Home / ಕವನ / ಕವಿತೆ / ಅವ್ವ

ಅವ್ವ

ಬ್ರಿಟೀಷ್ ಕಾಲದ ಪೋಲಿಸನ ಮಗಳು ನಮ್ಮಮ್ಮ
ಹಾಗೇ ಕಿತ್ತೂರು ಚೆನ್ನಮ್ಮನ ನಾಡಿನಲ್ಲೇ ಹುಟ್ಟಬೆಳೆದವಳು
ಪೋಲಿಸನ ಕೆಲಸ ಅವನದಾಗಿದ್ದರೆ
ಇವಳ ಕೆಲಸ ಅದೇ ಝೆಂಡಾ ಹಿಡಿದು
ಊರತುಂಬೆಲ್ಲ ಪ್ರಭಾತಪೇರಿ ಹಾಕುತ
ಗಾಂಧಿ ಹೆಸರು ಹಿಡಿದು ಕೂಗುವುದು
ಅದೆಷ್ಟು ಧೈರ್ಯ ಅದೆಷ್ಟು ಶಕ್ತಿ ಅವಳಿಗೆ
ಒಬ್ಬೊಬ್ಬರನು ಎತ್ತಿ ಚಚ್ಚಿ ಬಿಡುವಷ್ಟು-
ಸುಳ್ಳು ಮೋಸ ಏನೇನೂ ನಡೆಯುವುದಿಲ್ಲ
ಎಲ್ಲವೂ ನೇರ ಕಡಾಖಂಡಿತ
ಹೀಗೆಂದು ಒಮ್ಮೊಮ್ಮೆ
ಜಗಳಗಂಟೆಯೂ ಅನಿಸಿಕೊಂಡಿದ್ದಾಳೆ

ಅವಳಪ್ಪ ಉದಾರಿ; ನಮ್ಮಪ್ಪ ಜಿಪುಣ ಸರಳವಾದಿ
ಉಂಡುಟ್ಟು ತಿಂದು ತೇಗಿದ ಮನೆಯಿಂದ
ಬಂಗಾರಕವಚ ತೊಟ್ಟು ಬಂದವಳಿಗೆ
ಇಲ್ಲಿ ಎಲ್ಲದಕೂ ಲೆಕ್ಖಾಚಾರ, ಸೀದಾ ಸಾದಾ
ವಯಸ್ಸಿನ ಶಿಕ್ಷಣದ ಅಂತರ ಇದ್ದ ಅವ್ವ
ಆಗಾಗ ಅಧಿಕಾರಿ ಗಂಡನೊಂದಿಗೆ
ಮಾತುಬಿಟ್ಟು ಮೌನಿ
ಮಾತನಾಡಿದ್ದು ಪುಸ್ತಕಗಳೊಂದಿಗೆ
ಕಲೆತದ್ದು ನಯ ನಾಜೂಕು ಶಿಸ್ತು

ನಿಂತನಿಂತಲ್ಲೇ ಬಟ್ಟೆಗಳ ಸುಕ್ಕು
ಒದ್ದೆ ಕೈಯಲೇ ಬಿಡಿಸುತ
ಇಸ್ತ್ರಿ ಹೊಡೆದಂತೆ ತೀಡಿ ತಿದ್ದಿ
ಯುನಿಫಾರ್ಮ್ ತೊಡಿಸಿ
ಬಿಗಿಯಾಗಿ ಜಡೆಹೆಣೆದು ಶಾಲೆಗೆ ಕಳಿಸುತ-
ಪಾಠ ಪುಸ್ತಕಗಳೊಂದಿಗೆ ಒಂದಾಗಿ ಓದಿ ಚರ್ಚಿಸುತ

ಈಗ ಸಾಹಿತಿಗಳ ರಾಜಕಾರಣಿಗಳ
ಸಮಾನಾಂತರ ಚರ್ಚಿಸುವಳು, ವಾದಿಸುವಳು.
ಅವರಪ್ಪ ನಮ್ಮಪ್ಪ ಇಬ್ಬರೂ
ಆಗಲೇ ದೇವರಪಾದ ಸೇರಿದ್ದಾರೆ
ಬ್ರಿಟೀಷರ ಸೇವೆಮಾಡಿ ಅವರಿಂದ
‘ಬಹದ್ದೂರ’ ಅನಿಸಿಕೊಂಡು ಆತ ಹೋದ
ಸರಕಾರದ ಸೇವೆಮಾಡಿ ಇವರಿಂದ
‘ದಕ್ಷ‌ಅಧಿಕಾರಿ’ ಎಂದೆನಿಸಿಕೊಂಡು ಈತ ಹೋದ
ನನಗೂ ಇನ್ನೊಂದಿಷ್ಟು ಓದಿಸಿದ್ದರೆ
ಸಹಕರಿಸಿದ್ದರೆ ಇವರಿಬ್ಬರನು ಮೀರಿಸುತ್ತಿದ್ದೆ
ಎನುತ ಒಮ್ಮೊಮ್ಮೆ ಅವರನು ಬಯ್ಯುತ

ನಮಗೆಲ್ಲ ಸಮಯಪ್ರಜ್ಞೆ ಸಮಾನತೆ
ಬಗೆಗೆ ಎಚ್ಚರಿಸಿ
ಬೆನ್ನುತಟ್ಟಿ ಆಶೀರ್ವದಿಸುವಳು
ಆಗಾಗ ಮಕ್ಕಳೆಲ್ಲರ ಸಾಧನೆಗೆ
ಕಣ್ಣೀರು ತುಂಬಿಕೊಂಡು
ಭಾವಪರವಶಳಾಗುತ್ತಾಳೆ.

ಆದರೂ ಅವಳೊಳಗೆ ಬೇರುಬಿಟ್ಟ
ಗಾಂಧಿತತ್ವ
ಪೋಲಿಸನ ದರ್ಪ
ಅಧಿಕಾರಿಯ ಮಾತುಗಳು
ಮತ್ತೆ ಮತ್ತೆ ಚಿಗಿಯುತ್ತವೆ
ಸಮಯ ಪ್ರಜ್ಞೆಗೆ ತಾನೂ
ಅವನ್ನೆಲ್ಲಾ ಬಳಸಿಕೊಳ್ಳುತ
ಒಮ್ಮೊಮ್ಮೆ ಗುಡುಗು ಸಿಡಿಲು ಮಳೆಯಾಗಿ ಬಿಡುತ್ತಾಳೆ.

ವಾತ್ಸಲ್ಯ
ಉಡಿತುಂಬ ತುಂಬಿಕಳಿಸಿದ
ನನ್ನವ್ವಳ ಆಶೀರ್ವಾದ
ಹಾಸಿದ್ದೇನೆ ಹೊದ್ದಿದ್ದೇನೆ
ಬಿತ್ತಿ ಬೆಳೆದುಕೊಂಡು
ತೊನೆದಾಡುತ್ತಿದ್ದೇನೆ.
*****

ಪುಸ್ತಕ: ಇರುವಿಕೆ

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...