Home / ಕಥೆ / ಜನಪದ / ನನಗೇನು ಕೊಟ್ಟರು

ನನಗೇನು ಕೊಟ್ಟರು

ಕೈಲಾಸದಲ್ಲಿ ಶಿವಪಾರ್ವತಿಯರು ಸಂತೋಷದಿಂದ ಕುಳಿತು ಸರಸವಾಡುತ್ತಿರುವಾಗ, ಪಾರ್ವತಿ ಕೇಳಿದಳು – “ಶ್ರಾವಣತಿಂಗಳು ಮುಗಿದುಹೋಗಿ ಭಾದ್ರಪದ ಆರಂಭವಾಯಿತು. ನಾಳೆ ನನ್ನ ತವರೂರಿಗೆ ಹೋಗಿ ಬರುವೆ.”

“ಅಲ್ಲಿ ನಿನ್ನ ಸರಿಯರು ಯಾರಿದ್ದಾರೆ ? ಹೊತ್ತು ಹೇಗೆ ಕಳೆಯುವಿ ? ಸರಿಯರು ಯಾರು?” ಎಂದನು ಶಿವ.

“ಸರಿಯರೇತಕೆ ಬೇಕು ? ಮೂರುದಿನ ಮಾತ್ರ ಅಲ್ಲಿದ್ದು ನಿಮ್ಮ ಸೇವೆಗೆ ಮರಳುವೆ.”

ಮೂರುದಿನವೇಕೆ, ಐದು ದಿನ ಇರು. ಏಳುದಿನಗಳವರೆಗೆ ದಾರಿ ಕಾಯುವೆ, ಮತ್ತೇನು? ಆಗ ಸಹ ನೀನು ಬರದಿದ್ದರೆ ಮೀರಿದವಳೆಂದು ಬಗೆದು, ಗಣಪತಿಯೊಡನೆ ಕರೆಯಲು ಬರುವೆನು,” ಎನ್ನುವ ಮಾತಿನಲ್ಲಿ ಶಿವನು ಪಾರ್ವತಿಗೆ ಅಪ್ಪಣೆಯಿತ್ತನು, ತವರು ಮನೆಗೆ ಹೋಗಲಿಕ್ಕೆ.

ತಿರಿದುಣ್ಣುವ ಶಿವನಿಗೆ ಮೂರು ಲೋಕಗಳೆಲ್ಲವೂ ಸ್ವಗೃಹಗಳೇ. ಭಸ್ಮಾಂಗಕೆ ಹೊದಿಕೆಯೆಂದರೆ ಆನೆಯ ತೊಗಲು. ಇನ್ನೇನು ಬೇಕು ಉಪಚಾರ ಶಿವನಿಗೆ?

ಪಾರ್ವತಿಯು ತವರಿನಲ್ಲಿ ನಾಲ್ಕೊಪ್ಪತ್ತು ನಿಂತುಕೊಂಡು ಕೈಲಾಸಕ್ಕೆ ಮರಳಿದಳು. ದುಂಡುಮಲ್ಲಿಗೆ ಹೂವಿನ ದಂಡೆ ತಲೆಯಲ್ಲಿ. ಬಿತ್ತಿದ ಮುತ್ತು ಬೈತಲೆಯಲ್ಲಿ. ಕುಡಿ ಹುಬ್ಬಿನ ಕಳೆಗೆ ಕಂಗಳಲ್ಲಿ ರಂಭೆಯೇ ಹೊಳೆಯುತ್ತಿರಲು, ನಿಂಬೆಯ ಹಣ್ಣಿನಂಥ ಕಾಂತಿಯನ್ನು ಸೂಸುತ್ತ ಬಂದ ಪಾರ್ವತಿಯನ್ನು ಕಂಡು ಶಿವನು ಕೇಳಿದನು –

“ನಿನ್ನ ತವರಿಗೆ ಹೋಗಿ ಬಂದೆಯೊ ? ತವರಿನವರು ಈಗೇನು ಕೊಟ್ಟರು, ಇನ್ನೇನು ಕೊಡುವರು ? ಬೇಗ ಹೇಳು.”

“ತಂದೆ ಗಿರಿರಾಯ ಕಡುಬಡವ, ಮುದುಕ ಬೇರೆ. ಏನು ಕೊಟ್ಟಾನು ? ಬರಿಗೈಯಲ್ಲಿ ಕಳಿಸಬಾರದೆಂದು ಕೊಪ್ಪರಿಗೆ ಹಣ, ಎಪ್ಪತ್ತು ಆನೆ ಕುದುರೆ ಕೊಟ್ಟನು. ಜತನವಾಗಿರಿಸಿಕೋ ಎಂದು ಬಂಗಾರದ ಕೊಡ ಕೊಟ್ಟನು. ನಮ್ಮವರು ಬಡದರು ಇನ್ನೇನು ಕೊಡುವರು ? ಆರು ಹೇರು ಸಣ್ಣಕ್ಕಿ, ಆರು ಹೇರು ಅರಿಸಿಣ, ಆರು ಹೇರು ಅಡಕೆ, ಒಂದು ಖಂಡಗ ಬೆಲ್ಲ, ಆರು ಕೊಳಗ ಮೆಣಸು, ನೂರು ತೆಂಗಿನ ಕಾಯಿ ಕೊಟ್ಟರಲ್ಲದೆ ಇನ್ನೇನು ಕೊಟ್ಟಾರು ಬಡವರು? ಐದು ಹರಿವಾಣ, ಐದು ಸಮೆ, ಐದು ತಪ್ಪೇಲಿ, ಹದಿನಾಲ್ಕು ತಂಬಿಗೆ, ಐದು ಬಿಂದಿಗೆ, ನಾಲ್ಕು ತಂಬಿಗೆ ಸುವಾಸಿಕ ಎಣ್ಣೆ, ಹೆಚ್ಚಿಗೇನು ಕೊಡುವರು, ಮೊದಲೇ ಬಡವರು.”

ಪಟ್ಟೇಸೀರೆ, ಬಣ್ಣದ ಸೀರೆ, ಸಕಲಾತಿ ಶಾಲು, ರತ್ನಗಂಬಳಿ, ಪಟ್ಟಮಂಚ ಅಲ್ಲದೆ ಹಿಂಡು ಆಕಳು ಹದಿನೆಂಟು, ಕಾಲಾಳು ನೂರು ಜನ, ಕರೆವ ಎಮ್ಮೆ ಎಂಟು, ಕರುಗಳೆಂಟು, ಅವುಗಳ ಹಾಲು ಕರೆದು ಕಾಸಿಕೊಡುವ ದಾಸಿಯರನ್ನೂ ಕೊಟ್ಟರು. ಇನ್ನೇನು ಕೊಡುವರು?

“ಕೆಂಪು ಅರಿಸಿನ, ಕಸ್ತೂರಿ, ಕುಂಕುಮ, ಕುಪ್ಪಸ, ಗಿಣಿ ಮೊದಲಾದವುಗಳನ್ನಿತ್ತು, ಮುತ್ತೈದೆಯರು ಸೇಸೆದಳೆದು ಉಡಿಯಕ್ಕಿ ಹಾಕಿ ಕಳಿಸಿದರು. ಹೆಚ್ಚು ಏನು ಕೊಟ್ಟಾರು ಬಡವರು?”

ಕಡುಬಡವನಾದ ಗಿರಿರಾಯನು ಮಗಳಿಗೆ ಕೊಟ್ಟ ವಸ್ತು ಒಡವೆಗಳ ಹೆಸರುಗೆಳನ್ನೆಲ್ಲ ಒಮ್ಮೆ ಹೇಳಿ ಮುಗಿಸಿದಳು ಪಾರ್ವತಿ. ಅದನ್ನು ಕೇಳಿ ಆತುರದಿಂದ ಶಿವನು ನುಡಿದನು – “ಅಕ್ಕರೆಯ ಮಗಳೆಂದು ನಿನಗೆ ಇಷ್ಟೆಲ್ಲ ಕೊಟ್ಟರು. ನನಗೇನಾದರೂ ಒಂದಿಷ್ಟು ಕೊಡಲಿಲ್ಲವೇ?”

ಪಾರ್ವತಿಯೂ ತಡಮಾಡದೆ ಮರುನುಡಿದಳು – “ಇಷ್ಟೆಲ್ಲವನ್ನೂ ನನಗಿತ್ತು ತವರವರು ನನ್ನನ್ನೇ ನಿಮಗಿತ್ತರು.”

ಅದನ್ನು ಕೇಳಿ ಶಿವನ ಮನಸ್ಸಿಗೆ ಅದೆಷ್ಟು ಹರ್ಷವಾಗಿರಬೇಕು?
*****

ಪುಸ್ತಕ: ಉತ್ತರ ಕರ್ನಾಟಕದ ಜನಪದ ಕಥೆಗಳು

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...