Home / ಕವನ / ಅನುವಾದ / ಬ್ಲೆನ್‌ಹೀಮ್ ಕದನ

ಬ್ಲೆನ್‌ಹೀಮ್ ಕದನ

ಬೇಸಗೆಯಲಿ ಸಂಜೆಯಾಯಿತು; ಕೆಲಸವ
ಮುತ್ತಜ್ಜ ತೀರಿಸಿಕೊಂಡ.
ಹಟ್ಟಿಯ ಬಾಗಿಲ ಬಳಿಯಲಿ ನೋಡುತ
ಹೊಂಬಿಸಿಲಲಿ ಕುಳಿತುಕೊಂಡ.
ಅಲ್ಲಿಯೆ ಹಸುರಮೇಲಾಡುತಲಿದ್ದಳು
ಅಜ್ಜನ ಮುದ್ದಿನ ಪುಟ್ಟ ಮೊಮ್ಮಗಳು.
ಕಂಡಳು ಕೂಗಿಕೊಂಡಣ್ಣನು ಬರುವುದ
ಆಡುತ, ಹೊಳೆಯಂಚಿನಿಂದ
ದಪ್ಪಗೆ, ದುಂಡಗೆ, ಏನನೊ ಒಂದನು
ಉರುಳಿಸಿಕೊಂಡವ ತಂದ.
ದಪ್ಪಗೆ, ನುಣ್ಣಗೆ, ದುಂಡಗೆ ಇರುವುದು,
ಅಜ್ಜ ಇದೇನೆಂದು ಕೇಳಲು ಬಂದ.
ಅಜ್ಜ ತೆಗೆದುಕೊಂಡ ಕೈಗದ, ಹುಡುಗನು
ನಿಂತ ಹತ್ತಿರ ಕಿವಿಗೊಟ್ಟು.
ನೋಡಿ, ಆ ಮುದುಕನು ತಲೆಯನಲ್ಲಾಡಿಸಿ,
ಮರುಗುತ ನಿಟ್ಟುಸಿರಿಟ್ಟು,
ಪಾಪ, ಇದಾರದೋ ತಲೆಯೋಡು-ಯಾವನೊ
ಬಿದ್ದವನಾ ದೊಡ್ಡ ಜಯದಲಿ ಎಂದ.
ಎಷ್ಟೋ ನೋಡಿರುವೆನು ನಮ್ಮ ತೋಟದಲೆಲ್ಲ,
ಬಿಸುಡುವೆನೊಕ್ಕಡೆಗಿಕ್ಕಿ.
ಉಳುತ ಹೋದಾಗೆಲ್ಲ ಮೇಲಕೆ ಬರುವುವು
ನೇಗಿಲ ಕುಳದಲಿ ಸಿಕ್ಕಿ.
ಸಾವಿರಗಟ್ಟಳೆ ಜನಗಳು ಕೊಲೆಯಾಗಿ
ಬಿದ್ದವರಾ ದೊಡ್ಡ ಜಯದಲಿ ಎಂದ.
ಆ ಕಥೆ ಏನದು? ನಮಗೆಲ್ಲ ಹೇಳಜ್ಜ ,
ಎಂದನು ಪುಟ್ಟ ಮೊಮ್ಮಗನು.
ಅಚ್ಚರಿ ಕಾಯುತ, ಅರಳಿದ ಕಣ್ಣೆತ್ತಿ
ನಿಂದಳು ಪುಟ್ಟ ಮೊಮ್ಮಗಳು.
ಯುದ್ಧದ ಕಥೆಯೇನು ನಮಗೆಲ್ಲ ಹೇಳಜ್ಜ
ಏತಕೆ ಕಾದಾಡಿದರೊ ಅದ ಹೇಳು.
ಮುತ್ತಜ್ಜ ಹೇಳಿದ – ಇಂಗ್ಲಿಷರಿರುವರೆ,
ಮುರಿದರು ಫ್ರೆಂಚರ ಪಡೆಯ.
ಏತಕೆ ಕಾದಾಡಿದರೊ ಅದ ನಾ ಬೇರೆ
ಕಾಣೆನು ಚೆನ್ನಾಗಿ ಅಡಿಯ.
ಆದರೆ ಯಾರನೆ ಕೇಳವರೆಲ್ಲರು
ಲೋಕಪ್ರಸಿದ್ದಿಯ ಜಯವೆಂಬರೆಂದ.
ನಮ್ಮಯ್ಯ ಗುಡಿಸಲ ಮಾಡಿಕೊಂಡಿದ್ದನು
ಆ ಹೊಳೆಯಂಚಿನನಾಗ,
ಸೂರೆ ಹೊಡೆದು ಬೀಡ ನೆಲಸಮ ಸುಟ್ಟರು;
ತಲೆಯ ತಪ್ಪಿಸಿಕೊಂಡು ಬೇಗ
ಹೆಂಡತಿ ಮಕ್ಕಳ ಕಟ್ಟಿಕೊಂಡೋಡಿದ
ನಿಂತಲ್ಲಿ ನಿಲ್ಲದೆ ನೆಲೆಗಾಣದಲೆದ.
ಬೆಂಕಿಯ, ಕತ್ತಿಯ ಬಾಯಿಗೆ ಬಲಿಯಾಗಿ
ದೇಶವೆ ಹಾಳಾಯಿತೆಲ್ಲ.
ತುಂಬುಬಸಿರಿಯರು, ಹಾಲುಮಕ್ಕಳು ಸತ್ತ
ಲೆಕ್ಕವ ದೇವರೆ ಬಲ್ಲ
ಅದರಂತಹುದೆಷ್ಟೊ ಆಗಲೇಬೇಕಲ್ಲ
ಲೋಕಪ್ರಸಿದ್ಧಿಯ ಜಯದಲಿ ಎಂದ.
ನೋಡಲುಬಾರದು ಎಂಬರು ಘೋರವ
ಗೆದ್ದ ಮೇಲಾರಣದಲ್ಲಿ,
ಸಾವಿರಗಟ್ಟಳೆ ಹೆಣಗಳು ಕೊಳೆಯುತ
ಬಿಸಿಲಲಿ ಬಿದ್ದಿದ್ದುವಲ್ಲಿ.
ಆದರಂತಹುದೆಷ್ಟೊ ಆಗಲೇಬೇಕಲ್ಲ
ಲೋಕಪ್ರಸಿದ್ದಿಯ ಜಯದಲಿ ಎಂದ.
ದೇಶವೆ ಹೊಗಳಿತು ಗೆದ್ದ ನಾಯಕರನು,
ಸುರಿದುವು ಹೂವು ಮಳೆಗಳು-
ಛೀ ತೆಗೆ, ಏನದು, ಬಲುಕೆಟ್ಟ ಕೆಲಸವು!
ಎಂದಳು ಪುಟ್ಟ ಮೊಮ್ಮಗಳು.
ಅಲ್ಲವೆ, ಅಲ್ಲವೆ, ಪುಟ್ಟ ಹುಡುಗಿ. ಕೇಳು.
ಲೋಕಪ್ರಸಿದ್ಧಿಯ ಜಯವದು ಎಂದ.
ಎಲ್ಲರು ಹೊಗಳಿದರಾ ದೊಡ್ಡ ಯುದ್ಧವ
ಗೆದ್ದವರನು ಶೂರರನ್ನು-
ಒಳ್ಳೆಯದದರಿಂದ ಕಡೆಗಾದುದೇನಜ್ಜ?
ಎಂದನು ಪುಟ್ಟ ಮೊಮ್ಮಗನು.
ಅದ ನಾನು ಬಲ್ಲೆನೆ? ಯಾರನೆ ಕೇಳದು
ಲೋಕಪ್ರಸಿದ್ಧಿಯ ಜಯವೆಂಬರೆಂದ.
*****
SOUTHEY (1774 -1843) : After Blenheim
Tagged:

Leave a Reply

Your email address will not be published. Required fields are marked *

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...