
ಲಕ್ಷ ಲಕ್ಷ ಕುಟುಂಬ ದುಡಿದು ತುಂಬುತ್ತವೋ
ಕಳ್ಳಿ ಕರಿಸಿರಿಯ ಬಸಿರು.
ನೆನಪಿದೆಯ, ಅಲ್ಲಿ ಗ್ಯಾರೇಜು ಸಾಲಿರುವ ಕಡೆ
ಚಳಿಮಳೆಗೆ ತಡೆ ನಿಂತ
ಅಷ್ಟಿಷ್ಟು ಹರಿದ ಕೊಡೆ ಥರದ ಗುಡಿಸಲ ಸಾಲು ಇದ್ದದ್ದು?
* * *

ನಿಜ ಕಣೋ, ಈ ಗ್ರಹ
ವ್ಯಾಪಾರಿ ಠಕ್ಕು ರೂಪಾಯಿ ಮಾಟಕೆ ಮೆಚ್ಚಿ
ಕಟ್ಟಿಸಿದ ವೇಶ್ಯಾಗೃಹ.
ಖುಷಿಹತ್ತಿ ಸೈತಾನ ತುಟಿ ಬಳಿಗೆ ತಂದು
ಬಗ್ಗಿಸುತ್ತಿದ್ದಾನೆ ಮಧುಬಟ್ಟಲ.
ಆಸೆ ಎಲ್ಲಿದೆ? ಎಲ್ಲಿ ಅನ್ನ? ಭರವಸೆ? ಭಾಷೆ
ಮೋಸ ಗೆದ್ದಿತೊ ಅಣ್ಣ ಭವಿಷ್ಯವನ್ನ.
ಬಳಗವಿದೆ ಕಳ್ಳರಿಗೆ
ಬಲಗಳಿವೆ ಠಕ್ಕರಿಗೆ
ಭೋಳೆರಾಮರು ನೀವು ಹೊಕ್ಕ ಜೈಲಿನ ಸುತ್ತ
ಕಳ್ಳರದ ತಂಡವಿದೆ ಹಗಲಿರುಳ ಗಸ್ತಿಗೆ!
* * *

ಯಾರು ಕರೆದರೊ ನಿನ್ನ ಕಳ್ಳ ಅಂತ,
ಖದೀಮ ಅಂತ?
ತೆಗೆದಿದ್ದರೂ ಪಾಪ! ಮಹಲ ಮಾಳಿಗೆಯಿಂದ
ಒಂದೆರಡು ಲೋಟ
ನಾಲ್ಕು ನಾಣ್ಯ
ಹಸಿದ ಮಧ್ಯಾಹ್ನಕ್ಕೆ ಪಾವು ಧಾನ್ಯ.
ಇರಿಯಲಿಲ್ಲಲ್ಲ ನೆರೆಯವನನ್ನ ಬೆನ್ನಲ್ಲಿ?
ಬರೆಯಲಿಲ್ಲಲ್ಲ ಅದ ಹೊಗಳಿ ಪುಸ್ತಕದಲ್ಲಿ?

ಯಾಕೆ ಕೊರಗುವೆ ತಮ್ಮ?
ನಿನ್ನ ತಪ್ಪೆಲ್ಲವೂ ಬರಿಯ ಕತ್ತಲ ಗುಮ್ಮ.
ಯಾರಿಗಾಗಿಯೊ ದುಡಿದ, ಹೊಡದ, ತಲೆಗಳನೊಡೆದ
ವಾಲ್ಮೀಕಿಗಾದಂತೆ ಸ್ಥಿತ್ಯಂತರ
ಸಿಕ್ಕ ಪಕ್ಷಕ್ಕೆ ನಿಜವಾದ ಮಾನವನೊಬ್ಬ
ಆಗದಿರುವುದೆ ನಿನಗು ಸ್ಥಾನಾಂತರ?
*****

Tagged:

Leave a Reply

Your email address will not be published. Required fields are marked *

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...