Home / ಕಥೆ / ಜನಪದ / ಯಾರಿಗೆ ಕೊಡಬೇಕು ಕನ್ಯೆ

ಯಾರಿಗೆ ಕೊಡಬೇಕು ಕನ್ಯೆ

ಹೀಂಗ ಒಂದು ಊರಿತ್ತು. ಆ ಊರಲ್ಲಿ ಇಬ್ಬರು ಗಂಡಹೆಂಡಿರಿದ್ದರು. ಅವರಿಗೆ ಒಬ್ಬಳೇ ಮಗಳು. ಬಹಳ ಚೆಲುವೆ; ಕಡ್ಡಿಯಿಂದ ಕೊರೆದಂತೆ ರೂಪು; ಮೈಬಣ್ಣ ಬಂಗಾರದ್ದು; ಏನು ಆ ಮೂಗು ಸಂಪಿಗೆ ತೆನೆ; ಏನು ಆ ಹಲ್ಲು ದಾಳಿಂಬರ ಬೀಜ; ಆಕೆಯನ್ನು ಯಾರು ಬೇಡವೆಂದಾರು? ಆಕೆಗಿದ್ದ ಮೂವರೂ ಸೋದರ ಮಾವಂದಿರು ಕೇಳುತ್ತಿದ್ದರು – ಆಕೆ ನನಗೆ ಬೇಕು, ನನಗೆ ಬೇಕು – ಎಂದು.

ಅಕ್ಕನಿಗೆ ಇದ್ದವಳು ಒಬ್ಬಳೇ ಮಗಳು. ಕೇಳುವವರು ಮೂವರು ತಮ್ಮಂದಿರು. ಯಾರಿಗೆ ಕೊಡಬೇಕು ?

ಎಲ್ಲರೂ ಒಳ್ಳೆಯವರೇ ಆಗಿದ್ದರು; ಚೆಲುವರೂ ಆಗಿದ್ದರು. ಒಬ್ಬನಿಗೆ ಕೊಟ್ಟರೆ ಇಬ್ಬರು ಸಿಟ್ಟಾಗುತ್ತಾರೆ. ಏನು ಮಾಡುವುದು ಯುಕ್ತಿ ?

ಮೂವರೂ ತಮ್ಮರನ್ನು ಕರೆದು ಅಕ್ಕನು, ತಲೆಗೆ ನೂರುನೂರು ರೂಪಾಯಿ ಕೊಟ್ಟಳು. “ಎಲ್ಲಿಗೆ ಬೇಕೋ ಅಲ್ಲಿಗೆ ಹೋಗಿರಿ. ಯಾರು ತೀವ್ರವಾಗಿ ಹೆಚ್ಚು ಗಳಿಸಿಕೊಂಡು ಬರುವಿರೋ ಅವರಿಗೆ ನನ್ನ ಮಗಳನ್ನು ಕೊಡುವೆನು” ಎಂದು ಹೇಳಿದಳು.

ಆ ಮಾತಿಗೆ ಮೂವರೂ ಒಪ್ಪಿ ದೇಶಾಂತರಕ್ಕೆ ನಡೆದರು. ಕೆಲವು ದಿನಗಳಲ್ಲಿ ಅವರು ಮೈಸೂರಿನಂಥ ಪಟ್ಟಣಕ್ಕೆ ಹೋದರು. ಊರತುಂಬ ಅಂಗಡಿಗಳು ! ಪ್ರತಿಯೊಂದು ಅಂಗಡಿಯಲ್ಲಿ ತರತರದ ಬದುಕು ! ನೋಡುತ್ತ ನೋಡುತ್ತ ಒಂದು ಅಂಗಡಿಯನ್ನು ಪ್ರವೇಶಿಸಿದರು. ಅಲ್ಲೊಂದು ಕನ್ನಡಿಯಿತ್ತು. ಅದರಲ್ಲಿ ನೋಡಿದರೆ ಜಗತ್ತೆಲ್ಲ ಕಣ್ಣಮುಂದೆ ಬರುತ್ತಿತ್ತು. ಹಿರಿಯಣ್ಣನು ತನ್ನ ಬಳಿಯಲ್ಲಿದ್ದ ನೂರು ರೂಪಾಯಿಕೊಟ್ಟು ಅದನ್ನು ಕೊಂಡುಕೊಂಡನು.

ಇನ್ನೊಂದು ಅಂಗಡಿಯಲ್ಲಿ ವಿಚಿತ್ರವಾದ ತೊಟ್ಟಿಲು ಕಂಡರು. ಅದರಲ್ಲಿ ಕುಳಿತು ಮನಸ್ಸು ಹರಿದಲ್ಲಿ ಹೋಗಲು ಬರುವಂತಿತ್ತು. ನಡುವಿನಣ್ಣನು ಅದನ್ನು ನೂರು ರೂಪಾಯಿಗಳಿಗೆ ಖರೀದಿಮಾಡಿದನು. ಮುಂದಿನ ಪೇಟೆಯಲ್ಲಿ ಗೊಂಬೆಗಳ ಅಂಗಡಿಯಿತ್ತು. ಅಲ್ಲಿ ಸತ್ತವರನ್ನು ಬದುಕಿಸುವ ಗೊಂಬೆಗಳಿದ್ದವು. ಅವುಗಳನ್ನು ಸಣ್ಣವನು ಕೊಂಡುಕೊಂಡನು. ಅಷ್ಟಾಗುವುದಕ್ಕೆ ಊಟದ ಹೊತ್ತಾಗಿತ್ತು. ಮೂವರೂ ಹಸಿದಿದ್ದರು. ಅಕ್ಕ ಕಟ್ಟಿದ ಬುತ್ತಿಯಂತೂ ಇತ್ತು. ಅದನ್ನು ತೆಗೆದುಕೊಂಡು ಊರಹೊರಗೆ ಹಳ್ಳದ ಕಡೆಗೆ ಊಟಕ್ಕೆಂದು ನಡೆದರು. ಹಳ್ಳದಲ್ಲಿ ಕೈಕಾಲು ತೊಳೆದುಕೊಂಡು ಬಂದು ಬುತ್ತಿ ಬಿಚ್ಚಿದರು. ಇನ್ನೇನು, ಊಟಕ್ಕೆ ಕುಳಿತುಕೊಳ್ಳಬೇಕೆನ್ನುವಷ್ಟರಲ್ಲಿ, ತಮ್ಮೂರ ಕಡೆಯ ಸಂಗತಿಯನ್ನು ತಿಳಿದುಕೊಳ್ಳಬೇಕೆಂದು ಕನ್ನಡಿಯಲ್ಲಿ ನೋಡಿದರು. ದುರ್ದೈವ ಎದುರಿಗೇ ಬಂದಂತಾಯ್ತು. ತಾವು ಮದುವೆಯಾಗಬೇಕೆಂದಿರುವ ಕನ್ಯೆ ತೀರಿಕೊಂಡಿತ್ತು. ಗೋರಿಮರಡಿಗೆ ಒಯ್ಯುವ ಸಿದ್ಧತೆ ನಡೆದಿತ್ತು. ಬಿಚ್ಚಿದ ಬುತ್ತಿ ಕಟ್ಟಿದರು. ಇನ್ನೆಲ್ಲಿಯ ಊಟವೆಂದು ಕೂಡಲೇ ತೊಟ್ಟಿಲಲ್ಲಿ ಕುಳಿತರು. ಹಾ೦ ಅನ್ನುವಷ್ಟರಲ್ಲಿ ಊರಿಗೆ ಬಂದು ತಲುಪಿದರು. ಸಣ್ಣ ತಮ್ಮನು ತನ್ನ ಬಳಿಯಲ್ಲಿರುವ ಗೊಂಬೆಯಿಂದ ಸತ್ತವಳನ್ನು ಎಬ್ಬಿಸಿದನು.

ಇನ್ನು ಹೇಳಿರಿ – ಅಕ್ಕನು ಯಾರಿಗೆ ಕೊಡಬೇಕು. ತನ್ನ ಮಗಳನ್ನು ?
*****

ಪುಸ್ತಕ: ಉತ್ತರ ಕರ್ನಾಟಕದ ಜನಪದ ಕಥೆಗಳು

Tagged:

Leave a Reply

Your email address will not be published. Required fields are marked *

ತೆಂಕಣದಿ ಹದಿನಾರು ಮೈಲಿಗಳಾಚಿ ಬಾಂದಳಕೆ ಭುಜಗೊಟ್ಟು ನಿಂತಿರುವ ಸಿಂಹಗಡವೇ-ಇದೋ ನಿನಗೆ ತಲೆಬಾಗುವೆನು. ಶತಮಾನಗಳ ಹಿಂದೆ, ನರಜಾತಿಯಲಿ ಹರಿಯಂತೆ ಮೆರೆದ ವೀರಲೀಲಾಲೋಲ ಶಿವಪ್ರಭುವನು ಶಿರದಲಿ ಹೊತ್ತು ಮೆರೆಯಿಸಿದ ಸಿಂಹಗಡವೇ ಇದೋ-ನಿನಗೆ ವಂದಿಸುವೆನು. ಅಂದು ನಮ್ಮ ನಾಡಿನ ಧರ್‍ಮ-ನಮ್ಮ ಹ...

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...