Home / ಕಥೆ / ಜನಪದ / ರುಚಿಗಾರ ಸವಿಗಾರ

ರುಚಿಗಾರ ಸವಿಗಾರ

ಅನಾಥೆಯಾದ ಒಬ್ಬ ಮುದುಕಿಯಿದ್ದಳು ಒಂದೂರಿನಲ್ಲಿ. ಆಕೆಗೆ ಯಾರೂ ಇರಲಿಲ್ಲ. ದಿನಾಲು ರಾಟಿಯ ಮೇಲೆ ನೂಲುವಳು. ಬಂದಷ್ಟರಲ್ಲಿ ಉದರ ನಿರ್ವಾಹ ಸಾಗಿಸುವಳು.

ರಾತ್ರಿ ಸಹ ನಿದ್ರೆ ಬರುವವರೆಗೆ ನೂಲುತ್ತ ಕುಳಿತುಕೊಳ್ಳುವಳು. ಒಂದು ದಿವಸ ರಾತ್ರಿ ಬಹಳ ಹೊತ್ತು ನೂಲುತ್ತ ಕುಳಿತಳು. ಅಂದು ಸೋಮವಾರ. ಆಕೆಗೆ ಒಪ್ಪೊತ್ತು. ಸಂಜೆಯ ಊಟವಿರಲಿಲ್ಲ. ನೂಲುವುದು ಸಾಕಾದ ಬಳಿಕ ರಾಟಿಯನ್ನು ಒತ್ತಟ್ಟಿಗೆ ಸರಿಸಿಟ್ಟು, ಕೈ ಬಾಯಿ ತೊಳಕೊಂಡು, ನೀರು ಕುಡಿಯುವುದಕ್ಕೆ ಅಣಿಯಾದಳು. ಆಕೆಯ ಬಾಯಲ್ಲಿ ಹಲ್ಲು ಇರಲಿಲ್ಲ. ಕಾಳು ನುರಿಸುವದಕ್ಕೆ ಆಗದೆ ಅಬಡು ಜಬಡು ತಿಂದು ನೀರು ಕುಡಿಯುತ್ತ – “ಏನು ಹೋದೆಯೋ ನನ್ನ ರುಚಿಗಾರ, ನನ್ನ ಸವಿಗಾರ” ಎಂದು ಮೈಮರೆತು ನುಡಿದಳು.

ಆ ಮಾತು ನೆರೆಮನೆಯವರಿಗೆ ಕೇಳಿಸಿತು. – “ಈಕೆ ಯಾರೊಡನೆ ಮಾತಾಡುತ್ತಿದ್ದಾಳೆ? ಅವನೆಂಥ ರುಚಿಗಾರ ಸವಿಗಾರ ಇದ್ದಿರಬಹುದು ಈಕೆಗೆ” ಎಂದು ಸಂಶಯ ಪಟ್ಟರು.

“ಅಜ್ಜೀ, ನೀನು ಯಾರೊಡನೆ ಮಾತಾಡುತ್ತಿರುವಿ ?” ಎಂಬ ದನಿ ನೆರೆಮನೆಯವರಿಂದ ಕೇಳಿ ಬಂತು.

“ನಾನಾರೊಡನೆ ಮಾತಾಡಲೆವ್ವ! ನನಗಾರಿದ್ದಾರೆ ?”

“ರುಚಿಗಾರ ಸವಿಗಾರ ಅಂದೆಯಲ್ಲ, ಯಾರು ಅವರು ?” ನೆರೆಮನೆಯಿಂದ ಬಂದ ಪ್ರಶ್ನೆ.

“ಇನ್ನೆಲ್ಲಿಯ ರುಚಿಗಾರ. ಇನ್ನೆಲ್ಲಿಯ ಸವಿಗಾರ ! ಹೋಗಿಬಿಟ್ಟು ಬಹಳ ದಿನಗಳಾದವು” ಮುದುಕಿಯ ಮರುನುಡಿ.

“ಹಳೆ ಗೆಳೆತನದ ನೆನಪಾದಂತೆ ತೋರುತ್ತದೆ ಮುದುಕಿಗೆ” ಎಂದುಕೊಂಡಿದ್ದಾಳೆ ನೆರೆಯವಳು. “ಹೋದವರು ಮರಳಿ ಬರಲಾರರು ಅಜ್ಜೀ. ನಾವೂ ಒಮ್ಮೆ ಅದೇ ಹಾದಿಯಲ್ಲಿ ಹೋಗತಕ್ಕವರೇ ಅಲ್ಲವೇ ?” ಎಂದಳು.

“ನಾನು ಹುಚ್ಚಿ ಸತ್ತವರನ್ನು ನೆನೆಯಲಿಲ್ಲ. ಬಿದ್ದು ಹೋದ ಹಲ್ಲುಗಳನ್ನು ನೆನಪಿಸಿಕೊಂಡು ಹಾಗೆ ನುಡಿದೆ – ಏನು ಹೋದೆಯೋ ನನ್ನ ರುಚಿಗಾರ – ಸವಿಗಾರ ಎಂದು.” ಮುದುಕಿ ಅರ್ಥವನ್ನು ಸ್ಪಷ್ಟಗೊಳಿಸಿದಳು.

“ಅಹುದೇ ಅಜ್ಜಿ ? ನಾನು ಬೇರೆಯೇ ತಿಳಿದಿದ್ದೆನಲ್ಲ !” ಎಂದು ನೆರೆಯವಳು ವಿಷಯವನ್ನು ಪೂರ್ತಿಗೊಳಿಸಿದಳು.
*****

ಪುಸ್ತಕ: ಉತ್ತರ ಕರ್ನಾಟಕದ ಜನಪದ ಕಥೆಗಳು

Tagged:

Leave a Reply

Your email address will not be published. Required fields are marked *

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...