Home / ಕಥೆ / ಜನಪದ / ಪಿಸುಣನಿಗೆ ಉಪಕಾರ

ಪಿಸುಣನಿಗೆ ಉಪಕಾರ

ಗಂಡ ಹೆಂಡಿರು ಕೂಡಿಕೊಂಡು ನೆರೆಯೂರಿನ ಸಂತೆಗೆ ಹೋಗಿ, ತಮಗೆ ಬೇಕಾದ ಅರಿವೆ ಅಂಚಡಿ, ಕಾಳುಕಡ್ಡಿ ಕೊಳ್ಳುವುದರಲ್ಲಿ ತೊಡಗಿದರು. ಜವಳಿಸಾಲಿನಿಂದ ಕಿರಾಣಿ ಸಾಲಿನ ಕಡೆಗೆ ಸಾಗಿದಾಗ ಅಲ್ಲೊಬ್ಬ ಕುರುಡ ಮುದುಕನು ಹೊರಟಿದ್ದನು. ಆತನ ಕಣ್ಣು ಕಾಣದೆ ಮುಳ್ಳು ಕಲ್ಲು ತುಳಿಯುತ್ತ ತೋಟದ ಬೇಲಿಯಲ್ಲಿಯೇ ಸಾಗಿದ್ದನು – “ಯಾರಾದರೂ ನನ್ನನ್ನು ಹಾದಿಗೆ ಹಚ್ಚಿರಪ್ಪೋ. ನಾನು ಕಣ್ಣು ಕಾಣದ ಕುರುಡ. ಮುಳ್ಳುಬೇಲಿಯಲ್ಲಿ ಹೋಗಿ ಬೀಳುತ್ತೇನೆ. ಒಂದಿಷ್ಟು “ಪುಣ್ಯ ಕಟ್ಟಿಕೊಳ್ಳಿರೆಪ್ಪ ಪುಣ್ಯಾತ್ಮಯಾ” ಎಂದು ಹಲಬುತ್ತಿದ್ದನು.

ಕುರುಡನ ಸ್ಥಿತಿಯನ್ನು ಕಂಡು ಗಂಡನು ಕನಿಕರಿಸಿ ಹೆಂಡತಿಗೆ ಹೇಳಿದನು “ಆ ಮುದುಕನ ಕೈ ಹಿಡಿದು ದಾರಿಗೆ ಹಚ್ಚು.”

ಗಂಡನಪ್ಪಣೆಯಂತೆ ಹೆಂಡತಿಯು ಕುರುಡನ ಕೈಹಿಡಿದು ಮೆಲ್ಲನೆ ಹೊರಳಿಸಿ ಸರಿದಾರಿಗೆ ಹಚ್ಚಿ, ಕೈಬಿಡಬೇಕೆಂದರೆ ಕುರುಡನು ಕೈಬಿಡದೆ ಕೂಗಿಕೊಳ್ಳತೊಡಗಿದನು – “ನನ್ನ ಹೆಂಡತಿ ನೋಡಿರೋ ಅಪ್ಪಾ ಈಕೆ. ನನ್ನ ಕೈಬಿಟ್ಟು ಇನ್ನಾವನೋ ಗೆಳೆಯನ ಕೂಡ ಓಡಿಹೋಗಬೇಕೆನ್ನುತ್ತಾಳೆ. ನ್ಯಾಯ ಮಾಡಿರೋ ಅಪ್ಪಾ ಕುರುಡನದು” ಎನ್ನುತ್ತಾ ಗಟ್ಟಿಯಾಗಿ ಬೊಬ್ಬಿಟ್ಟನು. ಜನ ನೆರೆಯಿತು.

ತನ್ನ ಹೆಂಡತಿಯನ್ನು ಕುರುಡನ ಕೈಯೊಳಗಿಂದ ಬಿಡಿಸಿಕೊಳ್ಳಲು ಗಂಡನು ಪ್ರಯತ್ನಿಸಿದರೆ ಮತ್ತಿಷ್ಟು ಬೊಬ್ಬಾಟವೇ ಆಗತೊಡಗಿತು. ಆಕೆ ತನ್ನ ಹೆಂಡತಿಯೆಂದು ಕುರುಡ ಹೇಳುವನು ; ನನ್ನ ಹೆಂಡತಿಯೆಂದು ಆತ ಹೇಳುವನು. ಆತನು ನನ್ನ ಗಂಡನೆಂದು ಹೆಂಡತಿ ಹೇಳಿದೆರೆ, ತನ್ನನ್ನು ಬಿಟ್ಟು ಹೊರಟಿದ್ದರಿಂದ ಹಾಗೆ ಹೇಳುತ್ತಾಳೆಂದು ಕುರುಡನ ಕೂಗಾಟ.

ಆ ನ್ಯಾಯ ಚಾವಡಿಯ ಕಟ್ಟೆಯೇರಿತು. ಅಲ್ಲಿಯೂ ಬಗೆಹರಿಯಲಿಲ್ಲ. ಬಳಿಕ ಗೌಡನು ಸಿಟ್ಟಗೇರಿ ಆ ಮೂವರನ್ನೂ ಮೂರು ಬೇರೆ ಬೇರೆ ಕೋಣೆಗಳಲ್ಲಿ ಹಾಕಿಸಿ ಒಂದೆಂದು ಕೋಣೆಯ ಮುಂದೆ ಒಬ್ಬೊಬ್ಬ ಓಲೆಕಾರನನ್ನು ಕಾವಲಿಟ್ಟನು.

ಮರುದಿವಸ ಗೌಡನು ಆ ಮೂವರೂ ಕಾವಲುಗಾರನನ್ನು ಬೇರೆ- ಬೇರೆಯಾಗಿ ಕರೆಯಿಸಿಕೊಂಡು, ಒಳಗಿದ್ದವರು ಒಡನುಡಿಯುತ್ತಿದ್ದ ಮಾತುಗಳಾವವೆಂದು ಕೇಳಿದನು. ಅವರು ಕ್ರಮವಾಗಿ ಹೀಗೆ ಹೇಳಿದರು –

ಕುರುಡನ ಕೋಣೆಯ ಕಾವಲುಗಾರ – “ಮನಸ್ಸಿನಂತೆ ಮಹಾದೇವ ! ಮನಸ್ಸಿನಂತೆ ಮಹಾದೇವ ! ಎನ್ನುತ್ತ ಕುಣಿದಾಡುತ್ತಿದ್ದನು ಆ ಕುರುಡ.”

ಹೆಂಗಸಿನ ಕೋಣೆಯ ಕಾವಲುಗಾರ – “ಗಂಡನಪ್ಪಣೆ ಮೀರಬಾರದೆಂದು ತಂದೆಗೆ ಸಮಾನನಾದ ಆ ಕುರುಡ ಮುದುಕನ ಕೈಹಿಡಿದು ಸರಿದಾರಿಗೆ ಹಚ್ಚಿದರೆ, ‘ಹೆಂಡತಿ  ಕೈಕೊಸರಿಕೊಂಡು  ಓಡಿಹೋಗುವಳೋ  ಅಪ್ಪಾ’ ಎಂದು ಹೊಯ್ಕೊಂಡರೆ ನಾನೇನು ಹಣೆಹಣೆ ಗಟ್ಟಿಸಿಕೊಳ್ಳಲಾ ? ಎಂಥ ವೇಳೆ ತಂದೆಯೋ ದೇವರೇ” ಎನ್ನುತ್ತ ಆಕೆ ಬೆಳತನಕ ಗೋಳಾಡಿ ಅತ್ತಳು.

ಗಂಡನ ಕೋಣೆಯ ಕಾವಲುಗಾರ – “ಆ ಕುರುಡನನ್ನು ನೋಡಿ ನನಗೇಕೆ ದಯೆ ಬಂದಿತೋ ಏನೋ. ಆತನಿಗೆ ಸರಿದಾರಿಗೆ ಹಚ್ಚುವ ಕೆಲಸವನ್ನು ಹೆಂಡತಿಗೆ ಹೇಳದೆ ನಾನೇ ಮಾಡಿದ್ದರೆ ಎಷ್ಟು ಚೆನ್ನಾಗಿತ್ತಲ್ಲ!” ಎಂದು ಗಳಿಗೆಗೊಮ್ಮೆ ಮಿಡುಕುತ್ತಿದ್ದನು.

ಆ ಎಲ್ಲ ಹೇಳಿಕೆಗಳನ್ನು, ಕೇಳಿ ಗೌಡನು, ಆ ಹೆಣ್ಣು ಮಗಳು ಕುರುಡನ ಹೆಂಡತಿ ಅಲ್ಲವೆಂದು ನಿರ್ಣಯಿಸಿ ಆಕೆಯನ್ನು ಆಕೆಯ ಗಂಡನೊಡನೆ ಕಳಿಸಿದನು.

ಕುರುಡ ಮುದುಕನನ್ನು ಬಯ್ದು ಬೆದರಿಸಿ ಊರಹೊರಗೆ ಹಾಕಿಸಿದನು.
*****

ಪುಸ್ತಕ: ಉತ್ತರ ಕರ್ನಾಟಕದ ಜನಪದ ಕಥೆಗಳು

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...