Home / ಕಥೆ / ಜನಪದ / ಅಳಬೇಕೆಂದರೆ

ಅಳಬೇಕೆಂದರೆ

ಒಂದು ಗಂಡು ಒಂದು ಹೆಣ್ಣು ಭೂಮಿಯ ಮೇಲೆ ಮೊದಲು ಹುಟ್ಟಿದರು. ಅವರಿಂದ ಆರಂಭವಾಯಿತು ಮಾನವ ಸಂತಾನ ಬೆಳೆಯಲಿಕ್ಕೆ. ಹೆಣ್ಣು-ಗಂಡು
ಮಕ್ಕಳು ಹುಟ್ಟಿದರು. ಮಕ್ಕಳಿಂದ ಮಕ್ಕಳಾದರು. ಮೊಮ್ಮಕ್ಕಳು ಮರಿಮಕ್ಕಳು ಆದರು. ಮೊಮ್ಮಕ್ಕಳ ಮರಿಮಕ್ಕಳೂ ಹುಟ್ಟಿಕೊಂಡರು. ಹುಟ್ಟಿದವರೆಲ್ಲ ಬೆಳೆದು ದೊಡ್ಡವರಾದರು; ದೊಡ್ಡವರು ಮುದುಕರಾದರು. ಮನುಷ್ಯಕೋಟಿ ಬೆಳೆದೇ ಬೆಳೆಯಿತು. ಎಲ್ಲಿ ನೋಡಿದರೂ ಹುಟ್ಟಿದ ಒಸಗೆಯೇ. ಏನು ಕೇಳಿದರೂ ಹುಟ್ಟಿದ ಸುದ್ದಿಯೇ. ಸುಖ ಸಂತೋಷಗಳಲ್ಲಿಯೇ ಮಾನವ ಸಂತಾನವು ವಾಸಿಸತೊಡಗಿತು.

ವಿಶಾಲವಾದ ಮನೆತನ. ಮನೆತನದಲ್ಲಿ ಎಣಿಸಲಿಕ್ಕಾಗದಷ್ಟು ಜನ. ಹಗಲು ಹೊತ್ತಿನಲ್ಲಿ ಹೆಣ್ಣು ಗಂಡು ಎನ್ನದೆ, ಹುಡುಗ ಬಾಲಿಕೆ ಎನ್ನದೆ ಎಲ್ಲರೂ ಅಡವಿ ಸೇರಿ ತಂತಮ್ಮ ಕೆಲಸದಲ್ಲಿ ತೊಡಗುವರು. ಮಕ್ಕಳು, ಮೊಮ್ಮಕ್ಕಳು, ಮರಿಮಕ್ಕಳನ್ನು ಆಡಿಸುತ್ತ ಒಬ್ಬ ಅಜ್ಜಿ ಮನೆಯಲ್ಲಿ ಉಳಕೊಳ್ಳುವಳು.

ಸುಖಸಂತೋಷಗಳನ್ನೇ ಉಣ್ಣುತ್ತ ಬಂದ ಅಜ್ಜಿಗೆ ಏಕೋ ಬೇಸರವೆನಿಸಿತು. ಎದೆ ಜಡವಾಯಿತು. ಮನಸ್ಸು ಹಗುರಾಗುವುದಕ್ಕೆ ಉಪಾಯವೇನೆಂದು ಚಿಂತಿಸತೊಡಗಿದಳು.  ಬಾಲಕರೆಲ್ಲ ಆಡುತ್ತ ಎಲ್ಲಿಲ್ಲಿಯೋ ಹೋಗಿದ್ದರು. ಅಜ್ಜಿಗೊಂದು ಯುಕ್ತಿ ಹೊಳೆಯಿತು. ಹಿಟ್ಟಿನಿಂದ ಒಂದು ಕೂಸು ಮಾಡಿ, ಅದು
ಸತ್ತುಹೋಯಿತೆಂದು ಬಗೆದು, ಕ್ಷಣ ಹೊತ್ತು ಅತ್ತುಬಿಟ್ಟರೆ ಮನಸ್ಸು ಹಗುರಾಗುವದೆಂದು ಯೋಚಿಸಿದಳು.

ಮೆತ್ತಿಗೆಯೊಳಗಿಂದ ಬೊಗಸೆ ಕಡೆಲೆತೆಗೆದು ಬೀಸಿ ಹಿಟ್ಟುಮಾಡಿದಳು. ಆ ಹಿಟ್ಟನ್ನು ನೀರಲ್ಲಿ ಕಲೆಸಿ ಕಣಕಮಾಡಿದಳು. ಆ ಕಣಕದಿಂದ ಒಂದು ಗೊಂಬೆ ಮಾಡಿ ಮುಗಿಸುವುದರಲ್ಲಿದ್ದಳು. ಅಷ್ಟರಲ್ಲಿ ಆಡಹೋದ ಬಾಲಕರೆಲ್ಲರೂ ಒಬ್ಬೊಬ್ಬರಾಗಿ ಬಂದರು. “ಅಜ್ಜೀ, ನನಗೆ ತಿನ್ನಲು ಬೆಲ್ಲ” ಎಂದು ಒಂದು ಹುಡುಗ ಕೇಳಿದರೆ, ಇನ್ನೊಂದು – “ಅಜ್ಜೀ ನನಗೆ ಉಣ್ಣಲು ರೊಟ್ಟಿ” ಬೇಡುತ್ತದೆ. ಒಂದು ನೀರು ಕೇಳುತ್ತದೆ. ಇನ್ನೊಂದು ಮಮ್ಮ ಅನ್ನುತ್ತದೆ. “ರೊಟ್ಟಿಗೆ ಬೆಣ್ಣೆ ಸವರು,” “ಅನ್ನಕ್ಕೆ ಮೊಸರು ಕಲೆಸು” ಎನ್ನುತ್ತ ಅಜ್ಜಿಯನ್ನು ಜಗ್ಗಾಡಿ ಎಬ್ಬಿಸಿದವು. ಆಕೆಯ ಸೆರಗು ಒಂದು ಹಿಡಿದಿದೆ, ಕೈ ಮತ್ತೊಂದು ಹಿಡಿದಿದೆ. ಹಿಂದೆ ನೂಕುವುದು ಒಂದು, ಮುಂದೆ ಎಳೆಯುವುದು ಬೇರೊಂದು. ಎಲ್ಲ ಕೂಡಿ ಅಜ್ಜಿಯನ್ನು ಅಡಿಗೆ ಮನೆಗೆ ಕರೆದೊಯ್ದವು.

“ನಂಗೂ ಅಜ್ಜಿ, ಉಪ್ಪಿನಕಾಯಿ” ಎಂದು ತೊದಲುತ್ತ ಇನ್ನೊಂದು ಕೂಸು ತಪ್ಪುಹೆಜ್ಜೆ ಹಾಕುತ್ತ ಅಜ್ಜಿಯ ಬಳಿಗೆ ಬಂದಿತು. “ಇದಾವ ಹೊಸದನಿ” ಎಂದು ಅಜ್ಜಿ ನೋಡಿದರೆ, ಕಡಲೆ ಹಿಟ್ಟಿನ ಗೊಂಬೆ, ಜೀವತಳೆದು ಎದ್ದು ಬಂದಿದೆ! ಆಶ್ಚರ್ಯವೆನಿಸಿತು ಅಜ್ಜಿಗೆ.

“ಗೊಂಬೆಯ ಹೆಣವನ್ನು ಮುಂದಿರಿಸಿಕೊಂಡು ಅತ್ತು ಕಣ್ಣೀರು ಸುರಿದು ಮನಸ್ಸು ಹಗುರಮಾಡಿಕೊಳ್ಳಬೇಕೆಂದರೆ ಹಿಟ್ಟಿನ ಗೊಂಬೆಯೂ ಜೀವಂತವಾಗಬೇಕೆ? ಅಳುವುದು ನನ್ನ ದೈವದಲ್ಲಿಲ್ಲ” ಎಂದುಕೊಂಡಳು.
*****

ಪುಸ್ತಕ: ಉತ್ತರ ಕರ್ನಾಟಕದ ಜನಪದ ಕಥೆಗಳು

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...