Home / ಕಥೆ / ಜನಪದ / ಹಗಮಲ್ಲಿ ದಿಗಮಲ್ಲಿ

ಹಗಮಲ್ಲಿ ದಿಗಮಲ್ಲಿ

ಅಜ್ಜಿಗೆ ಮೊಮ್ಮಗಳೊಬ್ಬಳ ಹೊರತು ಇನ್ನಾರೂ ಇರಲಿಲ್ಲ. ಮೊಮ್ಮಗಳು ದೊಡ್ಡವಳಾದಳೆಂದು ತಕ್ಕವರನಿಗೆ ಕೊಟ್ಟು ಲಗ್ನಮಾಡಿದ್ದಳು. ಒಳ್ಳೆಯದಿನ ನೋಡಿ ಮೊಮ್ಮಗಳನ್ನು ಕರೆಯಲಿಕ್ಕೆ ಆಕೆಯ ಗಂಡನು ಬಂದನು. ಅಜ್ಜಿ ಬಲು ಹಿಗ್ಗಿನಿಂದ ಮೊಮ್ಮಗಳನ್ನು ಎರಡು ದಿವಸ ಇಟ್ಟುಕೊಂಡು, ಹೋಳಿಗೆ ಹುಗ್ಗಿ ಮಾಡಿ ಉಣ್ಣಿಸಿದಳು. ಮೂರನೇದಿವಸ ಮೊಮ್ಮಗಳಿಗೆ ತನ್ನ ಗಂಡನ ಕೂಡ ಹೊರಡುವುದಕ್ಕೆ ಸಿದ್ಧತೆ ಮಾಡಿಕೊಟ್ಟಳು. ಮೊಮ್ಮಗಳನ್ನು ಆಗಲುವಾಗ ಅದೆಷ್ಟು ತಳಮಳಿಸಿದರೂ, ಆಕೆಯು ಗಂಡನ ಮನೆಗೆ ಹೋಗುವ ಸಡಗರವನ್ನು ನೋಡಿ ಮುದುಕಿಗೆ ಹಿಡಿಸಲಾರದಷ್ಟು ಹಿಗ್ಗಾಯಿತು – “ಹೋಗಿ ಬಾ ನನ್ನ ಹಗಮಲ್ಲೀ, ದಿಗಮಲ್ಲೀ; ಸುಖದಿಂದ- ಹೋಗಿ ಬಾ” ಎಂದು ಸೂಸುವ ಹಿಗ್ಗಿನಲ್ಲಿ ನುಡಿದು ಬೀಳ್ಕೊಟ್ಟಳು.

ಎತ್ತಿನ ಮೇಲೆ ಹೆಂಡತಿಯನ್ನು ಕುಳ್ಳಿರಿಸಿ ಗ೦ಡನು ಅದನ್ನು ಬೆಂಬಳಿಸಿ ತನ್ನೂರ ಹಾದಿ ಹಿಡಿದನು. ಒಂದೆರಡು ಹರದಾರಿ ದಾರಿ ಸಾಗಿದ ಬಳಿಕ ಗಂಡನು ಕೇಳಿದನು ಹೆಂಡತಿಗೆ “ನಿಮ್ಮ ಅಜ್ಜಿ ಹಾಗೇಕೆಂದಳು ಹಗಮಲ್ಲಿ ದಿಗಮಲ್ಲಿ ಎಂದು ? ಏನದರ ಅರ್ಥ?” “ಅದು ಆಕೆ ಪ್ರೀತಿಯಿಂದ-ಆಡಿದ ಮಾತು. ಅದರರ್ಥ ಬರುವದಿಲ್ಲ. ಬೇಕೆಂದರೆ ಮಾಡಿಯೇ ತೋರಿಸುತ್ತೇನೆ” ಎಂದಳು ಹೆಂಡತಿ.

ಮುಂದಿನೂರ ದಾಟುತ್ತಲೆ ಗಂಡನು ಒಂದು ಗಿಡದ ಕೆಳಗೆ ಎತ್ತು ಬಿಟ್ಟು ಕುಳಿತುಕೊಂಡನು. ಹೆಂಡತಿ ಅಲ್ಲಿಂದ ಊರಮುಂದಿನ ಹಳ್ಳದ ಕಡೆಗೆ ಸಾಗಿದಳು. ಹಳ್ಳದ ಬದಿಹಿಡಿದು ಬರುತ್ತಿರುವ ನಾಲ್ವರನ್ನು ಕಂಡು, ಅವರು ಒಂದು ಕೂಸಿನ ಅಂತ್ಯಕ್ರಿಯೆ ಮಾಡಿಬಂದರೆಂದು ತಿಳಕೊಂಡು ಗೋರಿ ಮರಡಿಗೆ ನಡೆದಳು. ಗೋರಿಯನ್ನಗಿದು ಕೂಸಿನ ಶವವನ್ನೆತ್ತಿ ಅರಿವೆಯಲ್ಲಿ ಸುತ್ತಿಕೊಂಡು, ಊರಲ್ಲಿ ಹೊಕ್ಕು ಭಿಕ್ಷುಕಳಂತೆ ಮನೆಮನೆಯಲ್ಲಿ ಭಿಕ್ಷೆ ಬೇಡತೊಡಗಿದಳು.

ಒಂದು ದೊಡ್ಡ ಮನೆಯ ಮುಂದೆ ನಿಂತು, ಭಿಕ್ಷೆ ಹಾಕಿರೆಂದು ಕೀಸರಿಡುವಂತೆ ಕೂಗಹತ್ತಲು ಮನೆಯವನು ಬೇಸರಗೊಂಡು ಬಂದವನೇ ಆಕೆಯನ್ನು ನುಗಿಸಿದನು. ಅಷ್ಟೇ ನೆವವಾಯಿತು. ಭಿಕ್ಷುಕಿ ಒತ್ತಟ್ಟಿಗೆ, ಆಕೆಯ ಕೈಯೊಳಗಿನ ಕೂಸು ಒತ್ತಟ್ಟಗೆ ಬೀಳಲು, ಆತನೇ ಆಕೆಯನ್ನ ಹಿಡಿದೆತ್ತಿ ಆಕೆಯ ಕೂಸನ್ನು ಆಕೆಯ ಕೈಗೆ ಕೊಟ್ಟನು. ಕೂಸು ಪಟ್ಟು ಬಡಿದು ಸತ್ತಿತೆಂದು ಬೋರಾಡಿ ಅಳತೊಡಗಲು ಮನೆಯವನು ಹೆದರಿಕೆಯಿಂದ ಆಕೆಯ ಕೈಯಲ್ಲಿ ಮುಚ್ಚಿ ನೂರು ರೂಪಾಯಿಗಳನ್ನು ಇಟ್ಟನು. ಆಕೆ ಮೆಲ್ಲನೆ ಅಲ್ಲಿಂದ ಕಾಲ್ತೆಗೆದು ಗಂಡನು ಕುಳಿತಲ್ಲಿಗೆ ಹೋಗಿ ಆತನಿಗೆ ಆ ನೂರು ರೂಪಾಯಿಗಳನ್ನು ಎಣಿಸಿಕೊಡುತ್ತ ಹೇಳಿದಳು – “ಇದೇ ಹಗಮಲ್ಲಿತನ. ಇನ್ನು ದಿಗಮಲ್ಲಿತನವನ್ನು ತೋರಿಸುವೆ.”

ಅದೇ ಊರಿನ ಆಚೆಯ ಓಣೆಯಲ್ಲಿ ಒಬ್ಬ ನಿಪುತ್ರಿಕ ಶ್ರೀಮಂತನು ಸತ್ತಿದ್ದನು. ಆತನ ಮೂವರು ಹೆಂಡರು ಬಡಬಡಕೊಂಡು ಅಳುತ್ತಿದ್ದರು. ಆ ಸಂದರ್ಭವನ್ನು ಲಕ್ಷ್ಯಿಸಿ, ಆ ಹೆಣ್ಣು ಮಗಳು ಎದೆ‌ಎದೆ ಬಡಕೊಂಡು, ಕೈ ಹಿಡಿದವನು ಅಗಲಿ ಹೋದನೆಂದು ಹಾಡಿಹಾಡಿಕೊ೦ಡು ಅಳತೊಡಗಿದಳು. ನೆರೆದವರಿಗೆಲ್ಲ ಅನಿಸಿತು – ಈಕೆಯೂ ಒಬ್ಬ ಹೆಂಡತಿಯಿರಬೇಕು ಶ್ರೀಮಂತನಿಗೆ. ಮಕ್ಕಳ ಸಲುವಾಗಿ ಒಟ್ಟಿಗೆ ನಾಲ್ಕು ಜನ ಹೆಂಡಿರನ್ನು ಮಾಡಿಕೊಂಡಿದ್ದನೆಂದು ಲೆಕ್ಕ ಹಾಕಿದರು-

ಅಂತ್ಯವಿಧಿ ಮುಗಿಯಿತು.

ಶ್ರೀಮಂತನ ಆಸ್ತಿಯನ್ನೆಲ್ಲ ಆತನ ನಾಲ್ವರು ಹೆಂಡರಿಗೆ ಹಂಚಿಕೊಟ್ಟರು ಸಾಮಾಜಿಕರು. ಆತನಿಗೆ ಮಕ್ಕಳೇ ಇಲ್ಲವೆಂದಾಗ ಆತನ ಆಸ್ತಿಗೆ ಹೆಂಡಂದಿರೇ
ಹಕ್ಕುದಾರರಲ್ಲವೇ ?

ತನ್ನ ಪಾಲಿಗೆ ಬಂದ ದ್ರವ್ಯವನ್ನೆಲ್ಲ ಗಂಟುಕಟ್ಟಿದಳು. ಆ ಮೇಲೆ ಅದನ್ನು ಹೊತ್ತುಕೊಂಡು ಗಂಡನು ಇಳಿದುಕೊಂಡ ಸ್ಥಳಕ್ಕೆ ಹೋದಳು. “ಇದೇನು ತಂದೆ” ಎಂದು ಕೇಳಿದನು ಗಂಡ. “ನೋಡಿಕೋ” ಎಂದು ನುಡಿದು ಹೆಂಡತಿಯು ಬೆಳ್ಳಿ ಬಂಗಾರ, ಮುತ್ತು ರತ್ನ, ರೂಪಾಯಿ ಎಲ್ಲವನ್ನು ತೋರಿಸಿದಳು. “ಇದನ್ನೆಲ್ಲ ಹೇಗೆ ದೊರಕಿಸಿದೆ” ಎಂದು ಗಂಡನು ಕೇಳಿದನು.
“ಅದರ ಕಥೆಯನ್ನೆಲ್ಲ ಹಿಂದಿನಿಂದ ಹೇಳುವೆ. ಈಗ, ಇದಕ್ಕೇ ದಿಗಮಲ್ಲಿ ತನವೆನ್ನುವರೆಂದು ಹೇಳಿದೆರೆ ಸಾಕು” ಎಂದಳು. ಮರುದಿನ ನಸುಕಿನಲ್ಲಿ ಎದ್ದು ಗಂಡ-ಹೆಂಡಿರಿಬ್ಬರು ತಮ್ಮೂರ ಹಾದಿ ಹಿಡಿದರು.
*****

ಪುಸ್ತಕ: ಉತ್ತರ ಕರ್ನಾಟಕದ ಜನಪದ ಕಥೆಗಳು

Tagged:

Leave a Reply

Your email address will not be published. Required fields are marked *

ತೆಂಕಣದಿ ಹದಿನಾರು ಮೈಲಿಗಳಾಚಿ ಬಾಂದಳಕೆ ಭುಜಗೊಟ್ಟು ನಿಂತಿರುವ ಸಿಂಹಗಡವೇ-ಇದೋ ನಿನಗೆ ತಲೆಬಾಗುವೆನು. ಶತಮಾನಗಳ ಹಿಂದೆ, ನರಜಾತಿಯಲಿ ಹರಿಯಂತೆ ಮೆರೆದ ವೀರಲೀಲಾಲೋಲ ಶಿವಪ್ರಭುವನು ಶಿರದಲಿ ಹೊತ್ತು ಮೆರೆಯಿಸಿದ ಸಿಂಹಗಡವೇ ಇದೋ-ನಿನಗೆ ವಂದಿಸುವೆನು. ಅಂದು ನಮ್ಮ ನಾಡಿನ ಧರ್‍ಮ-ನಮ್ಮ ಹ...

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...