ಆಶಯ

ಇಹದ ಸುಖವನು ಬಯಸಿ, ಆತ್ಮಯೋಗದ ಬಲವು
ತನ್ನದೆಂಬುದ ನೆಚ್ಚಿ, ಮುಂಗುರಿಯ ದೃಷ್ಠಿಯನು
ನಂಬಿಕೆಯ ನೇತೃದಲಿ ನೋಡುತಲು, ಜೀವನದ
ಧ್ಯೇಯವನು ದಿಗ್ಭ್ರಾಂತ ತರಂಗದೊಳಾಡಿಸುತ,
ಕೋಟಿಮಾನವರಲ್ಲಿ ತನ್ನ ಪ್ರತಿಭೆಯ ಸಾಕ್ಷ್ಯ
ಸಾರುತಲಿ ಪಾಡುತಲಿ, ಮಾನವನು ತಾನ್ಪಡೆದ
ಜನ್ಮಸಾರ್ಥಕವೆಂದು ಜಡನಂತೆ ಮರುಳಾಗಿ
ವಿಶ್ವನಿಯಮದ ಎದುರು ಪಕ್ಕಮಿಲ್ಲದ ಪಾತೆ-
ಯಂತೆ ಸೇರ್ವನು ಸೋಲ ಸುರಂಗವನ್ನು!

ಕಾಲಪುರುಷನು ತಾಳ್ದ ಅನುಭವವೆ ಅದು ಚಿತ್ರ!
ಎಲ್ಲಿಂದೆಲಿಗೆ ಹಾಯ್ದು ಎಂತೆಂಥಾ ಭೀಕರದ
ನೋಟವನು, ಜನತೆಗಳ ಭಾಗ್ಯ ದೌರ್ಭಾಗ್ಯಗಳ
ಜೀವನವ ನೋಡಿ ಕನಿಕರಗೊಂಡು, ಮನಸಿನಾ
ಭಿತ್ತಿಯಲಿ ಆ ಹಾಳೂಬಾಳಿನಾ ಬೇಗುದಿಯ
ಚಿತ್ರವನು, ಆ ಕಾಲ ಮಹಿಮಾ ಮಹತ್ವವನು
ಒಂದಾಗಿ, ಗುರುಜನರ ನೃಪಜನದ ತತ್ವದಿಂ
ಆಳ್ಕೆಯಿಂ ಬಗೆ ಬಗೆಯ ಸೋಗನ್ನು ಜಗಪಡೆದ
ತೆರವನ್ನು ನೋಡುತೋಡುತ ಸಾರ್ವುದಾಹಾ!

ಎನ್ನೆದೆನ್ನದುವೆಂದು ಔತ್ಕೃಷ್ಟ್ಯವಾದದಲಿ,
ಒಲ್ಮೆ ನಲ್ಮೆಯ ಸುಖನು ಎಂಬ ವಿಚಾರದಲಿ,
ರಸಿಕ ಜೀವನ ತಾಳ್ವ ಮೋಹ ಸಂಘಟನೆಯಲಿ,
ಸಮರನಾದದಿ ಏಳ್ವ ಜನದ ತಳಮಳದಲ್ಲಿ,
ವೈರಾಗ್ಯ ಜೀವನವು ಪಡೆವ ಸಾರ್ಥಕದಲ್ಲಿ,
ಮನಕೆ ತೋರುವವೊಂದು ವಿಸ್ಮಯಾಂತಕವಾದ-
ಧ್ವನಿಯ ಲೋಕಕೆ ಸಾರ್ವ ಮಂಗಲಾಮಂಗಲವೊ
ಹೇಳ ಬಲ್ಲವರಾರು?  ಹೃದಯಾದಾವೇಶವನು
ಅನುಭವವೆ ಒಪ್ಪಿಸುವುದು ಕಾಣ್ಕೆಯಾಗಿ!

ಲೇಖನಿಯನುರುಳಿಸೆನು ಕವಿಯೆಂಬ ಹೆಮ್ಮೆಯಲಿ,
ಪಾಡ್ದನಿಯನೊಪ್ಪಿಸೆನು ಗಮಕಿಯೆಂಬರ್ಥದಲಿ,
ಜಗದಿರವ ಚಿತ್ರಿಸೆನು ಚಿತ್ರಿಕನ ರೀತಿಯಲಿ,
ತತ್ವಗಳ ನೊರೆಯೆನಾ ತಾತ್ವಿಕನ ಸೂಕ್ತಿಯಲಿ,
ಎಮ್ಮೆ ಜೀವದ ಛಾಯೆ ಪರರ ಬಾಳಿನ ಮಾಯೆ
ಹಾಸುಹೊಕ್ಕಾಗಿ ತರಂಗಗಳ ತಲ್ಪದಲಿ
ಬಿದ್ದುರುಳುವುದ ಕಂಡು ಮನವಾರೆ ಸೋಲುತಲಿ
ನೀಳ್ಗತೆಯ ಕಿರಿದಾಗಿ ವಿಷಯಗಳ ಲಘುವಾಗಿ
ಅಂಧ ಸಾಧಕನಂತೊರೆಯಲಿಳಿದೆನೊರ್ವ!

ಬ್ರಹ್ಮಾಂಡ ನೆಲಗಟ್ಟು ಪ್ರೇಮದಾಧಾರದಲಿ
ವಿಶ್ವನಿಯಮದ ಬಲವು ಪ್ರೇಮಸುಧೆ ಧಾರೆಯಲಿ,
ಮಾನವನ ವ್ಯವಹಾರ ಪ್ರೇಮ ಪೋಷಾಕಿನಲಿ,
ಜೀವಿಗಳ ಸ್ವಾತಂತ್ರ್‍ಯ ಪ್ರೇಮಪ್ರಲಾಪದಲಿ-
ಅಡಗಿರಲು, ಈರೇಳು ಲೋಕದಾ ಘಟನೆಯಲಿ
ಪ್ರೇಮಜಾಲದಿ ಏಳ್ವ ಪ್ರಣಯಧೂಮದ ರೂಪ
ಅದೆಂತು ವೈಚಿತ್ರ್‍ಯ!  ಎಂತು ಮನೋಹರವು!!
ಎನ್ನ ಸೊಲ್ಲನು ಇಲ್ಲಿ ತದ್ವಿಶೇಷದಿ ಚೆಲ್ಲಿ
ನೋಟಕರ ಹಾಯೆಣಿಸಲಸದಳವೊ!

ಮನಸಿಜನ ಮಾಯೆಯಲಿ ಜನದಲಿಹ ಮೋಹದಲಿ
ಕವಿಪಾಕವೊಸರುವುದು ಆತ್ಮರಸಬಟ್ಟಲಿಂ!
ಸುಖದ ದುಃಖದ ಬೇರೆ ಪಾಲು ಎರಡನು ಮಾಡಿ
ಸೋಗಿನನುಭವದಲ್ಲಿ ಸವಿದು ಸವಿಕಹಿಯನ್ನು
ನೋಡಿ ಲೋಕದ ಬಗೆಯ ಚಿತ್ರಿಸಿಡುತಲಿ ವಿಧವ-
ಹಾಹಾಕಾರದ ಕಾಣ್ಕೆ ಗುಣದ ದೋಷದ ಪೂಣ್ಕೆ
ಒಂದನೊಂದರಲಿಟ್ಟು, ತನ್ನ ಇರವನು ತನ್ನ
ಬುದ್ಧಿಬಲದಿಂ ಬೆಳಗಿ ಆದರ್ಶ ಜೀವನಕೆ
ಆಧಾರನಾಗಿರಲು ಸಲ್ವುದೆನಿತೊ!
*****

ಪುಸ್ತಕ: ಸೂರ್ಯ ಕಾಂತಿ

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...