Home / ಕಥೆ / ಜನಪದ / ಸೊಂಟನೋವಿಗೆ ಎಣ್ಣೆ ಮಜ್ಜನ

ಸೊಂಟನೋವಿಗೆ ಎಣ್ಣೆ ಮಜ್ಜನ

ಬಹುತರವಾಗಿ ಯಾವ ಅಮಲ್ದಾರರೂ ಕಾಲಿಡದ ಹಳ್ಳಿಯೆಂದರೆ ಕೊರಕಲಮಟ್ಟಿ. ಅಲ್ಲಿಗೊಮ್ಮೆ ಜಾಫರಖಾನ ಫೌಜದಾರ ಸಾಹೇಬರು ಬಂದುಹೋದರು. ಅಷ್ಟೇ ಅಲ್ಲ, ಒಂದು ರಾತ್ರಿ ಚಾವಡಿಯಲ್ಲಿ ಮುಕ್ಕಾಮು ಮಾಡಿದರು. ಏಳುಗೇಣು ಎತ್ತರದ ಕಪ್ಪು ಕುದುರೆಯನ್ನು ನೀಳಗಡ್ಡದ ಫೌಜದಾರ ಸಾಹೇಬರು ಹತ್ತಿ ನಡೆಯಿಸತೊಡಗಿದರೆ ಕುದುರೆಯ ಬೆನ್ನು ಬಾಗಿ ಬಿಲ್ಲಾಗುತ್ತಿತ್ತು.

ಕೊರಕಲಮಟ್ಟಿಗೆ ಬರುವುದಕ್ಕೆ ಯಾವ ದಾರಿಯೂ ಅನುಕೂಲವಾಗಿಲ್ಲ. ನಡೆಯುತ್ತಲೇ ಬರಬೇಕು. ಇಲ್ಲವೆ ಕುದುರೆ ಹತ್ತಿ ಬರಬೇಕು. ಜಾಫರಖಾನ ಫೌಜದಾರರು ಕುದುರೆ ಸಾಕಿದ್ದರಿಂದಲೇ ಕೊರಕಲಮಟ್ಟಿಗೆ ಬರಲು ಸಾಧ್ಯವಾಯಿತು.

ಬೆಳಗಾಗುವ ಹೊತ್ತಿಗೆ ಚಾವಡಿ ಮುಂದಿನ ಕುದುರೆಯನ್ನು ಬಿಚ್ಚಿಕೊಂಡು ಓಲೆಕಾರನು ಮುಂದೆ ಸಾಗಿದನು. ಅಗಸೆಯ ಹೊರಗಿರುವ ಹನುಮಪ್ಪನ ಹಾಳು ಗುಡಿಯ ಕಲ್ಲುಡಿಗ್ಗೆಯ ಬಳಿಯಲ್ಲಿ ನಿಲ್ಲಿಸಿದನು. ಏಳುಗೇಣಿನ ಕುದುರೆಯಾದ್ದರಿಂದ ಮೇಲೆ ಹತ್ತುವವರಿಗೆ ಆನುಗಲ್ಲು ಅಥವಾ ಕಟ್ಟೆ ಅವಶ್ಯವಾಗಿ ಬೇಕು.

ಗುಡಿಯ ಮಗ್ಗುಲಿಗೆ ಅಸ್ತವ್ಯಸ್ತವಾಗಿ ಬಿದ್ದ ಕಲ್ಲುಗಳಲ್ಲಿ ಒಂದನ್ನೇರಿ ನಿಂತು ಕುದುರೆಯನ್ನು ಜಿಗಿದು ಹತ್ತಿದರು. ಆ ಇಸಲಿಗೆ ಕಾಲಕೆಳಗಿನ ಕಲ್ಲು ಉರುಳಿಬಿತ್ತು. ಗೌಡ ಓಲೆಕಾರರು ಮಾಡಿದ ಮುಜುರೆಯನ್ನು ಸ್ವೀಕರಿಸುತ್ತ ಫೌಜದಾರರು ಕುದುರೆಯನ್ನು ಓಡಿಸಿದರು.

ಅಂದು ರಾತ್ರಿ ಊರಗೌಡರ ಕನಸಿನಲ್ಲಿ ಹನುಮಪ್ಪನು ಕಾಣಿಸಿಕೊಂಡು ಅವನನ್ನು ಗಟ್ಟಿಯಾಗಿ ಹಿಡಿದನು.

“ಏಕೆ ದೇವಾ, ಕನಸಿನಲ್ಲಿ ದರ್ಶನಕೊಟ್ಟಿರಲ್ಲ” ಎಂದು ವಿನಯದಿಂದ ಗೌಡ ಕೇಳಿದನು.

“ಗೌಡ, ಒಳ್ಳೆಯ ಮಾತಿನಿಂದ ಎಣ್ಣೆ ಮಜ್ಜನ ಮಾಡಿಸುವೆಯೋ ಇಲ್ಲವೋ ನಿನ್ನ ಕುತ್ತಿಗೆ ಹಿಸುಕಲೋ?” ಎಂದನು ಹನುಮಪ್ಪ. “ನನ್ನ ಮೇಲೇಕೆ ಸಿಟ್ಟು ದೇವಾ? ನಾನಾವ ಅಪರಾಧ ಮಾಡಿದೆ?”

“ನನ್ನ ಸೊಂಟ ನೋವಾಗಿದೆ.”

“ಸೊಂಟ ನೋವು ಏಕಾಯಿತು ?” ಗೌಡನ ಪ್ರಶ್ನೆ.

“ಬಂದಿದ್ದನಲ್ಲ ನಿಮ್ಮ ಫೌಜುದಾರ. ತನ್ನೂರಿಗೆ ಹೋಗುವಾಗ ಕುದುರೆ ಹತ್ತುವ ಮು೦ದೆ ನನ್ನ ಮೇಲೆ ಕಾಲಿಟ್ಟು ನೆಗೆದು ಕುದುರೆ ಹತ್ತಿದನು. ಆ ಇಸಲಿಗೆ ಸೊಂಟ ನೋವು ಆಗಿದೆ” ಹನುಮಪ್ಪನ ವಿವರಣೆ.

“ಆ ಫೌಜದಾರನನ್ನು ಬಿಟ್ಟು ನನ್ನನ್ನೇಕೆ ಹಿಡಿದಿರಿ ದೇವಾ?”

“ಯಾರನ್ನು ಹಿಡಿಯಲಿ ? ಫೌಜದಾರನು ನನ್ನ ಭಕ್ತನೇ ? ಭಕ್ತರನ್ನು ಬಿಟ್ಟು ಅನ್ಯರನ್ನು ನಾನೇಕೆ ಹಿಡಿಯಲಿ” ಹನುಮಂತದೇವರ ಸ್ಪಷ್ಟೀಕರಣ. “ಬೆಳಗಾಗುತ್ತಲೆ ಎಣ್ಣಿ ಮಜ್ಜನ ಮಾಡಿಸುತ್ತೇನೆ. ತಾಳು ದೇವ” ಎಂದು ಗೌಡನು ಕಾಲಿಗೆರಗಲು ಹನುಮಪ್ಪನು ಅವನನ್ನು ಬಿಟ್ಟುಕೊಟ್ಟನು.

ಕನಸಿನಲ್ಲಿ ಮಾತುಕೊಟ್ಟ ಪ್ರಕಾರ ಗೌಡನು, ಮಗಿ ಎಣ್ಣೆ ತರಿಸಿ ಹನುಮಪ್ಪ ದೇವರಿಗೆ ಎಣ್ಣೆ ಮಜ್ಜನ ಮಾಡಿಸಿದನು.
*****

ಪುಸ್ತಕ: ಉತ್ತರ ಕರ್ನಾಟಕದ ಜನಪದ ಕಥೆಗಳು

Tagged:

Leave a Reply

Your email address will not be published. Required fields are marked *

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಕೀಲಿಕರಣ: ಎಂ ಎನ್ ಎಸ್ ರಾವ್