Home / ಕಥೆ / ಜನಪದ / ಸಣ್ಣಪೋರ

ಸಣ್ಣಪೋರ

ತೀರ ಸಣ್ಣವ ಇದ್ದಾಗ ಸಣ್ಣಪೋರನ ಲಗ್ನ ಆಗಿತ್ತು. ಲಗ್ನ ಆಗಿದ್ದು ಅವನಿಗೆ ಸಹ ಗೊತ್ತಿರಲಿಲ್ಲ. “ಎಲ್ಲಾರೂ ಅತ್ತೀಮಾವನ ಮನೇಗಿ ಹೋಗತಾರ ನಾನೂಬಿ

ಹೋಗುತೆ” ಅಂದಾಗ “ನಿಂಗ ಖೂನ ಹಿಡಿಯುದಿಲ್ಲ ಮಗಾ” ಎಂದು ಅವ್ವ ಅಂದರೂ ಕೇಳಲಿಲ್ಲ ; ಅಪ್ಪ ಅಂದರೂ ಕೇಳಲಿಲ್ಲ. ಅತ್ತೀಮಾವನ ಮನೇಗಿ ಹೋಗಿ ಮುಟ್ಟಿದ. ಮಾವ ಬಂಕಿನಾಗ ಕೂತಿದ್ದ ; ಅತ್ತಿ ಪಡಸಾಲ್ಯಾಗ ಕುಂತಿದ್ದಳು. ಹೆಂಡತಿ ಅತ್ತೀ ಹಂತ್ಯಾಕ ನಿಂತಿದ್ದಳು. “ಅವ್ವಾ ಯಾರೋ ಬಂದಾರ ಬಾಗಿಲಾಗ” ಎಂತ ಹೆಂಡತಿ ಖೂನ ಹಿಡಿಯಲಾರದೆ ಹೇಳತಾಳ. “ನಿನ್ನ ಗಂಡ ಬಂದಾನ” ಎಂದು ಅವ್ವ ಹೇಳಿ ಮುಗಿಸತಾಳ. ಆದರೆ ಅತ್ತೀನೂ ಬಾ ಅನ್ಲಿಲ್ಲ ; ಮಾವಾನೂ ಬಾ ಅನ್ಲಿಲ್ಲ. ಏಸುದಿನಾ ಆಯ್ತು ಮದುವೆಯಾಗಿ, ಇನ್ನೂ ಯಾಕ ಬಂದಿಲ್ಲಂತ ಇಬ್ಬರಿಗೂ ಸಿಟ್ಟು. ಪೋರ ಕಿಂಡೆ ಬಾಗಿಲಕಡೆ ಹೊಂಟ.

ಕಿಂಡೆ ಬಾಗಿಲ ಹಂತ್ಯಾಕ ನಿಂತ ಹೆಂಡತೀನೂ ಗಂಡನ ಬೆನ್ನು ಹತ್ತಿದಳು. “ಪೋರಿ ಎತ್ತಹೋಯ್ತು” ಅಂತ ತಂದೆ ಕೇಳಿದರ, ಆ ಹುಡುಗನ ಬೆನ್ನು ಹತ್ತಿ ಹೋದಳು – ಎಂದು ತಿಳಿಯಿತು. ತಂದೆತಾಯಿಯರು, ಗಂಡನ ಬೆನ್ನು ಹತ್ತಿ ಮಗಳು ಹೋದರ ಹೋಗಲಿ – ಎಂದರು.

“ನನ್ನ ಹೆಂಡತಿನ್ನ ಕರಕೊಂಡು ಬಂದೀನಿ ನೋಡವ್ವ”

“ಅವರ ಮನ್ಯಾಗ ಉಣ್ಣುತಿನ್ನುದಕ ಬೇಕಾದಷ್ಟು ಒಟ್ಟ್ಯಾದ. ಅದನ್ನು ಬಿಟ್ಟು ನಮ್ಮಲ್ಲ್ಯಾಕ ಕರಕೊಂಡು ಬಂದ್ಯೋ ಮಗ” ಎಂದಳು ತಾಯಿ.

“ನೀವು ಉಂಡಿದ್ದು ನಾನು ಉಣ್ಣುವೆ ; ನೀವು ಉಟ್ಟಿದ್ದು ನಾನು ಉಡುವೆ” ಎಂದು ಸೊಸೆ ಸಮಾಧಾನ ಹೇಳಿದಳು.

ನಾಲ್ಕಾರು ತಿಂಗಳು ಹೋಗಟ್ಲೆ ಸೊಸೆ ಮೈನೆರೆದಳು. ಊರಾಗ ಯಾರ ಮನ್ಯಾಗ ಶೋಭಾನ ಆಗುತ್ತಲೇ ಪಟೇಲನ ಮನೆಗೆ ಹೆಣ್ಣುಮಗಳಿಗೆ ಕಳಿಸಬೇಕು – ಹೀಂಗ ಅಲ್ಲಿ ಪದ್ಧತಿಯಿತ್ತು. ಅತ್ತಿ ಅನ್ನ ಉಂಬಲ್ದೆ ಹೋದಳು; ನೀರು ಕುಡ್ಯಲ್ದೆ ಹೋದಳು. ಮಾರಿ ಸಣ್ಣದು ಮಾಡಿಕೊಂಡು ಕುಂತಳು. – “ಏನು ಬಂದಿದ್ದು ಬರಲಿ, ನಾ ಎದುರಿಸಲಿಕ್ಕೆ ತಯಾರಿದ್ದೀನಿ. ಬಂದದ್ದು ತಗೊಳ್ಳಾಕ ಮುಸ್ತಾದ ಇದ್ದೀನಿ” ಎಂದಳು ಸೊಸಿ.

“ಪಟೇಲನ ಮನೀಗಿ ಶೋಭಾನ ಆದ ಹುಡುಗಿ ಹೋಗಬೇಕೆನ್ನುವುದು ನಮ್ಮೂರ ಪದ್ಧತಿ ಆದ. ಅದಕ್ಕ ಹೇಂಗ ಮಾಡಬೇಕೇನ್ನೂದು ತಿಪಲ ಬಿದ್ದಾದ” ಎಂದಾಳು ಅತ್ತಿ.

ಸೊಸಿ ಚಿಂತಿ ಮಾಡಲ್ದೆ ಆರತಿ ಹಿಡಕೊಂಡು ಶೋಭಾನ ಆದ ಸೀರಿ ಉಟಕೊಂಡು ಹೋದಳು. ಪಟೇಲ ಬಂಕಿನೊಳಗೆ ನಿಂತಿದ್ದ. ಪಡಸಾಲ್ಯಾಗ ಹೋಗಿ ನಿಂತು ಸೊಸಿ ಕೇಳ್ತಾಳ – “ಯಾಕರಿ ಎಪ್ಪಾ, ನಮಗ್ಯಾಕ ಕರೆಸೀರಿ ?”

“ನನಗೆ ಅಪ್ಪ ಅಂತ ಕರೆದಳು. ನಾ ಈಗ ಇವಳಿಗೆ ಅಪ್ಪ ಆದೆ. ಇನ್ನ ಬ್ಯಾರೆ ಇಚಾರನೇ ಮಾಡೂದು ಬ್ಯಾಡ” ಎಂದು ಇಚಾರಿಸಿ – “ಬಡವರಿದ್ದೀರಿ. ಸೀರಿ ಉಡಿಸಿ ಕಳಿಸಬೇಕೆಂದು ಮಾಡಿದ್ದೆ. ಸೀರಿ ಉಡಿಸಿ ಉಡಿಯಕ್ಕಿ ಹೊಯ್ದು ಕಳಿಸಿಕೊಡುತೀನಿ ಮಗಾ” ಎಂದ.

“ಎಪ್ಪಾ, ನಾ ಒಂದ ಮಾತ ಹೇಳತೀನಿ” ಅಂದಳು ಸೊಸಿ.

“ಅದೇನು ಮಾತವ್ವ, ಖುಲಾಸ ಹೇಳಿಬಿಡು” ಎಂದು ಪಟೇಲ ಹೇಳಿದ.

“ಹೇಂಗೂ ದೀಪಾವಳಿ ಹೊಂಟಾದ. ಒಬ್ಬರೂ ಮನ್ಯಾಗ ತುಂಬಿದ ಕೊಡ ಇಕ್ಕಬಾರದು. ದೀಪ ಇಡಬಾರದು. ನೀ ಹೀಂಗ ಡಂಗುರ ಸಾರಿದರ ಜನ ನೀ ಹೇಳಿದಂಗ ಕೇಳತಾದ.”

ಪಟೇಲ ಅದರಂಗ ಡಂಗುರ ಸಾರಿಸಿದ. ಸೊಸಿಗಿ ಉಡಿಯಕ್ಕಿ ಇಕ್ಕಿ ಕಳಿಸಿದ. ನಾಲ್ಕೈದು ದಿನದಾಗ ದೀವಳಿಗೆ ಬಂತು. ದೀಪ ಇಕ್ಕಬೇಡ ಅಂತ ಪಟೇಲ ಹೇಳಿದಂತೆ ಊರವರು ಬಿಟ್ಟರ ಸೊಸೆ ಮನೇತುಂಬಾ – ಮಾಡತುಂಬಾ ದೀಪ ಹಚ್ಚಿಟ್ಟಳು. ಒಲಿಯೊಳಗೆ ಬೆಂಕಿಮಾಡಿಟ್ಟಳು. ಲಕ್ಷ್ಮೀತಾಯಿ ಊರತುಂಬಾ ತಿರುತಿರುಗಿ ಬಂದಳು. ಊರೆಲ್ಲ ಕತ್ತಲೆ ಕಂಕಾಳ ಆಗಿತ್ತು. ಸಣ್ಣ ಪೋರನ ಮನೆಯಾಗ ದೀಪ ಇರುವದು ಕಂಡು ಅಲ್ಲೇ ಬಂದಳು. “ತಟ್ಟೀ ತೆರೆ” ಅಂತ ಲಕ್ಷ್ಮೀತಾಯಿ ಅಂದಳು.

“ನೀನು ಯಾರು ಇದ್ದೀ” ಎಂದು ಸೊಸಿ ಕೇಳಿದಳು. “ನಾ ಲಕ್ಷ್ಮಿ ಇದ್ದೀನಿ. ಜಲ್ದೀ ತಟ್ಟೀ ತಗಿ ಮಗಾ” ಎಂದಳು. “ಲಕ್ಷ್ಮಿ ಇದ್ದರ ಚೆಂದ ಆಯ್ತು ಯಾಕ ಹೊಂಟೀದಿ ? ಇರುವಲ್ಲೆ ಇದ್ದರ ಮಾತ್ರ ತಟ್ಟೀ ತಗೀತೀನಿ” ಎಂದಳು. “ಊರವರಲ್ಲಿ ದೀಪ ಇಲ್ಲ. ಅದಕ್ಕ ನಿನ್ನಲ್ಲಿ ಬಂದೀನು.” “ನೀನು ಎಂದೆಂದಿಗೂ ಹೋಗದಿದ್ದರ ತಟ್ಟೀತಗೀತೀನು.” ಲಕ್ಷ್ಮಿಯಿಂದ ವಚನ ತಕ್ಕೊಂಡು ಮನಿಪ್ರವೇಶಮಾಡಗೊಟ್ಟಳು. ಲಕ್ಷ್ಮೀ ದೇವರ ಮನ್ಯಾಗ ಹೊಕ್ಕು ಅಲ್ಲಿ ಮಾಯವಾದಳು. ಹಾಲುಕ್ಕುವಂತೆ ಮನೆ ಸಿರಿ ತುಂಬಿತು. ಸಂಪತ್ತು ತುಳುಕಾಡಿತು.

ಸೊಸೆಗೆ ತಾಯಿತಂದೆಗಳಿಗೆ ಮಗಳನ್ನು ನೋಡಬೇಕೆಂಬ ಇಚ್ಛೆಯಾಯಿತು. ಅಷ್ಟರಾಗೇ ಮಗಳು ತವರೂರಿಗೂ ಗಂಡನೂರಿಗೂ ನಡುವೆ ಸಾಲಾಗಿ ಗಿಡ ಹಚ್ಚಿಸಿದಳು. ಹಾದಿಯಲ್ಲೆಲ್ಲ ನೆರಳಾಯಿತು. ಬಾವಿ ಹೊಡಿಸಿದಳು. ಬೀದಿಯಲ್ಲೆಲ್ಲಾ ನೀರಾಯ್ತು. ತಾಯಿತಂದೆ ಬಂದು ನೋಡಿದರು, ಮನೆಯಲ್ಲಿ ಅನಾಜ ಬೇಕಾದಷ್ಟು ಅದ. ಸಂದುಕ ತುಂಬಾ ಪೈಸಾ ಅದ. ಇದನ್ನೆಲ್ಲ ನೋಡಿ ತಾಯಿತಂದಿ ಹಿರಿಹಿರಿ ಹಿಗ್ಗು ಪಟ್ಟರು.
*****

ಪುಸ್ತಕ: ಉತ್ತರ ಕರ್ನಾಟಕದ ಜನಪದ ಕಥೆಗಳು

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...