Home / ಕಥೆ / ಜನಪದ / ಬಟ್ಟಲ್ಯಾತಕ್ಕ ಕೆನಿ ತಿನ್ಲಕ್ಕ

ಬಟ್ಟಲ್ಯಾತಕ್ಕ ಕೆನಿ ತಿನ್ಲಕ್ಕ

ಗಂಡಹೆಂಡಿರು ಮಾತಾಡಿಕೊಂಡು ಒಂದು ಹಿಂಡುವ ಎಮ್ಮೆಯನ್ನು ಕೊಂಡುತಂದರು. ಹಾಲಿಗೆ ಹೆಪ್ಪು ಹಾಕಿ, ಬೆಣ್ಣೆ ತುಪ್ಪ ಮಾಡಿ ಮಾರಿಕೊಂಡರೆ ಕೈಯಲ್ಲಿ ಹಣವೂ ಆಗುವದೆಂದು ಗಂಡನು ಹೆಂಡತಿಗೆ ಸೂಚನೆಮಾಡಿದನು. ಅದಕೈ ಹೆಂಡತಿ ಸೈ ಎಂದಳು.

ಕೆಂಡದ ಮೇಲಿಟ್ಟು ಹಾಲು ಕಾಸಿದರೆ, ಅಂಗೈಗಡುತರ ಕೆನೆ ಹೊರಡುವದು. ಆದರೆ ಅದನ್ನು ನೋಡಿದರೆ ಹೆಂಡತಿಯ ಜೀವ ಅದನ್ನು ತಿನ್ನುವುದಕ್ಕೆ ಎಳಸುವದು. ಅಲ್ಪಸ್ವಲ್ಪ ತಿಂದರೆ ಸಾಕಾಗುವಂಥವಲ್ಲ ಕೆನೆ. ಅದನ್ನು ಇಡಿಯಾಗಿ ತಿಂದು, ಹಾಲಿಗೆ ಕೆನೆಯೇ ಹೊರಡುವದಿಲ್ಲವೆಂದು ಗಂಡನಿಗೆ ಹೇಳುವಳು. ಎಮ್ಮೆ ಹೆಡಸಿನದಲ್ಲ, ಬರಿ ಹಾಲಿನದು – ಎಂದು ತಪ್ಪು ಎಮ್ಮೆಯ ಮೇಲೆ ಹಾಕುವಳು.

ಗಂಡನು, ತಮಗೆ ಎಮ್ಮೆ ಮಾರಿದವರಲ್ಲಿ ಹೋಗಿ ಕೇಳಿದ – “ಹೆಡಸು ಹಯನಿಗೆ ಮಿಗಿಲಾದ ಎಮ್ಮೆಯೆಂದು ನಮಗೆ ಭರವಸೆ ಹೇಳಿದಿರಿ. ಈಗ ಕೆನೆಯೇ ಹೊರಡುವದಿಲ್ಲವೆಂದು ನನ್ನ ಹೆಂಡತಿ ಹೇಳುತ್ತಿದ್ದಾಳೆ. ನೀವು ಸುಳ್ಳು ಹೇಳಿ ಎಮ್ಮೆ ಕೊಡಬಾರದಿತ್ತು, ನೆರೆಯವರಿಗೆ.”

ಆ ರೈತನ ಹೆಂಡತಿ ಹಯನು ಮಾಡಬಲ್ಲಳು. ಆ ಕೆಲಸದಲ್ಲಿ ಬಲ್ಲಿದಳು. ಮಾರಿದ ಎಮ್ಮೆಯ ಹಯನವನ್ನು ಸಹ ಈ ಮುಂಚೆ ಮಾಡಿದ್ದಳು. ಆಕೆ ಹೇಳಿದಳು – “ತಮ್ಮಾ, ನಿನ್ನ ಹೆಂಡತಿ ಹೇಳುವುದು ಸುಳ್ಳು. ಹಾಲು ಚನ್ನಾಗಿ ಕಾಸಿ ಅಂಗೈಗಡುತರ ಕೆನೆ ತೆಗೆದು ತೋರಿಸಲೇನು ನಿನಗೆ? ನಿಮ್ಮಲ್ಲಿಯೂ ಕೆನೆ ಹೊರಡುತ್ತಿರಬಹುದು. ಆದರೆ ಅದನ್ನು ನಿನ್ನ ಹೆಂಡತಿ ಅದೆಂತು ಇಲ್ಲದಾಗಿಸುತ್ತಾಳೋ ನೋಡು.”

“ಹೇಗೆ ನೋಡಲಿ ?”

“ನಾನು ಎರಡು ಗೊಂಬೆ ಮಾಡಿಕೊಡುತ್ತೇನೆ. ಅವುಗಳಲ್ಲಿ ಒಂದನ್ನು ಹಾಲ ಗಡಿಗೆಯಿಡುವಲ್ಲಿ, ಇನ್ನೊಂದು ಪಾತ್ರೆಪಗಡೆ ಇಡುವಲ್ಲಿ ಗಟ್ಟಿಯಾಗಿ ನೆಡು. ಅದರಿಂದ ತಾನೇ ಹೊರಬೀಳುತ್ತದೆ ಇದ್ದ ಸಂಗತಿ” ಎಂದಳು ಆ ರೈತನ ಹೆಂಡತಿ.

ಅವೆರಡು ಗೊಂಬೆಗಳನ್ನು ತಂದು ಗಂಡನು ಸರಿಯಾದ ಸ್ಥಳಗಳಲ್ಲಿ ಗಟ್ಟಿಯಾಗಿ ನಿಲ್ಲಿಸಿದನು. ಹೆಂಡತಿ ಎಂದಿನಂತೆ ಹಾಲಗಡಿಗೆಯನ್ನು ತೆಗೆದುಕೊಂಡು ಕೆನೆ ತಿನ್ನಬೇಕೆಂದು, ಪಾತ್ರೆ ತೆಗೆದುಕೊಳ್ಳಲು ಕೈ ಚಾಚಿದಾಗ ಅಲ್ಲಿ ನಿಲ್ಲಿಸಿದ ಗೊಂಬೆ – “ಬಟ್ಟಲ್ಯಾತಕ್ಕ” ಎಂದು ಕೇಳಿತು. ಅತ್ತ ಕಡೆಗೆ ಕಿವಿಕೊಡದೆ ಹಾಲಗಡಿಗೆಯ ಬಳಿಗೆ ಬಂದಾಗ – “ಹಾಲು ಕೆನಿ ತಿನ್ಲಕ್ಕ” ಎಂದಿತು ಇನ್ನೊಂದು ಗೊಂಬೆ. ಅಷ್ಟಕ್ಕೆ ಬಿಡಲಿಲ್ಲ ಆ ಗೊಂಬೆಗಳು.

ಒಂದು ಕೇಳುವುದು – “ಬಟ್ಟಲ್ಯಾತಕ್ಕ ?”

ಇನ್ನೊಂದು ಕೇಳುವುದು – “ಕೆನಿತಿನ್ಲಕ್ಕ.”

ಈ ಕ್ರಮ ನಡೆದೇ ನಡೆಯಲು ಹೆಂಡತಿ ಹುಚ್ಚು ಹಿಡಿದಂತೆ ನಿಂತುಬಿಟ್ಟಳು. ಅದೇ ಹೊತ್ತಿಗೆ ಅಕಸ್ಮಾತ್ ಗಂಡ ಬರಲು ಆಕೆ, ಗೊಂಬೆಗಳ ಸಲುವಾಗಿ ದೂರು ಹೇಳಿದಳು – “ನೋಡಿರಿ. ಈ ಗೊಂಬೆಗಳು ಸುಳ್ಳುಸುಳ್ಳೇ ಕೂಗಾಟ ಎಬ್ಬಿಸಿವೆ. ಬಟ್ಟಲ್ಯಾತಕ್ಕ ಅನ್ನುತ್ತದೆ ಒಂದು. ಕೆನಿತಿನ್ಲಕ್ಕ ಅನ್ನುತ್ತದೆ ಇನ್ನೊಂದು, ಅವುಗಳನ್ನು ಕಿತ್ತೊಗೆಯಿರಿ.”

“ಇರಲಿ ಬಿಡು. ಅವೇನು ಮಾಡುತ್ತವೆ ನಿನಗೆ ?”

ತರುವಾಯ ಹಾಲು ಕಾಸಿದರೆ ಕೆನೆ ಬರತೊಡಗಿತು. ಕಡಿದರೆ ಮುದ್ದೆ ಮುದ್ದೆ ಬೆಣ್ಣೆ; ಕಾಸಿದರೆ ತಂಬಿಗೆ ತಂಬಿಗೆ ತುಪ್ಪ. ಅದನ್ನು ಕಂಡು ಗಂಡನು ಹಿಗ್ಗಿ -“ಹೆಂಡತಿ ಚೆನ್ನಾಗಿ ಮಾಡುವಳು ಹಯನ” ಎಂದು ಹೊಗಳತೊಡಗಿದನು.
*****

ಪುಸ್ತಕ: ಉತ್ತರ ಕರ್ನಾಟಕದ ಜನಪದ ಕಥೆಗಳು

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...