Home / ಕವನ / ಕವಿತೆ / ಎಲ್ಲರಂಥವನಲ್ಲ ನನ ಗಂಡ

ಎಲ್ಲರಂಥವನಲ್ಲ ನನ ಗಂಡ

ಎಲ್ಲರಂಥವನಲ್ಲ ನನ ಗಂಡ
ಬಲ್ಲಿದನು ಪುಂಡ
ಎಲ್ಲರಂಥವನಲ್ಲ ನನ ಗಂಡ         || ಪ ||

ಸೊಲ್ಲು ಸೊಲ್ಲಿಗೆ ಬಯ್ದು ನನ್ನ
ಎಲ್ಲಿಗೋಗದ್ಹಾಂಗ ಮಾಡಿಟ್ಟಾ
ಕಾಲ್ಮುರಿದು ಬಿಟ್ಟಾ           || ಅ.ಪ ||

ಮಾತಾಪಿತರು ಮನೆಯೊಳಿರುತಿರಲು
ಮನಸೋತು ಮೂವರು
ಪ್ರೀತಿಗೆಳೆತನ ಮಾತಿನೊಳಿರುತಿರಲು
ಮೈನೆರೆತು ಮಾಯದಿ
ಘಾತವಾಯಿತು ಯವ್ವನವು ಬರಲು
ಹಿಂಗಾಗುತಿರಲು
ದೂತೆ ಕೇಳ್ನಿಮ್ಮವರು ಶೋಭನ
ರೀತಿಚಾರವನೆಲ್ಲ ತೀರಿಸಿ
ಆತನೊಳು ಮೈಹೊಂದಿಕೆಯ ಮಾಡಿ
ಮಮತೆಯಲ್ಲಿ ಕೂಡಿ               || ೧ ||

ಅಕ್ಕತಂಗಿಯರಾರು ಮಂದಿಗಳಾ
ಅಗಲಿಸಿದನೈವರ
ಕಕ್ಕುಲಾತಿಯ ಅಣ್ಣತಮ್ಮಗಳಾ
ನೆದರೆತ್ತಿ ಮ್ಯಾಲಕ
ನೋಡಗೊಡದೇ ಹತ್ತು ದಿಕ್ಕುಗಳಾ
ಮಾಡಿದನೆ ಮರುಳಾ
ತೆಕ್ಕೆಯೊಳು ಬಿಗಿದಪ್ಪಿ ಸುರತಾ-
ನಂದಸುಖ ತಾಂಬೂಲ ರಸಗುಟ-
ಗಿಕ್ಕಿ ಅಕ್ಕರತಿಯಲಿ ನಗುವನು ತಾ
ಬಹು ಸುಗುಣನೀತಾ            || ೨ ||

ತುಂಟ ಸವತಿಯ ಸೊಂಟಮುರಿ ಹೊಡೆದಾ
ಒಣ ಪಂಟಮಾತಿನ
ಗಂಟಗಳ್ಳರ ಮನೆಗೆ ಬರಗೊಡದಾ
ಹದಿನೆಂಟು ಮಂದಿ
ಕುಂಟಲಿಯರ ಹಾದಿಯನು ಕಡಿದಾ
ಎನ್ನ ಕರವ ಪಿಡಿದಾ
ಕುಂಟಕುರುಡಾರೆಂಟು ಮಂದಿ
ಗಂಟುಬಿದ್ದರೆ ಅವರ ಕಾಣುತ
ಗಂಟಲಕೆ ಗಾಣಾದನೇಳಕ್ಕಾ
ತಕ್ಕವನೇ ಸಿಕ್ಕಾ           || ೩ ||

ಅತ್ತೆಮಾವರ ಮನೆಯ ಬಿಡಿಸಿದನೇ
ಮತ್ತೆಲ್ಲಿ ಮೂವರ
ಮಕ್ಕಳೈವರು ಮಮತೆಯ ಕೆಡಿಸಿದನೇ
ಎನ್ನನ್ನು ತಂದು
ರತ್ನಜ್ಯೋತಿಯ ಪ್ರಭೆಯೊಳಿರಿಸಿದನೇ
ಎನಗೊತ್ತಿನವನು
ಎತ್ತ ಹೋಗದೆ ಚಿತ್ತವಗಲದೆ
ಗೊತ್ತಿನಲ್ಲಿ ಇಟ್ಟು ಎನ್ನನು
ಮುತ್ತಿನಾ ಮೂಗುತಿಯ ಕೊಟ್ಟಾನೇ
ಅವನೇನು ದಿಟ್ಟನೇ           || ೪ ||

ಕಾಂತೆ ಕೇಳೆ ಕರುಣ ಗುಣದಿಂದ
ಎನಗಿಂಥ ಪುರುಷನು
ಬಂದು ದೊರಕಿದ ಪುಣ್ಯಫಲದಿಂದಾ
ಎನ್ನಂತರಂಗದ
ಕಾಂತ ಶ್ರೀ ಗುರುನಾಥ ಗೋವಿಂದಾ
ಶಿಶುನಾಳದಿಂದ
ಕಾಂತೆ ಬಾರೆಂತೆಂದು ಕರೆದೇ-
ಕಾಂತ ಮಂದಿರದೊಳಗೆ ಒಯ್ದು
ಭ್ರಾಂತಿ ಭವ ದುರಿತವನು ಪರಿಹರಿಸಿ
ಚಿಂತೆಯನು ಮರಸಿ            || ೫ ||
***

Tagged:

Leave a Reply

Your email address will not be published. Required fields are marked *

“ಸುಭದ್ರೆ, ನೀನು ಎಂದು….” ದೈನ್ಯವಾಣಿಯಿಂದ ಕೇಳಿಕೊಂಡ ಶ್ರೀಧರ. “ತಡೆ ಶ್ರೀಧರ. ಹ್ಞ. ಹತ್ತಿರ ಬರಬೇಡ. ಪ್ರತಿಯೊಂದು ಕಾರ್ಯಕ್ಕೂ ಮುಹೂರ್ತ ಬರಬೇಕು; ಸ್ವಲ್ಪ ಕಾಲ ತಡೆ. ಒಮ್ಮೆ ಹೇಳಿದೆ: ನಾನು ನಿನ್ನವಳೆಂದು, ನಂಬಿಕೊ.” “ಎಷ್ಟು ದಿನ ಈ ನ...

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...