Home / ಕವನ / ಕವಿತೆ / ಎಲ್ಲಿದೆ ಧರ್ಮ

ಎಲ್ಲಿದೆ ಧರ್ಮ

ಧರ್ಮಾ ಧರ್ಮಾ ಅಂತಾರೋ ಎಲ್ಲಿದೆ ಧರ್ಮಾ ತೋರಿಸರೋ ||ಪ||
ನಮ್ಮದು ಧರ್ಮಾ ನಿಮ್ಮದು ಧರ್ಮಾ ಅವರದು ಧರ್ಮಾ ಅಂತಾರೆ
ಜನಗಳ ನಡುವೆ ಗೋಡೆಗಳೆಬ್ಬಿಸಿ ಆಗಸ ಕಾಣದೆ ನಿಂತಾರೆ ||೧||

ಕೊಂಬಿ ರೆಂಬಿಗಳ ಜೋತು ಬಿದ್ದು ಅವುಗಳೆ ಮರ ಮರ ಅಂತಾರೆ
ಬೊಡ್ಡೆಗೆ ಕೊಡಲಿ ಹಾಕುತಲಿದ್ದು ಕೊಂಬೆ ಚಿಗುರಿದವು ಅಂತಾರೆ ||೨||

ನೆಲದಲಿ ಹುಟ್ಟಿದ ಗಿಡಗಳ ಕಿತ್ತುತ ಅಂತರ ಬೆಂತರ ಬೆಳೆಸ್ಯಾರೆ
ಮಣ್ಣೂ ನೀರೂ ತುಳಿದೂ ಹಳಿದೂ ರೊಕ್ಕದಿ ಗಿಡಗಳ ಇಳಿಸ್ಯಾರೆ ||೩||

ಜೀವನ ಮೂಲದಿ ಹೊಮ್ಮಿದ ನಾದದ ಕೋಗಿಲೆ ಕೊರಳನು ಹಿಚಿಕ್ಯಾರೆ
ಸಮಗ್ರ ಬದುಕಿನ ಸುರ ಸಂಗೀತದ ತಂತು ತಂತುಗಳ ತಿರಿಚ್ಯಾರೆ ||೪||

ಬಯಲು ಆಲಯದ ಹಿಡಿಯದ ಲೀಲೆಯ ಗೂಡುಗಳಲಿ ಹಿಡಿದಿಟ್ಟಾರೆ
ಆಕಾರಿಲ್ಲದ ಅಗಮ್ಯ ಗೂಢಕೆ ತೋಚಿದ ಆಕೃತಿ ಕೊಟ್ಟಾರೆ ||೫||

ಹಾಲೂ ಇಲ್ಲಾ ಬಟ್ಟಲು ಇಲ್ಲಾ ಗೊಟಕ್ಕು ಪೂಜೆಯ ಮಾಡ್ಯಾರೆ
ವೇಷ ಮೋಸಗಳ ಕಳ್ಳ ಬಸಿರುಗಳು ಉಬ್ಬಿದ ಅಬ್ಬರ ಮೆರೆಸ್ಯಾರೆ ||೬||

ಝಣ ಝಣ ರೊಕ್ಕದ ಗಂಟೆ ಭೇರಿಗಳ ನಾದದ ಕೇಳುವ ಧರ್ಮಗಳು
ಹಸಿದ ಕೂಸುಗಳ ನೊಂದ ಜೀವಿಗಳ ಕೂಗು ಕೇಳದಾ ಕಿವುಡುಗಳು ||೭||

ಬಣ್ಣ ಬಟ್ಟೆಗಳು ಮಹಲು ಮೆರಗುಗಳು ಮಾತ್ರ ಕಾಣುವವು ಅವುಗಳಿಗೆ
ಹರಕು ಬಟ್ಟೆಗಳು ದುಡಿವ ರಟ್ಟೆಗಳು ಕಾಣದ ಕುರುಡಿದೆ ಅವುಗಳಿಗೆ ||೮||

***

ನಾಮಾ ವಿಭೂತಿಗಳಲ್ಲಿ ಇರುವುದೇ
ಜನಿವಾರ ಜುಟ್ಟುಗಳಲಿದೆಯೇ?
ಗುಡಿಗೋಪುರದಲಿ ಬಸದಿಯಲಿರುವುದೆ
ಮಸೀದಿ ಗೋಡೆಗಳೊಳಗಿದೆಯೇ? ||೯||

ಗುಡಿಗಳ ಒಳಗಿನ ಕಲ್ಲು ಲೋಹಗಳ
ವಿಧ ವಿಧ ವಿಗ್ರಹಗಳಲಿದೆಯೇ?
ನಾಮ ಪಠಣದಲಿ ಜಪಮಾಲೆಗಳಲಿ
ಯಜ್ಞ ಯಾಗಗಳಲಡಗಿದೆಯೇ? ||೧೦||

ಮಡಿಮೈಲಿಗೆಯಲಿ ವ್ರತನೇಮಗಳಲಿ
ಮೂಡ ಭಕ್ತಿಯಲಿ ಕುಳಿತಿದೆಯೇ?
ಊಹಾ ಮೃಗಜಲ ಪುರಾಣ ಕತೆಗಳ
ಶಾಸ್ತ್ರಗಳಡವಿಗಳೊಳಗಿದೆಯೇ? ||೧೧||

ಮಠಗಳ ಸಿಂಹಾಸನಗಳ ಮೇಲೆ
ಛತ್ರ ಚವರಿಗಳ ತಂಪಿನಲಿ
ಪಲ್ಲಕ್ಕಿಗಳಲಿ ಅಟ್ಟಹಾಸದಲಿ
ಮೆರೆಯುತಲಿದೆಯೇ ಸೊಂಪಿನಲಿ? ||೧೨||

****

ಎಲ್ಲಿದೆ ಧರ್ಮಾ ಯಾವುದು ಧರ್ಮಾ
ಏನದು ಧರ್ಮಾ ತೋರಿಸಿರೊ
ಬೆಳಕನು ಹರಡಲು ಹುಟ್ಟಿದ ಧರ್ಮವು
ಕತ್ತಲೆಯನೆ ಹಬ್ಬಿಸದಿರಲಿ ||೧೩||

ಜ್ಞಾನ ದೀವಿಗೆಯು ಮೌಢ್ಯ ಕಂದಕದಿ
ಉಸಿರು ಕಟ್ಟದೆಯೆ ಬದುಕಿರಲಿ
ಮಾನವರೆಲ್ಲರ ಕೂಡಿಸುವ ಬದಲು
ಭೇದಿಸಿ ಕೊಲ್ಲದ ಹಾಗಿರಲಿ
ಮಾನವತೆಯ ಆ ಮೂಲ ಬೇರಿನಲಿ
ತನ್ನಯ ಸಾರವ ಹೀರಿರಲಿ ||೧೪||
********

Tagged:

Leave a Reply

Your email address will not be published. Required fields are marked *

ತೆಂಕಣದಿ ಹದಿನಾರು ಮೈಲಿಗಳಾಚಿ ಬಾಂದಳಕೆ ಭುಜಗೊಟ್ಟು ನಿಂತಿರುವ ಸಿಂಹಗಡವೇ-ಇದೋ ನಿನಗೆ ತಲೆಬಾಗುವೆನು. ಶತಮಾನಗಳ ಹಿಂದೆ, ನರಜಾತಿಯಲಿ ಹರಿಯಂತೆ ಮೆರೆದ ವೀರಲೀಲಾಲೋಲ ಶಿವಪ್ರಭುವನು ಶಿರದಲಿ ಹೊತ್ತು ಮೆರೆಯಿಸಿದ ಸಿಂಹಗಡವೇ ಇದೋ-ನಿನಗೆ ವಂದಿಸುವೆನು. ಅಂದು ನಮ್ಮ ನಾಡಿನ ಧರ್‍ಮ-ನಮ್ಮ ಹ...

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...