Home / ಕವನ / ಕವಿತೆ / ರೈತಹತ್ಯಾ (ಬೀದಿ ನಾಟಕದ ಹಾಡು)

ರೈತಹತ್ಯಾ (ಬೀದಿ ನಾಟಕದ ಹಾಡು)

ಹಾಡು – ೧

ಎಲ್ಲಿಹುದೊ ಬಾಳ ಬೆಳಕು
ಅದೆಲ್ಲಿಹುದೊ ಜೀವ ತಳುಕು ||

ಜೀವ ಜಲ ಹನಿಹನಿ ರಾಶಿ
ಸುರಿಯೆ ಧಾರೆ ಹಸಿರು ಕಾಣಿ
ಹೂವರಳಿಸಿ ನಗು ಮಿಂಚಿಸಿ
ಜೀವಕೆಲ್ಲ ಚೇತನವ ಪೂಸಿ ||

ಮುಗಿಲಾಗಿರೆ ಬಟ ಬಯಲು
ನೆಲವೆಲ್ಲ ದ್ವೇಷಾಗ್ನಿ ಬುಗಿಲು
ಎಲ್ಲಿ ನಮ್ಮ ಬೆಳ್ಳಿ ಬೆಳಕು
ಅದೆಲ್ಲಿಹುದೊ ಜೀವ ತಳುಕು ||

ಹಾಡು – ೨

ಯಾರು ಕಾಯುವರಣ್ಣ
ರೈತಾಪಿ ಜನರನ್ನ ||

ತೆಂಗೀಗೆ ಜಂಗಲು ಹಿಡಿದು
ಜುಂಗು ಹತ್ತಿತು ಬದುಕು
ಮಳೆಯಿಲ್ಲ ಬೆಳೆಯಿಲ್ಲ
ದನ ಕರುಗೆ ಮೇವಿಲ್ಲ ||

ಕಣಜದೋರಿಗೆ ಕರುಣೆಯಿಲ್ಲ
ಜಣ್‌ಜಣ್ ಹಣ ಕಾಣಲಿಲ್ಲ
ಕೀಟ ಕಳೆಯ ಔಸದೀಯ
ಭಾಗ್ಯವಲ್ಲ ನಾವೆ ಕುಡಿಯೊ ||

ಹಾಡು – ೩

ದುಡ್ಡು ಕೊಡ್ತಾರೆ ಇವರು
ಜಪ್ತಿ ಮಾಡ್ತಾರೆ ||

ಸಾಲ ಮಾಡಿ ಅಂತಾರೆ
ಸಬ್ಸಿಡಿ ಮಾತ ಹೇಳ್ತಾರೆ
ಸಾಲದ ಶೂಲಕೆ ಹಾಕುತ್ತ
ನಮ್ ಗೋಣು ಮುರಿತಾರೆ ||

ಸಾಲ ಎಣಿಸಿ ಕೊಡುತಾರೆ
ಮೇಲೆ ಬಡ್ಡಿ ಹಾಕ್ತಾರೆ
ಸರ್ವಿಸ್ ಪರ್ವಿಸ್ ಚಾರ್ಜು
ಅಂತ ಟಾರ್ಚರ್‍ ಮಾಡ್ತಾರೆ ||

ಹಾಡು – ೪

ಮಾರುವಾಡಿ ಮುಂದೆ ಬಂದ
ಅಡಮಾನವೆಲ್ಲ ಹರಾಜು ಎಂದ ||

ಬೆಳ್ಳಿ ಬಂಗಾರದ ಅಂಗಡಿ
ಕಾಲೂರಲು ಜಾಗ ಒಂದಡಿ
ಬೆಳೆದ ವಾಮನ ತ್ರಿವಿಕ್ರಮ
ಹಿಡಿಯೋರ್‍ಯಾರವನ ಕ್ರಮ ||

ಬಡ್ಡಿ ಬಡ್ಡಿ ಚಕ್ರ ಬಡ್ಡಿ
ಹೊಟ್ಟೆ ಬೆಳೆದಂತೆ ಅಡ್ಡಾದಿಡ್ಡಿ
ತಕಡಿಗಾಕಿದರೆ ಬಂಗಾರ
ಬಂದಿತಲ್ಲಾ ಸಂಚಕಾರ ||

ಹಾಡು – ೫

ಜಮೀನುದಾರ ಮುರುದಾರ
ಬಡವರ ಭೂಮಿ ಬಕಾಸುರ ||

ಬಡತನ ಭಂಗದ ಪಿತಾಮಹ
ಜೀತ ಬೆವರಿನ ರಣಪಂತ
ಹಸಿಮಾಂಸದ ನರಭಕ್ಷಕ
ಮಾಡೋರ್‍ಯಾರಿವಗೆ ಶಿಕ್ಷಾ ||

ಮೂರಕೆ ಆರು ಲೆಕ್ಕ ಬರೆದು
ಸಾಲಕೆ ಕಟ್ಟಿನ ಗೆರೆಯ ಕೊರೆದು
ಬಿಡದೆ ಮಾಡುವ ವಸೂಲಿಕೋರ
ಊರ ಜುಟ್ಟಿನ ಸೂತ್ರಧಾರ ||

ಹಾಡು – ೬

ಹರಿದೀತು ಕಣ್ಣಗಂಗೆ
ಗಂಗಮ್ಮ ತಾಯಾಗೆ
ಒಡ್ಡು ಕಟ್ಟುವರ್‍ಯಾರು
ಬೋಯಿಗಳು || ಅಣ್ಣಾ ||

ಮುದ್ದೆ ಕೂಡಿಸಲಿಕ್ಕೆ
ಹಿಟ್ಟಿಲ್ಲ ಸೊಪ್ಪಿಲ್ಲ
ಹಿಡಿ ಹಿಟ್ಟು ಆಯಿತೊ
ಹಂಬಲಿಯು || ಅಣ್ಣಾ ||

ತಿನ್ನಲಾರೆವು ಎಂದು
ಅನ್ನ ಚೆಲ್ಲುವ ಮಂದಿ
ಕೊಡಿರಯ್ಯೊ ಹಿಡಿಗೂಳು
ನಿಮ್ಮ ಧರ್ಮ || ಅಣ್ಣಾ ||

ಹಾಡು – ೭

ಕೊಳ್ಳುವಿರಾ ಅಣ್ಣಾ ಕೊಳ್ಳುವಿರಾ
ಜೀವಗಳು ಬಿಕರಿಗಿವೆ ಕೊಳ್ಳುವಿರಾ ||

ಜೀವಾವ ಕೊಂಡು ದುಡ್ಡಾ ಕೊಟ್ಟಾರೆ
ಅದೆ ನಮ್ಮ ಮನೆ ಮಂದಿ ಹೊಟ್ಟಹೊರೆ
ಜೀವ ಉಳಿಸಲು ಜೀವ ಮಾರಾಟವೆ
ಜೀವ ಕೊಂಡು ಜೀವ ಉಳಿಸಿರಣ್ಣಾ ||

ನಮ್ಮ ಹಸಿವು ದುಃಖ ನಿಮ್ಮದಾಗಲಿಲ್ಲ
ಕನಸ ಕೊಂಡು ಮಹಲಲಿ ಕುಣಿದಿರಲ್ಲ
ಹೊಟ್ಟೆ ಕೇಳಲಿಲ್ಲ ಸುಮ್ಮನಿರಲಾಗಿಲಿಲ್ಲ
ಉರಿಬೆಂದು ಬೂದಿ ಆದೆವಲ್ಲ ||

ಹಾಡು – ೮

ಸಹಾಯವ ಮಾಡೀರಣ್ಣ
ನಾವು ಸಾಯಬೇಕ್ರಣ್ಣ ||

ಇದ್ದು ನಾವು ಬದುಕಲಾರೆವು
ನಿಮಗೆ ಏನೂ ಮಾಡಲಾರೆವು
ಬದುಕಿಗಂತೂ ಏನೂ ಇಲ್ಲ
ಸಾವಿಗಾದ್ರೂ ಕೊಡ್ರಿ ಬೆಲ್ಲ ||

ನಮ್ಮ ಸಾವಿಗೆ ನೀವೇ ಸಾಕ್ಷಿ
ಅದುವೆ ಸದ್ಯ ನಮಗೆ ಮೋಕ್ಷ
ಮನಕರಗದವರ ನಡುವೆ
ಸಾವೆ ಪರಮ ಒಡವೆ ||
*****

 

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...