Home / ಕಥೆ / ಜನಪದ / ಗಂಗಮ್ಮ ತಂಗಿ

ಗಂಗಮ್ಮ ತಂಗಿ

ಕೊಂಬಣಸು, ಕೊರಳಹುಲಿಗೆಜ್ಜಿಗಳಿಂದ ನಂದಿಯನ್ನು ಸಿಂಗರಿಸಿ ಶಿವನು ಪ್ರಯಾಣ ಹೊರಡುತ್ತಾನೆ. ಅದೆಲ್ಲಿಗೆ ?

ದಾರಿಯಲ್ಲಿ ಒಂದು ಹಳ್ಳ. ಹಳ್ಳದ ದಂಡೆಯಲ್ಲಿ ಹೂ ಕೊಯ್ಯುತ್ತಿರುವ ರಮಣಿಯನ್ನು ಕಂಡು ಶಿವನು – “ಜಾಣೇ, ನಮ್ಮ ಲಿಂಗಪೂಜೆಗೊಂದು ಹೂ ಕೊಡು” ಎಂದು ಕೇಳಿದನು.

ಆಕೆ ಹೇಳಿದಳು – “ಲಿಂಗಪೂಜೆಗೆಂದರೆ ಕೊಡಮಾಡಬಹುದು. ಆದರೆ ಮನೆಯಲ್ಲಿ ನಮ್ಮವ್ವ ಬಯ್ಯುತ್ತಾಳೆ ; ನಮ್ಮಪ್ಪ ಬಡಿಯುತ್ತಾನೆ.”

“ನಿಮ್ಮವ್ವ ಬಯ್ದರೆ, ನಿಮ್ಮವ್ವ ಬಡಿದರೆ ಗಂಗಾ, ನನ್ನ ಜಡೆಯಲ್ಲಿ ಬಂದು ಬಿಡು” – ಎನ್ನುತ್ತಾನೆ ಶಿವ.

“ಬಂದರೂ ಬರಬಹುದು. ಆದರೆ ಹೇಗೆ ನಂಬಲಿ ? ನಿಮ್ಮ ಮನೆಯಲ್ಲಿ ರಂಭೆಯಿದ್ದಾಳಲ್ಲ !” ಎಂದು ಸಂಕೋಚಪಟ್ಟಳು ಗಂಗಮ್ಮ.

“ನನ್ನಾಣೆ, ನಿನ್ನಾಣೆ ಅಲ್ಲದೆ ಧರಿಸಿದ ಲಿಂಗದಾಣೆ ಮಾಡಿ ಹೇಳುತ್ತೇನೆ. ನನ್ನ ಮನೆಯಲ್ಲಿ ರಂಭೆಯಿಲ್ಲ” ಎಂದು ಶಿವ ಭರವಸೆ ಕೊಡುತ್ತಾನೆ.

“ಬಂದೇನು ? ಆದರೆ ಹೇಗೆ ನಂಬಲಿ ? ನಿನ್ನ ಮನೆಯಲ್ಲಿ ಮಡದಿಯಿದ್ದಾಳಲ್ಲ !” ಗಂಗಮ್ಮ ಬೇರೊಂದು ಸಂಶಯ ತೋರಿದರೆ, ಆಗಲೂ ಶಿವನು – ತನ್ನಾಣೆ, ನಿನ್ನಾಣೆ ಅಲ್ಲದೆ ದೇವರಾಣೆ ಮಾಡಿ ಹೇಳುತ್ತೇನೆ ಮನೆಯಲ್ಲಿ ಮಡದಿಯಿಲ್ಲವೆಂದು, ಹೇಳುತ್ತಾನೆ. ಆಗ ಗಂಗಮ್ಮ ಮೆಲ್ಲನೆ ಶಿವನ ಜಡೆಯಲ್ಲಿ ಅಡಗುವಳು. ಅದನ್ನು ನೋಡಿದ ಗಿಣಿರಾಮನು ಕೂಡಲೇ ಹಾರಿಹೋಗಿ ಗೌರಮ್ಮನಿಗೆ ತಿಳಿಸುತ್ತಾನೆ.

ಆ ವಾರ್ತೆಯನ್ನು ಕೇಳಿ, ಮಲಗಿಕೊಂಡಿದ್ದ ಗೌರಮ್ಮನು ಮೈ ಮುರಿದುಕೊಂಡು ಎದ್ದು ಗಿಂಡಿಯೊಳಗಿನ ತಣ್ಣೀರಿನಿಂದ ಮುಖ ತೊಳೆದುಕೊಂಡವಳೇ ತನ್ನಣ್ಣನ ಅರಮನೆಗೆ ಹೋದಳು.

ಎಂದೂ ಬಾರದ ಗೌರಮ್ಮ ಇಂದು ಏತಕ್ಕಾಗಿ ಬಂದಳೆಂದು ಬಗೆಯುತ್ತ ಅಣ್ಣನು. ಆಕೆಗೆ ಕುಳಿತುಕೊಳ್ಳಲು ಮಣಿ ಚೌಕಿ ಕೊಡಿರೆಂದು ಮಡದಿಗೆ ಹೇಳುತ್ತಾನೆ.

“ನಾನು ಕುಳಿತುಕೊಳ್ಳಲೂ ಬಂದಿಲ್ಲ. ನಿಂತುಕೊಳ್ಳಲೂ ಬಂದಿಲ್ಲ. ನಾನೊಂದು ಕನಸು ಹೇಳಲು ಬಂದಿದ್ದೇನೆ. ಕೆರೆಯ ಮೇಲೆ ಕೆರೆಹುಟ್ಟಿ, ಕೆರೆಯ ಮೇಲೆ ಮರ ಹುಟ್ಟಿ, ಮರದ ಮೇಲೆ ಒಬ್ಬಾತನು ಬಲೆಹಾಕಿದ್ದಾನೆ” ಎನ್ನುತ್ತಾಳೆ ಗೌರಮ್ಮ.

ಒಗಟಿನಂಥ ಈ ಕನಸು ಅಣ್ಣನಿಗೆ ತಿಳಿದಂತೆ ತೋರಲಿಲ್ಲ. ಅದನ್ನು ಗೌರಮ್ಮ ಸ್ಪಷ್ಟಗೊಳಿಸಿದಳು – ಕೆರೆ ಅಂದರೆ ಶಿವರಾಯ. ಮರ ಅಂದರೆ ಜಡೆ, ಬಲೆಯೆಂದರೆ ಒಳಗಿನ ಶ್ರೀಗಂಗೆ.

“ದೇಶವನ್ನೇ ಆಳುವವರಿಗೆ ಹೆಂಡರು ಏಸು ಜನರಿದ್ದರೇನು ? ನಿನಗೇಕೆ ಆ ಚಿಂತೆ” ಎಂದು ಅಣ್ಣನು ತೀರ್ಪು ಹೇಳಿದನು.

ಆ ಮಾತು ಕೇಳಿ ಗೌರಮ್ಮ ಕಿಡಿಕಿಡಿಯಾದಳು. ಕಿಡಿಚೆಂಡೇ ಆದಳು. ಎಡಹಿ ಬೆರಳಿಗೆ ನೋವಾದುದನ್ನೂ ಲೆಕ್ಕಿಸದೆ ತನ್ನ ಅರಮನೆಯತ್ತ ಸಾಗಿದಳು.

ಶಿವನು ಒಂದೂರಿನಿಂದ ಯತಿಯ ವೇಷದಲ್ಲಿ ಬಂದು, ಗೌರಿಗೆ ನೀರು ಬೇಡುತ್ತಾನೆ. ಒಂದು ಗಿಂಡಿ ಬೇಡಿದರೆ, ಆಕೆ ಎರಡು ಗಿಂಡಿ ನೀರು ಕೊಡುತ್ತಾಳೆ. ಅದನು ಕಂಡು ಶಿವನು – “ನಿನಗೆ ಪುರುಷರು ಇಬ್ಬರೇನೇ ?” ಎಂದು ಚೇಷ್ಟೆಮಾಡುತ್ತಾನೆ.

“ಅಯ್ಯಯ್ಯೋ ಶಿವನೇ, ಅಣಕದ ಮಾತೇಕೆ ? ಕೆಂಜೆಡೆಯ ಮಣಿಮಕುಟದಲ್ಲಿರುವ ಸಿರಿಗಂಗೆಗೊಂದು ಗಿಂಡಿ, ನಿನಗೊಂದು ಗಿಂಡಿ” ಅನ್ನುತ್ತಾಳೆ ಗೌರಮ್ಮ.

“ಅಬ್ಬರಣೆ ಸಾಕು. ಎಡೆಮಾಡು ಗೌರೀ” ಎಂದು ಶಿವನು ಹೇಳಿದರೆ, ಎರಡು ಎಡೆಗಳು ಸಿದ್ಧವಾಗಿ ಬರುತ್ತವೆ. ಆಗಲೂ ಶಿವನು ಚೇಷ್ಟೆಮಾಡುತ್ತಾನೆ – “ನಿನಗೆ ಇಬ್ಬರೇನೆ ಪುರುಷರು ಗೌರಿ” ಎಂದು. ಗೌರಮ್ಮ ಮತ್ತೆ ಮುಂಚಿನ ಉತ್ತರವನ್ನೇ ಕೊಡುತ್ತಾಳೆ – “ನಿನಗೊಂದು ಎಡೆ, ಜತೆಯಲ್ಲಿರುವ ಸಿರಿಗಂಗೆಗೊಂದು ಎಡೆ.”

ಶಿವನು ತುಂಬ ದಿಗಿಲುಗೊಂಡು – “ಗಂಗೀನ ತಂದರೆ ತಂಗೀನ ತಂದಂತೆ. ಲಿಂಗ ಮುಟ್ಟಿ ಹೇಳುತ್ತೇನೆ ; ಕೆಂಡಮುಟ್ಟಿ ಹೇಳುತ್ತೇನೆ” ಎಂದು ಕ್ರಿಯೆಗೆ ಸಿದ್ಧನಾಗುತ್ತಾನೆ.

ಗೌರಮ್ಮ ಬೇರೊಂದು ಹಂಚಿಕೆ ತೆಗೆಯುತ್ತಾಳೆ. ಬೆಳ್ಳಿಯ ಬಟ್ಟಲಲ್ಲಿ ಎಳ್ಳೆಣ್ಣೆ ತೆಗೆದು ತಂದು ಶಿವನ ಜಡೆಯನ್ನು ಹೂಸಲು ಆರಂಭಿಸುತ್ತಾಳೆ. ಗೌರಮ್ಮನು ತಲೆಯಿಂದ ಸೊಂಟಿನತ್ತ ಎಣ್ಣೆಹೂಸುತ್ತ ಬರಲು, ಗಂಗೆ ಅದಕ್ಕಿಂತ ಕೆಳಗಡೆಗೆ ಸರಿಯುವಳು. ಗೌರಿಯೂ ಅಲ್ಲಿಯೂ ಎಣ್ಣೆ ಹೊಸತೊಡಗಲು, ಗಂಗೆಯು ಅನಿವಾರ್ಯವಾಗಿ ನೆಲಕ್ಕಿಳಿದು ಹೊಳೆಯಾಗಿ ಹರಿದು ಹೋಗುತ್ತಾಳೆ.

ಗಂಗೆ ಹೋದ ಮರುದಿನವೇ ಗೌರಮ್ಮ ರಜಸ್ವಲೆ ಆಗುತ್ತಾಳೆ. ಮೈದೊಳೆಯಲು ನೀರಿಲ್ಲದಾಗುತ್ತದೆ. ಶಿವನು ಚೇಷ್ಟೆಯಿಂದ ಹಾಲಿನ ಕೊಡವನ್ನು ಕಳಿಸುತ್ತಾನೆ ಗೌರಮ್ಮನ ಕಡೆಗೆ. “ಹಾಲಿನಿಂದ ಮಿಂದರೆ ಮುಡಚಟ್ಟು ಹೋಗುವದೇ? ತಂಗಿ ಗಂಗಮ್ಮನನ್ನು ಕಳಿಸಿರಿ” ಎನ್ನಲು, ಶಿವನು ಬೇಕೆಂದೇ ತುಪ್ಪದ ಕೊಡವನ್ನು ಕಳಿಸುವನು. “ತುಪ್ಪಿನಲ್ಲಿ ಮಿಂದರೆ ಮೈಲಿಗೆ ಕಳೆಯುವುದೇ? ದಯಮಾಡಿ ತಂಗಿ ಗಂಗಮ್ಮನನ್ನು ಕಳಿಸಿರಿ” ಎ೦ದು ಗೌರಮ್ಮ ಅಂಗಲಾಚಲು ಶಿವನು `ಆಗಲಿ’ ಎಂದನು.
*****

ಪುಸ್ತಕ: ಉತ್ತರ ಕರ್ನಾಟಕದ ಜನಪದ ಕಥೆಗಳು

Tagged:

Leave a Reply

Your email address will not be published. Required fields are marked *

ತೆಂಕಣದಿ ಹದಿನಾರು ಮೈಲಿಗಳಾಚಿ ಬಾಂದಳಕೆ ಭುಜಗೊಟ್ಟು ನಿಂತಿರುವ ಸಿಂಹಗಡವೇ-ಇದೋ ನಿನಗೆ ತಲೆಬಾಗುವೆನು. ಶತಮಾನಗಳ ಹಿಂದೆ, ನರಜಾತಿಯಲಿ ಹರಿಯಂತೆ ಮೆರೆದ ವೀರಲೀಲಾಲೋಲ ಶಿವಪ್ರಭುವನು ಶಿರದಲಿ ಹೊತ್ತು ಮೆರೆಯಿಸಿದ ಸಿಂಹಗಡವೇ ಇದೋ-ನಿನಗೆ ವಂದಿಸುವೆನು. ಅಂದು ನಮ್ಮ ನಾಡಿನ ಧರ್‍ಮ-ನಮ್ಮ ಹ...

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...