Home / ಕಥೆ / ಜನಪದ / ಮನೆ ಅಳಿಯ

ಮನೆ ಅಳಿಯ

ಅಳಿಯನಿಗೆ ಮನೆಯಳಿಯ ಮಾಡಿಕೊಂಡಿದ್ದರು ; ಮಗಳಿಗೆ ಮನೆಯಾಗೇ ಇಟ್ಟುಕೊಂಡಿದ್ದರು. ಅಳಿಯ ದನಕರುಗಳನ್ನು ಕಾಯಬೇಕು. ಮನೆಯಲ್ಲಿ ತಂಗುಳಬಂಗುಳ ಉಣ್ಣಬೇಕು – ಈ ರೀತಿ ವ್ಯವಸ್ಥೆಮಾಡಿದ್ದರು. ಅಳಿಯನೆಂದರೆ ದನಕಾಯುವ ಹುಡುಗ ಅಂತ ನಿಷ್ಕಾಳಜಿ ಮಾಡುತ್ತಿದ್ದರು.

“ನನ್ನ ಹಣೇಬರಹದಾಗ ಇಷ್ಟೇ ಬರೆದಾದ. ಅದಕ್ಕ್ಯಾಕ ಚಿಂತಿ ಮಾಡಬೇಕು” ಎಂದು ವಿಚಾರಮಾಡಿ ದಿನಾಲು ಕೆಲಸಮಾಡುತ್ತ ಇದ್ದನು. ಒಂದುದಿನ ಹೊಲದಾಗ ಎತ್ತುಬಿಟ್ಟಿದ್ದ. ಧಾರೆ ಮಳೆ ಸುರೀಲಿಕ್ಕ ಹತ್ತಿತು. ಆ ಸಮಯದಾಗ ನೀರಿನ ಬಿಂದಿಗೆಯೊಳಗಿನ ನೀರೆಲ್ಲ ಚೆಲ್ಲಿ ಅದರಲ್ಲಿ ಅಂಗಿ, ಧೋತರ ತುರುಕಿದನು. ತಾನು ಬರಿಯ ಚಡ್ಡಿಯಮೇಲೆ ನಿಂತನು. ಬಿಂದಿಗೆ ಬೋರಲು ಹಾಕಿದ- ಹಾಂಗೇ ತಾಸು ಗಟ್ಟಲೆ ನಿಂತನು. ಮಳೆ ಹೊಡೆದು ಹೊಡೆದು ಬಹಳ ಹೊತ್ತಿನ ಮೇಲೆ ನಿಂತು ಬಿಟ್ಟಿತು. ಛಕ್ಕನೆ ಬಿಸಿಲುಬಿತ್ತು. ಉಟ್ಟುಕೊಂಡು ತೊಟ್ಟುಕೊಂಡು ನಿಂತನು. ಅಲ್ಲಿಗೆ ಒಬ್ಬ ಗೋಸಾವಿ ಮೈತೋಯಿಸಿಕೊಂಡು ಬಂದನು. “ನಾನು ಇಷ್ಟು ತೋಯಿಸಿಕೂಂಡೀನು. ಈ ಮನುಷ್ಯ ಏನೂ ತೋಯಿಸಿಕೊಂಡಿಲ್ಲ. ಇದರಾಗೇನಿದೆ ಚಮತ್ಕಾರ” ಎಂದುಕೊಂಡನು. “ಯಾಕಪ್ಪ ನಿನ್ನ ಮೈಮ್ಯಾಗ ಮಳೆ ಬಿದ್ದೀಲ್ಲೇನು” ಎಂದು ಕೇಳಿದನು.

“ನಂದು ನನಗೇ ಗೊತ್ತು. ನಿಂದು ನಿನಗೇ ಗೊತ್ತು. ನನಗ ಇದರ ಅರ್ಥಹೇಳು ಅಂದರ, ನಿನ್ನ ಹಂತ್ಯಾಕಿದ್ದ ಮಂತ್ರ ತಂತ್ರ ಹೇಳಿದೆರ ನಾ ನನ್ನ ಹಿಕಮತಿ ಹೇಳತೀನಿ” ಎಂದು ನುಡಿದನು ಅಳಿಯ-

ತನ್ನ ಪರಿಸ್ಥಿತಿಯನ್ನೆಲ್ಲ ಅಳಿಯ ಹೇಳಿದನು. “ಹೂತ್ತರಳಿ ದನಕಾಯಲು ಅತ್ತ ಮಾವ ಕಳಿಸತಾರ. ಅತ್ತಿ ಮಾವ ಹೇಣತಿ ಯಾರೂ ಸೇರೂದಿಲ್ಲ. ಈ ಪರಿಸ್ಥಿತಿ ಹೋಗೂ ಸಲುವಾಗಿ ಒಂದು ಉಪಾಯ ಹೇಳು” ಎಂದು ಗೋಸಾವಿಗೆ ಕೇಳಿಕೊಂಡನು. ಗೋಸಾವಿ ಅಲ್ಲೇಬಿದ್ದ ಏಳು ಹರಳು ಆರಿಸಿಕೊಂಡನು.

“ಒಂದು ಹರಳು ಒಗೆದು ಅಲ್ಲೇ ಚಿಟಕಾಸಿ ಕೂಡು, ಅಂದರ ಅಲ್ಲೇ ನೆಲಕ್ಕ ಹತ್ತಂಡಿ ಆಗಿ ಚಿಟಕಾಸಿಕೊಂಡು ಬಿಡತಾದ. ಅತ್ತಿ ಮಾವ ಮಲಕೊಂಡ ಜಾಗಾದಿಂದ ಏಳಬಾರದು – ಎರಡು ಹರಳು ಒಗೆದರೆ – ಯಾರೂ ಅವರೀಗಿ ಎಬ್ಬಿಸಲಿಕ್ಕೆ ಸಾಧ್ಯವಿಲ್ಲ. ಹೀಂಗ ಏಳು ಹರಳು ಉಪಯೋಗಿಸುವುದರಾಗ ಅತ್ತಿ ಮಾವ ಹಾದೀ ಮ್ಯಾಲ ಬರತಾರ” ಎಂದು ಹೇಳಿ, ಅಳಿಯನ ಹಿಕಮತ್ತಿಯ ಬಗ್ಗೆ ಕೇಳುತ್ತಾನೆ.

“ಗುಂಡರಗಿಯೊಳಗೆ ಅರಿವೆ ತುರುಕಿ ಬಿಂದಿಗೆ ಬೋರಲ ಹಾಕಿದ್ದರಿಂದ ಮಳಿ ಹತ್ತಲಿಲ್ಲ.”

ಅಳಿಯ ಮನೆಗೆ ಬಂದು ಬಂಕಿನಲ್ಲಿ ಮಲಗಿಕೊಂಡನು”. ಬಾಗಿಲಲ್ಲಿ ಬಂದು ಅತ್ತೆ ಮಾವ ಮಲಗಿದಲ್ಲೆ ಮಲಗಲಿ ಎಂದು ಸೈ ಎಂದನು. ಬಾಗಿಲಿಗೆ ಬಂದು ಬಾಗಿಲು ತೆರೆಯಿರಿ ಅನ್ನುತ್ತಾನೆ. ಅವರು ನೆಲಕ್ಕೆ ಮೆತ್ತಿಕೊಂಡವರು ಮೇಲೆ ಏಳಲೊಲ್ಲರಾದರು. “ತೊರೆಯ ಆಚೆಗೆ ಜಾಣಿಹಾಳ. ಅವಳೀಗಿ ಕೇಳಿ ಬರ್ರಿ” ಎಂದು ಮಂದೀಗಿ ಕಳಿಸ್ತಾರ. ಜಾಣಿ ನಡುನೀರೊಳಗಿಂದ ಹಾಯ್ದು ಬರುವಾಗ ಇಂವ ನಿಂತಲ್ಲಿ – ನಿಂತು – ನೀರಾಗ ನಿಂತಕ್ಕಿ ನಿಂತಾಂಗೇ ಇರಲಿ ಎಂದು ಗಟ್ಟಿಯಾಗಿ ಹೇಳುತ್ತಲೇ ಹರಳ ಒಗೆಯುತ್ತಾನೆ.

ಜಾಣಿ ಇವನಿಗೆ ಅಂಗಲಾಚಿ ಬೇಡುತ್ತಾಳೆ – “ನನಗೆ ಬಿಡುಗಡೆ ಮಾಡಿದರೆ ನಿನಗ ಬೇಡಿದ್ದು ಕೊಡುತ್ತೀನಿ.”

ನಡೆ ಅಂದಕೂಡಲೇ ನೀರೂಳಗಿಂದ ಜಾಣಿ ಪಾರಾಗಿ ಮುಂದೆ ಮುಂದೆ ಬಂದಳು. ಬಂದು ಅತ್ತೆ ಮಾವಂದಿರಿಗೆ ಬುದ್ಧಿ ಹೇಳಿದಳು –

“ನಿಮ್ಮ ಅಳಿಯನಿಗೆ ಈ ರೀತಿ ಕಾಡಬೇಡಿರಿ. ಇಲ್ಲ ಅಂದರೆ ನೀವು ನೆಲದ ಮ್ಯಾಗಿಂದ ಏಳಲಿಕ್ಕೆ ಸಾಧ್ಯವೇ ಇಲ್ಲ” ಎಂದು ಗಟ್ಟಿಯಾಗಿ ಹೇಳುತ್ತಾಳೆ.

“ನಾವು ಹಿಂಥಾ ಕೆಲಸ ಇನ್ನೆಂದೂ ಮಾಡೂದಿಲ್ಲ” ಎಂದು ಗಲ್ಲಗಲ್ಲ ಬಡಕೊಳ್ಳುತ್ತಾರೆ. ಏಳಬೇಕೆನ್ನುತ್ತಾರೆ, ಏಳುವದಾಗಲಿಲ್ಲ. ಆಗ ಅಳಿಯ “ನಡೆ” ಅಂದ ಕೂಡಲೇ ಗಪ್ಪನೆ ಎದ್ದು ಕುಳಿತರು.

ಅಂದಿನಿಂದ ಅಳಿಯದೇವರ ಸತ್ಕಾರ ನಡೆಯಲು ಆರಂಭವಾಯಿತು.
*****

ಪುಸ್ತಕ: ಉತ್ತರ ಕರ್ನಾಟಕದ ಜನಪದ ಕಥೆಗಳು

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...