Home / ಕವನ / ಕವಿತೆ / ಒಂದು ಪೇಟೆಯೆಂದರೆ

ಒಂದು ಪೇಟೆಯೆಂದರೆ

ಸಣ್ಣಪುಟ್ಟ ಓಣಿಗಳನ್ನೂ ಬೀದಿಗಳನ್ನೂ ಈ ಪೇಟೆಯ ಒಳಹೊರಕ್ಕೆ
ಹೊಕ್ಕು ಹೊರಟು ಅಚಾನಕ ನಿಮ್ಮ ಕೈಬಿಡುವ ಹಾದಿಗಳನ್ನೂ
ಹೋಲಿಸಬಹುದು ಕ್ಲಿಷ್ಟವಾದೊಂದು ನರಮಂಡಲಕ್ಕೆ

ಅದರಿದರ ಮಿದುಳು ಯಾವುದೋ ನಾನು ಕಾಣೆ
ತಾಲೂಕಾಪೀಸೆ, ನಗರಸಭಾಕಛೇರಿಯೆ, ಜೈಲೆ,
ರೈಲು ನಿಲ್ದಾಣವೆ, ಅಥವ ಕಾವಿ ಬಳಿದ ಪೋಲೀಸು ಠಾಣೆ?

ಮಿದುಳಿರುವುದಕ್ಕೆ ಇದೇನೂ ಸಾವಯವ ಜೀವಿಯಲ್ಲ ಖರೆ
ಬಹುಶಃ ಇದ್ದೀತು ಇದು ಬೆಳೆದುಬಂದ ರೀತಿ ಸರಿಯಲ್ಲದೆ, ಅಥವ
ನಾವು ಮಾಡಿದ ಹೋಲಿಕೆಯಲ್ಲಿ ಏನೊ ತೊಂದರೆ

ಇದ್ದರೂ ಇರಬಹುದು.  ಆದರೂ ಈ ಸ್ಥಾವರಕ್ಕೆಷ್ಟು ನೆನಪು
ಕದಂಬರು ನಿಲ್ಲಿಸಿದ ಶಾಸನ ಮತ್ತೆ ಯಾರೋ ಹೇರಿಸಿದ ಮದರಾಸು
ಸಂಸ್ಥಾನ, ನಿನ್ನೆ ಮೊನ್ನೆ ಈ ಕಡೆ ಬಂದವನು ಟಿಪ್ಪು

ಇದು ಚರಿತ್ರೆ.  ಚರಿತ್ರೆಯೊಂದೇ ನೆನಪಲ್ಲ.  ನೆನಪು ಉಪ್ಪಿನ ಹಾಗೆ
ಸಮುದ್ರದಿಂದ ಮೊಗೆದುದು ಅಥವ ಭೂಮಿಯೊಳಗಿಂದ ಅಗೆದುದು
ಮೈಯಲ್ಲಿ ಕರಗಿರುವುದು, ಹರಳುಗಟ್ಟುವುದಿಲ್ಲ ಒಳಗೆ

ತಲೆಹೊರೆಯಾಗಿ ಇಲ್ಲಿಗಿದು ಬಂತು ಈ ನೆನಪು ಬಳಸು ದಾರಿ
ಸಾಗಿ, ನೆಲಕ್ಕೆ ಸುರಿದ ಇಲ್ಲವೇ ಉಟ್ಟ ವಸ್ತ್ರಕ್ಕೆ ಒರಸಿದ ಬೆವರಾಗಿ
ಕಣ್ಣ ಒಸರಿನಲ್ಲಷ್ಟು ನಡೆಯೆಬ್ಬಿಸಿದ ಧೂಳಿನಲ್ಲಷ್ಟು ಸೇರಿ

ಬಂದರೆ ಆಲ ಅಶ್ವತ್ಥ ಗುಡಿಗುಡಾರಗಳು ಗದ್ದೆ ಬಯಲು
ಗಡಿ ಗಡಿಗೆ ಒಮ್ಮೆ ನಿಲ್ಲಿಸಿದ್ದ ಹೊರೆಕಂಬಗಳು
ಮತ್ತೆ ನಸುಕಿಗೇ ಕಟ್ಟಿದ ಎತ್ತಿನ ಗಾಡಿಗಳ ಸಾಲು

ಈ ನೆನಪಿನ ಸಾಕ್ಷಿ.  ಹೀಗೆ ಈ ಪೇಟೆಯ ನರಗಳಿಗೆ ಎಲ್ಲೆಲ್ಲೂ
ಸಾಗಿ ಸೆಣೆದು ಸೇರುವಾತುರ ಈ ಹೊರೆ ಹೊತ್ತು ಆ ಅಗೋಚರ ಕೇಂದ್ರ
ಯಾವ ಅರೆಗನಸಿನ ತೆಕ್ಕೆಯಲ್ಲೊ ಯಾವ ಕೊಚ್ಚೆಯ ಮಗ್ಗುಲಲ್ಲೊ

ಸೇರುವುವು ಸೇರಲೇಬೇಕಾಗಿ.  ಒಂದು ಪೇಟೆಯೆಂದರೆ ನೆಲ
ಸಾರಿಸಿ ಹಾಕಿದ ರಂಗೋಲಿಯಲ್ಲ, ಟೇಬಲಿನ ಮೇಲೆ ಹೊಳೆಯುವ
ತಾಟಿನಲ್ಲಿ ನೀಟಾಗಿ ಕತ್ತಿರಿಸಿಟ್ಟ ಕಸಿಮಾವಿನ ಹಣ್ಣಲ್ಲ

ಒಂದು ಪೇಟೆಗೆ ತನ್ನದೇ ಎದೆಬಡಿತವಿದೆ.  ಕೇಳಿಲ್ಲವೇ ನಾವದನ್ನು
ಒಂಟಿಯಾಗಿ ಎಲ್ಲಿಂದೆಲ್ಲಿಗೆ ಸಾಗುವ ರಾತ್ರಿ ಉಗಿಬಂಡಿಯ
ಭಾರವಾದ ಕಾಲಸಪ್ಪಳದಲ್ಲಿ ಮಿಳಿಯುವುದನ್ನು

ಕಂಡಿಲ್ಲವೇ ಅದು ಮುದುಕುವುದು ಘಟ್ಟದ ಕೆಳಗೆ ಮಳೆ ಬೀಳುವ ಇರುಳು
ವೃದ್ಧನಂತೆ ಅಥವ ತೆರೆಯುವುದಂಗಾತ ಹೆಣ್ಣಿನಂತೆ
ಮುಂದೊತ್ತುವಾಗ ಯಕ್ಷಿಣೀ ಲಾಂದ್ರದ ನೆರಳು

ಒಂದು ಪೇಟೆಯೆಂದರೆ ಬರೇ ಅಂಗಡಿಬೀದಿಗಳಲ್ಲ.  ಇದರ ವಸ್ತು
ಈ ಹೊಗೆಹಿಡಿದ ಹಂಚಿನ ಮತ್ತು ಮುಳಿಮನೆಗಳ ಬದಿಗೆ
ಅಡ್ಡಾದಿಡ್ಡಿ ಹೆಜ್ಜೆಗಳಲ್ಲಿ ಮೂಡಿದ ಪ್ರತ್ಯೇಕ ಗುರುತು

ಒದಗಬೇಕಷ್ಟೆ ಇಲ್ಲಿ ನಡೆವವರಿಗೆ ಮಾತ್ರ.  ಎಷ್ಟೆ
ಹೊರಟರೂ ಮತ್ತೆ ತನ್ನ ಒಳಪ್ರಾಕಾರಗಳಲ್ಲಿ ಸುತ್ತಿಸುವ ಕೋಟೆ
ನೀವೇ ಹೇಳಿದಂತೆ ನಮಗೆ ವಿಧಿಸುವುದು ನಾವು ಕಲ್ಪಿಸಿದ ಪೇಟೆ
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...