Home / ಕಥೆ / ಜನಪದ / ಪಿಸುಣನಿಗೆ ಉಪಕಾರ

ಪಿಸುಣನಿಗೆ ಉಪಕಾರ

ಗಂಡ ಹೆಂಡಿರು ಕೂಡಿಕೊಂಡು ನೆರೆಯೂರಿನ ಸಂತೆಗೆ ಹೋಗಿ, ತಮಗೆ ಬೇಕಾದ ಅರಿವೆ ಅಂಚಡಿ, ಕಾಳುಕಡ್ಡಿ ಕೊಳ್ಳುವುದರಲ್ಲಿ ತೊಡಗಿದರು. ಜವಳಿಸಾಲಿನಿಂದ ಕಿರಾಣಿ ಸಾಲಿನ ಕಡೆಗೆ ಸಾಗಿದಾಗ ಅಲ್ಲೊಬ್ಬ ಕುರುಡ ಮುದುಕನು ಹೊರಟಿದ್ದನು. ಆತನ ಕಣ್ಣು ಕಾಣದೆ ಮುಳ್ಳು ಕಲ್ಲು ತುಳಿಯುತ್ತ ತೋಟದ ಬೇಲಿಯಲ್ಲಿಯೇ ಸಾಗಿದ್ದನು – “ಯಾರಾದರೂ ನನ್ನನ್ನು ಹಾದಿಗೆ ಹಚ್ಚಿರಪ್ಪೋ. ನಾನು ಕಣ್ಣು ಕಾಣದ ಕುರುಡ. ಮುಳ್ಳುಬೇಲಿಯಲ್ಲಿ ಹೋಗಿ ಬೀಳುತ್ತೇನೆ. ಒಂದಿಷ್ಟು “ಪುಣ್ಯ ಕಟ್ಟಿಕೊಳ್ಳಿರೆಪ್ಪ ಪುಣ್ಯಾತ್ಮಯಾ” ಎಂದು ಹಲಬುತ್ತಿದ್ದನು.

ಕುರುಡನ ಸ್ಥಿತಿಯನ್ನು ಕಂಡು ಗಂಡನು ಕನಿಕರಿಸಿ ಹೆಂಡತಿಗೆ ಹೇಳಿದನು “ಆ ಮುದುಕನ ಕೈ ಹಿಡಿದು ದಾರಿಗೆ ಹಚ್ಚು.”

ಗಂಡನಪ್ಪಣೆಯಂತೆ ಹೆಂಡತಿಯು ಕುರುಡನ ಕೈಹಿಡಿದು ಮೆಲ್ಲನೆ ಹೊರಳಿಸಿ ಸರಿದಾರಿಗೆ ಹಚ್ಚಿ, ಕೈಬಿಡಬೇಕೆಂದರೆ ಕುರುಡನು ಕೈಬಿಡದೆ ಕೂಗಿಕೊಳ್ಳತೊಡಗಿದನು – “ನನ್ನ ಹೆಂಡತಿ ನೋಡಿರೋ ಅಪ್ಪಾ ಈಕೆ. ನನ್ನ ಕೈಬಿಟ್ಟು ಇನ್ನಾವನೋ ಗೆಳೆಯನ ಕೂಡ ಓಡಿಹೋಗಬೇಕೆನ್ನುತ್ತಾಳೆ. ನ್ಯಾಯ ಮಾಡಿರೋ ಅಪ್ಪಾ ಕುರುಡನದು” ಎನ್ನುತ್ತಾ ಗಟ್ಟಿಯಾಗಿ ಬೊಬ್ಬಿಟ್ಟನು. ಜನ ನೆರೆಯಿತು.

ತನ್ನ ಹೆಂಡತಿಯನ್ನು ಕುರುಡನ ಕೈಯೊಳಗಿಂದ ಬಿಡಿಸಿಕೊಳ್ಳಲು ಗಂಡನು ಪ್ರಯತ್ನಿಸಿದರೆ ಮತ್ತಿಷ್ಟು ಬೊಬ್ಬಾಟವೇ ಆಗತೊಡಗಿತು. ಆಕೆ ತನ್ನ ಹೆಂಡತಿಯೆಂದು ಕುರುಡ ಹೇಳುವನು ; ನನ್ನ ಹೆಂಡತಿಯೆಂದು ಆತ ಹೇಳುವನು. ಆತನು ನನ್ನ ಗಂಡನೆಂದು ಹೆಂಡತಿ ಹೇಳಿದೆರೆ, ತನ್ನನ್ನು ಬಿಟ್ಟು ಹೊರಟಿದ್ದರಿಂದ ಹಾಗೆ ಹೇಳುತ್ತಾಳೆಂದು ಕುರುಡನ ಕೂಗಾಟ.

ಆ ನ್ಯಾಯ ಚಾವಡಿಯ ಕಟ್ಟೆಯೇರಿತು. ಅಲ್ಲಿಯೂ ಬಗೆಹರಿಯಲಿಲ್ಲ. ಬಳಿಕ ಗೌಡನು ಸಿಟ್ಟಗೇರಿ ಆ ಮೂವರನ್ನೂ ಮೂರು ಬೇರೆ ಬೇರೆ ಕೋಣೆಗಳಲ್ಲಿ ಹಾಕಿಸಿ ಒಂದೆಂದು ಕೋಣೆಯ ಮುಂದೆ ಒಬ್ಬೊಬ್ಬ ಓಲೆಕಾರನನ್ನು ಕಾವಲಿಟ್ಟನು.

ಮರುದಿವಸ ಗೌಡನು ಆ ಮೂವರೂ ಕಾವಲುಗಾರನನ್ನು ಬೇರೆ- ಬೇರೆಯಾಗಿ ಕರೆಯಿಸಿಕೊಂಡು, ಒಳಗಿದ್ದವರು ಒಡನುಡಿಯುತ್ತಿದ್ದ ಮಾತುಗಳಾವವೆಂದು ಕೇಳಿದನು. ಅವರು ಕ್ರಮವಾಗಿ ಹೀಗೆ ಹೇಳಿದರು –

ಕುರುಡನ ಕೋಣೆಯ ಕಾವಲುಗಾರ – “ಮನಸ್ಸಿನಂತೆ ಮಹಾದೇವ ! ಮನಸ್ಸಿನಂತೆ ಮಹಾದೇವ ! ಎನ್ನುತ್ತ ಕುಣಿದಾಡುತ್ತಿದ್ದನು ಆ ಕುರುಡ.”

ಹೆಂಗಸಿನ ಕೋಣೆಯ ಕಾವಲುಗಾರ – “ಗಂಡನಪ್ಪಣೆ ಮೀರಬಾರದೆಂದು ತಂದೆಗೆ ಸಮಾನನಾದ ಆ ಕುರುಡ ಮುದುಕನ ಕೈಹಿಡಿದು ಸರಿದಾರಿಗೆ ಹಚ್ಚಿದರೆ, ‘ಹೆಂಡತಿ  ಕೈಕೊಸರಿಕೊಂಡು  ಓಡಿಹೋಗುವಳೋ  ಅಪ್ಪಾ’ ಎಂದು ಹೊಯ್ಕೊಂಡರೆ ನಾನೇನು ಹಣೆಹಣೆ ಗಟ್ಟಿಸಿಕೊಳ್ಳಲಾ ? ಎಂಥ ವೇಳೆ ತಂದೆಯೋ ದೇವರೇ” ಎನ್ನುತ್ತ ಆಕೆ ಬೆಳತನಕ ಗೋಳಾಡಿ ಅತ್ತಳು.

ಗಂಡನ ಕೋಣೆಯ ಕಾವಲುಗಾರ – “ಆ ಕುರುಡನನ್ನು ನೋಡಿ ನನಗೇಕೆ ದಯೆ ಬಂದಿತೋ ಏನೋ. ಆತನಿಗೆ ಸರಿದಾರಿಗೆ ಹಚ್ಚುವ ಕೆಲಸವನ್ನು ಹೆಂಡತಿಗೆ ಹೇಳದೆ ನಾನೇ ಮಾಡಿದ್ದರೆ ಎಷ್ಟು ಚೆನ್ನಾಗಿತ್ತಲ್ಲ!” ಎಂದು ಗಳಿಗೆಗೊಮ್ಮೆ ಮಿಡುಕುತ್ತಿದ್ದನು.

ಆ ಎಲ್ಲ ಹೇಳಿಕೆಗಳನ್ನು, ಕೇಳಿ ಗೌಡನು, ಆ ಹೆಣ್ಣು ಮಗಳು ಕುರುಡನ ಹೆಂಡತಿ ಅಲ್ಲವೆಂದು ನಿರ್ಣಯಿಸಿ ಆಕೆಯನ್ನು ಆಕೆಯ ಗಂಡನೊಡನೆ ಕಳಿಸಿದನು.

ಕುರುಡ ಮುದುಕನನ್ನು ಬಯ್ದು ಬೆದರಿಸಿ ಊರಹೊರಗೆ ಹಾಕಿಸಿದನು.
*****

ಪುಸ್ತಕ: ಉತ್ತರ ಕರ್ನಾಟಕದ ಜನಪದ ಕಥೆಗಳು

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...