Home / ಕವನ / ಕವಿತೆ / ಸ್ವತಂತ್ರ ಭಾರತ (ಆಗಸ್ಟ್ ೧೫-೧೯೪೭)

ಸ್ವತಂತ್ರ ಭಾರತ (ಆಗಸ್ಟ್ ೧೫-೧೯೪೭)

ಭಾರತೀ ಸತೀಯ ಗೆಲವು ಮಂದಹಾಸ ನೋಡೊ!  ||ಪಲ್ಲ||

ತ್ರಿವರ್ಣದಾ ಧ್ವಜವ ಬೀಸಿ ಶೂರಕುವರಿ ಏರಿ
ಬಂದಳದೋ ಪಾರತಂತ್ರ್‍ಯಪಾಶ ಮುರಿದು ನಾರೀ!  ||ಅ.ಪ||

ನೊಂದಮೊಗವು ಅಂದಸೊಗವು ಎಲ್ಲ ಮ್ಲಾನವಾಗಿದೆ,
ನೂರುವೆರಡು ವರುಷವೆಲ್ಲ ದಾಸ್ಯತನದೊಳಡಗಿರೆ;
ತನ್ನ ತಾನು ಮರೆತು ಜೊಳ್ಳು ಪುತ್ರರನ್ನು ನಂಬಿರೆ,
ಆತ್ಮಖ್ಯಾತಿ ಘನತೆಗಳನು ಕಳೆದು ತಾಯಿ ನೊಂದಳೊ!  ||ಭಾ||

ಬಡತನದಿ ಬೇನೆಯಿಂದ ಬೆಂದು ಬಳಲಿ ಬಾಡಿತು
ದೇಶದಲ್ಲಿ ಶಾಂತಿ ಕಾಂತಿ ಕಳೆದು ಭ್ರಾಂತಿ ತುಂಬಿತು,
ಹಿಂದೂದೇಶ ಕರ್ಮಭೂಮಿ ಧರ್ಮಕ್ಷೇತ್ರ ಖ್ಯಾತಿಯು
ಶೂರ ಆರ್ಯಜನರ ಸ್ಥೈರ್ಯ ಶೂನ್ಯವಾಗಿ ಪೋದುವೊ!  ||ಭಾ||

ಒಲಿದು ನಲಿದು ಮುಗುಳು ನಗೆಯ ತೋರಿ ಹಾಡಿ ಬರುವಳು
ಹೂವ ಮುಡಿದು ತಿಲಕ ಹಚ್ಚಿ ಧ್ವಜವ ಹಾರ್‍ಸಿ ಮೆರೆವಳು,
ಕಾಲಗೆಜ್ಜೆ ಝಣಽ ಝಣರೆಂದೆನಿಸಿ ಕುಣಿದು ಕರೆವಳು
ನಲಿದಳೀ ನಲ್ವತ್ತು ಕೋಟಿ ಕುರವರರೊಡನೆ ಹರುಷದಿ!  ||ಭಾ||

ಅಹೋ ಏನು ಧಣಿದರವಳ ವೀರ ತ್ಯಾಗಿ ಪುತ್ರರು,
ದೇಶಬಂಧು ಲೋಕಮಾನ್ಯ ಮೋತಿಲಾಲ ಶಿಷ್ಟರು;
ಆ ನೇತಾಜಿ ನೆಹುರು ವಲ್ಲಭಾದಿ ಗೋಕಲೇಯರು,
ದಣಿದು ಕಾದು ಸತ್ತ ಹಿರಿಯ ಕಿರಿಯ ಹಲವು ವೀರರು!  ||ಭಾ||

ರಕ್ತ ಹರಿಸಿ ತನುವ ಸವೆಸಿ ಧಣಿದರಲವು ಜನಗಳು
ಏಸು ಕಾಲ ಪಾರತಂತ್ರ್‍ಯದಿಂದ ಇರ್ದ ದೇಶದೊಳ್;
ಶೂರಗಾಂಧಿ ರಾಜಋಷಿಯು ಬಡವಗೊಲಿದ ದೇವನು
ಸತ್ಯಾಗ್ರಹಾದಾಯುಧವೇ ದೇಶ ವಿಜಯಕಾಯ್ದನು!  ||ಭಾ||

ಬಂದಳದೋ ವಿಜಯಭೇರಿಯನ್ನು ಮೊಳಗಿ ಮಾನಸಿ,
ಗಳಿಸಿದೊಂದು ಕೀರ್ತಿಯನ್ನು ಕಂದರೊಳಗೆ ಹಬ್ಬಿಸಿ;
ಧರೆಯ ರಾಷ್ಟ್ರಗಳಲಿ ನಮ್ಮ ಪ್ರಭೆಯು ಇನ್ನು ಬೀರ್ವುದು,
ಧವಳ ಕೇತು ಹಾರ್‍ಸಿ ತಂದಳದೋ ಭಾರತೀವಧು!  ||ಭಾ||
*****
ಪುಸ್ತಕ: ಸೂರ್ಯ ಕಾಂತಿ

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...