Home / ಕಥೆ / ಜನಪದ / ಸೊಂಟನೋವಿಗೆ ಎಣ್ಣೆ ಮಜ್ಜನ

ಸೊಂಟನೋವಿಗೆ ಎಣ್ಣೆ ಮಜ್ಜನ

ಬಹುತರವಾಗಿ ಯಾವ ಅಮಲ್ದಾರರೂ ಕಾಲಿಡದ ಹಳ್ಳಿಯೆಂದರೆ ಕೊರಕಲಮಟ್ಟಿ. ಅಲ್ಲಿಗೊಮ್ಮೆ ಜಾಫರಖಾನ ಫೌಜದಾರ ಸಾಹೇಬರು ಬಂದುಹೋದರು. ಅಷ್ಟೇ ಅಲ್ಲ, ಒಂದು ರಾತ್ರಿ ಚಾವಡಿಯಲ್ಲಿ ಮುಕ್ಕಾಮು ಮಾಡಿದರು. ಏಳುಗೇಣು ಎತ್ತರದ ಕಪ್ಪು ಕುದುರೆಯನ್ನು ನೀಳಗಡ್ಡದ ಫೌಜದಾರ ಸಾಹೇಬರು ಹತ್ತಿ ನಡೆಯಿಸತೊಡಗಿದರೆ ಕುದುರೆಯ ಬೆನ್ನು ಬಾಗಿ ಬಿಲ್ಲಾಗುತ್ತಿತ್ತು.

ಕೊರಕಲಮಟ್ಟಿಗೆ ಬರುವುದಕ್ಕೆ ಯಾವ ದಾರಿಯೂ ಅನುಕೂಲವಾಗಿಲ್ಲ. ನಡೆಯುತ್ತಲೇ ಬರಬೇಕು. ಇಲ್ಲವೆ ಕುದುರೆ ಹತ್ತಿ ಬರಬೇಕು. ಜಾಫರಖಾನ ಫೌಜದಾರರು ಕುದುರೆ ಸಾಕಿದ್ದರಿಂದಲೇ ಕೊರಕಲಮಟ್ಟಿಗೆ ಬರಲು ಸಾಧ್ಯವಾಯಿತು.

ಬೆಳಗಾಗುವ ಹೊತ್ತಿಗೆ ಚಾವಡಿ ಮುಂದಿನ ಕುದುರೆಯನ್ನು ಬಿಚ್ಚಿಕೊಂಡು ಓಲೆಕಾರನು ಮುಂದೆ ಸಾಗಿದನು. ಅಗಸೆಯ ಹೊರಗಿರುವ ಹನುಮಪ್ಪನ ಹಾಳು ಗುಡಿಯ ಕಲ್ಲುಡಿಗ್ಗೆಯ ಬಳಿಯಲ್ಲಿ ನಿಲ್ಲಿಸಿದನು. ಏಳುಗೇಣಿನ ಕುದುರೆಯಾದ್ದರಿಂದ ಮೇಲೆ ಹತ್ತುವವರಿಗೆ ಆನುಗಲ್ಲು ಅಥವಾ ಕಟ್ಟೆ ಅವಶ್ಯವಾಗಿ ಬೇಕು.

ಗುಡಿಯ ಮಗ್ಗುಲಿಗೆ ಅಸ್ತವ್ಯಸ್ತವಾಗಿ ಬಿದ್ದ ಕಲ್ಲುಗಳಲ್ಲಿ ಒಂದನ್ನೇರಿ ನಿಂತು ಕುದುರೆಯನ್ನು ಜಿಗಿದು ಹತ್ತಿದರು. ಆ ಇಸಲಿಗೆ ಕಾಲಕೆಳಗಿನ ಕಲ್ಲು ಉರುಳಿಬಿತ್ತು. ಗೌಡ ಓಲೆಕಾರರು ಮಾಡಿದ ಮುಜುರೆಯನ್ನು ಸ್ವೀಕರಿಸುತ್ತ ಫೌಜದಾರರು ಕುದುರೆಯನ್ನು ಓಡಿಸಿದರು.

ಅಂದು ರಾತ್ರಿ ಊರಗೌಡರ ಕನಸಿನಲ್ಲಿ ಹನುಮಪ್ಪನು ಕಾಣಿಸಿಕೊಂಡು ಅವನನ್ನು ಗಟ್ಟಿಯಾಗಿ ಹಿಡಿದನು.

“ಏಕೆ ದೇವಾ, ಕನಸಿನಲ್ಲಿ ದರ್ಶನಕೊಟ್ಟಿರಲ್ಲ” ಎಂದು ವಿನಯದಿಂದ ಗೌಡ ಕೇಳಿದನು.

“ಗೌಡ, ಒಳ್ಳೆಯ ಮಾತಿನಿಂದ ಎಣ್ಣೆ ಮಜ್ಜನ ಮಾಡಿಸುವೆಯೋ ಇಲ್ಲವೋ ನಿನ್ನ ಕುತ್ತಿಗೆ ಹಿಸುಕಲೋ?” ಎಂದನು ಹನುಮಪ್ಪ. “ನನ್ನ ಮೇಲೇಕೆ ಸಿಟ್ಟು ದೇವಾ? ನಾನಾವ ಅಪರಾಧ ಮಾಡಿದೆ?”

“ನನ್ನ ಸೊಂಟ ನೋವಾಗಿದೆ.”

“ಸೊಂಟ ನೋವು ಏಕಾಯಿತು ?” ಗೌಡನ ಪ್ರಶ್ನೆ.

“ಬಂದಿದ್ದನಲ್ಲ ನಿಮ್ಮ ಫೌಜುದಾರ. ತನ್ನೂರಿಗೆ ಹೋಗುವಾಗ ಕುದುರೆ ಹತ್ತುವ ಮು೦ದೆ ನನ್ನ ಮೇಲೆ ಕಾಲಿಟ್ಟು ನೆಗೆದು ಕುದುರೆ ಹತ್ತಿದನು. ಆ ಇಸಲಿಗೆ ಸೊಂಟ ನೋವು ಆಗಿದೆ” ಹನುಮಪ್ಪನ ವಿವರಣೆ.

“ಆ ಫೌಜದಾರನನ್ನು ಬಿಟ್ಟು ನನ್ನನ್ನೇಕೆ ಹಿಡಿದಿರಿ ದೇವಾ?”

“ಯಾರನ್ನು ಹಿಡಿಯಲಿ ? ಫೌಜದಾರನು ನನ್ನ ಭಕ್ತನೇ ? ಭಕ್ತರನ್ನು ಬಿಟ್ಟು ಅನ್ಯರನ್ನು ನಾನೇಕೆ ಹಿಡಿಯಲಿ” ಹನುಮಂತದೇವರ ಸ್ಪಷ್ಟೀಕರಣ. “ಬೆಳಗಾಗುತ್ತಲೆ ಎಣ್ಣಿ ಮಜ್ಜನ ಮಾಡಿಸುತ್ತೇನೆ. ತಾಳು ದೇವ” ಎಂದು ಗೌಡನು ಕಾಲಿಗೆರಗಲು ಹನುಮಪ್ಪನು ಅವನನ್ನು ಬಿಟ್ಟುಕೊಟ್ಟನು.

ಕನಸಿನಲ್ಲಿ ಮಾತುಕೊಟ್ಟ ಪ್ರಕಾರ ಗೌಡನು, ಮಗಿ ಎಣ್ಣೆ ತರಿಸಿ ಹನುಮಪ್ಪ ದೇವರಿಗೆ ಎಣ್ಣೆ ಮಜ್ಜನ ಮಾಡಿಸಿದನು.
*****

ಪುಸ್ತಕ: ಉತ್ತರ ಕರ್ನಾಟಕದ ಜನಪದ ಕಥೆಗಳು

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...