Home / ಕವನ / ಅನುವಾದ / ಮುದಿಯ ರಾಮಗೌಡ

ಮುದಿಯ ರಾಮಗೌಡ

ಕುರಿಗಳೆಲ್ಲಾ ರೊಪ್ಪದಲ್ಲಿ, ದನಗಳೆಲ್ಲಾ ತೊಟ್ಟಿಯಲ್ಲಿ,
ಜನಗಳೆಲ್ಲಾ ಹಟ್ಟಿಯಲ್ಲಿ ಬಳಲಿ ಕೆಡೆದರು ತೆಪ್ಪಗೆ;
ಗಂಡ ಗೊರಕೆಹೊಯ್ಯುತಿಹನು ನಿದ್ದೆ ಕವಿದು ಮಗ್ಗುಲಲ್ಲಿ-
ನನಗೋ ಹೊಟ್ಟೆಯ ದುಃಖವೆಲ್ಲಾ ಕಣ್ಣ ಹನಿಯಲಿ ಸುರಿವುದು.

ಚಿಕ್ಕ ಹರೆಯದ ಚಾಮನೊಲಿದು ಮದುವೆಗೆನ್ನ ಬಯಸುತ್ತಿದ್ದ.
ಮಾತನೆತ್ತಲು ರೆಕ್ಕವಿಲ್ಲದೆ ನಾಚಿ ಸುಮ್ಮನೆ ಇರುವನು.
ದುಡ್ಡು ಕಾಸನು ಕೂಡಿಹಾಕಲು ಹೋಗಿ ಹಡಗ ಸೇರಿಕೊಂಡ-
ದುಡ್ಡು ಕಾಸನು ನನ್ನ ಸಲುವೇ ಕೂಡಿಹಾಕಲು ಹೋದನು.

ಅವನು ಹೋಗಿ ನೆಟ್ಟಗೆಲ್ಲಾ ಎರಡು ವಾರ ಕಳೆಯಲಿಲ್ಲ.
ಅಪ್ಪ ಕೈಯ ಮುರಿದುಕೊಂಡ; ಕಳ್ಳರೊಯ್ದರು ದನವನು.
ಅವ್ವ ನರಳುತ ಬಿದ್ದುಕೊಂಡಳು, ಚಾಮ ಎತ್ತಲೋ ಕಡಲಲಿದ್ದನು.
ಇತ್ತ ಮುದಿಯ ರಾಮಗೌಡ ನನ್ನ ಬಯಸಿ ಬಂದನು.

ಅಪ್ಪ ಹೊರಗೆ ಗೆಯ್ಯಲಾರ, ಅವ್ವ ಒಳಗೆ ನೆಯ್ಯಲಾರಳು;
ಹಗಲು ಇರುಳು ನಾನು ದುಡಿದೂ ನಮಗೆ ಹಿಟ್ಟು ಹುಟ್ಟದು.
ರಾಮಗೌಡ ಕಷ್ಟಕಾದ : ಕೈಯ ಹಿಡಿದು ಕಣ್ಣ ನೆನಸಿ,
ಅವರ ಸಲುವಾಗೆನ್ನ ಚೆನ್ನಿ, ಮದುವೆಯಾಗು ಎಂದನು.

ನನ್ನ ಮನಸೋ ಒಲ್ಲೆನೆನುವುದು; ಚಾಮ ಬರುವ ನಚ್ಚು ಹೋಗದು;
ಎಲ್ಲಿ ಬರುವನು? ಗಾಳಿ ಬಡಿದು ಹಡಗು ಪುಡಿಪುಡಿಯಾಯಿತು.
ಹಡಗು ಪುಡಿಪುಡಿಯಾಯಿತಯ್ಯೋ ಸಾಯದೇತಕೆ ಚಾಮ ಉಳಿದ!
ಕೊರಗಿ ನಾನೀ ಬೇಗೆಯಲ್ಲಿ ಏಕೆ ಬದುಕುತ್ತಿರುವೆನು!

ಅಪ್ಪ ಹೇಳಿದ, ಗದರಿಕೊಂಡ; ಅವ್ವ ಬಾಯಲಿ ಆಡಒಲ್ಲಳು;
ಅವಳು ನೋಡಿದ ನೋಟವೇ ನನ್ನೆದೆಯನಿರಿಯಿತು, ಮುರಿಯಿತು.
ಅವನ ಕೈಯಲಿ ಕೈಯನಿಟ್ಟರು; ಮನಸು ಕಡಲಲಿ ನಿಂತುಹೋಯಿತು.
ಅಂತು ಮುದಿಯ ರಾಮಗೌಡ ನನಗೆ ಗಂಡನಾದನು.

ಮದುವೆಯಾಗಿ ನೆಟ್ಟಗೆಲ್ಲಾ ನಾಲ್ಕುವಾರ ಕಳೆಯಲಿಲ್ಲ.
ಬಾಗಿಲಲ್ಲಿ ಕಲ್ಲಮೇಲೆ ಕುಳಿತು ಕೊರಗುತ – ಕಂಡೆನು!
ಗಾಳಿಯಾಗಿ ಬಂದ ಚಾಮ ಎಂದುಕೊಂಡೆನು – ಚಾಮು ನಕ್ಕು,
ತೆರವ ತಂದೆ, ಮದುವೆಯಾಗಲು ಬಂದೆ, ಚೆನ್ನಿ , ಎಂದನು .

ಬಿಕ್ಕಿ ಬಿಕ್ಕಿ ನುಡಿಸಿ ನುಡಿಸಿ, ದುಃಖವೆಲ್ಲಾ ಹೇಳಿಕೊಂಡೆವು,
ಒಂದು ಮುತ್ತ ಸೆಳೆದುಕೊಂಡೆವು-ಅಟ್ಟಿಬಿಟ್ಟೆ, ಆಗಲೆ!
ಸಾಯ ಒಲ್ಲೆನೆ ನಾನು ಪಾಪಿ! ಅಯ್ಯೊ! ಪಾಪಿಗೆ ಸಾವು ಬಹುದೆ?
ಹುಟ್ಟದೇ ಇರಬಾರದೇ! ಈ ಬೇಗೆಬಾಳನು ತಾಳೆನೇ!

ಗಾಳಿಯಾಗಿ ಸುಳಿಯುತಿರುವೆ-ಮನೆಯ ಕೆಲಸ ಅಕ್ಕರಿಲ್ಲ,
ಚಾಮನನು ನೆನೆಯುವುದು ಪಾಪ ; ಎಷ್ಟೋ ತಡೆಯುವೆ ಮನಸನು.
ಒಳ್ಳೆ ಗರತಿಯಾಗಿ ಬದುಕಲು ಎದೆಯನೆಷ್ಟೋ ಗಟ್ಟಿಮಾಡುವೆ,
ರಾಮಗೌಡನ ಪ್ರೀತಿ ನಂಬಿಕೆಗೆಂತು ದ್ರೋಹವ ಬಗೆವೆನು!
*****
LADY LINDSAY (1750-1825): Auld Robin Gray

Tagged:

Leave a Reply

Your email address will not be published. Required fields are marked *

ಪೆಟ್ರೋಲ್ ವಾಸ್ತೆ ಮೂಗಿಗೆ “ಗಫ್” ಅಂತಾ ಬಡೀತು! ಐದಾರು ಕ್ಯಾನ್‌ಗಟ್ಟಲೆ ಮನೆ ಸುತ್ತಮುತ್ತ ಉಗ್ಗಿ ಬಾಗಿಲು ಕಿಟಕಿ ಸಂಧಿನಿಂದ ಧುಭುಧುಭು – ಪೆಟ್ರೋಲ್ ಸುರಿವಿದ ತೀರಿಗೆ ಅದು ಹಳ್ಳ ಕೊಳ್ಳವಾಗಿ ಮನೆಯೊಳಕ್ಕೆ ಜಗ್ಗಿ ಹರಿದು ಬಂತು! ಮಲಗಿದ್ದ ಹಾಸಿಗೆ, ದಿಂಬು, ಹೊ...

ಭಾಗ ೧ ಒಂದು ಯುನಿವರ್ಸಿಟೀನಲ್ಲಿ ಆಧ್ಯಾಪಕನಾಗಿರುವ ನಾನು ಕ್ಯಾಂಪಸ್ ಆವರಣದೊಳಗೇ ಇರುವ ಫ್ಲಾಟೊಂದರಲ್ಲಿ ಹೆಂಡತಿ ಮಕ್ಕಳ ಜತೆ ಮನೆ ಮಾಡಿಕೊಂಡಿದ್ದೇನೆ. ಮನೆ ಮತ್ತು ಆಫೀಸಿಗೆ ಹೆಚ್ಚೇನೂ ದೂರವಿಲ್ಲದ ಕಾರಣ ವಾಹನಗಳಿಗೆ ವೃಥಾ ಕಾಸು ಖರ್ಚು ಮಾಡಬೇಕಾದುದಿಲ್ಲ. ಮಧ್ಯಾಹ್ನ ಲಂಚಿಗೆ ಕೂಡ ಮನ...

ಬಣಸಾಲೆ ಮುಂದಿನಿಂದ ಹೆಜ್ಜೆ ಹಾಕುವಾಗ ಹೊತ್ತು ಕಂತಿದ್ದು ಲಕ್ಷ್ಯಕ್ಕೆ ಬಂದಿರಲಿಲ್ಲ. ಆಚೀಚಿನ ಹನೆಮರದೆತ್ತರದ ತೇಗ-ಮಾವುಗಳ ಟಿಸಿಲುಗಳಲ್ಲಿ ಹಕ್ಕಿಗಳ ಗರಿ ಒದರುವ ಸರಪರ. ತಾರಕ ಸ್ವರದ ಮಕ್ಕಳಾಟ ವೀಕ್ಷಿಸುತ್ತಾ ರಸ್ತೇಲಿ ಬಿದ್ದಿದ್ದ ಸಣ್ಣ ಸಣ್ಣ ಕಲ್ಲುಗಳನ್ನು ಕಾಲಿನಿಂದ ಚಿಮ್ಮುತ್ತಾ...

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...