Home / ಕಥೆ / ಜನಪದ / ರಾತ್ರಿರಾಜ

ರಾತ್ರಿರಾಜ

ಭೂಲೋಕದಿಂದ ತನ್ನ ಕಡೆಗೆ ಬಂದ ವಿಪುಲ ಅರ್ಜಿಗಳ ಒಟ್ಟಣೆಯನ್ನು ನೋಡಿ, ಅವುಗಳಿಗೆಲ್ಲ ಉತ್ತರ ಬರೆಯಿಸುತ್ತ ಕುಳಿತುಕೊಳ್ಳುವುದಕ್ಕಿಂತ ಸ್ವತಃ ಭೂಲೋಕಕ್ಕೆ ಹೋಗಿ, ಅಲ್ಲಿಯವರಿಗೆ ಬೇಕಾದ ಪರಿಹಾರವನ್ನು ಒದಗಿಸಿ ಬರುವುದು ಲೇಸೆಂದು ಬಗೆದು ಬ್ರಹ್ಮದೇವನು ತನ್ನ ಸಿಬ್ಬಂದಿಯೊಡನೆ ಪೃಥ್ವಿಗಿಳಿದನು. ಅರ್ಜಿದಾರರಿಗೆ ಕೊಡಬೇಕಾದ ಪರಿಹಾರಗಳನ್ನೂ ಹೊತ್ತುತಂದನು.

ಊರಮುಂದಿನ  ಧರ್ಮಶಾಲೆಯಲ್ಲಿ ಬೀಡುಬಿಟ್ಟು ಊರಲ್ಲೆಲ್ಲ ಡಂಗುರ ಹೊಡಿಸಿದನು. “ಯಾರಾರ ಬೇಡಿಕೆ ಏನೇನಿದೆಯೆಂಬುದನ್ನು ಸಮಕ್ಷಮದಲ್ಲಿ ತಿಳಿಸಿ ಪರಿಹಾರ ಪಡೆಯಬೇಕು” ಎನ್ನುವ ಸುದ್ಧಿ ಕಣ್ಣುಮುಚ್ಚಿ ಕಣ್ಣು ತೆರೆಯುವಷ್ಟರಲ್ಲಿ ಊರವರಿಗೆ ತಿಳಿದುಬ೦ತು.

ಮರುದಿನ ಮುಂಜಾನೆ ಧರ್ಮಶಾಲೆಯತ್ತ ಜನರು ಸಾಲುಗಟ್ಟಿ ಸಾಗಿಯೇ ಸಾಗಿದರು. ತಮ್ಮ ಬೇಡಿಕೆಗಳನ್ನು ಬ್ರಹ್ಮದೇವನ ಮುಂದಿಟ್ಟರು. ಬ್ರಷ್ಮದೇವನಾದರೂ ಯಾರನ್ನೂ ಬರಿಗೈಯಿಂದ ಕಳಿಸದೆ, ಕೈಸಡಿಲು ಬಿಟ್ಟು ಕೇಳಿದವರಿಗೆ ತೃಪ್ತಿಯಾಗುವಂತೆ ಅವರವರ ಬೇಡಿಕೆಗಳನ್ನು ಪೂರಯಿಸಿದನು. ಸಂತ್ರಸ್ತರಲ್ಲಿ ಕೆಲವರಿಗೆ ಹೊಲ ಸಿಕ್ಕವು. ಕೆಲವರಿಗೆ ಮನೆ ಸಿಕ್ಕವು. ಹಿಂಡುವ ಎಮ್ಮೆ ಕೆಲವರಿಗೆ, ಹೂಡುವ ಎತ್ತು ಕೆಲವರಿಗೆ ದೊರೆತವು. ಕುದುರೆ ಬೇಡಿದವರಿಗೆ ಕುದುರೆ, ಗಾಡಿ ಬೇಡಿದವರಿಗೆ ಗಾಡಿ, ಪ್ರಾಯ ಬೇಡಿದರೂ ಸಿಕ್ಕಿತು. ಆರೋಗ್ಯ ಬೇಡಿದರೂ ಸಿಕ್ಕಿತು. ಚೆಲುವಿಕೆ – ಆಭರಣಗಳನ್ನೂ ಬ್ರಹ್ಮದೇವನು ಇಲ್ಲೆನ್ನದೆ ಕೊಟ್ಟೇಕೊಟ್ಟನು.

ದೀಪ ಹಚ್ಚುವ ವೇಳೆಯಾಯಿತು. ಬಡ ನೇಕಾರನೊಬ್ಬನು ಧರ್ಮಶಾಲೆಗೆ ಬಂದು, ಬ್ರಹ್ಮದೇವರಿಗೆ ಕೈಮುಗಿದು ನಿಂತನು.

“ಏನು ಬೇಕಾಗಿತ್ತು ನಿನಗೆ” ಎಂದು ಕೇಳಿದನು ಬ್ರಹ್ಮದೇವ.

“ನನಗೆ ಅರಸೊತ್ತಿಗೆಯನ್ನು ಕೊಟ್ಟುಬಿಡಿರಿ” ಎಂದನು ಆ ನೇಕಾರ.

“ತೀವ್ರ ಏಕೆ ಬರಲಿಲ್ಲ ನೀನು ?”

“ಮಗ್ಗದ ಮೇಲಿನ ಸೀರೆ ನೆಯ್ದು ಮುಗಿಸ್ಲಬೇಕಾಗಿತ್ತು. ಆದ್ದರಿಂದ ತಡವಾಯಿತು” ಎಂದು ನೇಕಾರನು ಕೈತಿಕ್ಕುತ್ತ ನುಡಿದು ಮುಗಿಸಿದನು.

“ನಾನು ಕೊಡಬೇಕಾದ ಅರಸೊತ್ತಿಗೆಗಳೆಲ್ಲ ತೀರಿಹೋದವು. ಮತ್ತೇನಾದರು ಕೇಳಿಕೋ ಕೊಡುವೆನು.”

“ನನಗೆ ಅರಸೂತ್ತಿಗೆಯೇ ಬೇಕಾಗಿತ್ತು” ನೇಕಾರನು ತಡವರಿಸುತ್ತ ಹೇಳಿದನು.  ಬ್ರಹ್ಮದೇವನು ಕೆಲಹೊತ್ತು ವಿಚಾರಮಗ್ನನಾಗಿ ಆ ಬಳಿಕ ಹೇಳಿದನು –

“ರಾತ್ರಿರಾಜನಾಗುವೆಯಾ ?”

“ಆಗಲಿ. ಎಂಥದೇ ಆಗಲಿ. ರಾಜನಾದರೆ ಸಾಕು. ಕೊಟ್ಟುಬಿಡಿರಿ” ಎಂದು ಹಿರಿಹಿಗ್ಗಿನಲ್ಲಿ ಕೇಳಿದನು.

“ಕೊಟ್ಟಿದೆ ಹೋಗು” ಎಂದನು ಬ್ರಹ್ಮದೇವ.

*     *     *

ಹಳ್ಳಿಯ ಬಯಲಾಟದ ಮೇಳದವರು ಪ್ರತಿಯೊಂದು ಆಟದಲ್ಲಿ ಆ ನೇಕಾರನಿಗೇ ರಾಜನ ಸೋಗು ಕೊಡತೊಡಗಿದರು. ಬಡ ನೇಕಾರನು ದುಡಿದು ದುಡಿದು ಬಡಕಲಾಗಿದ್ದನು. ಗಲ್ಲಗಳೆಲ್ಲ ಕರಗಿ ದವಡಿಗೆ ಹತ್ತಿದ್ದವು. ಕಣ್ಣು ಒಳಸೇರಿದ್ದವು. ಅವು ಅಸಹ್ಯವಾಗಿ ಕಾಣಿಸಬಾರದೆಂದು ನೇಕಾರನು ಕಣ್ಣಿಗೆ ಬಣ್ಣದ ಕನ್ನಡಕ ಧರಿಸುವನು. ಗಲ್ಲಮೀಸೆ ಹಚ್ಚಿಕೊಳ್ಳುವನು. ಅದಕ್ಕಾಗಿ ಮೇಳದವರು ಬಣ್ಣದ ಕೋಣೆಯಲ್ಲಿ ಹರಕಲಾದ ಒಂದು ಉಣ್ಣೆಯ ಝಾನ (ಥಡಿ) ತಂದಿಟ್ಟರು. ಬಟ್ಟಲಲ್ಲಿ ಅರೆದ ಅಂಟು ನೆನೆಯಿಟ್ಟರು.

ಪ್ರತಿಯೊಂದು ಸೋಗು ರಂಗಸ್ಥಳಕ್ಕೆ ಕುಣಿಯುತ್ತಲೇ ಬರುವದು. “ಝೆಂತತ ಝಣತ ಕಡಕಡ ಝೇಂತತ ಝಣತ| ತಯಾ ತೋಮ್ಲದರಿನಲಾ” ಎಂದು ತಿಲ್ಲಾಣವಾಡುವುದು ವಾಡಿಕೆಯಾಗಿದೆ. ಆದರೆ ಅದಕ್ಕೆ ಅರ್ಥವೇನು, ಯಾರಿಗೂ ತಿಳಿಯದು.

“ಝಾನ್ ತಾ | ಕಡಕಡ್ಡು ತಾ |
ಜಿಗಿತಾ | ಝಾನತಾ
ತಗೊಂಡು ಬರಲಿಲ್ಲ ಲಾ”

ಎನ್ನುವುದೇ ಆ ವೀರಾವೇಶದ ರಾಜನ ವೀರವಾಣಿ.

ಬ್ರಹ್ಮದೇವರಿತ್ತ ವರಪ್ರಸಾದದಿಂದ ನೇಕಾರನು ರಾತ್ರಿರಾಜನಾಗುತ್ತಲೇ ಬಂದನು. ಅವನ ಆ ವತನವನ್ನು ಯಾರೂ ಕಸಿದುಕೊಳ್ಳುವಂತಿಲ್ಲ. ರಾತ್ರಿರಾಜ ಅವನು.
*****

ಪುಸ್ತಕ: ಉತ್ತರ ಕರ್ನಾಟಕದ ಜನಪದ ಕಥೆಗಳು

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...