Home / ಕಥೆ / ಜನಪದ / ಪಾದರಕ್ಷೆಯ ಪುಣ್ಯ

ಪಾದರಕ್ಷೆಯ ಪುಣ್ಯ

ಶ್ರೀಮಂತಿಕೆಯನ್ನು ಭೋಗಿಸಿ, ಸಾಮಾನ್ಯಸ್ಥಿತಿಗೆ ಬಂದ ಇಬ್ಬರು ಗಂಡಹೆಂಡಿರು ಒಂದೂರಿನಲ್ಲಿ ಇದ್ದರು. ಅವರ ಕುಲಗುರುಗಳು ವಾಡಿಕೆಯಂತೆ ಅವರ ಮನೆಗೆ ಆಗಮಿಸಿದರು, ಒಬ್ಬ ಸೇವಕನೊಡನೆ. ಆ ಗಂಡಹೆಂಡಿರು ತಮ್ಮ ಸಾಮಾನ್ಯಸ್ಥಿತಿಯನ್ನು ಗುರುಗಳಿಗೆ ತೋರಗೊಡದೆ, ಮೊದಲಿನಂತೆಯೇ ಅವರನ್ನು ಸತ್ಕರಿಸಲು ನಿಶ್ಚಯಿಸಿದರು. ತಮ್ಮ ಮನೆಯೊಳಗಿನ ಒಂದು ಕೋಣೆಯಲ್ಲಿ ಗುರುಗಳು ಇಳಿದುಕೊಳ್ಳಲು ಏರ್ಪಡಿಸಿದರು. ಆದರೆ ಗುರುಗಳಿಗೆ ಬಿನ್ನಹಮಾಡಿ ದಕ್ಷಿಣೆಕೊಡಮಾಡುವುದು ಏತರಿಂದ – ಎಂದು ಆ ದಂಪತಿಗಳು ಯೋಚಿಸತೊಡಗಿದರು. ಅವರಿಗೊಂದು ಯುಕ್ತಿ ಹೊಳೆಯಿತು – “ಗುರುಗಳಿಗೆ ಪ್ರತ್ಯೇಕವಾದ ಒಂದು ಜೊತೆ ಚಮ್ಮಳಿಗೆಗಳಿವೆ. ಹೇಗಾದರೂ ಅವುಗಳನ್ನು ಅವರು ಉಪಯೋಗಿಸುವದಿಲ್ಲ. ಚೀಲದಲ್ಲಿ ಬಯತಿರಿಸಿರುತ್ತಾರೆ. ಅವುಗಳನ್ನು ಅವರಿಗೆ ಗೊತ್ತಾಗದಂತೆ ಒಯ್ದು ಮಾರಿ ಬಂದರಾಯಿತು. ತಕ್ಕಷ್ಟು ಹಣ ಬರುತ್ತದೆ. ಅದನ್ನೇ ಖರ್ಚು ಮಾಡಿ, ಗುರುಗಳಿಗೆ ಬಿನ್ನಹಮಾಡಿಸಿ ಮೇಲೆ ದಕ್ಷಿಣೆ ಕೊಡಬಹುದು.

ಗಂಟಿನಲ್ಲಿದ್ದ ಆ ಚಮ್ಮಳಿಗೆಗಳನ್ನು ಗುರುಗಳಿಗೂ ಅವರ ಸೇವಕನಿಗೂ ಗೊತ್ತಾಗದಂತೆ ಎತ್ತಿತಂದು ಕೊಟ್ಟವಳು ಹೆಂಡತಿ. ಅವುಗಳನ್ನು ಪೇಟೆಗೊಯ್ದು ಮಾರಿಕೊಂಡು ಮೂವತ್ತು ರೂಪಾಯಿ ತಂದವನು ಗಂಡ. ಆ ಬಳಿಕ ಗೋದಿ, ಅಕ್ಕಿ, ಬೇಳೆ, ಬೆಲ್ಲ, ಬೆಣ್ಣೆ, ಎಣ್ಣಿ ಮೊದಲಾದವುಗಳನ್ನು ಕೊಂಡುತಂದರು. ಗೊತ್ತು ಮಾಡಿದ ದಿವಸ ಹೂರಣಕ್ಕೆ ಹಾಕಿ ಹೋಳಿಗೆ ಮಾಡಿದರು. ತುಪ್ಪವಂತೂ ಬೆಣ್ಣೆ ಕಾಸಿದ್ದಿತ್ತು.

ಗುರುಗಳ ಸ್ನಾನ, ಪೂಜೆ ಆದ ಬಳಿಕ ಆ ದಂಪತಿಗಳು ಪಾದಪೂಜೆಗೆ ಕುಳಿತರು. ಅದು ಮುಗಿದ ಮೇಲೆ ಕರಣಪ್ರಸಾದ ತೆಗೆದುಕೊಂಡು ಗುರುಗಳಿಗೆ
ಉಣಬಡಿಸುವ ಏರ್ಪಾಡು ನಡೆಸಿದರು. ಹೋಳಿಗೆ – ತುಪ್ಪದ ಊಟದಿಂದ ಗುರುಗಳು ಸಂತೃಪ್ತರಾದರು. ಶಿಷ್ಯ ಮಕ್ಕಳು ಗುರುಗಳ ಕಾಲಿಗೆರಗಿ ಇಪ್ಪತ್ತು ರೂಪಾಯಿ ಗುರುದಕ್ಷಿಣೆಯಿಟ್ಟರು. ಗುರುಗಳಿಗೆ ಅತಿಶಯ ಆನಂದವಾಗಿ ಅವರ ಔದಾರ್ಯವನ್ನು ಹೊಗಳ ತೊಡಗಿದರು.

ಗಂಡಹೆಂಡಿರು ಕೈಮುಗಿದು – “ಅದೆಲ್ಲ ತಮ್ಮ ಪಾದರಕ್ಷೆಯ ಪುಣ್ಯ” ಎಂದು ವಿನಯಿಸಿದರು.

ಸೇವಕನನ್ನು ಕರೆದು ಗುರುಗಳು ಮುಂದಿನ ಪಯಣದ ಸಿದ್ಧತೆ ನಡೆಸಿದರು. ಗಂಡಹೆಂಡಿರನ್ನು ಕರೆದು ಅವರ ಭಕ್ತಿಯನ್ನೂ ಔದಾರ್ಯವನ್ನೂ ಕೊಂಡಾಡಿದರು. ದಂಪತಿಗಳಿಬ್ಬರೂ ಗುರುಗಳ ಕಾಲಿಗೆರಗಿ – ‘ತಮ್ಮ ಪಾದರಕ್ಷೆ ಯ ಪುಣ್ಯ’ ಎನ್ನುತ್ತ ಆಶೀರ್ವಾದ ಪಡೆದರು.

ಮುಂದಿನೂರು ತಲುಪಿ ಬೀಡು ಬಿಟ್ಟಾಗ ಗುರುಗಳು ತಮ್ಮ ಚಮ್ಮಳಿಗೆಗಳನ್ನು ಹುಡುಕಾಡಿದರೆ ಸಿಗಲೇ ಇಲ್ಲ. ಸೇವಕನನ್ನು ಕೇಳಿದರು – “ಎಲ್ಲಿ ಮಾಯವಾದವು?”

ಗುರುಗಳಿಗಂತೂ ಏನೂ ತಿಳಿಯಲಿಲ್ಲ. ಕೊನೆಗೆ ಸೇವಕನೇ ಅನುಮಾನಿಸುತ್ತ ನುಡಿದನು-

“ಹಿಂದಿನೂರಿನ  ಶಿಷ್ಯಮಕ್ಕಳು ಮಾತುಮಾತಿಗೆ ‘ತಮ್ಮ ಪಾದರಕ್ಷೆಯ ಪುಣ್ಯ’ ವೆನ್ನುತ್ತಿದ್ದರು. ಅವರೇ ಪುಣ್ಯಕಟ್ಟಿಕೊಂಡಂತೆ ಕಾಣುತ್ತದೆ.”

“ಗುರುದಕ್ಷಿಣೆ ಈ ಬಗೆಯಾಗಿ ಸಿಕ್ಕಿತೆನ್ನೋಣ – ಗುರುವಿನಿಂದ ದಕ್ಷಿಣೆ” ಎಂದರು ಗುರುಗಳು.
*****

Tagged:

Leave a Reply

Your email address will not be published. Required fields are marked *

ತೆಂಕಣದಿ ಹದಿನಾರು ಮೈಲಿಗಳಾಚಿ ಬಾಂದಳಕೆ ಭುಜಗೊಟ್ಟು ನಿಂತಿರುವ ಸಿಂಹಗಡವೇ-ಇದೋ ನಿನಗೆ ತಲೆಬಾಗುವೆನು. ಶತಮಾನಗಳ ಹಿಂದೆ, ನರಜಾತಿಯಲಿ ಹರಿಯಂತೆ ಮೆರೆದ ವೀರಲೀಲಾಲೋಲ ಶಿವಪ್ರಭುವನು ಶಿರದಲಿ ಹೊತ್ತು ಮೆರೆಯಿಸಿದ ಸಿಂಹಗಡವೇ ಇದೋ-ನಿನಗೆ ವಂದಿಸುವೆನು. ಅಂದು ನಮ್ಮ ನಾಡಿನ ಧರ್‍ಮ-ನಮ್ಮ ಹ...

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...