Home / ಬಾಲ ಚಿಲುಮೆ / ಕಥೆ / ಬೆಳ್ಳಿ ಕಡಗ

ಬೆಳ್ಳಿ ಕಡಗ

ಒಂದು ಕುಗ್ರಾಮದಲ್ಲಿ ಮುದುಕ ಮುದುಕಿ ಇದ್ದರು. ಅವರಿಗೆ ಒಬ್ಬ ಮಗನಿದ್ದ. ಆತ ಹೇಳಿದ್ದನ್ನು ತಿಳಿದುಕೊಳ್ಳಲಾರದಷ್ಟು ದಡ್ಡನಾಗಿದ್ದ. ಮಗನ ಈ ವರ್ತನೆಯಿಂದ ಬೇಸತ್ತ ಅವನ ತಂದೆ-ತಾಯಿ ಪಕ್ಕದ ಆಶ್ರಮದ ಋಷಿಯ ಬಳಿ ಹೋಗಿ `ಸ್ವಾಮೀಜಿ, ಇವನು ನಮ್ಮ ಮಗ ಧನವಂತ. ಇವನು ದಡ್ಡ. ಹೇಗಾದರೂ ಮಾಡಿ ಇವನನ್ನು ಬುದ್ಧವಂತನನ್ನಾಗಿ ಮಾಡಿ. ನಮ್ಮ ಬಳಿ ಇರುವ ಆಸ್ತಿ, ಹಣವನ್ನು ಆಶ್ರಮಕ್ಕೆ ಒಪ್ಪಿಸಿ ನಾವೂ ಇಲ್ಲಿಯೇ ಕೆಲಸ ಮಾಡಿಕೊಮಡು ಇರುತ್ತೇವೆ’ ಎಂದು ಬೇಡಿಕೊಂಡರು. ಧನವಂತನನ್ನೊಮ್ಮೆ ನೋಡಿದ ಋಷಿ `ಆಯಿತು’ ಎಂದರು.

`ಧನವಂತಾ, ನೀನು ಸ್ವಲ್ಪ ದಿನಗಳವರೆಗೆ ಸ್ವಚ್ಛಂದವಾಗಿ ಆಶ್ರಮದಲ್ಲಿ ಸುತ್ತಾಡಿಕೊಂಡಿರು. ಇಲ್ಲಿ ನಿನಗಾಗಿ ಈಜುಕೊಳ, ಪ್ರಾಣಿ, ಪಕ್ಷಿಗಳಿವೆ’ ಎಂದರು. ಸಂತಸಗೊಂಡ ಧನವಂತ `ಆಗಲಿ’ ಎಂದು ಕುಣಿಯುತ್ತ ಹೋದ.

ಸ್ವಲ್ಪ ದಿನಗಳ ನಂತರ ಋಷಿಗಳು ತಾವು ಕಲಿತ ಎಲ್ಲ ವಿದ್ಯೆಗಳನ್ನೂ ಕಲಿಸಿ ಧನವಂತನನ್ನು ಬುದ್ಧವಂತನನ್ನಾಗಿ ಮಾಡಿದರು. ನಂತರ `ನಾನು ಕಲಿತ ವಿದ್ಯೆಯನ್ನೆಲ್ಲ ನಿನಗೆ ಧಾರೆ ಎರೆದಿದ್ದೇನೆ. ನಿನಗೆ ರಾಜನಾಗುವ ಲಕ್ಷಣಗಳಿವೆ. ನಿನಗೊಂದು ಬೆಳ್ಳಿ ಕಡಗ ಕೊಡುವೆ. ಇದು ಸಾಮಾನ್ಯವಾದುದಲ್ಲ. ನೀನು ಕೇಳಿದ್ದನ್ನೆಲ್ಲ ಕೊಡುತ್ತದೆ. ಆದರೆ, ಒಳ್ಳೆಯ ಕಾರ್ಯಗಳಿಗೆ ಮಾತ್ರ ಉಪಯೋಗಿಸು’ ಎಂದು ಹೇಳಿ ಬೆಳ್ಳಿ ಕಡಗವನ್ನು ಧನವಂತನಿಗೆ ಕೊಟ್ಟರು.

ರಾತ್ರಿ ಮಲಗಿದ್ದ ಸಮಯದಲ್ಲಿ ಧನವಂತನ ಮನದಲ್ಲಿ ಕೆಟ್ಟ ಯೋಚನೆಗಳು ಸುಳಿದಾಡಿದವು. ತುಸು ಸಮಯದ ನಂತರ ಆತ ಎದ್ದು ಕುಳಿತು, ಬೆಳ್ಳಿ ಕಡಗವನ್ನು ಕೈಗೆ ಹಾಕಿಕೊಂಡು ನನಗೊಂದು ಅರಮನೆ ಬೇಕೆಂದ. ಕೂಡಲೇ ಅಲ್ಲೊಂದು ಅರಮನೆ ಸೃಷ್ಟಿಯಾಯಿತು. ತನಗೊಬ್ಬ ರಾಜಕುಮಾರಿ ಬೇಕೆಂದ. ಮರುಕ್ಷಣವೇ ಅಲ್ಲಿಗೆ ಒಬ್ಬ ಸುಂದರ ಯುವತಿ ಬಂದಳು. ಹೀಗೆ ಅರಮನೆಯ ರಾಜನಿಗೆ ಬೇಕಾದ ಬೆಳ್ಳಿ, ಬಂಗಾರ, ವಜ್ರ, ವೈಢೂರ್‍ಯ, ಸೈನಿಕರು, ಸೇವಕರು ಎಲ್ಲವೂ ಬಂದವು. ಇದನ್ನೆಲ್ಲ ಗಮನಿಸಿದ ಋಷಿಗಳು `ಧನವಂತ, ಏನಿದು ವಿಚಿತ್ರ’ ಎಂದು ಕೋಪಗೊಂಡರು. ಆದರೆ, ಧನವಂತ ಅದನ್ನು ಗಮನಿಸುವ ಸ್ಥಿತಿಯಲ್ಲಿರಲಿಲ್ಲ. ಆತ ಅಹಂಕಾರದಿಂದ `ಏ! ಯಾರು ನೀನು? ನಡೆ ಇಲ್ಲಿಂದ’ ಎಂದು ಗದರಿಸಿದ.

`ಥೂ, ಪಾಪಿ, ನೀನು ಸರ್ವನಾಶವಾಗುತ್ತಿ ಹೋಗು’ ಎಂದು ಹೇಳಿ ಋಷಿಗಳು ಅಲ್ಲಿಂದ ಹೊರಟರು.

ಇತ್ತ ಧನವಂತ ತನ್ನ ರಾಜ್ಯದಲ್ಲಿ ದರ್ಪ, ಸೊಕ್ಕಿನಿಮದ ಮೆರೆಯುತ್ತ ಪ್ರಜೆಗಳಿಗೆ ಕಿರುಕುಳ ಕೊಡಲು ಆರಂಭಿಸಿದ. ಅನ್ಯಾಯವಾಗಿ ಭೂಕಂದಾಯ ವಸೂಲಿ ಮಾಡುವುದು, ಭೂಮಿ ಕಬಳಿಸುವುದು, ಪಕ್ಕದ ರಾಜರನ್ನು ಯುದ್ಧಕ್ಕೆ ಆಹ್ವಾನಿಸಿ ತನ್ನ ಬೆಳ್ಳಿ ಕಡಗದ ಸಹಾಯದಿಂದ ಅವರನ್ನು ಸೋಲಿಸಿ, ಅವರ ಸಮಸ್ತ ರಾಜ್ಯವನ್ನೂ ತೆಗೆದುಕೊಂಡು ಆ ರಾಜರನ್ನು ತನ್ನ ಗುಲಾಮರನ್ನಾಗಿಸಿಕೊಳ್ಳುವುದೇ ಅವನ ಬದುಕಾಯಿತು.

ಇದನ್ನೆಲ್ಲ ಅರಿತ ಋಷಿಗಳು ಧನವಂತನಿಗೆ ಕೊಟ್ಟ ಬೆಳ್ಳಿ ಕಡಗವನ್ನು ದಿವ್ಯ ಶಕ್ತಿಯಿಂದ ತಮ್ಮ ಬಳಿ ಬರುವಂತೆ ಮಾಡಿದರು. ಕೂಡಲೇ ಬೆಳ್ಳಿ ಕಡಗ ಋಷಿಗಳ ಹತ್ತಿರ ಬಂತು. ಅಂದಿನಿಂದ ಧನವಂತ ಹಂತ ಹಂತವಾಗಿ ಎಲ್ಲವನ್ನೂ ಕಳೆದುಕೊಂಡ. ತನ್ನ ತಪ್ಪಿನ ಅರಿವಾಗಿ ಪುನಃ ಋಷಿಗಳ ಹತ್ತಿರ ಬಂದು ತನ್ನ ತಪ್ಪನ್ನು ಮನ್ನಿಸುವಂತೆ ಕೇಳಿಕೊಂಡ. ಅವನ ಕೋರಿಕೆ ತಿರಸ್ಕರಿಸಿದ ಋಷಿಗಳು `ನಿನ್ನನ್ನು ಶಿಷ್ಯನನ್ನಾಗಿ ಮಾಡಿಕೊಂಡಿದ್ದೇ ತಪ್ಪು, ನಡೆ ಆಚೆ’ ಎಂದರು. ಧನವಂತನ ಹೆಂಡತಿ ಅಳುತ್ತ `ಸ್ವಾಮೀಜಿ, ನನ್ನ ಗಂಡನದು ತಪ್ಪಾಗಿದೆ. ಮನ್ನಿಸಿ. ನಿಮ್ಮ ಸೇವೆ ಮಾಡಲು ನಮಗೆ ಅವಕಾಶ ಕೊಡಿ’ ಎಂದು ಬೇಡಿಕೊಂಡಳು. ಋಷಿಗಳು ಕಡೆಗೊಮ್ಮೆ ಆ ಮಾತಿಗೆ ಒಪ್ಪಿದರು. ಮುಂದೆ ಧನವಂತ ಸನ್ಮಾರ್ಗದಲ್ಲಿ ನಡೆದು ತನ್ನ ತಪ್ಪನ್ನು ತಿದ್ದಿಕೊಂಡ. ಆಶ್ರಮದಲ್ಲೇ ಇದ್ದು ಋಷಿಗಳ ಸೇವೆ ಮಾಡುತ್ತ ಕಾಲ ಕಳೆದ.

     *****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...