Home / ಕಥೆ / ಜನಪದ / ಯಾರಿಗೆ ಕೊಡಬೇಕು ಕನ್ಯೆ

ಯಾರಿಗೆ ಕೊಡಬೇಕು ಕನ್ಯೆ

ಹೀಂಗ ಒಂದು ಊರಿತ್ತು. ಆ ಊರಲ್ಲಿ ಇಬ್ಬರು ಗಂಡಹೆಂಡಿರಿದ್ದರು. ಅವರಿಗೆ ಒಬ್ಬಳೇ ಮಗಳು. ಬಹಳ ಚೆಲುವೆ; ಕಡ್ಡಿಯಿಂದ ಕೊರೆದಂತೆ ರೂಪು; ಮೈಬಣ್ಣ ಬಂಗಾರದ್ದು; ಏನು ಆ ಮೂಗು ಸಂಪಿಗೆ ತೆನೆ; ಏನು ಆ ಹಲ್ಲು ದಾಳಿಂಬರ ಬೀಜ; ಆಕೆಯನ್ನು ಯಾರು ಬೇಡವೆಂದಾರು? ಆಕೆಗಿದ್ದ ಮೂವರೂ ಸೋದರ ಮಾವಂದಿರು ಕೇಳುತ್ತಿದ್ದರು – ಆಕೆ ನನಗೆ ಬೇಕು, ನನಗೆ ಬೇಕು – ಎಂದು.

ಅಕ್ಕನಿಗೆ ಇದ್ದವಳು ಒಬ್ಬಳೇ ಮಗಳು. ಕೇಳುವವರು ಮೂವರು ತಮ್ಮಂದಿರು. ಯಾರಿಗೆ ಕೊಡಬೇಕು ?

ಎಲ್ಲರೂ ಒಳ್ಳೆಯವರೇ ಆಗಿದ್ದರು; ಚೆಲುವರೂ ಆಗಿದ್ದರು. ಒಬ್ಬನಿಗೆ ಕೊಟ್ಟರೆ ಇಬ್ಬರು ಸಿಟ್ಟಾಗುತ್ತಾರೆ. ಏನು ಮಾಡುವುದು ಯುಕ್ತಿ ?

ಮೂವರೂ ತಮ್ಮರನ್ನು ಕರೆದು ಅಕ್ಕನು, ತಲೆಗೆ ನೂರುನೂರು ರೂಪಾಯಿ ಕೊಟ್ಟಳು. “ಎಲ್ಲಿಗೆ ಬೇಕೋ ಅಲ್ಲಿಗೆ ಹೋಗಿರಿ. ಯಾರು ತೀವ್ರವಾಗಿ ಹೆಚ್ಚು ಗಳಿಸಿಕೊಂಡು ಬರುವಿರೋ ಅವರಿಗೆ ನನ್ನ ಮಗಳನ್ನು ಕೊಡುವೆನು” ಎಂದು ಹೇಳಿದಳು.

ಆ ಮಾತಿಗೆ ಮೂವರೂ ಒಪ್ಪಿ ದೇಶಾಂತರಕ್ಕೆ ನಡೆದರು. ಕೆಲವು ದಿನಗಳಲ್ಲಿ ಅವರು ಮೈಸೂರಿನಂಥ ಪಟ್ಟಣಕ್ಕೆ ಹೋದರು. ಊರತುಂಬ ಅಂಗಡಿಗಳು ! ಪ್ರತಿಯೊಂದು ಅಂಗಡಿಯಲ್ಲಿ ತರತರದ ಬದುಕು ! ನೋಡುತ್ತ ನೋಡುತ್ತ ಒಂದು ಅಂಗಡಿಯನ್ನು ಪ್ರವೇಶಿಸಿದರು. ಅಲ್ಲೊಂದು ಕನ್ನಡಿಯಿತ್ತು. ಅದರಲ್ಲಿ ನೋಡಿದರೆ ಜಗತ್ತೆಲ್ಲ ಕಣ್ಣಮುಂದೆ ಬರುತ್ತಿತ್ತು. ಹಿರಿಯಣ್ಣನು ತನ್ನ ಬಳಿಯಲ್ಲಿದ್ದ ನೂರು ರೂಪಾಯಿಕೊಟ್ಟು ಅದನ್ನು ಕೊಂಡುಕೊಂಡನು.

ಇನ್ನೊಂದು ಅಂಗಡಿಯಲ್ಲಿ ವಿಚಿತ್ರವಾದ ತೊಟ್ಟಿಲು ಕಂಡರು. ಅದರಲ್ಲಿ ಕುಳಿತು ಮನಸ್ಸು ಹರಿದಲ್ಲಿ ಹೋಗಲು ಬರುವಂತಿತ್ತು. ನಡುವಿನಣ್ಣನು ಅದನ್ನು ನೂರು ರೂಪಾಯಿಗಳಿಗೆ ಖರೀದಿಮಾಡಿದನು. ಮುಂದಿನ ಪೇಟೆಯಲ್ಲಿ ಗೊಂಬೆಗಳ ಅಂಗಡಿಯಿತ್ತು. ಅಲ್ಲಿ ಸತ್ತವರನ್ನು ಬದುಕಿಸುವ ಗೊಂಬೆಗಳಿದ್ದವು. ಅವುಗಳನ್ನು ಸಣ್ಣವನು ಕೊಂಡುಕೊಂಡನು. ಅಷ್ಟಾಗುವುದಕ್ಕೆ ಊಟದ ಹೊತ್ತಾಗಿತ್ತು. ಮೂವರೂ ಹಸಿದಿದ್ದರು. ಅಕ್ಕ ಕಟ್ಟಿದ ಬುತ್ತಿಯಂತೂ ಇತ್ತು. ಅದನ್ನು ತೆಗೆದುಕೊಂಡು ಊರಹೊರಗೆ ಹಳ್ಳದ ಕಡೆಗೆ ಊಟಕ್ಕೆಂದು ನಡೆದರು. ಹಳ್ಳದಲ್ಲಿ ಕೈಕಾಲು ತೊಳೆದುಕೊಂಡು ಬಂದು ಬುತ್ತಿ ಬಿಚ್ಚಿದರು. ಇನ್ನೇನು, ಊಟಕ್ಕೆ ಕುಳಿತುಕೊಳ್ಳಬೇಕೆನ್ನುವಷ್ಟರಲ್ಲಿ, ತಮ್ಮೂರ ಕಡೆಯ ಸಂಗತಿಯನ್ನು ತಿಳಿದುಕೊಳ್ಳಬೇಕೆಂದು ಕನ್ನಡಿಯಲ್ಲಿ ನೋಡಿದರು. ದುರ್ದೈವ ಎದುರಿಗೇ ಬಂದಂತಾಯ್ತು. ತಾವು ಮದುವೆಯಾಗಬೇಕೆಂದಿರುವ ಕನ್ಯೆ ತೀರಿಕೊಂಡಿತ್ತು. ಗೋರಿಮರಡಿಗೆ ಒಯ್ಯುವ ಸಿದ್ಧತೆ ನಡೆದಿತ್ತು. ಬಿಚ್ಚಿದ ಬುತ್ತಿ ಕಟ್ಟಿದರು. ಇನ್ನೆಲ್ಲಿಯ ಊಟವೆಂದು ಕೂಡಲೇ ತೊಟ್ಟಿಲಲ್ಲಿ ಕುಳಿತರು. ಹಾ೦ ಅನ್ನುವಷ್ಟರಲ್ಲಿ ಊರಿಗೆ ಬಂದು ತಲುಪಿದರು. ಸಣ್ಣ ತಮ್ಮನು ತನ್ನ ಬಳಿಯಲ್ಲಿರುವ ಗೊಂಬೆಯಿಂದ ಸತ್ತವಳನ್ನು ಎಬ್ಬಿಸಿದನು.

ಇನ್ನು ಹೇಳಿರಿ – ಅಕ್ಕನು ಯಾರಿಗೆ ಕೊಡಬೇಕು. ತನ್ನ ಮಗಳನ್ನು ?
*****

ಪುಸ್ತಕ: ಉತ್ತರ ಕರ್ನಾಟಕದ ಜನಪದ ಕಥೆಗಳು

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...