Home / ಕವನ / ಕವಿತೆ / ಹೀಗೂ ಆಯಿತೊಮ್ಮೆ

ಹೀಗೂ ಆಯಿತೊಮ್ಮೆ

ತೀರ ಇತ್ತೀಚಿಗೆ ಸಂಜೆಹೊತ್ತಿನ
ಜನನಿಬಿಡ ವಾಹನ ದಟ್ಟನೆಯ ರಸ್ತೆಯಲಿ
ಸಣ್ಣ ~ಆಕ್ಸಿಡೆಂಟ್ ನನ್ನ ಕಾರಿಗೆ ಆಗಿಯೇ ಹೋಯಿತು
ಅದು ~ಆಕ್ಸಿಡೆಂಟೇ ಅಲ್ಲ
ಹಾಗೆ ನೋಡಿದರೆ ತಕ್ಷಣದ ಬ್ರೆಕ್ಕು
ಕಿರುಗುಟ್ಟಿದ ಗಾಲಿ –
ಮುಂದಿನ ಕಾರು ಚಾಲಕ ಅರ್ಧಬೋಳು ತಲೆಯ
ಕರಿಯ ಹೊಟ್ಟಡುಮ್ಮ ಹೈದಗಳು
‘ಏನು ಗುಂಡಹಾಕಿ
ಕಾರು ಹೊಡೆತಾ ಇದ್ದಿಯಾ ಅಮ್ಮಣ್ಣಿ
ಕೆಳಗಿಳಿದು ದಂಡಕೊಟ್ಟು ಹೋಗು
ಕಾಸಿಲ್ಲದೆ ಕಾರು ಬಿಡುವುದಿಲ್ಲ’ ಕಿರುಚಾಟ ಕೂಗಾಟ
ಕೈಗೆ ಸಿಕ್ಕ ಶಾಪಿಂಗ್ ಬ್ಯಾಗ್ ಕಿತ್ತು
ದುರುಗುಟ್ಟುತ್ತ ಹೋದವು.

ಮರೆತು ಬಿಡಬಹುದಾದಂತಹುದೇ ವಿಷಯ
ನಾಲ್ಕಾರು ದಿನ ಕಳೆದರೂ ಪದೇ ಪದೇ
~ಆಕ್ಸಿಡೆಂಟ್ ಅಲ್ಲದ ~ಆಕ್ಸಿಡೆಂಟದ್ದೆ ಚಿತ್ರ
ಮನೆಯಲ್ಲಿ ಹೇಳಿ ಹಗುರಾಗಿದ್ದರೂ
ಮತ್ತದೇ ರಸ್ತೆ, ಕಾರು ಗಲಾಟೆ ಗಜಿಬಿಜಿ ಚಿತ್ರ.

ಮೊನ್ನೆ ಇದ್ದಕ್ಕಿದ್ದಂತೆ ಬಂತು
ಅದೇ ಹೈದಗಳ ಕಾರು ಮನೆಮುಂದಿನ
ರಸ್ತೆಯ ಆಚೆಗೆ
ತಬ್ಬಿಬ್ಬಾದೆ
ಒಳಗಡೆಯ ಮುಖಗಳೆಲ್ಲಾ ಅವೇ

ಭಯ ನಡುಕ ಸಣ್ಣಗೆ ಬೆವರು
ಹಾಗಾಗಬಾರದಿತ್ತು ನನಗೆ
ಐದು ಹತ್ತು ನಿಮಿಷ ಅರ್ಧಗಂಟೆ
ಇಳಿಯಲೊಲ್ಲವು ಹೋಗಲೊಲ್ಲವು ಪಾಪಿಗಳು
ಇಳಿಯತೊಡಗಿದವು ಒಂದೊಂದಾಗಿ.

ಅದೇನೇನೋ ಹುಡುಕತೊಡಗಿದವು
ಇಳಿಬಿಟ್ಟ ಬಗಲ ಚೀಲದಲಿ
ಇರಬಹುದೆ ಬಾಂಬು ಬಂದೂಕು ಚಾಕು ಚೂರಿ
(ಪೇಪರ ಸುದ್ದಿಗಳು ಒಬ್ಬೊಂಟಿಮಹಿಳೆಯ ಕೊಲೆ, ಹತ್ಯ)
ಒತ್ತಿದವು ಕರೆಗಂಟೆ ನೆತ್ತಿಗೆ ಬಂತು ಜೀವ
ಕಿಟಕಿ ಈಚೆಯಿಂದಲೇ ಯಾರು? ಎಂದೆ
ಏನೇನೂ ಗೊತ್ತಿಲ್ಲದವರಂತೆ.

ನಾವು ನಾವು ಅದೇs…….
ಕ್ಷಮಿಸಿ ಮೇಡಂ ನೀವು….
ನಿಮ್ಮ ಬ್ಯಾಗಿನಲ್ಲಿ ಸಿಕ್ಕ ಪುಸ್ತಕಗಳು….
ಕ್ಷಮಿಸಿ ಮೇಡಂ…..
ನಿಮ್ಮೊಂದಿಗೆ ಮಾತನಾಡಬೇಕು…..

ಸಾವರಿಸಿಕೊಂಡು
ಒಳಗೆ ಕರೆಯದೆ ಗೇಟಿನವರೆಗೆ ನಾನೇ ಹೋದೆ
’ನಮಸ್ಕಾರ ಮೇಡಂ ನೀವು ಅಂತಾ ಗೊತ್ತಾಗ್ಲಿಲ್ಲ
ಹೊರರಾಜ್ಯದವರ ಐಟಿ ಬಿಟಿ ಯವರ ಹಾವಳಿ
ಜಾಸ್ತಿ ನೋಡಿ ನಾವು ಕನ್ನಡಾಭಿಮಾನಿಗಳು’
‘ಮಾತನಾಡಿದಿರಲ್ಲ ಕನ್ನಡದಲ್ಲಿ’ ಅಂದೆ

ಮತ್ತೆ ಮತ್ತೆ ಬಗಲಚೀಲದಲಿ
ಕೈಯಾಡಿಸುವುದ ನೋಡಿ ಇದೇನೋ
ಆಪತ್ಕಾಲ ಬಂತೆಂದೆ
ದೊಡ್ಡಮಾಲೆ ತೆಗೆದು ಕೈಗಿಟ್ಟು
’ಕ್ಷಮಿಸಿಮೆಡಂ’ ಎಲ್ಲಾ ಒಟ್ಟಾಗಿ ಅಂದವು
ಬೆವೆತು ಕಂಪಿಸಿದೆ ಮಂಪರು ಏನಾದರು ಇದ್ದರೆ –

‘ನಮ್ಮ ಸಂಘದ ರಾಜ್ಯೋತ್ಸವ ಅಧ್ಯಕ್ಷತೆಗೆ
ನೀವು ಬರಲೇಬೇಕು
ನಿಮ್ಮ ಒಪ್ಪಿಗೆ ಬೇಕು ಮೆಡಂ’
ನಾನು ಮರೆತೂ ಒಳಗಡೆ ಕರೆಯಲಿಲ್ಲ
ಯಾರಿಗೆಗೊತ್ತು ಯಾವಯಾವ ರೂಪಿನವರೆಂದು
ಫೋನ್‌ದಲ್ಲಿ ಹೇಳುವುದಾಗಿ ಕಳಿಸಿ
ಅದು ಬರದೇ ಇದ್ದರೆ ಸಾಕಪ್ಪ ದೇವರೆ
ಎಂದೆನ್ನುತ್ತ ಒಳಗೆ ಬಂದು
ಸೋಫಾದಲ್ಲಿ ದೊಪ್ಪನೆ ಬಿದ್ದುಕೊಂಡೆ.
*****

ಪುಸ್ತಕ: ಇರುವಿಕೆ

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...