Home / ಕವನ / ಕವಿತೆ / ಒಂದು ಪೇಟೆಯೆಂದರೆ

ಒಂದು ಪೇಟೆಯೆಂದರೆ

ಸಣ್ಣಪುಟ್ಟ ಓಣಿಗಳನ್ನೂ ಬೀದಿಗಳನ್ನೂ ಈ ಪೇಟೆಯ ಒಳಹೊರಕ್ಕೆ
ಹೊಕ್ಕು ಹೊರಟು ಅಚಾನಕ ನಿಮ್ಮ ಕೈಬಿಡುವ ಹಾದಿಗಳನ್ನೂ
ಹೋಲಿಸಬಹುದು ಕ್ಲಿಷ್ಟವಾದೊಂದು ನರಮಂಡಲಕ್ಕೆ

ಅದರಿದರ ಮಿದುಳು ಯಾವುದೋ ನಾನು ಕಾಣೆ
ತಾಲೂಕಾಪೀಸೆ, ನಗರಸಭಾಕಛೇರಿಯೆ, ಜೈಲೆ,
ರೈಲು ನಿಲ್ದಾಣವೆ, ಅಥವ ಕಾವಿ ಬಳಿದ ಪೋಲೀಸು ಠಾಣೆ?

ಮಿದುಳಿರುವುದಕ್ಕೆ ಇದೇನೂ ಸಾವಯವ ಜೀವಿಯಲ್ಲ ಖರೆ
ಬಹುಶಃ ಇದ್ದೀತು ಇದು ಬೆಳೆದುಬಂದ ರೀತಿ ಸರಿಯಲ್ಲದೆ, ಅಥವ
ನಾವು ಮಾಡಿದ ಹೋಲಿಕೆಯಲ್ಲಿ ಏನೊ ತೊಂದರೆ

ಇದ್ದರೂ ಇರಬಹುದು.  ಆದರೂ ಈ ಸ್ಥಾವರಕ್ಕೆಷ್ಟು ನೆನಪು
ಕದಂಬರು ನಿಲ್ಲಿಸಿದ ಶಾಸನ ಮತ್ತೆ ಯಾರೋ ಹೇರಿಸಿದ ಮದರಾಸು
ಸಂಸ್ಥಾನ, ನಿನ್ನೆ ಮೊನ್ನೆ ಈ ಕಡೆ ಬಂದವನು ಟಿಪ್ಪು

ಇದು ಚರಿತ್ರೆ.  ಚರಿತ್ರೆಯೊಂದೇ ನೆನಪಲ್ಲ.  ನೆನಪು ಉಪ್ಪಿನ ಹಾಗೆ
ಸಮುದ್ರದಿಂದ ಮೊಗೆದುದು ಅಥವ ಭೂಮಿಯೊಳಗಿಂದ ಅಗೆದುದು
ಮೈಯಲ್ಲಿ ಕರಗಿರುವುದು, ಹರಳುಗಟ್ಟುವುದಿಲ್ಲ ಒಳಗೆ

ತಲೆಹೊರೆಯಾಗಿ ಇಲ್ಲಿಗಿದು ಬಂತು ಈ ನೆನಪು ಬಳಸು ದಾರಿ
ಸಾಗಿ, ನೆಲಕ್ಕೆ ಸುರಿದ ಇಲ್ಲವೇ ಉಟ್ಟ ವಸ್ತ್ರಕ್ಕೆ ಒರಸಿದ ಬೆವರಾಗಿ
ಕಣ್ಣ ಒಸರಿನಲ್ಲಷ್ಟು ನಡೆಯೆಬ್ಬಿಸಿದ ಧೂಳಿನಲ್ಲಷ್ಟು ಸೇರಿ

ಬಂದರೆ ಆಲ ಅಶ್ವತ್ಥ ಗುಡಿಗುಡಾರಗಳು ಗದ್ದೆ ಬಯಲು
ಗಡಿ ಗಡಿಗೆ ಒಮ್ಮೆ ನಿಲ್ಲಿಸಿದ್ದ ಹೊರೆಕಂಬಗಳು
ಮತ್ತೆ ನಸುಕಿಗೇ ಕಟ್ಟಿದ ಎತ್ತಿನ ಗಾಡಿಗಳ ಸಾಲು

ಈ ನೆನಪಿನ ಸಾಕ್ಷಿ.  ಹೀಗೆ ಈ ಪೇಟೆಯ ನರಗಳಿಗೆ ಎಲ್ಲೆಲ್ಲೂ
ಸಾಗಿ ಸೆಣೆದು ಸೇರುವಾತುರ ಈ ಹೊರೆ ಹೊತ್ತು ಆ ಅಗೋಚರ ಕೇಂದ್ರ
ಯಾವ ಅರೆಗನಸಿನ ತೆಕ್ಕೆಯಲ್ಲೊ ಯಾವ ಕೊಚ್ಚೆಯ ಮಗ್ಗುಲಲ್ಲೊ

ಸೇರುವುವು ಸೇರಲೇಬೇಕಾಗಿ.  ಒಂದು ಪೇಟೆಯೆಂದರೆ ನೆಲ
ಸಾರಿಸಿ ಹಾಕಿದ ರಂಗೋಲಿಯಲ್ಲ, ಟೇಬಲಿನ ಮೇಲೆ ಹೊಳೆಯುವ
ತಾಟಿನಲ್ಲಿ ನೀಟಾಗಿ ಕತ್ತಿರಿಸಿಟ್ಟ ಕಸಿಮಾವಿನ ಹಣ್ಣಲ್ಲ

ಒಂದು ಪೇಟೆಗೆ ತನ್ನದೇ ಎದೆಬಡಿತವಿದೆ.  ಕೇಳಿಲ್ಲವೇ ನಾವದನ್ನು
ಒಂಟಿಯಾಗಿ ಎಲ್ಲಿಂದೆಲ್ಲಿಗೆ ಸಾಗುವ ರಾತ್ರಿ ಉಗಿಬಂಡಿಯ
ಭಾರವಾದ ಕಾಲಸಪ್ಪಳದಲ್ಲಿ ಮಿಳಿಯುವುದನ್ನು

ಕಂಡಿಲ್ಲವೇ ಅದು ಮುದುಕುವುದು ಘಟ್ಟದ ಕೆಳಗೆ ಮಳೆ ಬೀಳುವ ಇರುಳು
ವೃದ್ಧನಂತೆ ಅಥವ ತೆರೆಯುವುದಂಗಾತ ಹೆಣ್ಣಿನಂತೆ
ಮುಂದೊತ್ತುವಾಗ ಯಕ್ಷಿಣೀ ಲಾಂದ್ರದ ನೆರಳು

ಒಂದು ಪೇಟೆಯೆಂದರೆ ಬರೇ ಅಂಗಡಿಬೀದಿಗಳಲ್ಲ.  ಇದರ ವಸ್ತು
ಈ ಹೊಗೆಹಿಡಿದ ಹಂಚಿನ ಮತ್ತು ಮುಳಿಮನೆಗಳ ಬದಿಗೆ
ಅಡ್ಡಾದಿಡ್ಡಿ ಹೆಜ್ಜೆಗಳಲ್ಲಿ ಮೂಡಿದ ಪ್ರತ್ಯೇಕ ಗುರುತು

ಒದಗಬೇಕಷ್ಟೆ ಇಲ್ಲಿ ನಡೆವವರಿಗೆ ಮಾತ್ರ.  ಎಷ್ಟೆ
ಹೊರಟರೂ ಮತ್ತೆ ತನ್ನ ಒಳಪ್ರಾಕಾರಗಳಲ್ಲಿ ಸುತ್ತಿಸುವ ಕೋಟೆ
ನೀವೇ ಹೇಳಿದಂತೆ ನಮಗೆ ವಿಧಿಸುವುದು ನಾವು ಕಲ್ಪಿಸಿದ ಪೇಟೆ
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...