Home / ಕವನ / ಅನುವಾದ / ಬಾನಾಡಿ

ಬಾನಾಡಿ

ಆರು ನೀನೆಲೆ ಹರುಷಮೂರುತಿ?
ಹಕ್ಕಿಯೆಂಬರೆ ನಿನ್ನನು!
ತೋರಿ ದಿವಿಜರು ಸುಳಿವ ಬಳಿ, ಸುಖ
ವುಕ್ಕಿಬಹ ನಿನ್ನೆದೆಯನು
ಹಾರಿ ನೆನೆಯದ ಕಲೆಯ ಕುಶಲದ ಭೂರಿಗಾನದೊಳೆರೆಯುವೆ!
ನೆಲವನೊಲ್ಲದೆ ಚಿಗಿದು ಚಿಮ್ಮುತ
ಮೇಲು ಮೇಲಕ್ಕೋಡುವೆ;
ಒಲೆದು ದಳ್ಳುರಿ ನೆಗೆದು, ಗಗನದ
ನೀಲಿಯಾಳದೊಳಾಡುವೆ;
ನಲಿದು ಹಾಡುತ ಹಾಡುತೇರುವೆ, ಏರುತೇರುತ ಹಾಡುವೆ.
ಬಿಳಿಯ ಮುಗಿಲನು ಬಣ್ಣವೇರಿಸಿ
ಕೆಳಗೆ ಹೊರಳುವ ಹೊತ್ತಿನ
ತಿಳಿಯ ಹೊಂಬಿಸಿಲಲ್ಲಿ ತೇಲುವೆ,
ಮುಳುಗಿ ಏಳುವೆ, ಹರಿಯುವೆ,
ಕಳಚಿ ದೇಹವ ದಿವಕೆ ಹರಿಯುವ ಭೋಗಿಯೋಲಾಟದವೊಲು.
ಹಾರುತಿರುತಲೆ ಸಂಜೆ ಸುತ್ತಲು
ಕರಗುವುದು ನಸುಗೆಂಪನು;
ತಾರೆ ನಡುಹಗಲಲ್ಲಿ ಬಾನೊಳು
ಕುರುಹುದೊರದ ಪರಿಯೊಳು
ತೊರೆಯಾದರು, ಕೇಳುತಿರುವೆನು ನಿನ್ನ ಕೀರುವ ನಲಿವನು.
ಎಳೆಯ ಬೆಳಕನು ಮೊಗೆದು ಹೊತ್ತರೆ
ಬೆಳ್ಳಗೆತ್ತಲು ತುಳುಕಲು,
ಕಳೆಯ ಸೊಡಲನು ಕುಗ್ಗುತಡಗುವ
ಬೆಳ್ಳಿಬಿಂಬದ ಬಗೆಯೊಳು,
ತಿಳಿವುದಿರುವುದು ಮೇಲೆ ಎಲ್ಲಿಯೋ, ಕಣ್ಣು ತಟ್ಟನೆ ಹಿಡಿಯದು.
ಇಳೆಯ, ಗಾಳಿಯ ತರಹನೆಲ್ಲವ
ಕೆಲೆವ ನಿನ್ನುಲಿ ತುಂಬಿತು,
ತೊಳೆದ ಬಾನೊಳಗೊಂಟಿಮೋಡದ
ನೆಲೆಗೆ ನುಸುಳಿದ ತಿಂಗಳು
ಬೆಳಕುಮಳೆಯನು ಕರೆದು ಗಗನದ ಬಯಲ ತುಂಬುವ ತೆರದೊಳು.
ಏನೊ ನೀನದ ನಾವು ಕಾಣೆವು;
ಏನು ಸರಿ ನಿನಗೆಂಬುದು?
ನೀನು ಸನ್ನಿಧಿಯಿಂದ ಬೀರುವ
ಗಾನಧಾರೆಯ ಕಾಂತಿಗೆ
ಸೋನೆ ಸಮನೇ ಬಿಲ್ಲುಮೂಡಿದ ಮೋಡ ಸುರಿಯುತ್ತಿರುವುದು!
ಬಗೆಯ ಹೊಳಪಿನೊಳಡಗಿ ತನ್ನೊಳೆ
ತಡೆಯಲಾರದೆ ಹಾಡುತ,
ಬಗೆಗೆ ತಾರದೆ ಲೋಕ ನೂಕಿದ
ಮಿಡುಕು ಹಂಬಲು ಬಯಕೆಯ
ಹೊಗಿಸಿ ಹೃದಯಕೆ ಮರುಕಗೊಳಿಸುವ ಕವಿಗೆ ಹೋಲಿಸಿ ಹೊಗಳಲೋ!
ಕೆಳದಿ ಸುಳಿಯದ ವೇಳೆ, ಒಬ್ಬಳೆ
ಏರಿ ಅರಮನೆಮಾಡವ
ಒಲುಮೆಹೇರಿದ ಜೀವವಾರಲು,
ತೂರಿ ನೆಲೆಯನು ಕೊಚ್ಚಿಸಿ,
ಒಲುಮೆವೊಲೆ ಸವಿಯಾದ ಗಾನವನುಲಿವ ದೊರೆಮಗಳೆಂಬೆನೋ!
ಬಿಳಿಯ ಮಂಜಿನ ಮುಸುಕು ಬಳಸಿದ
ಮೆಳೆಯ ಪೊದರಲಿ ಪದರುತ,
ಬಳಿಯ ಹೂವಿನ, ಹುಲ್ಲ ತೆರೆಯಲಿ
ಹೊಳಪ ಮೆಯುತ, ಮರಸುತ,
ತೆಳುವು ಬೆಳಕನು ಕೆದರಿ ಮಿನುಕುವ ಮಿಂಚುಹುಳುವೆಂದೆಣಿಸಲೋ!
ಹಸುರ ಹೊರಎಸಳಲ್ಲಿ ಹುದುಗುತ,
ಮುಗುಳ ಸೊಬಗನು ಹೊರೆಯುತ,
ಬಿಸಿಯ ಗಾಳಿಗೆ ಬಳಲಿ ಬಿರಿಯುತ,
ಸೊಗಡುಗಂಪನು ಸುರಿಯುತ,
ಹಸಿದ ಜೇನಿನ ಹೊರೆಯ ಕಳ್ಳರ ಸೊಕ್ಕಿಸಿಡುವ ಗುಲಾಬಿಯೋ!
ಹೊಳೆವ ಗರುಕೆಯ ಮೇಲೆ ಬೀಳುವ
ಮಳೆಯ ಹನಿಗಳ ಸೊಪ್ಪುಳು,
ಮಳೆಗೆ ಕಣ್ಣಿಡುವರಳು, ಮತ್ತೀ
ಇಳೆಯೊಳಾವುದು ನಲಿವುದು,
ಹೊಳಪು, ಹೊಸತವನೆಲ್ಲ ಮೀರಿಸಿ ನಿನ್ನ ಗಾನವೆ ಮೆರೆವುದು.
ದೇವನಾಗಿರು, ಹಕ್ಕಿಯಾಗಿರು,
ಕಲಿಸು ನಮಗೀ ಹರುಷವ,
ಪ್ರೇಮಗಾನವೊ, ಸೋಮಪಾನವೊ,
ಅಲೆವುದಾವುದು ಹೃದಯವ?
ಆವ ಸವಿ ಬಗೆ ತುಳುಕುವುದಿನಿತು ದಿವ್ಯಾನಂದವ?
ಮದುವೆಯೊಸಗೆಯ ಗೀತವಾಗಲಿ,
ಜಯದ ಘೋಷವೆ ಆಗಲಿ,
ಎದಿರೆ ನಿನ್ನೊಂದುಲಿಗೆ, ತೆಗೆ, ಹುಸಿ
ಮಯದ ಹೆಮ್ಮೆಯ ಕೊಸರಿಕೆ!
ಅದರೊಳೆತ್ತಲೋ ಹದುಗಿ ಏನೋ ಕೊರತೆ ಇಹುದೆಂದರಿಯೆವೇ?
ಆವ ಸಿರಿನೋಟಗಳು ಮಡುಗಳೊ
ತೀವಿದೀ ಸುಖಗಾನಕೆ?
ಆವ ತೆರೆಗಳೋ, ಬಯಲೋ, ಬೆಟ್ಟವೊ ,
ಆವ ಗಗನವಿಚಿತ್ರವೋ?
ಆವ ಜಾತಿ ಪ್ರೇಮವೋ? ನೋವೇನೂ ಕಾಣದ ಜನ್ಮವೋ?
ಗೆಲವು ಹಿಗ್ಗುವ ನಿನ್ನ ಬಗೆಯೊಳು
ಸೊರಗು ಸಂಕಟವಿಳಿಯದು;
ಕಲಕಿ ಚಿತ್ತವ ಕವಿವ ಚಿಂತೆಯ
ನೆರಳು ಬಳಿಯೊಳು ಸುಳಿಯದು.
ಒಲಿವೆ, ಒಲಿವರ ದಣಿವು ಬೇಸರವೇನೋ ನಿನಗದೆ ತಿಳಿಯದು.
ಜಡರು ಮರ್ತ್ಯರು ನಾವು, ತರ್ಕಿಸಿ
ಮರಣಮರ್ಮವನರಿವೆವೆ?
ಹಿಡಿದು ಕನಸಿನೊಳಾಳವೆಲ್ಲವ,
ಪರಮಶಾಂತಿಯ ಪಡೆದಿಹೆ;
ಪಡೆಯದಿರಲಿಂತೆಂತು ಹರಿವುದು ರಾಗ ತಿಳಿಹೊಳೆಯಂದದೆ?
ಹಿಂದುಮುಂದನು ನೋಡಿ ನಮೆವೆವು
ನೆನೆಯುತಿಲ್ಲದ ಸುಖವನು,
ಕುಂದು ಸೋಕದ ನಮ್ಮ ನಗೆಯೊಳು
ಕೊನೆಗೆ ನೋವಿನಿಸಿರುವುದು,
ನೊಂದ ಗೋಳನು ಹೇಳಿ ಕೊರೆವುವೆ ಇನಿಯ ಕವನಗಳೆಮ್ಮೊಳು.
ಹೋಗಲದು: – ಹಗೆ, ಕೊಬ್ಬು, ಕಳವಳ
ದೆಡೆಗೆ ಲೆಕ್ಕಿಸದಿದ್ದೆವು;
ಹೀಗೆ ಕಂಬನಿಬಿಡದ ಹುಟ್ಟನು
ಪಡೆದೆ ಭೂಮಿಗೆ ಬಂದೆವು;
ಆಗಲಾಯಿತು, ನಿನ್ನ ನಲಿವಿನ ಹದಕ್ಕೆ ಬರುವೆವೆ? ಕಾಣೆನು.
ಕಿವಿಗೆ ಸವಿಯನು ಕರೆವ ವೃತ್ತಗ
ಳಿರಲಿ ಹೆಣೆಯುವೆವೆಲ್ಲರು ,
ಕವನಕೋಶದೊಳಿರುವ ರತ್ನಗ
ಳಿರಲಿ ಕದಿಯಲು ಬಲ್ಲೆವು,
ಕವಿಗೆ ಬೇಡವೆ ನಿನ್ನ ಕೌಶಲ – ನೆಲವ ಜರೆಯುವ ಜೀವವೇ!
ಭೋಗನಿಧಿ, ನೀನರಿತ ಹರುಷದಿ
ಕಲಿಸಿಕೊಂಡು ನನಗರೆಯನು;
ರಾಗಮಧುರಾವೇಶವೆನ್ನಲಿ
ತುಳುಕಿ ಬರುತಿರೆ ತುಟಿಯಲಿ,
ಈಗ ಕೇಳುವೆ ನಾನು, ಲೋಕವೆ ಆಗ ಕೇಳುವುದೆನ್ನನು.
*****
SHELLEY (1792-1822) : Skylark
Tagged:

Leave a Reply

Your email address will not be published. Required fields are marked *

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...